Showing posts with label Agnana. Show all posts
Showing posts with label Agnana. Show all posts

Saturday, October 4, 2025

ಹತ್ತು ರೀತಿಯ ಮಾತಿನ ದೋಷಗಳು


ಕೆಲವರು ಮಾತನಾಡಿದರೆ ಚೆನ್ನ. ಇನ್ನಷ್ಟು ಕೇಳಬೇಕು ಅನಿಸುವುದು. ಮತ್ತೆ ಕೆಲವರು ಸುಮ್ಮನಿದ್ದರೆ ಚೆನ್ನ. ಮಾತನಾಡುವುದು ಯಾವಾಗ ನಿಲ್ಲಿಸುತ್ತಾರೋ ಎಂದು ಕಾಯಬೇಕಾಗುವುದು. ಎಷ್ಟು ಬೇಕೋ ಅಷ್ಟು ಮಾತ್ರ ಮಾತಾಡಿದರೆ ಬಲು ಚೆನ್ನ. ಅತಿಯಾಗಿ ಮಾತಾಡಿದರೆ ಕಷ್ಟ. "ಒಡಕು ಮಡಕೆಗೆ ಕಲ್ಲು ಹಾಕಿದಂತೆ" ಆಗಬಾರದು. ಏನು ಹೇಳಬೇಕೆಂದಿದ್ದಾರೋ ಅದನ್ನು ಸರಿಯಾಗಿ, ಪೂರ್ತಿಯಾಗಿ ಹೇಳದೆ ಕಡಿಮೆ ಮಾತಾಡಿದರೆ ಇನ್ನೂ ಕಷ್ಟ. "ಮಾತೇ ಆಡದಿದ್ದರೆ ಅರ್ಥವಾಗುವುದಾದರೂ ಹೇಗೆ?" ಎಂದು ಉದ್ಗರಿಸುವುದು ಆಗಾಗ ಅಲ್ಲಲ್ಲಿ ಕೇಳಿ ಬರುವುದು. 

"ಮಾತು ಬೆಳ್ಳಿ; ಮೌನ ಬಂಗಾರ" ಎಂದೊಂದು ಗಾದೆ. ಆದರೆ "ಮೌನದಿಂದಲೇ ಕೊಲ್ಲುತ್ತಾಳೆ" ಎಂದು ಹೇಳುವುದು ಕೇಳಿದ್ದೇವೆ. "ಹರಿತದ ಮಾತಿನಿಂದ ಇರಿಯುತ್ತಾನೆ" ಎಂದು ಕೆಲ ಸಂದರ್ಭಗಳಲ್ಲಿ ಹೇಳುವುದೂ ಉಂಟು. ಆಗ ಮಾತು ಕತ್ತಿಗಿಂತಲೂ ಹರಿತ. ವೈಶಂಪಾಯನ ಸರೋವರದಲ್ಲಿ ಜಲಸ್ತ೦ಭನ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ದುರ್ಯೋಧನನಿಗೆ ಭೀಮಸೇನನ ಬಿರುಸು ಗದೆಯ ಹೊಡೆತಕ್ಕಿಂತ ಮಾತಿನ ಇರಿತ ತಾಳದಾಯಿತು. ದೊಡ್ಡವರ ಸಾಂತ್ವನದ ನುಡಿಗಳು ಅದಕ್ಕೆ ತದ್ವಿರುದ್ಧ. "ಅವರ ಮಾತಿನಿಂದ ಎಷ್ಟೋ ಸಮಾಧಾನವಾಯಿತು" ಎಂದು ಕೆಲವೊಮ್ಮೆ ಅನಿಸುವುದು. "ಅವನೊಡನೆ ಮಾತಾಡಿದ್ದೇ ತಪ್ಪಾಯಿತಲ್ಲ. ಮನಸ್ಸು ಇನ್ನೂ ಉದ್ವಿಗ್ನವಾಯಿತು" ಅನ್ನುವ ಪರಿಸ್ಥಿತಿಗಳೂ ಉಂಟು. ಮಾತಿಗೆ ತೂಕ ಇರಬೇಕು. ತೂಕದ ಮಾತು ಬೇಕು. ಕೆಲವೊಮ್ಮೆ ಮಾತು ಬೇಕು. ಮತ್ತೆ ಕೆಲವೊಮ್ಮೆ ಮಾತೇ ಬೇಡ. 

ಮನುಷ್ಯರಿಗೂ ಪ್ರಾಣಿಗಳಿಗೂ ಇರುವ ಅನೇಕ ಭೇದಗಳಲ್ಲಿ ಈ ಮಾತನಾಡುವ ಶಕ್ತಿಯೂ ಒಂದು. ಒಂದು ಮಗು ಹುಟ್ಟಿದ ತಕ್ಷಣ ಸಂಭ್ರಮ ಆವರಿಸುತ್ತದೆ. ಆ ಮಗು ತೊದಲು ನುಡಿಗಳನ್ನು ಆಡಲು ಆರಂಭಿಸಿದಾಗ ಇನ್ನೂ ಸಂಭ್ರಮ. ಅರ್ಥವಾಗುವಂತೆ ಮಾತಾಡಿದರೆ ಮತ್ತಷ್ಟು ಸಂತಸ. ಆದರೆ ಜೀವನ ಪೂರ್ತಿ ತೊದಲುತ್ತಾ ಮಾತನಾಡುತ್ತಿದ್ದರೆ ಅದು ಹೇಗೆ? ಅದನ್ನು ಹೆತ್ತ ತಂದೆ-ತಾಯಿಯರಿಗೆ ಅದೊಂದು ಘೋರ ಕಷ್ಟ. ಮಗು ದೊಡ್ಡದಾದರೂ ಮಾತೇ ಬರದಿದ್ದರೆ ಹೇಳಲಾಗದ ವೇದನೆ. ಕಂಡ ಕಂಡ ವೈದ್ಯರಿಗೆಲ್ಲಾ ತೋರಿಸುವುದು ನಡೆಯುತ್ತದೆ. 

