Friday, June 27, 2025

ದೇವರಲ್ಲಿ ಬೇಡುವುದು ಸರಿಯೇ?


ಹಿಂದಿನ ಸಂಚಿಕೆಗಳಲ್ಲಿ "ಅಷ್ಟ ಭೋಗ", "ಅಷ್ಟ ಭಾಗ್ಯ" ಮತ್ತು "ಅಷ್ಟ ಐಶ್ವರ್ಯ" ಇವುಗಳ ಬಗ್ಗೆ ಸ್ವಲ್ಪಮಟ್ಟಿಗೆ ಚರ್ಚೆ ಮಾಡಿದೆವು. (ಈ ಹಿಂದಿನ ಸಂಚಿಕೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ). ಇವುಗಳು ತಾವಾಗಿಯೇ ಸಿಗುವುದಿಲ್ಲ. ಕೆಲವನ್ನು ಸ್ವಲ್ಪ ಮಟ್ಟಿಗೆ ನಾವೇ ಸ್ವಂತ ಪರಿಶ್ರಮದಿಂದ ಗಳಿಸಬಹುದಾದರೂ ಅವುಗಳ ಪ್ರಮಾಣ ಹೆಚ್ಚಿರುವುದಿಲ್ಲ. ಅಷ್ಟೇ ಅಲ್ಲ, ಮನುಷ್ಯ ಸಹಜ ಬುದ್ಧಿಯ ಕಾರಣವಾಗಿ ಎಷ್ಟು ಸಂಪಾದನೆ ಮಾಡಿದರೂ ತೃಪ್ತಿ ಎನ್ನುವುದು ಬರುವುದಿಲ್ಲ. "ಇಷ್ಟು ದೊರಕಿದರೆ ಇನ್ನಷ್ಟು ಬೇಕೆಂಬಾಸೆ. ಅಷ್ಟು ದೊರಕಿದರೆ ಮತ್ತಷ್ಟು ಬೇಕೆಂಬಾಸೆ. ಕಷ್ಟ ಬೇಡ ಎಂಬಾಸೆ. ಕಡು ಸುಖವ ಕಾಂಬಾಸೆ." ಎಂದು ದಾಸರು ಹೇಳುವಂತೆ ಮನುಷ್ಯನಿಗೆ ಕಷ್ಟ ಬೇಡವೇ ಬೇಡ. ಸುಖ ಬೇಕೇ ಬೇಕು. ಅಷ್ಟೇ ಅಲ್ಲ. ಸುಖ ಇದ್ದಷ್ಟೂ ಇನ್ನೂ ಹೆಚ್ಚು ಬೇಕೆಂಬ ತವಕ. 

ತಾವಾಗಿಯೇ ಸಿಗದ, ನಾವು ಕಷ್ಟ ಪಟ್ಟರೂ ಪೂರ್ಣವಾಗಿ ಎಟುಕದ, ಆದರೆ ಬೇಕೆಂಬ ತುಡಿತವುಳ್ಳ ಈ ವಿಷಯಗಳನ್ನು ಪಡೆಯುವುದು ಹೇಗೆ? ನಮ್ಮ ಅನುಭವ ಹೇಳಿಕೊಟ್ಟಂತೆ ನಮ್ಮಲ್ಲಿ ಇಲ್ಲದಿದ್ದುದನ್ನು ಬೇರೆಯವರಿಂದ ಕೇಳಿ ಪಡೆಯಬಹುದು. ಹಾಗಿದ್ದರೆ ಯಾರನ್ನು ಕೇಳಬೇಕು? ಯಾರಾದರೂ ತಮ್ಮ ಬಳಿ ಇರುವುದನ್ನು ಮಾತ್ರ ಕೊಡಬಲ್ಲರು. ಅವರ ಬಳಿಯೇ ಇಲ್ಲದಿದ್ದುದನ್ನು ಯಾರಾದರೂ ಕೊಡುವುದು ಹೇಗೆ? ಆದಕಾರಣ ನಾವು ನಂಬಿದ ದೇವರನ್ನೋ, ದೇವತೆಯನ್ನೋ ಕೇಳಬಹುದು. ಅದರಲ್ಲಿಯೂ ಯಾರು ಸುಲಭವಾಗಿ ನಮಗೆ ಒಲಿಯುವವರೋ ಅವರನ್ನು ಕೇಳುವುದು. ಅವರಲ್ಲಿ ಕೊಡುವ ಶಕ್ತಿ ಇದ್ದರೂ ಕೇಳಿದರೆ ಕೊಡದವರನ್ನು ಬೇಡಿ ಏನು ಪ್ರಯೋಜನ? 

