Showing posts with label A G Ramachandra Rao. Show all posts
Showing posts with label A G Ramachandra Rao. Show all posts

Monday, June 15, 2026

ನಾಳೆಯೂ ಕಾರ್ಯಕ್ರಮ ಇರುತ್ತದೆ!


ಬದಲಾಗುತ್ತಿರುವ ರಾಜಕೀಯ ಸನ್ನಿವೇಶಗಳು, ತೀವ್ರ ಅಧಿಕಾರದಾಹ ಹುಟ್ಟಿಸುತ್ತಿರುವ ಕದನಗಳು, ಬಿಗಿತಪ್ಪುತ್ತಿರುವ ಆಡಳಿತ, ಮತ್ತು ಇಂತಹ ಸಂದರ್ಭದಲ್ಲಿ ಗೊತ್ತು-ಗುರಿ ಇಲ್ಲದೆ ಓಡುತ್ತಿರುವ ಸಮಾಜದ ಬಗ್ಗೆ ಕೆಲವು ವಿಷಯಗಳನ್ನು ಹಿಂದಿನ ಸಂಚಿಕೆಯಲ್ಲಿ ನೋಡಿದೆವು. ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ನಮ್ಮ ಸುತ್ತಮುತ್ತಲೇ ಇದ್ದು ಹೆಣಗಾಡಿದ ಕೆಲವರು ಸ್ವಾತಂತ್ರ್ಯ ಸೇನಾನಿಗಳ ಬಗೆಗೂ ತಿಳಿದಂತಾಯಿತು. "ಸಂಸ್ಕೃತಿ ಪ್ರಸಾರ" ಎಂಬ ಶೀರ್ಷಿಕೆಯ ಈ ಹಿಂದಿನ ಸಂಚಿಕೆಯನ್ನು ಇಲ್ಲಿ ಕ್ಲಿಕ್ ಮಾಡಿ ಓದಬಹುದು.

ಕರ್ನಾಟಕ ಏಕೀಕರಣ ಆಗುವ ಮುನ್ನಿನ, ಆಗಿನ ಮೈಸೂರು ರಾಜ್ಯದ ಮೊದಲ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗಳಾದ ಶ್ರೀ ಕೆಂಗಲ್ ಹನುಮಂತಯ್ಯನವರ ಆಸೆಯ ಕೂಸಾಗಿ "ಸಂಸ್ಕೃತಿ ಪ್ರಸಾರ" ಸರಣಿಯ ಅಡಿಯಲ್ಲಿ ಅನೇಕ ಕಾರ್ಯಕ್ರಮಗಳು ರಾಜ್ಯಾದ್ಯಂತ ನಡೆದವು. ಇದರ ಜೊತೆಜೊತೆಯಾಗಿ ಕೇಂದ್ರ ಸರ್ಕಾರದ "ವಾರ್ತಾ ಮತ್ತು ಪ್ರಸಾರ ಇಲಾಖೆ" ಸಹ ತನ್ನ "Song and Drama" ವಿಭಾಗದ ವತಿಯಿಂದ ಅನೇಕ ಕಡೆ "ರಸಸಂಜೆ" ಕಾರ್ಯಕ್ರಮಗಳನ್ನು ನಡೆಸುತ್ತಿತ್ತು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ್ಯ "ಕುಟುಂಬ ಯೋಜನೆ" ಮತ್ತು ಅದರಲ್ಲಿಯೂ ಮುಖ್ಯವಾಗಿ "ಮಿತ ಸಂತಾನ" ಕಾರ್ಯಕ್ರಮದ ಪ್ರಚಾರವೇ ಆಗಿದ್ದಿತು. 

ಅನೇಕ ಕಲಾವಿದರು ಈ ಎರಡೂ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇಂತಹ ಸಂಜೆ ನಡೆಯುವ ಕೂಟಗಳಲ್ಲಿ ಬಂದ ಜನತೆಗೆ ಮನರಂಜನೆ ಮತ್ತು ಕೆಲವು ರೀತಿಯ ಜ್ಞಾನಪ್ರಸಾರ ಸಹ ಮಾಡಿದರು. ಶ್ರೀಯುತ ಪಿ. ಕಾಳಿಂಗ ರಾಯರು ನಡೆಸಿಕೊಡುವ ಕಾರ್ಯಕ್ರಮಗಳು ಬಹಳ ಜನಪ್ರಿಯವಾದವು. ಅವರು "ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು" ಗೀತೆಯಿಂದ ಪ್ರಾರಂಭಿಸಿ ಕೊನೆಯಲ್ಲಿ "ಬಾನಿಗೊಬ್ಬ ರವಿಯಿರಬೇಕು, ಬಾಳಿಗೊಬ್ಬ ಮಗನಿರಬೇಕು, ತಂಪುಕೊಡುವ ಚಂದ್ರಿಕೆಯಂಥ ಚೆಲುವೆಯಾದ ಮಗಳಿರಬೇಕು" ಎಂದು ಮಿತ ಸಂತಾನದ ಪರವಾದ ಗೀತೆಯಿಂದ ಮುಗಿಸುತ್ತಿದ್ದರು. 

ಶ್ರೀ ಹನುಮಂತಯ್ಯನವರ ಸರ್ಕಾರ ಇದ್ದಾಗ ಸ್ವಾತಂತ್ರ್ಯ ಬಂದ ಹೊಸದು. ಮೊದಲನೇ ಪಂಚವಾರ್ಷಿಕ ಯೋಜನೆಯ ಮೂಲ ಗುರಿ ಕೃಷಿಗೆ ಉತ್ತೇಜನ ಕೊಡುವುದೇ ಆಗಿತ್ತು. ಆಗ ಅನೇಕ ಹಳ್ಳಿಗಳಲ್ಲಿ ಶಾಲೆಗಳಿರಲಿಲ್ಲ. ಒಟ್ಟಾರೆ ಜನಸಂಖ್ಯೆಯಲ್ಲಿ ಅನಕ್ಷರಸ್ಥರ ಸಂಖ್ಯೆ ಬಲು ದೊಡ್ಡದಿತ್ತು. ಅನೇಕ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಇರಲಿಲ್ಲ. ರಸ್ತೆಗಳೂ ಬಸ್ ಪ್ರಯಾಣದ ವ್ಯವಸ್ಥೆಯೂ ಇರಲಿಲ್ಲ. ನೀರಾವರಿ ಅನುಕೂಲಗಳು ಈಗಿನಂತೆ ಇರದೇ ಬಹುಪಾಲು ರೈತರು ಮಳೆಯನ್ನೇ ಅವಲಂಬಿಸಿಕೊಂಡು ಬೆಳೆ ತೆಗೆಯುವುದರಲ್ಲಿ ನಿರತರಾಗಿದ್ದರು. 

ಸಂಸ್ಕೃತಿ ಪ್ರಸಾರ ಕಾರ್ಯಕ್ರಮವನ್ನು ಮತ್ತು ಅದರ ಅನುಷ್ಠಾನವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಈ ಹಿನ್ನೆಲೆ ಮತ್ತು ಹಿಂದಿನ ಸಂಚಿಕೆ ವಿವರಗಳು ತಿಳಿದಿರುವುದು ಅವಶ್ಯಕ. 

*****

1952ರಲ್ಲಿ ಚುನಾಯಿತ ಸರ್ಕಾರ ಅಧಿಕಾರ ವಹಿಸಿಕೊಂಡು ಹೊಸ ಕಾರ್ಯಕ್ರಮಗಳ ರೂಪು-ರೇಷೆ ಸಿದ್ಧಪಡಿಸಿ, ಹಣ-ಕಾಸಿನ ವ್ಯವಸ್ಥೆ ಮಾಡಿ ಸಂಬಂಧಿಸಿದ ಚಟುವಟಿಕೆಗಳು ಪೂರ್ಣವಾಗಿ ರೂಪುಗೊಳ್ಳಲು ಸುಮಾರು ಎರಡು ವರುಷಗಳು ಹಿಡಿದವು. ನಂತರ ವ್ಯವಸ್ಥಿತವಾಗಿ ಕಾರ್ಯಕ್ರಮಗಳು ನಡೆಯಲಾರಂಭಿಸಿದವು. ಅನೇಕ ವಿದ್ವಾಂಸರು, ಗಮಕಿಗಳು, ಕಲಾವಿದರು ಭಾಗವಹಿಸಲಾರಂಭಿಸಿದರು. 