ಹೆಸರಾಂತ ನಟ, ನಿರ್ಮಾಪಕ, ನಿರ್ದೇಶಕ ಮನೋಜ ಕುಮಾರನ "ಶೋರ್" ಅನ್ನುವ ಹಿಂದಿ ಚಲನಚಿತ್ರದ ಕಥೆ ಅದೇ. ಅವನಿಗೆ ಹುಟ್ಟಿದ ತನ್ನ ಮಗ ಮಾತಾಡುವುದಿಲ್ಲ ಎಂದು ಆತಂಕ. ಪ್ರಪಂಚದ ಬೇರೆಲ್ಲಾ ಶಬ್ದಗಳೂ ಅವನನ್ನು ಹಿಂಸೆ ಮಾಡುತ್ತವೆ. ಅವನು ಕೇಳಬೇಕೆಂದಿರುವ ಒಂದೇ ಶಬ್ದವೆಂದರೆ ಮಗನ ಮಾತು. ಆದರೆ ಅವನು ಮಾತಾಡುವುದಿಲ್ಲ. ಕಡೆಗೊಂದು ದಿನ ಒಬ್ಬ ವೈದ್ಯರು ಮಗನಿಗೆ ಶಸ್ತ್ರ ಚಿಕಿತ್ಸೆ ಮಾಡಿ ಮಾತು ಬರಿಸುತ್ತಾರೆ. ಇನ್ನೇನು ಆಸ್ಪತ್ರೆಗೆ ಹೋಗಿ ಮಗನ ಮಾತು ಕೇಳಬೇಕು ಅನ್ನುವ ಸಮಯ. ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಅಪಘಾತ. ಅಪಘಾತದಲ್ಲಿ ತಂದೆಗೆ ಶ್ರವಣ ಶಕ್ತಿ ಹೋಗುತ್ತದೆ. ಅಪ್ಪ ಕಿವುಡನಾಗುತ್ತಾನೆ. ಈಗ ಮಗ ಮಾತಾಡುತ್ತಾನೆ. ಆದರೆ ತಂದೆ ಕೇಳಲಾರ. ಅದೊಂದು ವಿಪರ್ಯಾಸ. 

ಒಟ್ಟಿನಲ್ಲಿ ಮಾತು ಒಂದು ಪ್ರಶ್ನೆಯೇ!
*****

ಹುಟ್ಟಿದಂದಿನಿಂದ ಮಾತು ಹೊರಡದೇ ಇರುವುದು ಒಂದು ರೀತಿಯ ದೋಷ. ಅವರನ್ನು "ಮೂಕ' ಎನ್ನುತ್ತೇವೆ. ಕೆಲವರಿಗೆ ಕಿವಿ ಕೇಳದೆ, ಮಾತು ಬರೆದೇ ಇರುವುದು ಉಂಟು. ಇವರು "ಮೂಕ-ಬಧಿರರು" ಅಥವಾ "ಕಿವುಡು-ಮೂಗರು". ಇದೊಂದು ರೀತಿಯ ದೋಷ. ಹಾಗೆಯೇ ಮಾತನಾಡಬಲ್ಲ ಕೆಲವರಿಗೆ ಸರಿಯಾಗಿ ಮಾತನಾಡಲು ಆಗುವುದಿಲ್ಲ. ಕೆಲವರನ್ನು "ಮೂಗಿನಲ್ಲಿ ಮಾತಾಡುತ್ತಾನೆ" ಅನ್ನಬಹುದು. ಏನೋ ಒಂದು ವಿಕಾರ ಅಥವಾ ಕೊರತೆ. "ಎಲ್ಲರಂತೆ ನಾನಿಲ್ಲ" ಎಂದು ಅವರಿಗೆ ದುಃಖ. ಹೆತ್ತವರಿಗೆ "ಇದೇನು, ಹೀಗೆ ಆಯಿತಲ್ಲ?" ಎನ್ನುವ ಚಿಂತೆ. ಕೆಲವರಿಗೆ ಅವರನ್ನು ನೋಡಿ ಅಪಹಾಸ್ಯ ಮಾಡುವ ಗೀಳು. ಉಳಿದವರಿಗೆ ಅವರನ್ನು ಕಂಡಾಗ ಮರುಕ. ಒಟ್ಟಿನಲ್ಲಿ ಏನೋ ಒಂದು "ಸರಿಯಿಲ್ಲ" ಅನ್ನುವ ಸ್ಥಿತಿ. 

ಕೆಲವರಿಗೆ ಮಾತು ಬರದೇ ಪೂರ್ತಿ ಜೀವನ ಹಾಗೆಯೇ ನಡೆಯಬಹುದು. ಮತ್ತೆ  ಕೆಲವರಿಗೆ ಮೊದಲು ಮಾತು ಬರದಿದ್ದರೂ ಮುಂದೆಂದೋ, ಶಸ್ತ್ರ ಚಿಕಿತ್ಸೆಯಿಂದ ಅಥವಾ ಮತ್ತ್ಯಾವುದೋ ಕಾರಣದಿಂದ ಮಾತು ಬರಬಹುದು. ಚೆನ್ನಾಗಿ ಮಾತು ಬಂದು ಜೀವನ ನಡೆಸುತ್ತಿರುವವರಿಗೆ ಮುಂದೆಂದೋ ಮಾತಿನ ತೊಂದರೆ ಬರುವುದೂ ಇದೆ. ತೊದಲುವುದು, ಶಬ್ದ ಸರಿಯಾಗಿ ಹೊರಡದಿರುವುದು, ಆಗಾಗ ಮಾತು ನಿಲ್ಲುವುದು, ಮುಂತಾದುವು ಆಗುತ್ತವೆ. ಅನೇಕ ಕಾಯಿಲೆಗಳಿಂದ ಮಾತು ಹೆಚ್ಚು-ಕಡಿಮೆ ಆಗಬಹುದು. ಕೆಲವರಿಗೆ ಹಗಲೆಲ್ಲಾ ಮಾತು ಸರಿಯಿದ್ದು ಸಂಜೆ ಆಗುತ್ತಿದ್ದಂತೆ ಆಯಾಸದಿಂದ ಮಾತು ತೊದಲಬಹುದು. ಅಪಘಾತಗಳಿಂದ ಮಾತೇ ನಿಂತುಹೋಗಬಹುದು. ಹೀಗೆ ಹಲವು ರೀತಿ. ನಾವು ನಮ್ಮ ಸುತ್ತ-ಮುತ್ತ ಕಂಡಂತೆ. 