ಸಾಧನೆಯ ದಾರಿಯಲ್ಲಿ ನಡೆಯುತ್ತಿರುವ ಜಿಜ್ಞಾಸುವಿಗೆ "ಹೀಗೆ ಕೇಳುವುದು ಸರಿಯೇ?" ಎಂಬ ಅನುಮಾನ ಬರುವುದು ಸಹಜ. ವಾಸ್ತವವಾಗಿ ಈ ರೀತಿಯ ಅನುಮಾನ ಬರುವುದೇ ಒಂದು ಒಳ್ಳೆಯ ಸೂಚನೆ. ಎಷ್ಟು ಸಿಕ್ಕಿದರೂ ತೃಪ್ತಿ ಇಲ್ಲದ ಜೀವಕ್ಕೆ ಕೇಳುವುದರ ಎಲ್ಲೆ ಎಲ್ಲಿ? "ಕಿಂಗ್ ಮೈದಾಸ" ಕೇಳಿದಂತೆ ಮುಟ್ಟಿದ್ದೆಲ್ಲವೂ ಚಿನ್ನವಾಗಬೇಕು. ಅದು ನಿಜವಾಗಿ ಮುಟ್ಟಿದ್ದೆಲ್ಲಾ ಚಿನ್ನವಾದಾಗ, ತನ್ನ ಮುದ್ದಿನ ಮಗಳೂ ಒಂದು ಚಿನ್ನದ ಬೊಂಬೆಯಾಗಿ ಕುಳಿತಾಗ, ಅವನ ಕಣ್ಣು ತೆರೆಯಿತು. ಅಂತಹ ಅತಿರೇಕಕ್ಕೆ ಹೋಗದಿದ್ದರೆ ಆ ರೀತಿಯ ಪಾಠ ಕಲಿಯುವುದೂ ಸುಲಭ ಸಾಧ್ಯವಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಒಮ್ಮೆ ಕೇಳುವುದು ಅಭ್ಯಾಸವಾದರೆ ಆ ದುರಭ್ಯಾಸ ನಿಲ್ಲಿಸುವುದು ಕಷ್ಟವೇ. ಇದರಿಂದ ಹೊರಬರುವುದು ಹೇಗೆ?
*****

ಒಬ್ಬ ದೊಡ್ಡ ಧನಿಕ ಇದ್ದಾನೆ. ಅವನ ಬಳಿ ಬೇಕಾದಷ್ಟು ಐಶ್ವರ್ಯ ಇದೆ. ಕೊಡುವ ಶಕ್ತಿಯ ಜೊತೆ ಕೊಡುವ ಮನಸ್ಸೂ ಇದೆ. ಅನೇಕರು ಅವನ ಬಳಿ ಬಂದು, ಬೇಡಿ, ಬೇಕಾದುದನ್ನು ತೆಗೆದುಕೊಂಡು ಹೋಗುತ್ತಾರೆ. ಈ ರೀತಿ ತೆಗೆದುಕೊಂಡು ಹೋಗುವವರ ಸರತಿಯ ಸಾಲೇ ಇದೆ. 

