Showing posts with label Brundavana. Show all posts
Showing posts with label Brundavana. Show all posts

Monday, March 30, 2026

ಅಕ್ಷಯ ತೃತೀಯಾ ಗಂಧ ಲೇಪನ

 

ಇನ್ನು ಕೆಲವೇ ದಿನಗಳಲ್ಲಿ "ಅಕ್ಷಯ ತೃತೀಯಾ" ಬರುವುದಿದೆ. ಪ್ರತಿ ವರ್ಷ ವೈಶಾಖ ಮಾಸದ ಮೂರನೆಯ ದಿನ (ವೈಶಾಖ ಶುಕ್ಲ ತೃತೀಯ) ಒಂದು ವಿಶೇಷವಾದ ದಿನ. ಆ ದಿನವನ್ನು ಒಂದು "ಸ್ವಯಂ ಸಿದ್ಧ ಮುಹೂರ್ತ" ಎಂದು ತಿಳಿದು ಅದಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದಾರೆ. ಆ ದಿನ ಮಂತ್ರಾಲಯದಲ್ಲಿರುವ ಶ್ರೀ ಗುರು ರಾಘವೇಂದ್ರ ರಾಯರ ಮೂಲ ಬೃಂದಾವನ ಮತ್ತು ದೇಶದ ವಿವಿಧ ಕಡೆಗಳಲ್ಲಿ ಇರುವ "ಮೃತ್ತಿಕಾ ಬೃಂದಾವನ" (ಈಗ ಪ್ರಪಂಚದ ಬೇರೆ ಬೇರೆ ಭಾಗಗಳಲ್ಲಿಯೂ ಉಂಟು. ಅಮೇರಿಕ ಸಂಯುಕ್ತ ಸಂಸ್ಥಾನ (USA) ಒಂದರಲ್ಲಿಯೇ ಹನ್ನೆರಡು ಇಂತಹ ಬೃಂದಾವನಗಳಿವೆಯಂತೆ) ಇವುಗಳನ್ನು ಶ್ರೀಗಂಧ ಲೇಪನದಿಂದ ಅಲಂಕರಿಸಲಾಗುತ್ತದೆ. ಇದೊಂದು ವಿಶೇಷ ಸೇವೆ. ಅಂದು ಭಕ್ತಾದಿಗಳು ಸರತಿಯಲ್ಲಿ ಕಾದಿದ್ದು ದರ್ಶನ ಪಡೆಯುತ್ತಾರೆ. 

ಅಕ್ಷಯ ತೃತೀಯಾ ದಿನದಂದು ಹೀಗೆ ವೃಂದಾವನಕ್ಕೆ ಗಂಧ ಲೇಪನ ಏಕೆ ಮಾಡುತ್ತಾರೆ? ಹೀಗೆ ಪ್ರಶ್ನೆ ಮಾಡಿದರೆ ಅನೇಕ ವೇಳೆ ಸರಿಯಾದ ಉತ್ತರ ಬರುವುದಿಲ್ಲ. "ಬೇಸಿಗೆ ಕಾಲ. ಆದ್ದರಿಂದ ತಂಪಾಗಿರಲಿ ಎಂದು ಹೀಗೆ ಮಾಡುತ್ತಾರೆ" ಅನ್ನುವುದು ಸಾಮಾನ್ಯ ಉತ್ತರ. ಹಾಗಿದ್ದರೆ, ಎರಡು-ಮೂರು ತಿಂಗಳ ಕಾಲ ಕಡು ಬೇಸಿಗೆ ಇರುತ್ತದೆ. ಅದರಲ್ಲಿ ಈ ದಿನವನ್ನೇ ಏಕೆ ಆರಿಸಿಕೊಂಡರು? ಬಾಕಿ ದಿನ ಬೇಸಗೆಯ ಬೇಗೆ ಇಲ್ಲವೇ? ಆಗಾಗ ಏಕೆ ಮಾಡುವುದಿಲ್ಲ? ಇವೆಲ್ಲಾ ಸಾಧುವಾದ ಪ್ರಶ್ನೆಗಳೇ. ಅಕ್ಷಯ ತೃತೀಯ ಹನ್ನೆರಡು ತಿಂಗಳ ಮಧ್ಯದಲ್ಲಿ ಬರುವ ಒಂದು ದಿನ. ಅದು ಹೇಗೆ "ಸ್ವಯಂ ಸಿದ್ಧ ಮುಹೂರ್ತ" ಆಯಿತು? ಅದಕ್ಕೆ ಅಂತಹ ವಿಶೇಷವೇನು? ಇದೂ ಸಹ ಯೋಚಿಸಬೇಕಾದ ವಿಷಯವೇ. 