ಹೀಗೆ ಮಾತಿನಲ್ಲಿ ವ್ಯತ್ಯಾಸ ಆಗುವುದು ದೈಹಿಕ ಕಾರಣಗಳ ಜೊತೆ ಮಾನಸಿಕ ಮತ್ತು ಬೌದ್ಧಿಕ ಕಾರಣಗಳಿಂದಲೂ ಉಂಟು. ಕೆಲವು ಮಕ್ಕಳಿಗೆ ಹಿಂದೆ ತಮಗೆ ಹೊಡೆತ ಮೊದಲಾದ ಹಿಂಸೆ ಕೊಟ್ಟವರ ಮುಂದೆ ಮಾತು ಹೊರಡುವುದಿಲ್ಲ. ಚೆನ್ನಾಗಿ ತಯಾರಿ ಮಾಡಿಕೊಂಡು ಸಂದರ್ಶನಕ್ಕೆ (ಇಂಟರ್ವ್ಯೂ) ಹೋದವನಿಗೆ ಅಲ್ಲಿ ಕುಳಿತಾಗ ಆತಂಕದಿಂದ ಮಾತು ಹೊರಡದು. ಹೀಗೆ ಹಲವು ವಿಧ. 

*****
ತಿಳಿದವರು "ಹತ್ತು ರೀತಿಯ ಮಾತಿನ ತೊಂದರೆ" ಇವೆ ಎಂದು ಹೇಳುತ್ತಾರೆ. ಇವು ದೈಹಿಕ, ಬೌದ್ಧಿಕ ಮತ್ತು ಮಾನಸಿಕ ಕಾರಣಗಳು ಒಂದೊಂದರಿಂದ ಅಥವಾ ಎರಡು, ಮೂರು ಸೇರುವುದರಿಂದ ಆಗಬಹುದು. ಇವುಗಳಲ್ಲಿ ಕೆಲವಕ್ಕೆ ಇರುವ ವ್ಯತ್ಯಾಸ ಬಹಳ ತೆಳುವಾದದು. ಒಂದನ್ನು ಇನ್ನೊಂದಕ್ಕೆ ತಪ್ಪಾಗಿ ತಿಳಿಯಬಹುದು.ಈ ಹತ್ತು  ದೋಷಗಳು ಯಾವುವು ಎಂದು ನೋಡೋಣ. 
  1. ಅಜ್ಞಾನ (ತಿಳಿಯದಿರುವುದು): ಏನು ಮಾತನಾಡಬೇಕೆಂದು ತಿಳಿಯದೇ ಮೂಕರಾಗುವುದು. "ಏನು ಹೇಳಬೇಕೆಂದು ಗೊತ್ತಾಗಲಿಲ್ಲ" ಎಂದು ನಂತರ ಅನ್ನಬಹುದು. ಹೀಗೆ ಮಾತನಾಡಿದರೆ ಸರಿಯೋ, ತಪ್ಪೋ ಎನ್ನುವ ಭೀತಿ ಇರಬಹುದು. ಹೇಗೆ ಪ್ರಾರಂಭಿಸಬೇಕು ಎಂದು ಗೊತ್ತಾಗದಿರಬಹುದು.  ವಿಷಯದ ಪರಿಚಯ ಇಲ್ಲದಿರುವುದರಿಂದ ಆಗಬಹುದು. 
  2. ವಿಸ್ಮೃತಿ (ಮರೆವು): ಮೊದಲು ವಿಷಯ ಚೆನ್ನಾಗಿ ತಿಳಿದಿದ್ದರೂ ಮಾತನಾಡಬೇಕಾದಾಗ ನೆನಪು ಕೈಕೊಡುವುದು. ಬಹಳ ತಯಾರಿ ನಡೆಸಿದ್ದರೂ ಬೇಕಿದ್ದಾಗ ಅದು ಹೊಳೆಯಲಿಲ್ಲ. ಒಂದೇ ವಿಷಯವನ್ನು ಹತ್ತಾರು ಬಾರಿ ಪಾಠ ಹೇಳಿದ್ದರೂ ಕೆಲವರಿಗೆ ಈ ಕಾರಣದಿಂದ ತೊಂದರೆ ಆಗುವುದು. ಪಾಠ ಮುಗಿಸಿ ಹೊರಬಂದ ನಂತರ ಅದೇ ವಿಷಯ ಮತ್ತೆ ನೆನಪಿಗೆ ಬರುವುದುಂಟು. 
  3. ಭ್ರಾಂತಿ (ಭ್ರಮೆ): ಕೆಲವು ಲಕ್ಷಣಗಳಿಂದ ಒಂದನ್ನು ಇನ್ನೊಂದಾಗಿ ತಿಳಿಯುವುದು. ಬೆಳ್ಳಗಿರುವುದರಿಂದ ಸುಣ್ಣದ ನೀರನ್ನು ಹಾಲೆಂದು ತಿಳಿಯುವುದು. ಹಗ್ಗವನ್ನು ಹಾವೆಂದು ಭ್ರಮಿಸುವುದು. ಈ ಕಾರಣದಿಂದ ಮಾತಿನಲ್ಲಿ ವ್ಯತ್ಯಾಸ. 
  4. ಸಂಶಯ (ಅನುಮಾನ): ಮಾತಾಡುತ್ತಿರುವ ವಿಷಯದಲ್ಲಿ ಅನೇಕ ಅನುಮಾನಗಳ ಕಾರಣ ಮಾತು ಸರಿಯಾಗಿ ಹೊರಡದಿರುವುದು. ತಲೆಯಲ್ಲಿ ವಿಷಯ ಕಲಸು-ಮೇಲೋಗರ. ಹೀಗೆ ಹೇಳಿದರೆ ಹೇಗೋ? ಹಾಗೆ ಹೇಳಿದರೆ ಹೇಗೋ? ಈ ರೀತಿಯ ಅಭಿವ್ಯಕ್ತಿಯಲ್ಲಿ ಅನುಮಾನ. 