ಒಂದು ದಿನ ಮೊದಲನೆಯವನು ಬಂದ. ಅವನಿಗೆ ಸ್ವಂತ ಖರ್ಚಿಗೆ ಹಣ ಬೇಕು. ಅದನ್ನು ಕೇಳುವುದಕ್ಕಾಗಿ ಬಂದಿದ್ದಾನೆ. ಕೇಳಲು ನಾಚಿಕೆ. ಬಹಳ ಸಂಕೋಚದಿಂದ ತಲೆ ಕೆಳಗೆ ಮಾಡಿ ಬೇಡುತ್ತಾನೆ. ಕೊಡುವ ಧನಿಕನ ಕೈ ಯಾವಾಗಲೂ ಮೇಲೆ. ಕೇಳುವವನಿಗೆ ಅನುಮಾನ. "ಕೊಡುತ್ತಾನೋ ಇಲ್ಲವೋ ಗೊತ್ತಿಲ್ಲ. ಹೇಗೆ ಕೇಳುವುದು? ಯಾವ ರೀತಿ ಕೇಳಿದರೆ ಕೊಡಬಹುದು? ಇಲ್ಲ ಅಂದುಬಿಟ್ಟರೆ ಏನು ಮಾಡುವುದು? ಕೊಟ್ಟರೂ ಏನು ಹೇಳಿ ಕೊಡುತ್ತಾನೋ? ಸಾಲ ಎಂದು ಕೊಡಬಹುದು. ಇಷ್ಟು ಬಡ್ಡಿ ಎಂದು ಹೇಳಬಹುದು. ಈಗ ಇಲ್ಲ, ನಾಳೆ ಬಾ ಎನ್ನಬಹುದು. ಹತ್ತು ಬಾರಿ ಓಡಾಡಿಸಿ ಕೊಡಬಹುದು. ಇನ್ನೊಬ್ಬರ ಮುಂದೆ ಅವಮಾನ ಮಾಡಬಹುದು. ಏನಾದರೂ ಕೇಳಲೇಬೇಕು. ವಿಧಿಯಿಲ್ಲ" ಹೀಗೆಲ್ಲಾ ಮನಸ್ಸಿನಲ್ಲಿ ಗೊಂದಲ. ಕಡೆಗೆ ಧೈರ್ಯ ಮಾಡಿ ಕೇಳಿದ. ಸಾಹುಕಾರ ಕೊಟ್ಟೇಬಿಟ್ಟ. ಅವನ ಕೆಲಸವಾಯಿತು. ಹೊರಟುಹೋದ. 

ಈಗ ಎರಡನೆಯವನು ಬಂದ. ಇವನು ತನಗೋಸ್ಕರ ಹಣ ಕೇಳಲು ಬಂದವನಲ್ಲ. ಇವನು ಯಾವುದೋ ಸಂಸ್ಥೆಯ ಒಬ್ಬ ವಿಶ್ವಸ್ತ ಮಂಡಳಿಯವನು (ಟ್ರಸ್ಟೀ). ಕೇಳುತ್ತಿರುವುದು ತನಗಾಗಿ ಅಲ್ಲ. ಟ್ರಸ್ಟಿಗಾಗಿ. ಪಡೆವ ಹಣದಿಂದ ಸ್ವಂತಕ್ಕೆ ಪ್ರಯೋಜನ ಪಡೆಯುವ ಅಭಿಲಾಷೆ ಇಲ್ಲ. ಹಣ ತೆಗೆದುಕೊಂಡಮೇಲೆ ತನ್ನದು ಅನ್ನುವ ಭಾವನೆ ಇಲ್ಲ. ದುರುಪಯೋಗ ಮಾಡಬೇಕೆಂಬ ಇರಾದೆ ಇಲ್ಲ. ತನಗಾಗಿ ಎಂದು ಕೇಳದುದರಿಂದ ಸಂಕೋಚವೂ ಇಲ್ಲ. ಕೊಡುವವನು ಇದನ್ನು ಸಾಲ ಎಂದು ಕೊಡುವುದಿಲ್ಲ. ಹಣ ಕೇಳಲು ಬಂದಿದ್ದರೂ ಸಾಹುಕಾರ ಗೌರವದಿಂದ ಕಾಣುತ್ತಾನೆ. ಕೂಡಿಸಿ ಮಾತನಾಡಿಸುತ್ತಾನೆ. ಸಾಹುಕಾರ ಕೊಡುತ್ತಾನೆ. ಇವನು ತೆಗೆದುಕೊಂಡು ಹೋಗುತ್ತಾನೆ. ತೆಗೆದುಕೊಂಡುದನ್ನು ಸರಿಯಾಗಿ, ಕೇಳಿದ ಉದ್ದೇಶ ಸಾಧನೆಗೆ ಉಪಯೋಗಿಸುತ್ತಾನೆ. 