ಒಂದು ಸರ್ಕಾರಿ ಕಾರ್ಯಕ್ರಮದ ಉದ್ಘಾಟನೆಯ ನಂತರ ಚಹಾಕೂಟ ನಡೆಯುತ್ತಿತ್ತು. ಕಾರ್ಯಕ್ರಮಕ್ಕೆ ಸಂಬಂಧಿಸಿದ  ಮಂತ್ರಿಗಳಾದ ಶ್ರೀ ಎ. ಜಿ. ರಾಮಚಂದ್ರ ರಾವ್ ಅಂದು ಬಂದಿದ್ದ ಪತ್ರಕರ್ತರ ಜೊತೆಯಲ್ಲಿ ಮಾತನಾಡುತ್ತಿದ್ದರು. ಪತ್ರಿಕಾ ಪ್ರತಿನಿಧಿಯಾಗಿ ಅಲ್ಲಿ ಬಂದಿದ್ದ ಶ್ರೀ ಸಿ. ಕೆ. ನಾಗರಾಜ ರಾವ್ ಅವರ ಕಣ್ಣಿಗೆ ಬಿದ್ದರು. ರಾಮಚಂದ್ರರಾಯರು ಅವರನ್ನು ಕರೆದು ಕುಶಲೋಪರಿ ವಿಚಾರಿಸಿದರು. 

"ಸರ್ಕಾರ "ಸಂಸ್ಕೃತಿ ಪ್ರಸಾರ" ಕಾರ್ಯಕ್ರಮ ನಡೆಸುತ್ತಿರುವುದು ನಿಮ್ಮ ಗಮನಕ್ಕೆ ಬಂದಿದೆಯಲ್ಲವೇ?"
"ಬಂದಿದೆ. ನಮ್ಮ ಪತ್ರಿಕೆಯಲ್ಲಿ ವರದಿಗಳನ್ನೂ ಮಾಡುತ್ತಿದ್ದೇವಲ್ಲ"
"ಅನೇಕರು ಕ್ರಮವಾಗಿ ಅರ್ಜಿ ಹಾಕಿಕೊಂಡು, ಅನುಮೋದನೆ ಪಡೆದು ಕಾರ್ಯಕ್ರಮ ನಡೆಸುತ್ತಿದ್ದಾರೆ"
"ಹೌದು. ಗೊತ್ತು"
"ನೀವು ಅನೇಕ ವಿಷಯಗಳ ಬಗ್ಗೆ ಉಪನ್ಯಾಸ ಮಾಡಬಲ್ಲಿರಿ. ಹಳಗನ್ನಡ ಸಾಹಿತ್ಯದ ಬಗ್ಗೆ ಅಧಿಕಾರಯುತವಾಗಿ ಮಾತನಾಡುತ್ತೀರಿ. ಬಿ. ಎಂ. ಶ್ರೀ ಅವರ "ಗದಾಯುದ್ಧ" ನಾಟಕ ಆಡುವಂತಹ "ಯುನೈಟೆಡ್ ಆರ್ಟಿಸ್ಟ್ಸ್" ತಂಡ ಕಟ್ಟಿದ್ದೀರಿ. ಸಾಹಿತಿ ಎಂದು ಸಮಾಜ ನಿಮ್ಮನ್ನು ಗುರುತಿಸಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಆಗಿದ್ದೀರಿ. ಹೀಗಿದ್ದೂ ನೀವೇಕೆ ಈ ಕಡೆ ಆಸಕ್ತಿ ತೋರಿಸಿಲ್ಲ?"
"ಪ್ರಯಾಣ ಮಾಡಿ ಕಾರ್ಯಕ್ರಮ ಕೊಡುವಷ್ಟು ಬಿಡುವಿಲ್ಲ. ಮತ್ತೆ ಸರ್ಕಾರಕ್ಕೆ ಅರ್ಜಿ ಹಾಕಿ ಓಡಾಡುವಷ್ಟು ವ್ಯವಧಾನವೂ ಇಲ್ಲ"

"ನಿಮ್ಮ ಶ್ರೀಮತಿ ರಾಜಾಮಣಿಯವರು ಭಾರತದ ಬಿಂದೂರಾಯರ ಗಮಕ ಶಾಲೆಯಲ್ಲಿ ಪ್ರಥಮ ಶಿಷ್ಯೆಯರ ಗುಂಪಿಗೆ ಸೇರಿದವರು. ಮಕ್ಕಳಿಗೆ ಸಂಗೀತ ಹೇಳಿಕೊಡುವವರು. ವೀಣಾ ರಾಜರಾಯರಲ್ಲಿ ಹೆಚ್ಚಿನ ವೀಣಾವಾದನ ಕಲಿತವರು.  ಅವರಿಂದ ಗಮಕ ವಾಚನವಾದರೂ ಮಾಡಿಸಬಹುದಲ್ಲ?"
"ಮನೆಯಲ್ಲಿ ಹಿರಿಯರ ಯೋಗಕ್ಷೇಮ ನೋಡಬೇಕು. ನನ್ನ ಕಾರ್ಯಬಾಹುಳ್ಯದಿಂದ ಮನೆಗೆ ಬಂದು-ಹೋಗುವವರು ಹೆಚ್ಚು. ಮೂರು ಸಣ್ಣ ಮಕ್ಕಳು. ಬಿಡುವೆಲ್ಲಿ?"

"ನೀವು ಹೇಳುವುದೆಲ್ಲಾ ಸರಿ ಎಂದು ಒಪ್ಪುತ್ತೇನೆ. ಆದರೆ ರಾಜಧಾನಿಯಿಂದ ದೂರದಲ್ಲಿ, ಸಣ್ಣ ಸಣ್ಣ ಊರಿನಲ್ಲಿರುವ ಜನರಿಗೆ ಒಳ್ಳೆಯ ವಿದ್ವಾಂಸರ ಕಾರ್ಯಕ್ರಮದ ಅವಕಾಶ ಆಗಬೇಡವೇ? ಅದಿಲ್ಲದೆ ಇಂತಹ ಕಾರ್ಯಕ್ರಮಗಳು ಸಿದ್ಧಿಸುವುದಾದರೂ ಹೇಗೆ?"
"ನಿಮ್ಮ ಮಾತಿನ ಒಟ್ಟು ಅರ್ಥವನ್ನು ಒಪ್ಪುತ್ತೇನೆ. ಆದರೆ ನಮಗೆ ಕಷ್ಟ"
"ಹಾಗೆಂದು ಬಿಡುವುವಂತಿಲ್ಲ. ಆಗಾಗ ಬಿಡುವು ಮಾಡಿಕೊಳ್ಳಿ. ಎಲ್ಲರೂ ಅರ್ಜಿ ಹಾಕಿ ಕಾಯಬೇಕಿಲ್ಲ. ಕೆಲವರನ್ನು ನಾವೇ ನೇರವಾಗಿ ಆಹ್ವಾನಿಸಬಹುದು. ನಿಮಗೆ ಹೀಗೆ ಆಹ್ವಾನ ಬರುತ್ತದೆ. ಕೆಲವು ಕಾರ್ಯಕ್ರಮ ಮಾಡಿಕೊಡಿ. ಅದರ ಅನುಭವದಲ್ಲಿ ನಿಮಗೇ ಇನ್ನಷ್ಟು ಉತ್ಸಾಹ ಬರಬಹುದು!"