  5. ಅಪಸ್ಮ್ರುತಿ (ತಪ್ಪು ತಿಳಿವಳಿಕೆ): ಭ್ರಾಂತಿಯ ಇನ್ನೊಂದು ರೂಪ. ಸ್ವಲ್ಪವೇ ವ್ಯತ್ಯಾಸ. ರಾಮಣ್ಣನವರ ವಿಷಯ ಗೊತ್ತು. ಭೀಮಣ್ಣನವರ ವಿಷಯವೂ ಗೊತ್ತು. ಆದರೆ ಮಾತಾಡುವಾಗ ಒಬ್ಬರ ಬದಲು ಇನ್ನೊಬರ ವಿಷಯ ಮಾತಾಡುತ್ತಾ ಹೋಗುವುದು. 
  6. ಕ್ಷಯ (ಕಡಿಮೆಯಾಗುವುದು): ಮೊದಲು ಮಾತು ಚೆನ್ನಾಗಿದ್ದರೂ ಮುಂದೆ ಅನೇಕ ಕಾರಣಗಳಿಂದ ಕ್ರಮೇಣ ಮಾತಿನ ಆಳ ಕಡಿಮೆ ಆಗುವುದು. ಶಬ್ದ ಸರಿಯಾಗಿ ಹೊರಡದಿರುವುದು. ಮಾತಾಡುವ ವಿಷಯಗಳು ಕಡಿಮೆಯಾಗುವುದು. ಹೇಳಿದ್ದೇ ಹೇಳುತ್ತಿರುವುದು. ಮುಂತಾದುವು. 
  7. ತಂದ್ರಾ (ಆಲಸ್ಯ): ತಂದ್ರಾ ಪದಕ್ಕೆ ತೂಕಡಿಕೆ ಎಂದು ಒಂದು ಅರ್ಥ. ಮಾತಿನಲ್ಲಿ ತೂಕಡಿಕೆ ಅಂದರೇನು? ಮಾತಿನ ಮಧ್ಯೆ ನಿಂತು ಹೋಗುವುದು. ಮಾತು ಆಡುತ್ತಿದ್ದಂತೆ ಸುಸ್ತಾಗುವುದು. ನಿದ್ದೆಯಲ್ಲಿ ಮಾತಾಡುತ್ತಿರುವಂತೆ ಅಸಂಗತವಾದ ಮಾತುಗಳು. ಹೀಗೆ. 
  8. ಕಂಪವಚ (ತೊದಲು ಮಾತು): ಉಗ್ಗುವುದು ಅನ್ನುತ್ತಾರೆ. ತೊದಲು ಮಾತು. ಮಾತಿನಲ್ಲಿ ಧೃಡತೆ ಇಲ್ಲ. ನಡುಗುವ ಧ್ವನಿ. ಕೇಳುವವರಿಗೆ ಹಿತವಿಲ್ಲ. ಕಂಪನದಿಂದ ಮಾತು ಹುಟ್ಟುವುದಾದರೂ ಇಲ್ಲಿ ಬೇಡವಾದ ಕಂಪನ. ಸಂಗೀತಗಾರರು ಹಾಡುವಾಗ ಬೇಕೆಂದು ಕಂಪಿಸುವ ಧ್ವನಿಯ ರೀತಿಯಲ್ಲ. ಅನವಶ್ಯಕ ಧ್ವನಿಯ ಅಲ್ಲಾಟ. 
  9. ಕೌ೦ಠ್ಯ (ಅಲ್ಲಲ್ಲಿ ನಿಂತುಹೋಗುವುದು): ನಿರರ್ಗಳ ಮಾತಿಲ್ಲ. ಮಾತಾಡುತ್ತಿದ್ದಾಗ ಅಲ್ಲಲ್ಲಿ ಬೇಡದ ಕಡೆ ಏನು ಹೇಳಬೇಕೆಂದು ತೋಚದಿರುವುದರಿಂದ ಮಾತು ನಿಂತುಹೋಗುವುದರಿಂದ ವಿಚಾರ ಸರಿಯಾಗಿ ಪ್ರಸ್ತುತವಾಗದು. ಕೇಳುಗರಿಗೆ ಹಿತದ ಅನುಭವವಿಲ್ಲ. ಪೂರ್ತಿ ಅರ್ಥವಾಗದೆ ಕೊರತೆಯ ಅನುಭವ. 
  10. ಇಂದ್ರಿಯೋದ್ಭವ (ಪಂಚೇಂದ್ರಿಯಗಳಿಂದ ಹುಟ್ಟಿದುದು): ಕಣ್ಣು, ಕಿವಿ, ನಾಲಿಗೆಗಳು ತಾಳ-ಮೇಳದಲ್ಲಿ  ಕೆಲಸ ಮಾಡಬೇಕು. ಹೀಗಾಗದೆ ಏರುಪೇರಾದರೆ ಮಾತಿನಲ್ಲಿ ವ್ಯತ್ಯಾಸ ಉಂಟಾಗುವುದು. ಇನ್ನೊಬ್ಬರು ಹೇಳಿದುದು ಕಿವಿಗೆ ಸರಿಯಾಗಿ ಕೇಳದಿದ್ದರೆ ಅವರು ಕೇಳಿದುದೊಂದು, ಇವರು ಹೇಳಿದುದೊಂದು. ನೋಡಿದುದು ಒಂದು. ಮಾತಾಡುತ್ತಿರುವುದು ಇನ್ನೊಂದರ ಬಗ್ಗೆ. ಹೀಗೆ. 
ಹೀಗೆ ಮಾತಿನಲ್ಲಿ ಹತ್ತು ವಿಧದ ದೋಷಗಳು. ಕೆಲವರಿಗೆ ಒಂದೊಂದೇ ದೋಷ ಕಾಡಬಹುದು. ಮತ್ತೆ ಕೆಲವರಿಗೆ ಒಂದಕ್ಕಿಂತ ಹೆಚ್ಚು ತೊಂದರೆ ಕೊಡಬಹುದು. ಕೆಲವರಿಗಂತೂ ಮಾತೇ ಬಾರದ ಮೂಗತನ. 