*****

ಪ್ರತಿ ಸಂವತ್ಸರದ ಪ್ರಾರಂಭದ ದಿನ ಯುಗಾದಿ. ಅದು ಕಾಲಮಾನದ ಲೆಕ್ಕದ ಪ್ರಾರಂಭ. ಹೀಗಾಗಿ ಅದೊಂದು ಸ್ವಯಂ ಸಿದ್ಧ ಮುಹೂರ್ತ ಆಯಿತು. ವಿಜಯದಶಮಿ ವಿಶೇಷ ಎಲ್ಲರಿಗೂ ಗೊತ್ತಿರುವುದೇ. ಅದೂ ಸರಿ. ಬಲಿಪಾಡ್ಯಮಿ ಅರ್ಧ ದಿನವೂ ಒಂದು ವಿಶೇಷವೇ. ಅಂದು ಬಲಿಯಿಂದ ವಾಮನನು ಮೂರು ಲೋಕಗಳ ಅಧಿಪತ್ಯವನ್ನು ಕಸಿದುಕೊಂಡು ದೇವೇಂದ್ರನಿಗೆ ಹಿಂದಿರುಗಿಸಿದನು. ಇದರ ವಿವರಗಳಿಗೆ ಸಂಬಂಧಿಸಿದ ಸಂಚಿಕೆಯನ್ನು ಇಲ್ಲಿ ಕ್ಲಿಕ್ ಮಾಡಿ ಓದಬಹುದು. ಆದರೆ ಈ ಅಕ್ಷಯ ತೃತೀಯ ಹೇಗೆ ವಿಶೇಷ? 

ಚತುರ್ಮುಖ ಬ್ರಹ್ಮ ದೇವರು ತಮ್ಮ ಸೃಷ್ಟಿಕಾರ್ಯ ಪ್ರಾರಂಭ ಮಾಡಿದ ದಿನ ಅಕ್ಷಯ ತೃತೀಯಾ. ಯುಗಾದಿ ಕಾಲಮಾನದ ಲೆಕ್ಕದ ಕಾರಣ ಮುಖ್ಯವಾದರೆ ಅಕ್ಷಯ ತೃತೀಯಾ ಸೃಷ್ಟಿಯ ಪ್ರಾರಂಭವಾದದ್ದರಿಂದ ವಿಶೇಷವಾಯಿತು. ಅದೂ ಒಂದು ಸ್ವಯಂ ಸಿದ್ಧ ಮುಹೂರ್ತ ಆಯಿತು. ಯಾವುದೇ ಕೆಲಸ ಪ್ರಾರಂಭ ಮಾಡಲು, ಮತ್ತು ಮುಖ್ಯವಾದ ಕಾರ್ಯಗಳನ್ನು ಮಾಡಲು ದಿನ ಶುದ್ದಿ ನೋಡಿ ಒಳ್ಳೆಯ ಸಮಯ ನಿರ್ಧರಿಸುವ ಪರಿಪಾಠ ಇದೆ. ಆದರೆ ಈ ನಾಲ್ಕು ದಿನಗಳಲ್ಲಿ ಅವುಗಳ ಅವಶ್ಯಕತೆ ಇಲ್ಲ ಎಂದು ನಂಬುತ್ತಾರೆ. 

ಅಕ್ಷಯ ತೃತೀಯಾ ದಿನದಂದು ಮಾಡಿದ ಒಳ್ಳೆಯ ಕೆಲಸಗಳಿಗೆ (ದಾನ, ಜಪ, ತಪ ಮುಂತಾದುವು) ಹೆಚ್ಚಿನ ಫಲ ಎಂದು ನಂಬಿಕೆ. ಆದರೆ ಈಗ ಅದೊಂದು "ಮಾರಾಟ ಮಾಡುವ ಮೋಡಿ" ಆಗಿದೆ. ಇದರ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ ಓದಬಹುದು. 