ಇಬ್ಬರಾದಮೇಲೆ ಮೂರನೆಯವನು ಬಂದ . ಅವನು ಏನನ್ನೂ ಕೇಳಲು ಬಂದವನಲ್ಲ. ಅವನಿಗೆ ಏನೂ ಬೇಕಾಗಿಲ್ಲ. ಇರುವುದರಲ್ಲೇ ತೃಪ್ತನಾಗಿದ್ದಾನೆ. ಅವನಿಗೆ ಯಾವ ಪದಾರ್ಥವನ್ನೂ ಕೇಳಬೇಕೆಂಬ ಅಭಿಲಾಷೆ ಇಲ್ಲ. ಬದಲಾಗಿ ಅವನೇ ಸಾಹುಕಾರನಿಗೆ ಕೊಡಲು ಹಣ್ಣನ್ನು ತಂದಿದ್ದಾನೆ. ಹಣ್ಣು ಕೊಡುತ್ತಾನೆ. ಅಷ್ಟೇ. ಆದರೆ ಸಾಹುಕಾರ "ನಿನಗೆ ಏನು ಬೇಕು? ಕೇಳು. ಸಂತೋಷದಿಂದ ಕೊಡುತ್ತೇನೆ" ಅನ್ನುತ್ತಾನೆ. "ನನಗೆ ಏನೂ ಬೇಡ. ನಿನ್ನನ್ನು ಕಾಣಲು ಬಂದೆ. ನೋಡಿದ್ದಾಯಿತು. ಅಷ್ಟು ಸಾಕು" ಅನ್ನುತ್ತಾನೆ ಬಂದವನು. ಸಾಹುಕಾರ ಬಲವಂತ ಮಾಡಿ ಏನನ್ನೋ ಕೊಡುತ್ತಾನೆ.  ಬಂದವನು ಅದನ್ನು ತೆಗೆದುಕೊಂಡು ಹೋಗುತ್ತಾನೆ. ಕೊಡು ಎಂದು ಕೇಳಲಿಲ್ಲ. ಕೊಡದಿದ್ದರೆ ದುಃಖವಿಲ್ಲ. ಸಾಹುಕಾರ ತಾನಾಗಿಯೇ ಕೊಟ್ಟಿದ್ದನ್ನು ತೆಗೆದುಕೊಂಡಾಗ ಸಂತೋಷವಿಲ್ಲ. ಸಂತೋಷವಿಲ್ಲ ಎಂದರೆ ವಿಷಾದವೂ ಇಲ್ಲ. ಒಂದು ರೀತಿಯ ನಿರ್ಲಿಪ್ತ ಭಾವನೆ. "ನೀನು ಕೊಟ್ಟೆ. ಅದನ್ನು ಗೌರವಪೂರ್ವಕ ಸ್ವೀಕರಿಸುತ್ತೇನೆ. ಅದರ ಮೌಲ್ಯ ನೋಡಿ ಅಲ್ಲ. ಕೊಟ್ಟವನಾದ ನಿನ್ನ ದೊಡ್ಡತನ ನೋಡಿ ತೆಗೆದುಕೊಂಡೆ" ಎನ್ನುವ ಭಾವ. 
*****