*****

ಹಿಂದೊಂದು ಸಂಚಿಕೆಯಲ್ಲಿ, "ಸರಸ್ವತಿದೇವಿಯ ರಂಗಮಂದಿರ" ಅನ್ನುವ ಶೀರ್ಷಿಕೆಯಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲೆ ತಾಯಿ ಶಾರದೆಯ ಕೃಪೆಯಾಗಿ "ಪರಿಮಳ" ಗ್ರಂಥ ಬಂತೆಂದು ಹೇಳಲಾದ ಸಂದರ್ಭ ನೋಡಿದ್ದೆವು. ಇಲ್ಲಿ ಕ್ಲಿಕ್ ಮಾಡಿ ಆ ಸಂಚಿಕೆ ಓದಬಹುದು. 

ಶ್ರೀ ರಾಘವೇಂದ್ರ ಸ್ವಾಮಿಗಳ ಸಾಕ್ಷಾತ್ ಶಿಷ್ಯರಾದ ಶ್ರೀ ಅಪ್ಪಣ್ಣಾಚಾರ್ಯರು ಅವರ ಪ್ರೀತಿಯ ಗುರುಗಳಾದ ರಾಯರ ಬಗ್ಗೆ ರಚಿಸಿರುವ ಒಂದು ಸ್ತೋತ್ರದಲ್ಲಿ ಈ ಹತ್ತು ಮಾತಿನ ದೋಷಗಳ ಬಗ್ಗೆ ಸೂತ್ರ ರೂಪದಲ್ಲಿ ವಿವರಣೆ ಕೊಟ್ಟಿದ್ದಾರೆ. ಅಷ್ಟು ಮಾತ್ರವಲ್ಲ. ಶ್ರೀ ರಾಘವೇಂದ್ರ ರಾಯರ ಕರುಣೆಯಿಂದ ಈ ರೀತಿಯ ಹತ್ತೂ ವಿಧದ ಮಾತಿನ ದೋಷಗಳು ನಿವಾರಣೆ ಆಗುತ್ತವೆ ಎನ್ನುತ್ತಾರೆ. ಆ ಶ್ಲೋಕ ಹೀಗಿದೆ:

ಅಜ್ಞಾನವಿಸ್ಮೃತಿಭ್ರಾಂತಿ ಸಂಶಯಾಪಸ್ಮೃತಿಕ್ಷಯಾ 
ತಂದ್ರಾಕಂಪವಚ: ಕೌ೦ಠ್ಯಮುಖಾಯೇ ಚೇಂದ್ರಿಯೋದ್ಭವಾ:
ದೋಷಾಸ್ತೇ ನಾಶಮಾಯಾಂತಿ ರಾಘವೇಂದ್ರ ಪ್ರಸಾದತಃ 

ಅನೇಕ ನುರಿತ ವೈದ್ಯರಿಂದ ನಿವಾರಣೆ ಸಾಧ್ಯವಾಗದ ಮಾತಿನ ದೋಷಗಳು ಗುರುರಾಯರ ಕರುಣೆಯಿಂದ ಪರಿಹಾರವಾಗಿವೆ ಎಂದು ಹೇಳುತ್ತಾರೆ. ಇದನ್ನು ನಂಬಬೇಕೇ ಅಥವಾ ಬೇಡವೇ ಅನ್ನುವುದು ಅವರವರಿಗೆ ಬಿಟ್ಟ ವಿಚಾರ.  

Friday, July 11, 2025

ಚಿಂತೆ ಎಂಬ ವಿಶಾಲವಾದ ವೃಕ್ಷ

Large Tree Roots Images – Browse 120,707 Stock Photos, Vectors, and Video |  Adobe Stock

ಚ್ಯವನ ಮಹರ್ಷಿಗಳ ಮಗಳಾದ ಸುಮನಾ ಮತ್ತು ಅವಳ ಪತಿ ಸೋಮಶರ್ಮ ನಡುವೆ ನಡೆದ ಸಂವಾದ, ಮತ್ತು ಆ ಸಂದರ್ಭದಲ್ಲಿ ಸುಮನಾ "ಐದು ರೀತಿಯ ಮಕ್ಕಳು" ಮತ್ತು ಅವರ ಲಕ್ಷಣ, ಜನನದ ಕಾರಣಗಳನ್ನು ವಿವರಿಸುದುದನ್ನು ಹಿಂದಿನ ಅದೇ ಹೆಸರಿನ ಸಂಚಿಕೆಯಲ್ಲಿ ನೋಡಿದೆವು. ಹೇಗೆ ಹಿಂದಿನ ಜನ್ಮಗಳಲ್ಲಿ ಸಾಲಕೊಟ್ಟವರು, ಬೇರೆಯವರಿಂದ ಮೋಸ ಹೋಗಿ ಆಸ್ತಿ-ಪಾಸ್ತಿ ಕಳೆದುಕೊಂಡವರು, ಹಿಂದೆ ಪಡೆದ ಉಪಕಾರಗಳನ್ನು ತೀರಿಸುವವರು ಮತ್ತು ಯಾವುದೇ ಕಾರಣವಿಲ್ಲದೆ ಅವರ ಕರ್ಮಗಳ ಪರಿಪಾಕದಿಂದ ಹುಟ್ಟುವ ನಾಲ್ಕು ವಿಧದ ಮಕ್ಕಳ ಲಕ್ಷಣಗಳನ್ನು ನೋಡಿದೆವು. ಅದೇ ರೀತಿ ಸತ್ಕರ್ಮಗಳನ್ನು ಮಾಡಿದ ಪ್ರಯುಕ್ತ ಹುಟ್ಟುವ ಯೋಗ್ಯ ಮಕ್ಕಳನ್ನು ಪಡೆಯುವ ಸಾಧ್ಯತೆ ಬಗ್ಗೆಯೂ ನೋಡಿದ್ದೆವು. (ಈ "ಐದು ರೀತಿಯ ಮಕ್ಕಳು" ಎನ್ನುವ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ). 

ಸೋಮಶರ್ಮನಿಗೆ ಎರಡು ಚಿಂತೆಗಳು ಕಾಡುತ್ತಿದ್ದವು. ಮೊದಲನೆಯದು ದಾರಿದ್ರ್ಯ ಅನುಭವಿಸುತ್ತಿರುವುದು. ಎರಡನೆಯದು ಮಕ್ಕಳಿಲ್ಲ ಎಂಬ ಕೊರಗು. ಮಕ್ಕಳ ಸಂಬಂಧ ಸುಮನಾ ನೀಡಿದ ವಿವರಣೆಯನ್ನು ನೋಡಿದೆವು. ದರಿದ್ರತೆ ಮತ್ತು ಒಟ್ಟಿನಲ್ಲಿ ಚಿಂತೆಯ ಬಗೆಗೂ ಅವಳು ಬಹಳ ಸಮರ್ಥವಾದ ವಿವರಣೆಯನ್ನು ನೀಡಿರುವುದು ಪದ್ಮ ಪುರಾಣದಲ್ಲಿ ಕಂಡುಬರುತ್ತದೆ. ಅದರ ಸ್ವಲ್ಪ ತಿರುಳನ್ನು ಈಗ ನೋಡೋಣ.