ರಾಮಚಂದ್ರರಾಯರ ಮಾತಿನ ಧಾಟಿಯಲ್ಲಿ ಮರುಮಾತಿಗೆ ಅವಕಾಶ ಇರಲಿಲ್ಲ. ಮುಂದಿನ ವಾರವೇ ಸರ್ಕಾರದ ಇಲಾಖೆಯಿಂದ ಕಾರ್ಯಕ್ರಮ ನಿಗದಿ ಮಾಡಿ ಪತ್ರ ಬಂದೇ ಬಿಟ್ಟಿತು. ಮೊದಲ ಗಮಕವಾಚನ ಕಾರ್ಯಕ್ರಮ ರಾಮಚಂದ್ರರಾಯರ ನೇರ ಕಾರ್ಯಕ್ಷೇತ್ರ ಹಾಸನ ಜಿಲ್ಲೆಯ ಹಳ್ಳಿ ಒಂದರಲ್ಲಿ ನಿಯೋಜಿಸಿತ್ತು. 
*****

ಇಂತಹ ಕಾರ್ಯಕ್ರಮಗಳು ಸಂಜೆ ಐದು ಗಂಟೆಯ ಹಾಗೆ ಪ್ರಾರಂಭವಾಗಿ ಸೂರ್ಯಾಸ್ತದ ಸ್ವಲ್ಪ ಸಮಯಕ್ಕೆ ಮುಗಿದುಬಿಡಬೇಕಿತ್ತು. ಇಲ್ಲದಿದ್ದರೆ ಬೆಳಕಿನ ತೊಂದರೆ. ಜೊತೆಗೆ ಕಾರ್ಯಕ್ರಮಕ್ಕೆ ಬಂದ ಆಹ್ವಾನಿತರು ಕಡೆಯ ಬಸ್ಸು ಹಿಡಿದು ಹಿಂದಿರುಗಬೇಕಾಗಿತ್ತು. ಕಡೆಯ ಬಸ್ಸು ತಪ್ಪಿದರೆ ಅಂದು ರಾತ್ರಿ ಹಳ್ಳಿಯಲ್ಲಿಯೇ ಕಾಲಕಳೆಯಬೇಕು. ತಂಗಲು ಅನುಕೂಲಗಳು ಇರುತ್ತಿರಲಿಲ್ಲ. ಊರಿನ ಶಾನುಭೋಗರೋ, ಪಟೇಲರೋ ಅಥವಾ ಇನ್ಯಾರೋ ಗಣ್ಯ ವ್ಯಕ್ತಿಗಳು ಕಾರ್ಯಕ್ರಮಕ್ಕೆ ಸಹಕಾರ ಕೊಟ್ಟು ನಡೆಸಿಕೊಡಬೇಕು. ಊರಿನ ಅರಳಿ ಕಟ್ಟೆ ಬಳಿಯೋ ಅಥವಾ ದೊಡ್ಡ ಮನೆಯ ಅಂಗಳದಲ್ಲೋ, ಇದ್ದರೆ ರಾಮಮಂದಿರ ಅಥವಾ ಭಜನ ಮಂದಿರದಲ್ಲೋ ಕಾರ್ಯಕ್ರಮ. ಹೀಗೆ ನಡೆಯಬೇಕು. 

ಕಾರ್ಯಕ್ರಮ ನಿಗದಿಯಾದ ದಿನ ಬೆಳಿಗ್ಗೆ ನಾಗರಾಜರಾವ್ ದಂಪತಿಗಳು ಬೆಂಗಳೂರಿನಿಂದ ಬಸ್ಸಿನಲ್ಲಿ ಹೊರಟು ಹಾಸನ ತಲುಪಿ, ಸ್ನೇಹಿತರ ಮನೆಯಲ್ಲಿ ಊಟ ಮುಗಿಸಿ, ಮತ್ತೊಂದು ಬಸ್ಸಿನಲ್ಲಿ ಕಾರ್ಯಕ್ರಮ ಇರುವ ಊರು ತಲುಪಿದಾಗ ಮಧ್ಯಾನ್ಹ ಮೂರು ಗಂಟೆಯ ಸಮಯ. ಸಿಕ್ಕಿದ್ದ ಸೂಚನೆಯಂತೆ ಶಾನುಭೋಗ ಚನ್ನಪ್ಪನವರ ಮನೆ ವಿಚಾರಿಸಿಕೊಂಡರು ತಲುಪಿದರು. ಮನೆಯ ಮುಂದೆ ಎಂಟು-ಹತ್ತು ವರುಷದ ಬಾಲಕಿಯೊಬ್ಬಳು ಕುಂಟೆಬಿಲ್ಲೆ ಆಡುತಿದ್ದಳು. ಇವರನ್ನು ನೋಡಿದವಳು ಮನೆಯ ಬಾಗಿಲ ಬಳಿ ಹೋಗಿ "ಅಮ್ಮಾ, ಯಾರೋ ಬಂದಿದ್ದಾರೆ. ನೋಡು" ಎಂದು ಕೂಗಿ ತನ್ನ ಆಟ ಮುಂದುವರೆಸಿದಳು. 

ಹೊರಗಡೆ ಬಂದು ನೋಡಿದ ಗೃಹಿಣಿ ಪಡಸಾಲೆಯಲ್ಲಿ ಸುತ್ತಿಟ್ಟಿದ್ದ ಚಾಪೆ ಹಾಸಿ "ಕುಳಿತುಕೊಳ್ಳಿ. ಅವರು ಹೊಲದ ಕಡೆ ಹೋಗಿದ್ದಾರೆ. ಇನ್ನೇನು ಬರುವ ಹೊತ್ತು" ಎಂದು ಹೇಳಿ ಮನೆಯ ಒಳಗಡೆ ಹೊರಟುಹೋದರು. 

ಸುಮಾರು ಕಾಲು ಗಂಟೆ ಸಮಯ ಕಳೆಯಿತು. ಮನೆಯ ಒಳಗಡೆಯಿಂದ "ರತ್ನಾ, ಇಲ್ಲಿ ಬಾ" ಎಂದು ಕೂಗು ಬಂತು. ಕುಂಟೆಬಿಲ್ಲೆ ಆಡುತ್ತಿದ್ದ ಹುಡುಗಿ ಒಳಗೆ ಹೋದಳು. ಒಂದೊಂದಾಗಿ ಎರಡು ಲೋಟ ಕಾಫಿ ತಂದು ಪಡಸಾಲೆಯಲ್ಲಿ ಕುಳಿತಿದ್ದವರ ಮುಂದೆ ಇಟ್ಟು ತನ್ನ ಆಟ ಮುಂದುವರೆಸಿದಳು. ಗಂಟಲು ಒಣಗಿತ್ತು. ಕಾಫಿ ಕುಡಿದರು. ಇನ್ನರ್ಧ ಗಂಟೆ ಕಳೆಯಿತು. ಸುಮಾರು ನಲವತ್ತು-ನಲವತ್ತೈದು ವರುಷದ ವ್ಯಕ್ತಿ ಬಂದರು. ಕುಳಿತಿದ್ದವರನ್ನು ನೋಡಿದರು. 

"ನಮಸ್ಕಾರ. ಇಂದಿನ ಕಾರ್ಯಕ್ರಮ ನಡೆಸಲು ಬಂದವರೋ?"
"ಹೌದು. ಶಾನುಭೋಗ ಚನ್ನಪ್ಪನವರನ್ನು ಕಾಣುವಂತೆ ಸೂಚನೆಯಿತ್ತು. ಬಂದಿದ್ದೇವೆ"
"ನಾನೇ ಚನ್ನಪ್ಪ. ನನಗೆ ಬೆಳಿಗ್ಗೆ ತಾನೇ ಪತ್ರ ಬಂದಿತು. ಇದೇನು, ಇಲ್ಲೇ ಕುಳಿತಿರಿ. ರತ್ನಾ, ಒಳಗಡೆ ಕೂಡಿಸಬಾರದಿತ್ತೇ ಪುಟ್ಟ"

ಮನೆಯ ಒಳಗಡೆ ಕರೆದುಕೊಂಡು ಹೋದರು.