ಭಗವಂತನೆಂಬ ದೊಡ್ಡ ಸಾಹುಕಾರ. ಬಂದವರು ಮೂರು ರೀತಿಯ ಭಕ್ತರು. ಮೊದಲನೆಯವನು ತನಗೆ ಬೇಕು ಎಂದು ಕೇಳುವ "ಸಕಾಮಿ ಭಕ್ತ". ಕೇಳಿ ಪಡೆದದ್ದರಿಂದ ಸುಖ ಪಡುವ ಅಭಿಲಾಷೆ. ಸಾಹುಕಾರನ ಬಳಿ ಹೋಗುವಾಗಲೇ ಏನು ಬೇಕು ಎಂದು ತೀರ್ಮಾನ ಮಾಡಿ ಅದನ್ನು ಕೇಳಿದವ. ಕೇಳಿದ ಉದ್ದೇಶದಲ್ಲಿ ಅನುಮಾನವಿಲ್ಲ. ಅದು ಸ್ವಾರ್ಥಕ್ಕೇ. ಆದರೂ ಭಗವಂತ ಕೊಟ್ಟ. ಭಕ್ತನಿಗೆ ಸಂತೋಷ. ಮತ್ತೆ ಇನ್ನೊಂದು ದಿನ ಮತ್ತೊಂದು ಬೇಕಾದಾಗ ಹೀಗೆ ಅವನ ಬಳಿ ಹೋಗುತ್ತಾನೆ. ಎಂದೋ ಒಂದು ದಿನ ಮುಂದಿನ ಹಂತಕ್ಕೆ ತೇರ್ಗಡೆ ಆಗಬಹುದು. ಪರಮಾತ್ಮ ಕರುಣಾಳು. ಅವನನ್ನು ತಳ್ಳಿ ಓಡಿಸುವುದಿಲ್ಲ. ಹೆಚ್ಚಿನ ಭಕ್ತರು, ಅವರ ಅನುಷ್ಠಾನಗಳು ಈ ರೀತಿಯವೇ. 

ಎರಡನೆಯವನೂ ಬೇಡಲೆಂದೇ ಬಂದವನು. ಆದರೆ ಪಡೆದುದರಿಂದ ಸುಖ ಪಡುವ ಅಭಿಲಾಷೆ ಇಲ್ಲ. ಆ ಪರಿಕರಗಳಿಂದ ಮತ್ತಷ್ಟು ಸಾಧನೆ ಮಾಡಲು ಅನುಕೂಲ ಎಂದು ಬೇಡುತ್ತಿದ್ದಾನೆ. ಇವನಿಗೆ ಕೊಡುವುದರಿಂದ ಸರಿದಾರಿಯಲ್ಲಿ ಮುಂದುವರೆಯುತ್ತಾನೆ ಎನ್ನುವುದು ಅವನಿಗೂ ಗೊತ್ತು. (ಅವನಿಗೆ ಎಲ್ಲವೂ ಗೊತ್ತು). ಮೊದಲಿನವನಂತೆ ಇವನೂ ಬೇಡುವವನೇ ಆದರೂ ಇವನಿಗೆ ಗೌರವವೂ ಸಿಗುತ್ತದೆ. ಕೇಳಿದ್ದೂ ಸಿಗುತ್ತದೆ. ಈ ರೀತಿ ಭಕ್ತರು ಮೊದಲಿನವರಿಗಿಂತ ಸಂಖ್ಯೆಯಲ್ಲಿ ಕಡಿಮೆ. 