***** 

"ಚಿತೆ" ಮತ್ತು "ಚಿಂತೆ" ಇವೆರಡಕ್ಕೂ ಒಂದು ಸೊನ್ನೆ ಮಾತ್ರ ವ್ಯತ್ಯಾಸ ಎನ್ನುವ ಮಾತು ಬಹಳ ಜನಜನಿತವಾದದ್ದು. ಇದು ಎಲ್ಲರಿಗೂ ಗೊತ್ತಿರುವ ಸಂಗತಿಯಾದರೂ ಈ ಚಿಂತೆ ಅನ್ನುವುದು ಯಾರನ್ನೂ ಬಿಡದು. ಜೀವನದಲ್ಲಿ ಕೆಲವು ವಿಷಯಗಳ ಬಗ್ಗೆ ಯೋಚಿಸಬಾರದೆಂದು ಎಷ್ಟು ಪ್ರಯತ್ನ ಪಟ್ಟರೂ ಚಿಂತೆ ಎನ್ನುವುದು ನಮ್ಮ ಬೆನ್ನು ಬಿಡುವುದಿಲ್ಲ. ಏನಾದರೂ ಕೆಲಸ ಕಾರ್ಯಗಳಲ್ಲಿ ತೊಡಗಿರುವಾಗ ಮತ್ತು ಬೇರೆಯವರ ಸಂಗವಿದ್ದಾಗ ಈ ಚಿಂತೆ ಎನ್ನುವ ಭೂತ ಸ್ವಲ್ಪ ಬಾಲ ಮುದುರಿಕೊಂಡು ಕುಳಿತಿರುತ್ತದೆ. ಒಂಟಿಯಾಗಿ ಸುಮ್ಮನೆ ಕೂತಾಗ ಅಥವಾ ರಾತ್ರಿ ನಿದ್ದೆ ಮಾಡಲು ಯತ್ನಿಸಿದಾಗ ಅದು ಹೆಡೆ, ಬಾಲಗಳನ್ನು ಬಿಚ್ಚಿ ವಿಜೃಂಭಿಸುತ್ತದೆ. ಎಂಥ ತಿಳಿದವರಿಗೂ, ಜ್ಞಾನಿಗಳಿಗೂ ಸಹ ಈ ರೀತಿಯ ಚಿಂತೆಗಳು ಬಾಧಿಸದೆ ಬಿಡುವುದಿಲ್ಲ. 

"ನಾಸ್ತಿ ಚಿಂತಾ ಸಮಂ ದುಃಖಂ ಕಾಯ ಶೋಷಣಮೇವಹಿ" ಎಂದು ಚಿಂತೆಯ ವಿಷಯದಲ್ಲಿ ಹೇಳುತ್ತಾರೆ. ಚಿಂತೆಯಂತಹ ದುಃಖ ಬೇರೆ ಇಲ್ಲ. ಅದರಿಂದ ತಿಂದ ಆಹಾರ ಮೈಗೆ ಹತ್ತುವುದಿಲ್ಲ. ಮನಸ್ಸು ಸರಿಯಾಗಿ ಕೆಲಸ ಮಾಡುವುದಿಲ್ಲ. ಇವುಗಳ ಪರಿಣಾಮದಿಂದ ದೇಹವು ದುರ್ಬಲವಾಗುತ್ತದೆ. ಬಡತನವಂತೂ ಮನುಷ್ಯನನ್ನು ಅಸಂತುಷ್ಟನನ್ನಾಗಿ ಮಾಡುತ್ತದೆ. ಅಂತಹ ವ್ಯಕ್ತಿ ಪ್ರಪಂಚದಲ್ಲಿ ಕಾಣುವ ಎಲ್ಲದರಲ್ಲಿಯೂ ತಪ್ಪನ್ನೇ ಹುಡುಕುತ್ತಾನೆ. ಚಿಂತಾಕ್ರಾಂತನಾದವನಿಗೆ ತನ್ನ ಹಿತೈಷಿಗಳು ಹೇಳುವ ಒಳ್ಳೆಯ ಮಾತುಗಳೂ ಕಹಿ ಎನಿಸುತ್ತವೆ. ಬೇರೆಯವರು ಮತ್ತೇನೋ ವಿಷಯ ಮಾತನಾಡಿಕೊಳ್ಳುತ್ತಿದ್ದರೂ ತನ್ನನ್ನೇ ಕುರಿತು ಅಪಹಾಸ್ಯ ಮಾಡುತ್ತಿರುವರು ಎಂದು ಅನುಮಾನಿಸುತ್ತಾನೆ. 

ಚಾಣಕ್ಯ ನೀತಿಯು "ವರಂ ವನಂ ವ್ಯಾಘ್ರ ಗಜೇಂದ್ರ ಸೇವಿತಂ, ನ ಬಂಧು ಮಧ್ಯೇ ಧನ ಹೀನ ಜೀವನಮ್" ಮುಂತಾಗಿ ಹೇಳುತ್ತದೆ. ಹುಲಿ, ಆನೆ ಮೊದಲಾದ ಪ್ರಾಣಿಗಳಿರುವ ಕಾಡಿನಲ್ಲಿದ್ದರೂ ಸರಿಯೇ; ನೆಂಟರಿಷ್ಟರ ಬಳಿಯಲ್ಲಿ ಬಡತನದ ಜೀವನ ಬೇಡಪ್ಪಾ ಬೇಡ" ಎಂದು ಅನ್ನಿಸುತ್ತದೆ.  "ಏನಾದರೂ ಮಾಡಿ ಹಣವನ್ನು ಕೂಡಿಹಾಕಬೇಕು. ಈ  ಬಂಧುಗಳ ನಡುವೆ ನೆಮ್ಮದಿಯಿಂದ ಬಾಳಬೇಕು" ಎಂದು ಮನುಷ್ಯ ಪರಿತಪಿಸುತ್ತಾನೆ. (ಈ ರೀತಿ ನೆಂಟರಿಷ್ಟರ ಮಧ್ಯೆ ಬಡತನದ ಜೀವನ ಮಾಡುವುದು ಪ್ರಾಯಶಃ ಈಗಿನ ತಲೆಮಾರು ಕಾಣದು. ಈಗ ಎಲ್ಲ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಎಷ್ಟೋ ಸುಧಾರಿಸಿದೆ). ಸ್ವಲ್ಪ ಸ್ವಲ್ಪ ಹಣ ಸೇರುತ್ತಿದ್ದಂತೆ ಇನ್ನಷ್ಟು ಬೇಕೆಂಬ ಲೋಭ ಕಾಡಲು ತೊಡಗುತ್ತದೆ. 