*****

ಕೈ ಕಾಲು ಮುಖ ತೊಳೆದು ದಣಿವಾರಿಸಿಕೊಂಡ ಮೇಲೆ ಚನ್ನಪ್ಪ ಮಾತು ಮುಂದುವರೆಸಿದರು. 

"ನೀವು ಎರಡು ವರುಷದ ಹಿಂದೆ ಬೇಲೂರು ಕನ್ನಡ ಸಾಹಿತ್ಯ ಸಮ್ಮೇಳನ ನಡೆದಾಗ ಬಂದಿದ್ದಿರಲ್ಲವೇ? ಅಲ್ಲಿ ನಿಮ್ಮನ್ನು ನೋಡಿದಹಾಗಿದೆ"
"ಹೌದು. ಕನ್ನಡ ಸಾಹಿತ್ಯ ಪರಿಷತ್ತಿನ ಸಂಪರ್ಕದಿಂದ ಸಮ್ಮೇಳನ ಆಯೋಜಿಸುವ ಹೊಣೆ ನನ್ನ ಮೇಲೆ ಇತ್ತು. ಹೀಗಾಗಿ ಆಗ ಕೆಲವು ದಿನಗಳು ಬೇಲೂರಿನಲ್ಲಿಯೇ ಇದ್ದೆ. ಅಲ್ಲಿ ನೋಡಿರಬಹುದು"
"1952ರ ಬೇಲೂರು ಸಮ್ಮೇಳನವನ್ನು ಈ ಸುತ್ತಲಿನ ಜನ ಆಗಾಗ ನೆನೆಸಿಕೊಳ್ಳುತ್ತಾರೆ"
"ಸಮ್ಮೇಳನ ಚೆನ್ನಾಗಿ ಆಯಿತು ಅಂದು ಬಂದವರು ಅಂದರೆ ನಮ್ಮ ಕೆಲಸ ಸಾರ್ಥಕವಾಯಿತು"
"ಅಷ್ಟೇ ಅಲ್ಲ. ನಿಮ್ಮನ್ನು ಅದಕ್ಕೂ ಮುಂಚೆ ನೋಡಿದ ಹಾಗಿದೆ. ಸುಮಾರು ಹತ್ತು ವರುಷಗಳ ಹಿಂದೆ ಬೇಲೂರು ದೇವಸ್ಥಾನದ ಅರ್ಚಕ ಮಂಡಲಿಯ ಪ್ರಧಾನರು ಶ್ರೀ ಮುತ್ತು ಭಟ್ಟರ ಮನೆಗೆ ಡಿ.ವಿ.ಜಿ. ಅವರು ಬಂದಿದ್ದಾಗ ನೀವು ಅವರ ಜೊತೆ ಬಂದಿದ್ದೀರಾ?"
"ಹೌದು. ಡಿ.ವಿ.ಜಿ. ಅವರ "ಅಂತಃಪುರ ಗೀತೆ" ಮುದ್ರಣದ ಪುಸ್ತಕಕ್ಕೆ ಚನ್ನಕೇಶವನ ದೇವಾಲಯದ ಶಿಲಾಬಾಲಿಕೆಯರ ಫೋಟೋಗಳನ್ನು ಹಾಕುವ ಕೆಲಸವಿತ್ತು. ಗುಂಡಪ್ಪನವರು ಆ ಜವಾಬ್ದಾರಿ ನನಗೆ ವಹಿಸಿದ್ದರು. ಆ ಸಂದರ್ಭದಲ್ಲಿ ಬಂದಿದ್ದೆ. ನಿಟ್ಟೂರು ಶ್ರೀನಿವಾಸರಾಯರು, ಮಾನ್ವಿ ನರಸಿಂಗರಾಯರೂ ಬಂದಿದ್ದರು"

ಚನ್ನಪ್ಪನವರು ಉಂಡೆ ಮತ್ತು ಹುರಿಗಾಳು ತಂದರು. 

"ನಾನು ಗುಂಡಪ್ಪನವರ ಜೊತೆ ಬಂದಿದ್ದುದು ನಿಮಗೆ ಹೇಗೆ ಗೊತ್ತು?"
"ನನ್ನ ತಾಯಿಯ ತೌರು ಮನೆ ಅದೇ ಬೀದಿಯಲ್ಲಿದೆ. ಸೋದರಮಾವಂದಿರು ಈಗಲೂ ಅಲ್ಲಿದ್ದಾರೆ. ಆಗಾಗ ಅಲ್ಲಿ ಹೋಗುತ್ತಿರುತ್ತೇನೆ. ಹೀಗಾಗಿ ಡಿ.ವಿ.ಜಿ. ಅವರು ಬಂದಾಗ ನಾವೆಲ್ಲಾ ಅವರನ್ನು ನೋಡಲು ಮುತ್ತುಭಟ್ಟರ ಮನೆಗೆ ಬಂದಿದ್ದೆವು. ನನ್ನಮ್ಮ ನನಗೆ "ಚನ್ನಕೇಶವ" ಎಂದೇ ಹೆಸರಿಟ್ಟಿದ್ದಾಳೆ!"
"ಮತ್ತೆ "ಚನ್ನಪ್ಪ" ಎಂದು ಕರೆಯುತ್ತಾರಲ್ಲ?"
"ಇಲ್ಲಿ ಕೇಶವಯ್ಯ ಎಂದು ಹಿರಿಯರೊಬ್ಬರಿದ್ದರು. ಎರಡು ಕೇಶವ ಆಗಬಾರದು ಎಂದು ಚನ್ನಕೇಶವನಾದ ನನ್ನನು ಚನ್ನಪ್ಪ ಮಾಡಿಬಿಟ್ಟರು!"

ಎಲ್ಲರೂ ಘೊಳ್ಳೆಂದು ನಕ್ಕರು. ಮತ್ತೊಮ್ಮೆ ಕಾಫಿ ಆಯಿತು. ಕಾರ್ಯಕ್ರಮದ ಸಮಯವೂ ಆಯಿತು. 

*****

ರಾಮಮಂದಿರದಲ್ಲಿ ಶ್ರೀಮತಿ ರಾಜಾಮಣಿಯವರ ಕಾವ್ಯವಾಚನ. ಕುಮಾರವ್ಯಾಸ ಭಾರತದ ಪ್ರಸಂಗ. ವಿರಾಟಪರ್ವ ಮೂರನೆಯ ಸಂಧಿ. ಕೀಚಕನ ಕೋಟಲೆ ತಾಳಲಾರದೆ ಬೇಸತ್ತ ಸೈರಂಧ್ರಿ (ದ್ರೌಪದಿ) ಅಡಿಗೆಭಟ್ಟ ವಲಲ (ಭೀಮಸೇನ) ಇರುವೆಡೆ ಬಂದು ಕೀಚಕನ ವಧೆಗೆ ಅವನನ್ನು ಒಪ್ಪಿಸುವ ಸಂದರ್ಭ. ಪದ್ಯ ವಾಚನದ ನಂತರ ನಾಗರಾಜರಾಯರ ವ್ಯಾಖ್ಯಾನ. 