ಮೂರನೆಯವರದು ಬೇರೆಯೇ ರೀತಿ. ಅವರಿಗೆ ಭಗವಂತನ ಪ್ರೀತಿ ಬಿಟ್ಟು ಬೇರೆ ಏನೂ ಬೇಕಾಗಿಲ್ಲ. ಮಾಡಿದ ಪ್ರತಿ ಕೆಲಸವೂ ಅವನ ಪ್ರೀತಿಗಾಗಿ. ಸಂಕಲ್ಪ ಮಾಡುವಾಗ "ಅಸ್ಮಾಕಂ ಸಹಕುಟುಂಬಾನಾಂ" ಇಲ್ಲ. "ಲೋಕ ಕಲ್ಯಾಣಾರ್ಥಂ" ಮಾತ್ರವೇ ಉಂಟು. "ಪರಮೇಶ್ವರ ಪ್ರೇರಣಯಾ, ಪರಮೇಶ್ವರ ಪ್ರೀತ್ಯರ್ಥಂ" ಎನ್ನುವುದೇ ಧ್ಯೇಯ. "ಕರ್ಮ ಫಲ" ಎಂಬ ಹಣ್ಣನ್ನೂ ಭಗವಂತನಿಗೇ ಕೊಡುತ್ತಾರೆ. ಅದರ ಮೇಲೂ ಪ್ರೀತಿಯಾಗಲೀ, ಅಧಿಕಾರವಾಗಲೀ ಇಲ್ಲವೇ ಇಲ್ಲ. ಪರಮಾತ್ಮನೇ ತಾನಾಗಿ ಕೊಟ್ಟದ್ದನ್ನು "ಪ್ರಸಾದ" ಎಂದು ಸ್ವೀಕರಿಸುತ್ತಾರೆ. ತಿರಸ್ಕರಿಸುವ ಅಹಂಕಾರವಿಲ್ಲ. ಸಿಕ್ಕಿತು ಎಂಬ ಬೀಗುವಿಕೆಯಂತೂ ಮೊದಲೇ ಇಲ್ಲ. 

*****

ಸ್ವಾತಂತ್ರ್ಯಾನಂತರದ ಎರಡು-ಮೂರು ದಶಕಗಳಲ್ಲಿ ಹುಟ್ಟಿದ ತಲೆಮಾರಿನ ಜನರಿಗೆ ಮೂರು ರೀತಿಯಲ್ಲಿ ತೊಂದರೆಗಳು. ಹೆಚ್ಚಿನವರು ನಮ್ಮ ಅನುಷ್ಠಾನಗಳನ್ನು ಕ್ರಮವಾಗಿ ಕಲಿತವರಲ್ಲ. ಅಪ್ಪ, ಅಜ್ಜಂದಿರು ಮಾಡುತ್ತಿದ್ದರು. ಆದ್ದರಿಂದ ನಾವೂ ಮಾಡುತ್ತೇವೆ. (ನಮ್ಮ ಹಿಂದಿನ ತಲೆಮಾರಿನ ಜನ ಸಾಮಾನ್ಯವಾಗಿ ಇವನ್ನು ಕ್ರಮವಾಗಿ ಕಲಿತಿದ್ದರು. ಮುಂದಿನ ತಲೆಮಾರಿನವರು ಹೆಚ್ಚು-ಕಡಿಮೆ ಬಿಟ್ಟೀ ಬಿಟ್ಟರು.) ಮಂತ್ರ-ಸ್ತೋತ್ರಗಳ ಸರಿಯಾದ ಅರ್ಥಗಳು ತಿಳಿದಿಲ್ಲ. ಆದ್ದರಿಂದ ಹಿಂದಿನವರಂತೆ ಮಾಡುತ್ತಾ ಹೋಗುವುದು. ಇದು ಮೊದಲನೆಯ ತೊಂದರೆ. ಕ್ರಮೇಣ ವ್ಯವಹಾರ ಜ್ಞಾನದ ಜೊತೆಗೆ ಅನುಭವದ ಜ್ಞಾನ ಸೇರಿದಾಗ "ಇದೇನು ಹೀಗಿದೆ? ಕೆಲವು ಸರಿ ಕಾಣುವುದಿಲ್ಲ?" ಎನ್ನುವ ಅನುಮಾನ ಬರುತ್ತದೆ.