*****

ಈ ಲೋಭವೆನ್ನುವುದು ಎಲ್ಲ ಮುಂದಿನ ತೊಂದರೆಗಳಿಗೂ ತಾಯಿಬೇರು. ಸಮಸ್ತ ಅನಿಷ್ಟ ಬೆಳವಣಿಗೆಗಳೂ ಅಲ್ಲಿಂದಲೇ ಪ್ರಾರಂಭ. ಸುಮನಾ ಈ ಮುಂದಿನ ಎಲ್ಲ ಬೆಳವಣಿಗೆಗಳನ್ನೂ ಒಂದು ಸೂತ್ರದ ರೂಪದಲ್ಲಿ  ಹೇಳುತ್ತಾಳೆ:

ಲೋಭ: ಪಾಪಶ್ಚ ಬೀಜಂಹಿ ಮೋಹೋ ಮೂಲ೦ಚ ತಸ್ಯಹಿ 
ಅಸತ್ಯಂ ತಸ್ಯವೈ ಸ್ಕಂಧಃ ಮಾಯಾ ಶಾಖಾ ಸುವಿಸ್ತರಃ 
ದಂಭ ಕೌಟಿಲ್ಯ ಪತ್ರಾಣಿ ಕುಬುಧ್ಯಾ ಪುಷ್ಪಿತಃ ಸದಾ 
ಅನೃತಂ ತಸ್ಯವೈ ಸೌಗಂಧ: ಫಲಾ ಅಜ್ನ್ಯಾನಮೇವ ಚ 

"ಪಾಪ" ಅನ್ನುವ ಹೆಮ್ಮರಕ್ಕೆ ಈ "ಲೋಭ" ಅನ್ನುವುದೇ ಬೀಜರೂಪವು.  ಈ ಲೋಭವು ಮನಸ್ಸು ಎಂಬ ಮಣ್ಣಿನಲ್ಲಿ ಬಿದ್ದ ತಕ್ಷಣ ಬೇರು ಬಿಡಲಾರಂಭಿಸುತ್ತದೆ. ಲೋಭವು ಹೆಚ್ಚಿದಷ್ಟೂ ಬೇರುಗಳು ಆಳ ಮತ್ತು ವಿಶಾಲ ಆಗುತ್ತವೆ. "ಮೋಹ" ಎನ್ನುವುದೇ ಅದರ ಬೇರು. ಈ ಮರಕ್ಕೆ "ಅಸತ್ಯ" ಎನ್ನುವ ಒಂದು ದೊಡ್ಡದಾದ ಕಾಂಡವಿದೆ. "ಕಪಟತನ" (ಮಾಯಾ) ಅನ್ನುವುದು ಈ ಅಸತ್ಯ ಎನ್ನುವ ಭಾರಿ ಕಾಂಡದಿಂದ ಹೊರಡುವ ಅನೇಕ ಕೊಂಬೆಗಳು. "ದಂಭ" ಮತ್ತು "ಕುಟಿಲತೆ" ಅನ್ನುವುವು ಈ ಅಸತ್ಯವೆಂಬ ಕೊಂಬೆಗಳಲ್ಲಿ ಬೆಳೆಯುವ ಅಸಂಖ್ಯಾತ ಎಲೆಗಳು. ಆ ಅನೇಕ ಕೊಂಬೆಗಳ ಮೇಲೆ, ಎಲೆಗಳ ನಡುವೆ, "ಕುಬುದ್ಧಿ" ಎನ್ನುವ ಹೂವು ಸದಾ ಬಿಡುತ್ತದೆ.  ಹೂವುಗಳಲ್ಲಿ ಸಾಮಾನ್ಯವಾಗಿ ಸುವಾಸನೆ ಇದ್ದರೆ ಈ ಕುಬುದ್ಧಿ ಅನ್ನುವ ಹೂವಿನಲ್ಲಿ "ಸುಳ್ಳು ಮಾತುಗಳು" ಎನ್ನುವ ಅನೇಕ ರೀತಿಯ ದುರ್ವಾಸನೆಗಳು ಹರಡಲು ತಯಾರು. ಒಂದು ಮರದಲ್ಲಿ ಇಷ್ಟೆಲ್ಲಾ ಇರುವಾಗ ಕಡೆಗೆ ಅದರಲ್ಲಿ ಹಣ್ಣುಗಳು ಬಲೇಬೇಕಲ್ಲ? ಈ ಪಾಪವೆಂಬ ಮರಕ್ಕೆ "ಅಜ್ಞಾನ" ಎನ್ನುವುದೇ ಹಣ್ಣುಗಳಾಗಿ ತೋರುತ್ತವೆ. ಇಂತಹ ಮರದಲ್ಲಿ ಈ ಅಜ್ಞಾನ ಅನ್ನುವ ಹಣ್ಣಿನ ಆಸೆಯಿಂದ ಕಪಟತನ, ಪಾಖಂಡತನ, ಕ್ರೌರ್ಯ, ಅಸೂಯೆ, ಮುಂತಾದ ಇತರ "ದುರ್ಗುಣ" ರೂಪಗಳ ಹಕ್ಕಿಗಳು ಬಂದು ಸೇರುತ್ತವೆ! 

ಮರಗಿಡಗಳಿಗೆ ಸಾಮಾನ್ಯವಾಗಿ ವರ್ಷದಲ್ಲಿ ಕೆಲವು ತಿಂಗಳುಗಳು ಹೂವು ಮತ್ತು ಹಣ್ಣು ಬಿಡುವ ಕಾಲ. ಆದರೆ ಈ ಪಾಪವೆಂಬ ಮರದಲ್ಲಿ ವರುಷಕ್ಕೆ ಹನ್ನೆರಡು ತಿಂಗಳೂ ಕುಬುದ್ಧಿ ಎನ್ನುವ ಹೂವು ಅರಳುತ್ತದೆ! ಸದಾಕಾಲವೂ ಅಜ್ಞಾನವೆಂಬ ಹಣ್ಣು ತುಂಬಿರುತ್ತದೆ. 