ತಯಾರಿ ಮತ್ತು ಪ್ರಚಾರ ಇಲ್ಲದ, ತರಾತುರಿಯಲ್ಲಿ ಜನ ಸೇರಿಸಿದ ಕಾರ್ಯಕ್ರಮ. ಹೆಚ್ಚು ಜನ ಬಂದಿರಲಿಲ್ಲ. ಬಂದಿದ್ದವರು ಕೆಲವರು ಹೆಚ್ಚು ವಿದ್ಯಾವಂತರಲ್ಲದಿದ್ದರೂ ವಿಷಯ ತಿಳಿದವರು. "ಕುರಿತೋದದೆಯುo ಕಾವ್ಯಪ್ರಯೋಗ ಪರಿಣತಮತಿಗಳ್" ಅನ್ನುವ ಕವಿರಾಜಮಾರ್ಗ ನುಡಿಯ ರೀತಿಯವರು. ಕಾರ್ಯಕ್ರಮ ನಡೆಯುತ್ತಿದ್ದಂತೆ ಇನ್ನಷ್ಟು ಜನ ಸೇರಿದರು. ಒಂದೂವರೆ ಗಂಟೆಗಳ ವಾಚನ ನಡೆಯಿತು.

ಚನ್ನಪ್ಪನವರ ವಂದನಾರ್ಪಣೆ ಮೊದಲು ಹಿರಿಯರೊಬ್ಬರು ನಿಂತುಕೊಂಡರು. "ಭೀಮ ಕಷ್ಟವನೆಸಗಿದನು ಹಾಎಂದರಾದೊಡೆ ಮುಸುಡನಮರಾದ್ರಿಯಲಿ ತೇವೆನು ದೇವ ಸಂತತಿಯ" ಅನ್ನುವ ಪದ್ಯದ ಬಗ್ಗೆ "ಭೀಮ ಹಾಗೆ ಹೇಳಿದುದು ಸರಿಯೇ" ಎಂದು ಪ್ರಶ್ನೆ ಮಾಡಿದರು. ನಾಗರಾಜರಾಯರು ಸ್ವಲ್ಪ ವಿವರವಾಗಿಯೇ ಉತ್ತರಿಸಿದರು. "ಇಂತಹ ಕಾರ್ಯಕ್ರಮ ನಡೆಯುವುದು ನಮಗೆ ಸರಿಯಾಗಿ ಗೊತ್ತಾಗಲಿಲ್ಲ. ಅನೇಕ ಆಸಕ್ತರು ಬರಲಾಗಲಿಲ್ಲ" ಅಂದರು ಆ ಹಿರಿಯರು. "ಹೌದು, ಹೌದು" ಎಂದು ಸ್ವಲ್ಪ ಗುಸು ಗುಸು ಮಾತುಗಳಾದವು.

***** 

ಚನ್ನಪ್ಪನವರ ವಂದನಾರ್ಪಣೆ. "ಕಾರ್ಯಕ್ರಮ ಹೇಗಿತ್ತು ಅಂತ ನಾನೇನು ಹೇಳಬೇಕಾಗಿಲ್ಲ. ಎಲ್ಲರಿಗೂ ಗೊತ್ತಾಗಿದೆ. ಈ ದಿನ ಅನೇಕರಿಗೆ ಬರಲಾಗಿಲ್ಲ. ಬೆಳಕಿನ ವ್ಯವಸ್ಥೆ ಇಲ್ಲ. ಧ್ವನಿವರ್ಧಕ ಇಲ್ಲ. ಆದ ಕಾರಣ ನಾಳೆಯೂ ಕಾರ್ಯಕ್ರಮ ಇರುತ್ತದೆ. ಸುತ್ತಮುತ್ತಲ ಹಳ್ಳಿಯವರಿಗೆ ತಿಳಿಸಿ. ನಾಳೆ ಪೆಟ್ರೋಮ್ಯಾಕ್ಸ್ ದೀಪಗಳ ಮತ್ತು ಧ್ವನಿವರ್ಧಕದ ವ್ಯವಸ್ಥೆ ಮಾಡಿಸುತ್ತೇವೆ. ಊರಹಬ್ಬಕ್ಕೆ ಈ ವ್ಯವಸ್ಥೆ ಮಾಡುವ ಪಾರ್ಟಿಗೇ ಹೇಳಿಕಳಿಸುತ್ತೇನೆ. ಈದಿನ ವಂದನಾರ್ಪಣೆ ಇಲ್ಲ. ಅದು ಏನಿದ್ದರೂ ನಾಳೆಯೇ" ಎಂದು ಹೇಳಿ ಮುಗಿಸಿಬಿಟ್ಟರು.

ಮನೆಗೆ ಬರುವ ದಾರಿಯಲ್ಲಿ ರಾಯರು ಚನ್ನಪ್ಪರನ್ನು ಕೇಳಿದರು. "ಇದೇನು? ಹೀಗೆ ಮಾಡಿಬಿಟ್ಟಿರಿ? ನಮ್ಮನ್ನು ಕೇಳಲೂ ಇಲ್ಲ. ನಮಗೆ ನಾಳೆ ಇರಲು ಅನುಕೂಲವಿಲ್ಲ. ನಾವು ಇಂದೇ ಹಿಂದಿರುಗುವುದು ಎಂದು ಬಂದವರು. ಈ ದಿನ ತಡವಾಯಿತು. ನಾವು ಬೆಳಿಗ್ಗೆ ಬೇಗಲೇ ಹೊರಡಬೇಕು" ಅಂದರು. 

"ಸ್ವಾಮಿ, ಬಡವರ ಮನೆಯಲ್ಲಿ ಆದಷ್ಟೂ ಅನುಕೂಲ ಮಾಡಿ ಕೊಡುತ್ತೇನೆ. ಒಂದು ದಿನ ಸುಧಾರಿಸಿಕೊಳ್ಳಿ. ನೀವು ಮತೊಮ್ಮೆ ನಮ್ಮ ಊರಿಗೆ ಬರುವುದು ಸಾಧ್ಯವಿಲ್ಲ. ಬಂದಿರುವಾಗ ನಿಮಗೆ ಕಷ್ಟವಾದರೂ ನಮ್ಮ ಜನಗಳಿಗೆ ಒಂದು ಒಳ್ಳೆಯ ಕಾರ್ಯಕ್ರಮ ಆಗಲಿ" ಅಂದರು ಚನ್ನಪ್ಪನವರು. 

*****

ಮಾರನೆಯ ದಿನ ಎಲ್ಲಾ ವ್ಯವಸ್ಥೆಗಳೊಂದಿಗೆ ಭರ್ಜರಿ ಕಾರ್ಯಕ್ರಮ ನಡೆಯಿತು. ಊರಿನವರ ಬೇಡಿಕೆಯಂತೆ "ಕುಂತಿ-ಕರ್ಣ" ಪ್ರಸಂಗದ ವಾಚನ ಮಾಡಲಾಯಿತು. ಸುತ್ತ-ಮುತ್ತಲಿನ ಹಳ್ಳಿ ಜನರೆಲ್ಲಾ ಸೇರಿದ್ದರು. ಕಾರ್ಯಕ್ರಮ ನಡೆದ ನಂತರ ದಂಪತಿಗಳಿಗೆ ಔತಣದ ಊಟ ತಯಾರಾಗಿತ್ತು. ಧ್ವನಿವರ್ಧಕ, ಬೆಳಕಿನ ವ್ಯವಸ್ಥೆ ಮಾಡಲು ಉಪಕರಣ ತಂದಿದ್ದ ವ್ಯಾನಿನಲ್ಲಿ ಅವರನ್ನು ಉಡುಗೊರೆಗಳ ಸಮೇತ ಹಾಸನಕ್ಕೆ ಕಳಿಸಿಕೊಟ್ಟರು. ಹೊರಡುವ ಸಮಯದಲ್ಲಿ ತಡ ರಾತ್ರಿಯಾಗಿದ್ದರೂ ಅನೇಕರು ಕಾದಿದ್ದು ಬೀಳ್ಕೊಟ್ಟರು. ಮತ್ತೊಮ್ಮೆ ಬನ್ನಿ ಎಂದು ಎಷ್ಟೋವರ್ಷದ ಬಂಧುಗಳನ್ನು ಕೇಳುವಂತೆ ಪ್ರೀತಿಯಿಂದ ಆಹ್ವಾನಿಸಿದರು.  ದಂಪತಿಗಳು ಹಾಸನದಿಂದ ರಾತ್ರಿ ಬಸ್ಸಿನಲ್ಲಿ ಬೆಂಗಳೂರಿಗೆ ಬಂದು ತಲುಪಿದರು.  