ಎರಡನೆಯ ಸಿಕ್ಕು  ಅಂದರೆ ನಮ್ಮಲ್ಲಿ ಪ್ರತಿಯೊಬ್ಬರಿಗೂ ನಾವು ಹುಟ್ಟಿದ ಮನೆಯ ಆಚರಣೆಯೇ ಸರ್ವಶ್ರೇಷ್ಠ.. ಹೀಗೆಂದು ಪ್ರತಿ ಮತವೂ, ಪಂಗಡವೂ ಹೇಳುತ್ತವೆ. ಬೇರೆಯದರಲ್ಲೂ ಸ್ವಲ್ಪ ಒಳ್ಳೆಯದಿರಬಹುದು ಎಂದು ಒಪ್ಪುವ ಉದಾರ ಮನೋಭಾವ ಕಡಿಮೆ. ಜೊತೆಗೆ ಯಾವುದಾದರೂ ಸರಿ ಇಲ್ಲ ಅಂದರೆ ಅದನ್ನು ಬಿಟ್ಟುಬಿಡುವ ದಾರ್ಢ್ಯ ಇರುವುದಿಲ್ಲ. ಏಕೆಂದರೆ ಅದು ಸರಿಯಾಗಿಲ್ಲ ಎಂದು ಖಚಿತವಾದ ಅಭಿಪ್ರಾಯಕ್ಕೆ ಬರುವ ತಳಹದಿ ಭದ್ರವಿಲ್ಲ. 

ಮೂರನೆಯ ಸಮಸ್ಯೆ ಅಂದರೆ ನಾವು ತತ್ವಕ್ಕೂ ಮತ-ಪಂಗಡಗಳಿಗೂ ಇರುವ ವ್ಯತ್ಯಾಸವನ್ನು ಮಸಕು-ಮಸಕಾಗಿ ಕಾಣುತ್ತೇವೆ. ನಮ್ಮ ವೈದಿಕ ವಾಂಗ್ಮಯದಲ್ಲಿ, ವಿಶೇಷವಾಗಿ ಉಪನಿಷತ್ತುಗಳಲ್ಲಿ, ಹೇಳುವಂತೆ "ಎಲ್ಲವನ್ನೂ ತಿಳಿ; ನಿನಗೆ ಸರಿ ಅನ್ನಿಸಿದ್ದನ್ನು ಮಾಡು" ಎನ್ನುವುದರಲ್ಲಿ ನಮಗೆ ಹೆಚ್ಚಿನ ಪರಿಶ್ರಮವಿಲ್ಲ. ಆದ್ದರಿಂದ ಮೊದಲಿನಿಂದ ಮಾಡಿಕೊಂಡು ಬಂದ ಯಾವುದನ್ನೂ ಅದು ಈಗ ನಮಗೆ ಸರಿಕಾಣುತ್ತಿಲ್ಲ ಎಂದು ಬಿಡುವುದಿಲ್ಲ. ಇದಕ್ಕೆ ಪೂರಕವಾಗಿ ನಮ್ಮ ಅನುಮಾನಗಳಿಗೆ ಮುಕ್ತ ಮನಸ್ಸಿನಿಂದ ಸಮಾಧಾನ ಹೇಳುವ ಹಿರಿಯರೂ ತಿಳಿದವರೂ ಸಿಗುವುದು ಬಹಳ ಅಪರೂಪ. 

*****

ನಮ್ಮ ಅನೇಕ ಮಂತ್ರ-ಸ್ತೋತ್ರಗಳಲ್ಲಿ ದೇವರಲ್ಲಿ ಅನೇಕ ವಸ್ತುಗಳನ್ನು ಬೇಡುವ ಪ್ರಕರಣಗಳಿವೆ. ಕೆಲವುಗಳಲ್ಲಿ ಬೇಡಿದ್ದನ್ನೇ ಮತ್ತೆ ಮತ್ತೆ ಕೇಳುವ ಅಂಶಗಳಿವೆ. ನಮ್ಮ ಅರಿವು ಆಳವಾದಂತೆ ಈ ರೀತಿ ಬೇಡುವುದು, ಮತ್ತೆ ಮತ್ತೆ ಅದನ್ನೇ ಕೇಳುವುದು, ಅನವಶ್ಯಕವಾದ ಪದಾರ್ಥಗಳ ಕೋರಿಕೆ, ಮುಂತಾದುವುಗಳ ಸಮಸ್ಯೆ ಕಾಡುತ್ತವೆ. ಇದಕ್ಕೆ ಪರಿಹಾರವೇನು?