*****

ಶ್ರೀ ವೈಕುಂಠದ ದ್ವಾರ ಪಾಲಕರಾದ ಜಯ-ವಿಜಯರು ಸನಕ-ಸನಂದನಾದಿಗಳಿಗೆ ಶ್ರೀಮನ್ನಾರಾಯಣನ ದರ್ಶನಕ್ಕೆ ಅಡ್ಡಿ ಮಾಡಿದ ಕಾರಣದಿಂದ ಶಾಪಕ್ಕೊಳಗಾದ ಕಥೆ ಎಲ್ಲರಿಗೂ ಗೊತ್ತು. ಆ ಕಾರಣದಿಂದ ಅವರು ಮೂರು ಅಸುರ ಜನ್ಮ ಪಡೆದರು. ಶ್ರೀಹರಿಯ ಹೇಳಿಕೆಯ ಅನುಸಾರ ಅವನೇ ಮೂರು ಅವತಾರ ತೆಗೆದು ಅವರ ವಧೆ ಮಾಡಿ ಅವರ ಶಾಪ ವಿಮೋಚನೆ ಮಾಡಿದನು. 

ಮೊದಲಿಗೆ ಅವರು ಹಿರಣ್ಯಾಕ್ಷ-ಹಿರಣ್ಯಕಶಿಪು ಆಗಿ ಒಂದೇ ತಾಯಿ ದಿತಿಯ ಅವಳಿ ಮಕ್ಕಳಾಗಿ ಹುಟ್ಟಿದರು. ಎರಡನೆಯ ಬಾರಿ ಒಂದೇ ತಾಯಿ ಕೈಕಸೆಯ ಬೇರೆ ಬೇರೆ ಇಬ್ಬರು ಮಕ್ಕಳು ರಾವಣ-ಕುಂಭಕರ್ಣ ಆಗಿ ಹುಟ್ಟಿದರು. ಮೂರನೆಯ ಸಾರಿ ಅಕ್ಕ-ತಂಗಿಯರ ಮಕ್ಕಳು (ಶ್ರುತದೇವೆ ಮತ್ತು ಶ್ರುತಶ್ರವೆ - ವಸುದೇವನ ತಂಗಿಯರು) ಶಿಶುಪಾಲ-ದಂತವಕ್ತ್ರ ಆಗಿ ಹುಟ್ಟಿದರು. ಕ್ರಮವಾಗಿ ಮೊದಲಿಗೆ ವರಾಹ-ನರಸಿಂಹ ಎಂಬ ಎರಡು ರೂಪ, ಎರಡನೆಯದಾಗಿ ಶ್ರೀರಾಮ ರೂಪ ಮತ್ತು ಕಡೆಯದಾಗಿ ಶ್ರೀಕೃಷ್ಣ ರೂಪದಿಂದ ಅವರ ನಿಗ್ರಹವನ್ನು ಶ್ರೀಹರಿಯು ಮಾಡಿದನು. 

ಅವಳಿ ಮಕ್ಕಳಲ್ಲಿ ಲೋಕಾರೂಢಿಯಂತೆ ಮೊದಲು ತಾಯಿಯ ಗರ್ಭದಿಂದ ಬಂದವನು ಅಣ್ಣ ಎಂದೂ, ನಂತರ ಜನಿಸಿದವನು ತಮ್ಮ ಎಂದೂ ವ್ಯವಹರಿಸುತ್ತಾರೆ. ಆದರೆ ನಂತರ ಹುಟ್ಟಿದವನ ಗರ್ಭಧಾರಣೆ ಮೊದಲು ಆಗಿರುತ್ತದೆ. ಮೊದಲು ಜನಿಸಿದವನ ಗರ್ಭಧಾರಣೆ ಆಮೇಲೆ ಆಗಿರುತ್ತದೆ. ಈ ಕಾರಣದಿಂದ ವಾಸ್ತವವಾಗಿ ಹಿರಣ್ಯ ಕಷಿಪು ನಂತರ ಹುಟ್ಟಿದರೂ ಅಣ್ಣನು. ಹಿರಣ್ಯಾಕ್ಷನು ಮೊದಲು ಜನಿಸಿದರೂ ತಮ್ಮ. ಇದು ಸೂಕ್ಷ್ಮವಾದ ವಾಸ್ತವ. ಶ್ರೀಹರಿಯು ಮೊದಲು ವರಾಹರೂಪದಿಂದ ಹಿರಣ್ಯಾಕ್ಷನನ್ನೂ, ನಂತರ ನರಸಿಂಹ ರೂಪದಿಂದ ಹಿರಣ್ಯಕಶಿಪುವನ್ನೂ ಸಂಹರಿಸಿದನು. 