ನಂತರ ನಾಗರಾಜರಾವ್ ದಂಪತಿಗಳು ಅನೇಕ "ಸಂಸ್ಕೃತಿ ಪ್ರಸಾರ" ಕಾರ್ಯಕ್ರಮಗಳನ್ನು ರಾಜ್ಯದ ಅನೇಕ ಕಡೆಗಳಲ್ಲಿ ನಡೆಸಿಕೊಟ್ಟಿರುವುದು ಹಿಂದಿನ ತಲೆಮಾರಿನವರಿಗೆ ಗೊತ್ತಿರುವ ವಿಷಯವೇ.

Saturday, June 13, 2026

ಸಂಸ್ಕೃತಿ ಪ್ರಸಾರ


ದೇಶದ ಅನೇಕ ಕಡೆಗಳಲ್ಲಿ ಈಚೆಗೆ ಪ್ರತಿದಿನ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ದಿಗ್ಬ್ರಮೆ ಉಂಟಾಗುತ್ತದೆ. ನಮ್ಮನ್ನು ಆಳುತ್ತಿರುವವರು ದಿನದಿಂದ ದಿನಕ್ಕೆ ನಡೆಯುತ್ತಿರುವ ದಾರಿಗಳು ನಮ್ಮನ್ನು ಯಾವ ದಿಕ್ಕುಗಳಿಗೆ ಒಯ್ಯುತ್ತವೆ ಎಂದು ಹೇಳಲು ಬರುವುದಿಲ್ಲ. ಚುನಾವಣೆಗಳು ನಡೆದ ನಂತರ ಜನರು ಕೊಡುವ ತೀರ್ಪನ್ನು ಒಪ್ಪಿಕೊಳ್ಳದ ನಾಯಕರುಗಳು ಒಂದು ಕಡೆ. ತಾವು ಗೆದ್ದಾಗ ಮಾತ್ರ ಚುನಾವಣೆಗಳು ಸರಿಯಾಗಿ ನಡೆದುವು ಎನ್ನುವ ಗುಂಪುಗಳು ಇನ್ನೊಂದು ಕಡೆ. ಬೇಕಿದ್ದಾಗ ಪಕ್ಷ ಬದಲಿಸಿ ಅಧಿಕಾರಕ್ಕೆ ಜೋತುಬೀಳುವ ಹಂಬಲವಂತೂ ಎಲ್ಲ ಕಡೆ. ಮಂತ್ರಿಮಂಡಲದಲ್ಲಿ ಸ್ಥಾನ ಪಡೆಯಲು ಪರಿತಪಿಸುವ ಪ್ರತಿನಿಧಿಗಳು. ಜಾತಿ ಮತ್ತು ಪ್ರಾದೇಶಿಕ ಪ್ರಾತಿನಿಧ್ಯಗಳ ಕೂಗುಗಳ ಅತಿರೇಕಗಳು. ಅಧಿಕಾರ ಸಿಕ್ಕಿದ ನಂತರ ಖಾತೆಗಳ ಹಂಚಿಕೆಯಲ್ಲಿ ಗುದ್ದಾಟ. ಶಪಥಗ್ರಹಣ ನಡೆದ ನಂತರ ವಾರಗಳು ಕಳೆದರೂ ಬೇಕಿದ್ದ ಖಾತೆ ಸಿಗಲಿಲ್ಲವೆಂದು ಅಧಿಕಾರಗ್ರಹಣ ಮಾಡದ ಮಂತ್ರಿಗಳು. ಹೊಸ ವಾಹನಗಳು, ದೊಡ್ಡ ಆಫೀಸುಗಳು ಮತ್ತು ನಿವಾಸಗಳು ಮುಂತಾದುವಕ್ಕೆ ಕೊನೆಯಿಲ್ಲದ ಹಪಾಹಪಿ. ಒಟ್ಟಿನಲ್ಲಿ ದಿಕ್ಕು ದೆಸೆಯಿಲ್ಲದ ರಾಜಕೀಯ. 

ಸ್ವಾತಂತ್ರ್ಯಾನಂತರ ನಡೆದ ಮೊದಲ ಚುನಾವಣೆಗಳ ಬಳಿಕ 1952ರಲ್ಲಿ ನಮ್ಮ ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡ ಶ್ರೀ ಕೆಂಗಲ್ ಹನುಮಂತಯ್ಯನವರ ಮಂತ್ರಿಮಂಡಲದಲ್ಲಿ ಇದ್ದದ್ದು ಎಂಟು ಜನ ಮಂತ್ರಿಗಳು ಮಾತ್ರ. ಅದು ಮೈಸೂರು ರಾಜ್ಯ. ಇನ್ನೂ "ಕರ್ನಾಟಕ ಏಕೀಕರಣ" ಆಗಿರಲಿಲ್ಲ. ರಾಜ್ಯವೇನೋ ಗಾತ್ರದಲ್ಲಿ ಈಗಿಗಿಂತ ಚಿಕ್ಕದೇ. ಮಂತ್ರಿಮಂಡಲವೂ ಚಿಕ್ಕದೇ. ಬ್ರಿಟಿಷರ ಆಡಳಿತದಿಂದ ಹೊರಬಂದ ಮೇಲೆ ನಮ್ಮ ನಾಡಿನ ಭವ್ಯವಾದ ಸಂಸ್ಕೃತಿ ಎಲ್ಲೆಡೆ ವಿಜೃಂಭಿಸಲಿ ಎನ್ನುವ ಆಸೆಯಿಂದ ಸರ್ಕಾರ "ಸಂಸ್ಕೃತಿ ಪ್ರಸಾರ" ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಅದರ ಅಂಗವಾಗಿ ಅಮೂಲ್ಯ ಕೃತಿಗಳ ಮುದ್ರಣ-ಪ್ರಕಾಶನ, ರಾಜ್ಯದ ಮೂಲೆಮೂಲೆಗಳಲ್ಲಿ ವಿದುಷಿ-ವಿದ್ವಾಂಸರಿಂದ ಸಾಹಿತ್ಯ-ಸಂಗೀತ-ಗಮಕ ಮುಂತಾದ ಕಾರ್ಯಕ್ರಮಗಳು, ಉಪನ್ಯಾಸಗಳು, ಮುಂತಾದುವು ಈ ಸಂಸ್ಕೃತಿ ಪ್ರಸಾರದ ಮೂಲಕ ನಡೆದವು. 

ಸರ್ಕಾರದ ಆರ್ಥಿಕ ಸಹಾಯದ ಮೂಲಕ ಮೊದಲ ವರ್ಷ ಪ್ರಕಟವಾದ "ಕುಮಾರವ್ಯಾಸ ಭಾರತ" ಪುಸ್ತಕಕ್ಕೆ ಕೇವಲ ಎರಡು ರೂಪಾಯಿ ಬೆಲೆ. ಈ ಗ್ರಂಥಕ್ಕೆ ಕನ್ನಡದ ಹೆಮ್ಮೆಯ ಕುವೆಂಪು ಮತ್ತು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸಂಪಾದಕರು. ಈ ಕೃತಿಗೆ ಕುವೆಂಪು ಅವರ "ತೋರಣ ನಾಂದಿ". ಈಗಲೂ ಆಗಾಗ ಓದಬೇಕೆಂದು ಅನಿಸುವ, ಅವರೇ ಹೇಳುವಂತೆ ಸಹೃದಯ ವಿಮರ್ಶೆ. ಅನೇಕ ಮನೆಗಳಲ್ಲಿ ಈಗಲೂ ಈ ಪುಸ್ತಕ ಇದೆ. 
*****