ಅಂತಹವುಗಳ ಆಚರಣೆ ಬಿಡುವುದು ಒಂದು ಪರಿಹಾರ. ಆದರೆ ಅನೇಕ ಇಂತಹ ಸಂದರ್ಭಗಳಲ್ಲಿ ಅವುಗಳಲ್ಲಿ ನಮಗೆ ಹಿಡಿಸುವ, ಹಿತವಾದ ಅನೇಕ ವಿಷಯಗಳೂ ಸೇರಿರುತ್ತವೆ. ಕೆಲವಂತೂ ಮನಸ್ಸಿಗೆ ಹೆಚ್ಚಿನ ಮುದವನ್ನೂ, ಶಾಂತಿಯನ್ನೂ ಕೊಡುತ್ತವೆ. ಅನೇಕ ಕಡೆ ನಿಜವಾದ ಭಕ್ತಿ ಹೊರಹೊಮ್ಮುವ ಅವಕಾಶಗಳಿವೆ. ಹೀಗಾಗಿ ಅವನ್ನು ಬಿಡುವುದೂ ಪೂರ್ತಿಯಾಗಿ ಸರಿ ಕಾಣುವುದಿಲ್ಲ. 

ಮೇಲೆ ಚರ್ಚಿಸಿದ ಮೂವರು ಭಕ್ತರ ಗುಂಪುಗಳಲ್ಲಿ ಮೂರನೆಯ ಗುಂಪಿಗೆ ಹೋಗಲು ನಾವು ಬಹಳ ಬಹಳ ದೂರ ಹೋಗಬೇಕಾಗಿದೆ. ಇಂತಹ ಪ್ರಶ್ನೆಗಳು ಮನಸ್ಸಿನಲ್ಲಿ ಹುಟ್ಟಿವೆ ಅಂದರೆ ಮೊದಲನೆಯ ರೀತಿಯಲ್ಲಿ ಇರುವುದನ್ನು ದಾಟಿದ್ದೇವೆ ಅನ್ನಬಹುದು. ಆದ್ದರಿಂದ ಇಂತಹ ಬೇಡುವ ಸಂದರ್ಭಗಳಲ್ಲಿ ಮನಸ್ಸನ್ನು ಹದ ಮಾಡಿಕೊಂಡು ಕೇಳುವಾಗ "ಇದು ನಮ್ಮ ಭೋಗಕ್ಕಲ್ಲ. ಹೆಚ್ಚಿನ ಸಾಧನೆಗಾಗಿ ಬೇಡುತ್ತೇವೆ. ದುರುಪಯೋಗ ಮಾಡುವುದಿಲ್ಲ" ಅನ್ನುವ ಅನುಸಂಧಾನ ಇದ್ದು ಎರಡನೇ ವರ್ಗಕ್ಕೆ ಸೇರುವ ಪ್ರಯತ್ನ ಮಾಡಬಹುದು. 
***** 

ಮೂರನೆಯ ಗುಂಪಿನ ಭಕ್ತರ ಗುಣ-ಸ್ವರೂಪಗಳು ಮತ್ತು ಎರಡು-ಮೂರು ಉದಾಹರಣೆಗಳನ್ನು ಮುಂದಿನ ಸಂಚಿಕೆಯಲ್ಲಿ ಚರ್ಚಿಸುವ ಪ್ರಯತ್ನ ಮಾಡೋಣ. 

1 comment:

  1. Interested in reading continued messages reg requirement and Bhagawan fulfilling and when

    ReplyDelete