*****

ಹಿರಣ್ಯಕಶಿಪುವಿನ ಮಗನಾದ ಪ್ರಹ್ಲಾದನನ್ನು ತಂದೆಯು ಬಹಳವಾಗಿ ಹಿಂಸಿಸಿದನು. ಪ್ರಹ್ಲಾದನು ಶ್ರೀಹರಿಯನ್ನು ಬಲವಾಗಿ ನಂಬಿ ಎಲ್ಲ ತೊಂದರೆಗಳನ್ನೂ ಧೈರ್ಯವಾಗಿ ಎದುರಿಸಿದನು. ಕಡೆಗೆ ನರಸಿಂಹರೂಪದಿಂದ ಹಿರಣ್ಯನ ಸಂಹಾರವಾಯಿತು. ನರಸಿಂಹನ ಸ್ತುತಿ ಮಾಡಿದ ಬಾಲಕ ಪ್ರಹ್ಲಾದನು ವರಾಹ ಮತ್ತು ನರಸಿಂಹ ರೂಪ ಎರಡನ್ನೂ ಒಟ್ಟಿಗೆ ನೋಡಬೇಕೆಂದು ಶ್ರೀಹರಿಯನ್ನು ಪ್ರಾರ್ಥಿಸಿದನು. ಆಗ ಶ್ರೀಹರಿಯು ಎರಡು ರೂಪಗಳನ್ನೂ ಒಟ್ಟಿಗೆ ತೋರಿಸಿದನಂತೆ. ಸಾಮಾನ್ಯವಾಗಿ ಕೆಲವೇ ಕೆಲವು ವರಾಹ ರೂಪಿ ಶ್ರೀಹರಿಯ ದೇವಾಲಯಗಳು ಉಂಟು. ನರಸಿಂಹ ರೂಪಿ ಶ್ರೀಹರಿಯ ದೇವಾಲಯಗಳು ಅನೇಕ. ಆದರೆ, ಶ್ರೀವರಾಹ-ನರಸಿಂಹ ರೂಪಿ ಶ್ರೀಹರಿಯ ದೇವಾಲಯ ಒಂದಾಗಿ ಇರುವುದು ಒಂದೇ ಕಡೆ.  ಅದು ಆಂಧ್ರ ಪ್ರದೇಶದ ಸಿಂಹಾಚಲದಲ್ಲಿ. 

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಗರದ ಉತ್ತರಭಾಗದಲ್ಲಿ "ಸಿಂಹಾಚಲ ಪರ್ವತ ಶ್ರೇಣಿ" ಇದೆ. ಈ ಬೆಟ್ಟ ಪ್ರದೇಶದಲ್ಲಿ ಸಿಂಹಾಚಲ ವರಾಹ-ಲಕ್ಷ್ಮಿನರಸಿಂಹ ದೇವಾಲಯವಿದೆ. ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಿಂದ ಸುಮಾರು ಇಪ್ಪತ್ತು ಕಿಲೋಮೀಟರು ದೂರ. ಈಗ ಈ ಭಾಗ ನಗರದಲ್ಲಿಯೇ ಸೇರಿಹೋದಂತಿದೆ. ಮೇಲಿನ ಚಿತ್ರದಲ್ಲಿ ಕಾಡಿನ ಮಧ್ಯೆ ಇರುವ ದೇವಾಲಯವನ್ನು ನೋಡಬಹುದು. 