ಎ. ಜಿ. ರಾಮಚಂದ್ರ ರಾವ್ ನಮ್ಮ ರಾಜ್ಯದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಒಂದು ದೊಡ್ಡ ಹೆಸರು. ಹಾಸನ ಜಿಲ್ಲೆಯ ಅರಕಲಗೂಡಿನ ಅವರು ಅದೇ ಊರಿನ "ಕಾದಂಬರಿ ಸಾರ್ವಭೌಮ" ಆ. ನ. ಕೃಷ್ಣರಾಯರ ಸಮಕಾಲೀನರು. 1942ರ "ಕ್ವಿಟ್ ಇಂಡಿಯಾ" ಚಳುವಳಿಯಲ್ಲಿ ಸಕ್ರಿಯವಾಗಿದ್ದವರು. ಚಳುವಳಿಯ ಮುಂಚೂಣಿಯ ನಾಯಕರಾಗಿದ್ದ ಅವರನ್ನು ಹಿಡಿದು ಬಂದಿಖಾನೆಗೆ ಹಾಕಲು ಪೊಲೀಸರು ಕಾಯುತ್ತಿದ್ದರು. ಚಳುವಳಿಯನ್ನು ಯಶಸ್ವಿಯಾಗಿ ಮುನ್ನಡೆಸಲು ರಾಮಚಂದ್ರ ರಾಯರು ಪೋಲೀಸರ ಕಣ್ಣು ತಪ್ಪಿಸಿ ಕೆಲಕಾಲ ಭೂಗತರಾದರು. ಹೀಗೆ ಪೊಲೀಸರಿಗೆ ಸಿಗದಂತೆ ಓಡಾಡಿ ಚಳುವಳಿ ಸಂಘಟಿಸುವ ನಾಯಕರಿಗೆ ಸಹಕಾರ ಕೊಡಲು ಇತರೆ ಚಳುವಳಿಕಾರರ ತಂಡಗಳು ಇದ್ದವು. ಭೂಗತರಾದವರು ಒಂದೇ ಕಡೆ ಇರುವಂತಿಲ್ಲ. ಮನೆಯಿಂದ ಮನೆಗೆ ಗುಪ್ತವಾಗಿ ಓಡಾಟ. ಹೀಗೆ ಚಳುವಳಿ ನಡೆಯುತ್ತಿತ್ತು,

ಒಂದು ದಿನ ರಾತ್ರಿ ಶ್ರೀ ಹೆಚ್. ಎಸ್ ಸೀತಾರಾಮ್ (ಮುಂದೆ 1954-55ರಲ್ಲಿ ಬೆಂಗಳೂರಿನ ಮೇಯರ್ ಆದವರು. ಸ್ವಾತಂತ್ರ್ಯ ಯೋಧ ಶತಾಯುಷಿ ಶ್ರೀ ಹೆಚ್. ಎಸ್. ದೊರೆಸ್ವಾಮಿ ಅವರ ಅಣ್ಣ) ಅವರ ಕಾರಿನಲ್ಲಿ ಶ್ರೀ ರಾಮಚಂದ್ರ ರಾಯರನ್ನು ಅವರು ಅಡಗಿಕೊಂಡಿದ್ದ ಯಲಹಂಕದ ತಮ್ಮ ಸ್ನೇಹಿತರ ಮನೆಯಿಂದ ಕರೆತಂದು ನರಸಿಂಹರಾಜ ಕಾಲೋನಿಯಲ್ಲಿನ ಶ್ರೀ ಸಿ. ಕೆ. ನಾಗರಾಜ ರಾವ್ ಅವರ ಮನೆಯಲ್ಲಿ ಸೇರಿಸಿದರು. ಆಗ ನಾಗರಾಜ ರಾವ್ ಕನ್ನಡದ ಉದಯೋನ್ಮುಖ ಲೇಖಕ. ಕೆಲ ದಿನ ರಾಮಚಂದ್ರ ರಾಯರ ರಕ್ಷಣೆಯ ಜವಾಬ್ದಾರಿ ಅವರಿಗೆ ವರ್ಗಾವಣೆ ಆಯಿತು.

ರಾಮಚಂದ್ರ ರಾಯರ ಬೆನ್ನು ಹತ್ತಿದ್ದ ಪೊಲೀಸರಿಗೆ ಹೇಗೋ ಈ ಸುಳಿವು ಸಿಕ್ಕಿತು. ಸರ್ಚ್ ವಾರಂಟ್ ಹಿಡಿದುಕೊಂಡು ತಡರಾತ್ರಿ ಪೊಲೀಸರು ನಾಗರಾಜರಾಯರ ಮನೆ ಬಾಗಿಲು ಬಡಿದರು. ಮನೆಯಲ್ಲಿ ತಂದೆ-ತಾಯಿ, ಹೆಂಡತಿ-ಮಕ್ಕಳ ಜೊತೆ ನಾಗರಾಜರಾಯರ ವಾಸ. ಆ ದಿನ ಅವರ ಪತ್ನಿ ಮನೆಯಲ್ಲಿರಲಿಲ್ಲ. ಬಾಗಿಲು ತೆಗೆದರೆ ಪೊಲೀಸು ಅಧಿಕಾರಿಯ ಜೊತೆ ಒಬ್ಬ ಕನಿಷ್ಟಬಿಲ್ಲೆ. ಒಳಗೆ ಬಂದ ಅಧಿಕಾರಿಯನ್ನು ಕೂಡಿಸಿ ರಾಯರು ತಾಯಿಗೆ ಕಾಫಿ ಮಾಡಲು ಹೇಳಿದರು. ಸರ್ಚ್ ವಾರಂಟ್ ತೋರಿಸಿ ಅಧಿಕಾರಿ ತಪಾಸಣೆ ಮಾಡಿದರು. ರಾಯರ ಕೋಣೆಯಲ್ಲಿ ಒಂದು ವ್ಯಕ್ತಿ ಚಾಪೆಯಮೇಲೆ ಪೂರ್ತಿ ಕಂಬಳಿಯಿಂದ ಮುಸುಕು ಹೊದ್ದು ಮಲಗಿದ್ದುದು ಅಧಿಕಾರಿಗೆ ಕಂಡಿತು. 

"ಯಾರು ಅಲ್ಲಿ ಮಲಗಿರುವುದು?"
"ಇನ್ಯಾರು ಇಲ್ಲಿ ಬರುತ್ತಾರೆ? ಅದು ನನ್ನ ಹೆಂಡತಿ"
"ಹಾಗೆ ಯಾಕೆ ದೂರ ಮೂಲೆಯಲ್ಲಿ ಮಲಗಿದ್ದಾರೆ?"
"ಅದಕ್ಕೇನು ಹೇಳುವುದು? ತಿಂಗಳಿಗೆ ಮೂರು ದಿನ ದೂರ ಇರುವ ಪದ್ಧತಿ ಇದೆಯಲ್ಲ. ಅದಕ್ಕೆ"

ಅಧಿಕಾರಿಗೆ ನಂಬಿಕೆ ಬರಲಿಲ್ಲ. 