"ಜಂಭ" ಮತ್ತು "ದಂಭ" ಇವುಗಳಿಗೆ ವ್ಯತ್ಯಾಸವಿದೆ. ಇರುವುದನ್ನು ಹೆಚ್ಚಾಗಿ ಹೇಳಿಕೊಳ್ಳುವುದು ಜಂಭ. ಇಲ್ಲದೆ ಇರುವುದನ್ನು ಹೇಳಿಕೊಳ್ಳುವುದು ದಂಭ. ಉದಾಹರಣೆಗೆ: ಒಬ್ಬನ ಜೇಬಿನಲ್ಲಿ ಒಂದು ಸಾವಿರ ರೂಪಾಯಿ ಇದೆ. ಅವನು ಹತ್ತು ಸಾವಿರ ರೂಪಾಯಿ ಇದೆ ಎಂದು ಹೇಳಿದರೆ ಅದು ಜಂಭ ಕೊಚ್ಚಿಕೊಳ್ಳುವುದು. ಇನ್ನೊಬ್ಬನ ಜೇಬಿನಲ್ಲಿ ಒಂದು ರೂಪಾಯಿಯೂ ಇಲ್ಲ. ಅವನು ತನ್ನ ಜೇಬಿನಲ್ಲಿ ಒಂದು ಸಾವಿರ ರೂಪಾಯಿ ಇದೆ ಎಂದು ಹೇಳಿದರೆ ಅದು ದಂಭ. 

"ಕುಟಿಲ" ಅಂದರೆ "ನೆಟ್ಟಗಿಲ್ಲದ್ದು" ಎಂದು ಅರ್ಥ. ಸೊಟ್ಟಗಿದೆ ಎನ್ನಬಹುದು. ಶ್ರೀಕೃಷ್ಣನ ವರ್ಣನೆಯಲ್ಲಿ "ಕುಟಿಲ ಕುಂತಲಂ ಕುವಲಯ ದಳ ನೀಲಂ" ಎನ್ನುತ್ತೇವೆ. ಇಲ್ಲಿ ಕುಟಿಲ ಕುಂತಲಂ ಅಂದರೆ "ಗುಂಗುರು ಕೂದಲು" ಎಂದು ಅರ್ಥ. ಕೆಲವರಿಗೆ, ಅದರಲ್ಲೂ ಮಕ್ಕಳಿಗೆ, ಗುಂಗುರು ಕೂದಲು ಇದ್ದರೆ ಸುಂದರ. ಆದರೆ ನಡೆ-ನುಡಿ ನೇರವಾಗಿರಬೇಕು. ವಕ್ರವಾಗಿರಬಾರದು. ಹೇಳುವುದು, ತೋರಿಸುವುದು ಒಂದು ರೀತಿ. ಆದರೆ ಅದರ ಅರ್ಥ, ಆಚರಣೆ ಇನ್ನೊಂದು ರೀತಿ. ಹೀಗಿದ್ದರೆ ಇದನ್ನೇ "ಕುಟಿಲ ನೀತಿ" ಅನ್ನುವುದು. ಕುಟಿಲ ಸ್ವಭಾವ ಇರುವವರನ್ನು ನಂಬಬಾರದು. ಮಹಾಭಾರತದ ಶಕುನಿ ಇದಕ್ಕೆ ಅತ್ಯುತ್ತಮ ಉದಾಹರಣೆ. 

***** 

ಸುಮನಾ ಹೇಳಿರುವ ಮೇಲಿನ ಪಾಪ ಎಂಬ ಮರದ ವಿವರಗಳು ಬಹಳ ಅರ್ಥವತ್ತಾಗಿದ್ದು ಮೊದಲ ನೋಟದಲ್ಲಿ ಅಷ್ಟು ಸುಲಭವಾಗಿ ಗೊತ್ತಾಗುವುದಿಲ್ಲ. ಆದರೆ ನಿಧಾನವಾಗಿ ಓದಿ, ನಮ್ಮ ನಮ್ಮ ಅನುಭವದ ಹಿನ್ನೆಲಿಯಲ್ಲಿ ಮೆಲಕು ಹಾಕಿದಾಗ ಅದರ ಸತ್ಯವು ನಿಚ್ಚಳವಾಗಿ ಗೋಚರಿಸುತ್ತದೆ. 

"ಪದ್ಮ ಪುರಾಣ" ಸುಮಾರು ಐವತ್ತೈದು ಸಾವಿರ (55,000) ಶ್ಲೋಕಗಳಿರುವ ಒಂದು ಗ್ರಂಥ. ಏಳು (7) ಖಂಡಗಳ ಏಳು ನೂರ ಮೂರು (703) ಅಧ್ಯಾಯಗಳಲ್ಲಿ ಹರಡಿಕೊಂಡಿದೆ. ಶ್ರೀಮದ್ ಭಾಗವತಕ್ಕಿಂತ ಗಾತ್ರದಲ್ಲಿ ಮೂರುಪಟ್ಟು ದೊಡ್ಡದು. ಇಷ್ಟು ವಿಶಾಲ ಗ್ರಂಥದಲ್ಲಿರುವ ವಿಷಯಗಳ ಹರವನ್ನು ನೋಡಿದರೆ ವಿಸ್ಮಯವಾಗುತ್ತದೆ. 

ಭಗವಾನ್ ವೇದವ್ಯಾಸರು ನಮಗೆ ಕೊಟ್ಟಿರುವ ಗ್ರಂಥ ಲೋಕವನ್ನು ನಮ್ಮ ಜೀವನ ಕಾಲದಲ್ಲಿ ಒಮ್ಮೆ ಸರಿಯಾಗಿ ಓದಿ ಮನನ  ಮಾಡುವುದೂ ಒಂದು ದೊಡ್ಡ ಸಾಧನೆಯೇ ಆಗುತ್ತದೆ. ಅವುಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದಂತೂ ಇನ್ನೂ ದೂರದ ಮಾತು. ಆಚರಣೆಯಲ್ಲಿ ತರುವುದು ಒಂದು ತಪಸ್ಸೇ ಸರಿ. ಇಷ್ಟು ಕೃತಿರಚನೆ ಹೇಗಾಯಿತು ಎನ್ನುವುದು ನೋಡಿ ಕೇವಲ ಕೈ ಮುಗಿಯಬಹುದು. ಅಷ್ಟೇ. "ವ್ಯಾಸ ಪೂರ್ಣಿಮಾ" ಸಂದರ್ಭದಲ್ಲಿ ಇಂತಹ ಅನೇಕ ಗ್ರಂಥಗಳ ಕರ್ತೃವಾದ ಭಗವಾನ್ ವೇದ ವ್ಯಾಸರಿಗೆ ನಮ್ಮ ಅತ್ಯಂತ ಕೃತಜ್ಞತಾ ಪೂರ್ವಕವಾದ ಗೌರವಾದರ, ನಮನಗಳು ಸಲ್ಲಬೇಕು.