ಈ ದೇವಾಲಯದಲ್ಲಿ ಒಂದು ವಿಶೇಷ. ಇಬ್ಬರು ರಕ್ಕಸರನ್ನು ಸಂಹರಿಸಿದ ಶ್ರೀಹರಿಯು ಆ ಸಮಯದಲ್ಲಿ ಅತಿ ಉಗ್ರ ರೂಪವನ್ನು ಧಾರಣೆ ಮಾಡಿದ್ದನಂತೆ. ಆ ರೂಪಗಳನ್ನು ನೋಡಲು ದೇವತೆಗಳಿಗೂ ಅಸಾಧ್ಯವಾಗಿತ್ತಂತೆ. ನೇರವಾಗಿ ನೋಡಲು ಕಷ್ಟವಾದ ತೇಜೋಮೂರ್ತಿಗಳ ಸಂಗಮ. ಅತಿ ಉಗ್ರ ರೂಪ. ಬಾಲಕ ಪ್ರಹ್ಲಾದನು ಭಯವಿಲ್ಲದೆ ನೋಡಿದ ಮಹಾನುಭಾವ. ಅವನಿಗೆ ಈ ಉಗ್ರರೂಪಗಳ ಶ್ರೀಹರಿಯೂ, ಸೌಮ್ಯ ರೂಪಿ ಶ್ರೀಹರಿಯೂ ಒಂದೇ!

*****


ಪುರಾತನವಾದ ಈ ದೇವಸ್ಥಾನ ಕಾಡಿನಲ್ಲಿ ಮುಚ್ಚಿಹೋಗಿತ್ತಂತೆ. ಅದನ್ನು ಚಂದ್ರನ ಮೊಮ್ಮಗ, ಬುಧ-ಇಳಾ ದಂಪತಿಯರ ಮಗನಾದ ಪುರೂರವ ಮತ್ತು ಊರ್ವಶಿಯರು (ನಹುಷನ ತಂದೆ ಮತ್ತು ಯಯಾತಿಯ ತಾತ) ಪುನಃ ಜನರಿಗೆ ದರ್ಶನ ಸಿಗುವಂತೆ ಮಾಡಿದರು ಎಂದು ಸ್ಥಳ ಪುರಾಣ ಹೇಳುತ್ತದೆ. ಈ ದೇವಳದಲ್ಲಿ ಹದಿನಾರು ಕಂಭಗಳ ನಾಟ್ಯಮಂಟಪ ಮತ್ತು ತೊಂಬತ್ತಾರು ಕಂಭಗಳ ಕಲ್ಯಾಣ ಮಂಟಪ ಉಂಟು. 

ಉಗ್ರ ವರಾಹ-ಲಕ್ಷ್ಮೀನರಸಿಂಹ ವಿಗ್ರಹವನ್ನು ವರುಷದ ಒಂದು ದಿನ ಬಿಟ್ಟು, ಬಾಕಿ ಎಲ್ಲಾ ದಿನಗಳಲ್ಲೂ ಶ್ರೀಗಂಧ ಲೇಪನದಿಂದ ಮುಚ್ಚಿರುತ್ತಾರೆ. ಈ ಕಾರಣದಿಂದ ಅದು ಒಂದು ದೊಡ್ಡ ಶಿವಲಿಂಗ ಇರುವಂತೆ ಕಾಣುತ್ತದೆ. ಆ ಗಂಧದಿಂದ ತುಂಬಿದ ಮೂರ್ತಿಯ ಮೇಲೆ ನಾಮ, ಕಣ್ಣು, ಮೂಗು, ಮುಂತಾದುವನ್ನು ಅಂಟಿಸಿ ಅರ್ಚಿಸುತ್ತಾರೆ. ದರ್ಶನಕ್ಕೆ ಬಂದ ಭಕ್ತರಿಗೆ ಕಾಣುವ ಮೂರ್ತಿಯು ಮೇಲಿನ ಚಿತ್ರದಂತೆ ಇರುತ್ತದೆ. 