"ಗಾಢ ನಿದ್ರೆಯಲ್ಲಿದ್ದಾಳೆ. ಬೇಕಿದ್ದರೆ ಎಬ್ಬಿಸುತ್ತೇನೆ"

ಅಧಿಕಾರಿಗೆ ಎಬ್ಬಿಸಲು ಹೇಳುವಂತೆ ಮನಸ್ಸಾಗಲಿಲ್ಲ. ಅಷ್ಟರಲ್ಲಿ ನಾಗರಾಜರಾಯರ ತಾಯಿ ಕಾಫಿ ತಂದರು. ಸಹಾಯಕನ ಜೊತೆ ಒಳ್ಳೆಯ ಕಾಫಿ ಕುಡಿದು ಇಬ್ಬರೂ ಹೊರಟುಹೋದರು. ರಾಮಚಂದ್ರರಾಯರು ಅಂದು ಪಾರಾದರು. 
*****

ಸ್ವಾತಂತ್ರ್ಯ ಬಂದ ನಂತರ ಮೈಸೂರು ರಾಜ್ಯಕ್ಕೆ ಶ್ರೀ ಕೆ. ಚಂಗಲರಾಯ ರೆಡ್ಡಿ ಅವರು ಮುಖ್ಯಮಂತ್ರಿ ಆಗಿ ನಾಮನಿರ್ದೇಶಿತ ಸರ್ಕಾರ ಅಧಿಕಾರ ವಹಿಸಿಕೊಂಡಿತು. ಕೆ.ಸಿ. ರೆಡ್ಡಿ ಅವರ ನೇತೃತ್ವದಲ್ಲಿ ಮೊದಲ ಚುನಾವಣೆಗಳು 1952ರಲ್ಲಿ ನಡೆದುವು. 

ಎ. ಜಿ. ರಾಮಚಂದ್ರರಾಯರು ಹೊಳೆನರಸೀಪುರ ಕ್ಷೇತ್ರದಿಂದ ಎಂ.ಎಲ್.ಎ ಆಗಿ ಚುನಾಯಿತರಾದರು. ಶ್ರೀ ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿ ಆಗಿ ಮೊದಲ ಜನಪ್ರಿಯ ಸರ್ಕಾರ ಮೈಸೂರು ರಾಜ್ಯಕ್ಕೆ ಬಂದಿತು. ಹನುಮಂತಯ್ಯನವರ ಸರ್ಕಾರದ ಏಳು ಮಂತ್ರಿಗಳಲ್ಲಿ (ಆವರನ್ನು ಸೇರಿಸಿ ಎಂಟು ಜನ) ಶ್ರೀ ಕಡಿದಾಳ್ ಮಂಜಪ್ಪ ಮತ್ತು ಶ್ರೀ ಎ. ಜಿ. ರಾಮಚಂದ್ರ ರಾವ್ ಸೇರಿದರು. 

ರಾಮಚಂದ್ರರಾವ್ ಕಾನೂನು ಮತ್ತು ವಿದ್ಯಾ ಇಲಾಖೆ ಮಂತ್ರಿಗಳಾದರು. ನಾಗರಾಜರಾಯರ ಮನೆಯಲ್ಲಿ ನೆಲದ ಮೇಲೆ ಮಲಗಿದ್ದುದು ಮಾತ್ರವಲ್ಲ. ಸರ್ಕಾರ ಕೊಟ್ಟ ನಿವಾಸದ ಕೋಣೆಯ ಮಂಚದ ಮೇಲೂ ಅವರು ಮಲಗಲಿಲ್ಲ. ಮಂಚವನ್ನು ದೇವರ ಪೀಠವಾಗಿ ಉಪಯೋಗಿಸಿ ನೆಲದಮೇಲೇ ಮಲಗುತ್ತಿದ್ದರು ಎಂದು ಅವರನ್ನು ಹತ್ತಿರದಿಂದ ಕಂಡವರು ಹೇಳುತ್ತಿದ್ದರು. ಅಧಿಕಾರ ಮತ್ತು ಸವಲತ್ತುಗಳಿಗೆ ಆಸೆಪಡದ ಸ್ವಾತಂತ್ರ್ಯ ಯೋಧರ ಸಂತತಿಯವರು ಅವರು. 

1957ರಲ್ಲಿ ಹೊಳೆನರಸೀಪುರದಿಂದ ಪ್ರಜಾ ಸೋಷಲಿಸ್ಟ್ ಪಕ್ಷದ ಶ್ರೀ ವೈ. ವೀರಪ್ಪನವರು ಎಂ.ಎಲ್.ಎ ಆದರು. ನಂತರ 1962ರಿಂದ ಸತತ ಆರು ಬಾರಿ ಗೆದ್ದು ಬಂದ, ರಾಜ್ಯದ ಮುಖ್ಯ ಮಂತ್ರಿಗಳು ಮಾತ್ರವಲ್ಲದೆ ದೇಶದ ಪ್ರಧಾನ ಮಂತ್ರಿಗಳೂ ಆದ ಶ್ರೀ ಹೆಚ್. ಡಿ. ದೇವೇಗೌಡ ಅವರು ತಾವು ಎ. ಜಿ. ರಾಮಚಂದ್ರ ರಾಯರ ಗರಡಿಯಲ್ಲಿ ಬೆಳೆದವರು ಎಂದು ಕೃತಜ್ಞತೆಯಿಂದ ನೆನೆಸಿಕೊಳ್ಳುತ್ತಾರೆ. 

*****

ಈಗ ಸಂಸ್ಕೃತಿ ಬೆಳೆಸಲು "ಕನ್ನಡ ಮತ್ತು ಸಂಸ್ಕೃತಿ ಇಲಾಖೆ" ದೊಡ್ಡದಾಗಿ ಬೆಳೆದಿದೆ. "ಕನ್ನಡ ಅಭಿವೃದ್ಧಿ ಪ್ರಾಧಿಕಾರ" ಸಹ ಅಸ್ತಿತ್ವಕ್ಕೆ ಬಂದಿದೆ. ಮಂತ್ರಿಮಂಡಲಗಳೂ ದೊಡ್ಡವಾಗಿ ಬೆಳೆದಿವೆ. 

ಅದೇ ಕೆಂಗಲ್ ಹನುಮಂತಯ್ಯ ಅವರು ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ ದೇಶದ "ಆಡಳಿತ ಸುಧಾರಣಾ ಸಂಸ್ಥೆ" (Administrative Reforms Commission) ಹಾಕಿರುವ ಮಿತಿಯಂತೆ ಶಾಸಕಾಂಗದ ಒಟ್ಟು ಸದಸ್ಯರ ಸಂಖ್ಯೆಯ ಶೇಕಡಾ ಹದಿನೈದರಷ್ಟು ಮಾತ್ರ ಮಂತ್ರಿಮಂಡಲದಲ್ಲಿ ಮಂತ್ರಿಗಳಾಗಿರಬಹುದು. ಈ ಮಿತಿ ಹಾಕಿರದಿದ್ದರೆ ಅನಿಮಿತ ಸಂಖ್ಯೆಯ ಮಂತ್ರಿಗಳನ್ನು ಮಾಡಿಟ್ಟು  ಈ ಜಗಳಗಳನ್ನು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದಿತ್ತು!

ಸಂಸ್ಕೃತಿ ಪ್ರಚಾರ ಹೇಗೆ ನಡೆಯುತ್ತಿದೆ ಅನ್ನುವ ಚರ್ಚೆ ಒತ್ತಟ್ಟಿಗಿರಲಿ. ಆಡಳಿತ ಮತ್ತು ರಾಜಕೀಯ ನಾಯಕರ ಸಂಸ್ಕೃತಿಯಂತೂ ಹೇಗೆ ದಿಕ್ಕು ತಪ್ಪಿದೆ ಅನ್ನುವುದು ಯೋಚಿಸಬೇಕಾದ ವಿಷಯವೇ. ಇಂತಹ ಸಂಸ್ಕೃತಿಯ ಪ್ರಚಾರವಂತೂ ಬಹಳ ಚೆನ್ನಾಗಿಯೇ ಆಗುತ್ತಿದೆ. 

*****

ಅನೇಕ ಸಂಸ್ಕೃತಿ ಪ್ರಸಾರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಶ್ರೀ ಸಿ. ಕೆ. ನಾಗರಾಜರಾವ್ ಮತ್ತು ಅವರ ಶ್ರೀಮತಿ ರಾಜಮಣಿ ನಾಗರಾಜರಾವ್ ಅವರ ಒಂದು ಸುಂದರ ಅನುಭವದ ಸೊಗಸನ್ನು ಮುಂದಿನ ಸಂಚಿಕೆಯಲ್ಲಿ ನೋಡೋಣ.