ವರುಷದ ಒಂದು ದಿನ ಮಾತ್ರ, ಅಕ್ಷಯ ತೃತೀಯಾ ದಿನದಂದು, ಈ ಗಂಧ ಲೇಪನ ಎಲ್ಲವನ್ನೂ ತೆಗೆದು ಮೂಲ ವಿಗ್ರಹವನ್ನು ನೋಡಲು ಅವಕಾಶ ಮಾಡಿಕೊಡುತ್ತಾರೆ. ಆ ದಿನವೂ ವಿಗ್ರಹವನ್ನು ನೇರವಾಗಿ ನೋಡಿದರೆ ಕಣ್ಣುಗಳು ಉರಿಯುತ್ತವೆ ಮತ್ತು ರಕ್ತ ಬರುತ್ತದೆ ಎಂದು ನಂಬಿಕೆ. ಆದ ಕಾರಣ ಅಕ್ಷಯ ತೃತೀಯಾ ದಿನದಂದು ಮೂಲ ವಿಗ್ರಹದ ಮುಂದೆ ಒಂದು ಅತಿ ತೆಳುವಾದ ಪರದೆ ಇರುತ್ತದೆ. ಈ ಪರದೆಯ ಮೂಲಕ ವಿಗ್ರಹ ಚೆನ್ನಾಗಿ ಕಾಣುತ್ತದಂತೆ. ಅಂದು ದರ್ಶನ ಪಡೆಯಲು ಜನಜಂಗುಳಿ. ತಿರುಪತಿಯ ಶ್ರೀನಿವಾಸನ ದರ್ಶನದಂತೆ ದರ್ಶನ ಬಲು ಕಠಿಣವಂತೆ. ದರ್ಶನ ಸಿಕ್ಕರೆ ಸಿಗಬಹುದು. ಇಲ್ಲದಿದ್ದರೆ ಇಲ್ಲ. ಹೀಗೆಂದು ನೋಡಿ ಬಂದ  ಮಹಾನುಭಾವರು ಹೇಳುತ್ತಾರೆ. 

*****

ಪರಮಾತ್ಮನಿಗೆ ಅರ್ಪಿಸಿದ ಪ್ರತಿಯೊಂದು ಪದಾರ್ಥವೂ ಪೂಜ್ಯವೇ. ಪೂಜೆಯ ನಂತರ ಅವು ಪ್ರಸಾದವೇ. ಹೀಗಾಗಿ ಅವಕ್ಕೆ ಹೆಚ್ಚಿನ ಮಹತ್ವವುಂಟು. ನಾವು ಸಾಮಾನ್ಯವಾಗಿ ತಿಳಿದಂತೆ ಹಣ್ಣು-ಹಂಪಲು, ತಿಂಡಿ-ಆಹಾರ ಪದಾರ್ಥಗಳು ಮಾತ್ರ ಪ್ರಸಾದ ಅಲ್ಲ. ಹೂವು-ತುಲಸಿಗಳೂ ಪ್ರಸಾದವೇ. ಪೂಜೆಯ ವೇಳೆ ಕೊಟ್ಟ ವಸ್ತ್ರವೂ ಪ್ರಸಾದವಾಗಿ "ಶೇಷ ವಸ್ತ್ರ" ಎಂದು ಉಪಯೋಗ ಆಯಿತು. ಧೂಪಕ್ಕೆ ಉಪಯೋಗಿಸಿದ ಕೆಂಡವು ಆರಿದ ಬಳಿಕ ಇಜ್ಜಲಾಯಿತು. ಅದೂ ಪ್ರಸಾದ ಆದುದರಿಂದ ಹಣೆಯಲ್ಲಿ ಅಂಗಾರ ಆಗಿ ಸ್ವೀಕಾರ ಆಯಿತು. ತಿಂಡಿ-ತಿನಿಸುಗಳು, ಹಣ್ಣು-ಹಂಪಲುಗಳು ಸೇವನೆಗೆ ಯೋಗ್ಯ ಪರಮ ಪ್ರಸಾದ ಆಯಿತು. ಹೀಗೆ ಅವುಗಳ ಪೂಜ್ಯತೆ. 

ಪೂಜೆಗೆ ಗಂಧ ತೆಗೆದು ಅರ್ಪಿಸಿದ್ದಾಯಿತು. ಅದರಲ್ಲಿ ಮಿಕ್ಕಿದ್ದು ಹೀಗೆಯೇ ಪ್ರಸಾದ ಆಯಿತು. ನಮ್ಮ ದೇಹದ ಮೇಲೆ ಹಚ್ಚಿಕೊಳ್ಳುವುದಾಯಿತು. ಅದೇ ಪ್ರಸಾದ ಆದಮೇಲೆ ಅವನ ವಿಗ್ರಹದ ಮೇಲೆ ಏರಿಸಿದ ಗಂಧ ದೊಡ್ಡ ಪ್ರಸಾದ ಎಂದು ಬೇರೆ ಹೇಳಬೇಕಾಗಿಲ್ಲ. ಪ್ರಹ್ಲಾದರಾಜರು ಅವನ್ನು ಪ್ರಸಾದರೂಪದಲ್ಲಿ ಧರಿಸಿದರಂತೆ. 

ಇದೇ ಪ್ರಹ್ಲಾದರಾಜರು ಈಗ ಶ್ರೀ ರಾಘವೇಂದ್ರ ರಾಯರಾಗಿ ಮಂತ್ರಾಲಯದಲ್ಲಿ ವೃಂದಾವನದಲ್ಲಿ ಕುಳಿತಿದ್ದಾರೆ ಎಂದು ನಂಬಿಕೆ. ಅದೇ ಭಾವ ಮೃತ್ತಿಕಾ ವೃಂದಾವನಗಳಲ್ಲಿಯೂ ಉಂಟು. "ಅಂಥ  ಇಂಥವರಲ್ಲ" ಅನ್ನುವ ಹಿಂದಿನ ಒಂದು ಸಂಚಿಕೆಯಲ್ಲಿ ಇದನ್ನು ನೋಡಿದ್ದೇವೆ. (ಇಲ್ಲಿ ಕ್ಲಿಕ್ ಮಾಡಿ ಅದನ್ನು ಓದಬಹುದು). ಈ ಕಾರಣ ಅಕ್ಷಯ ತೃತೀಯಾ ದಿನದಂದು ಸಿಂಹಾಚಲ ಶ್ರೀ ವರಾಹ-ಲಕ್ಷ್ಮಿ ನರಸಿಂಹನ ದೇವಾಲಯದಲ್ಲಿ ಮೂಲ ಮೂರ್ತಿಗೆ ಗಂಧವಿಲ್ಲದ ದಿನ ಇಲ್ಲಿ ಶ್ರೀ ರಾಯರ ವೃಂದಾವನಕ್ಕೆ ಅವನ ಪ್ರಸಾದ ರೂಪದ ಗಂಧ ಲೇಪನ. ವರುಷದ ಎಲ್ಲ ದಿನ ಅಲ್ಲಿ ಅವನಿಗೆ ಗಂಧ ಲೇಪನ ಮತ್ತು ಭಕ್ತರಿಗೆ ಹಾಗೆ ದರ್ಶನ. ಅವನಿಗೆ ಹೀಗೆ ಗಂಧವಿಲ್ಲದ ಒಂದು ದಿನ ಇಲ್ಲಿ ಶ್ರೀ ರಾಯರಿಗೆ ಅವನ ಪ್ರಸಾದರೂಪದ ಗಂಧ ಲೇಪನ ಮತ್ತು ಭಕ್ತರಿಗೆ ಹೀಗೆ ದರ್ಶನ. ಮಾರನೆಯ ದಿನ ವೃಂದಾವನದ ಮೇಲಿರುವ ಗಂಧ ಶ್ರೀ ರಾಯರ ಪ್ರಸಾದ. ಅದಕ್ಕೆ ಬಹಳ ಗೌರವ ಮತ್ತು ಬೆಲೆ. ಹೀಗೆ ನಡೆಯುತ್ತಿದೆ!

Monday, August 11, 2025

ದೊಡ್ಡವರ ಶಾಪಗಳೆಂಬ ವರಗಳು


ಹಿಂದಿನ ಸಂಚಿಕೆಯಲ್ಲಿ "ಸೋರಿಹೋಗುವ ನೀರಿನಂತೆ" ಎನ್ನುವ ಶೀರ್ಷಿಕೆಯಡಿ ಶಾಪಗಳ ಕಾರಣಗಳನ್ನೂ ಮತ್ತು ಅವುಗಳ ಪರಿಣಾಮಗಳನ್ನೂ ಸ್ವಲ್ಪ ನೋಡಿದೆವು. (ಇಲ್ಲಿ ಕ್ಲಿಕ್ ಮಾಡಿ ಆ ಸಂಚಿಕೆಯನ್ನು ಓದಬಹುದು). ಅನೇಕ ವೇಳೆ ಶಾಪಗಳು ದೊಡ್ಡ ರೀತಿಯ ವರಗಳೇ ಆಗಿ ರೂಪಾಂತರವಾಗುವ ಕಥೆಗಳನ್ನು ಕೇಳಿದ್ದೇವೆ. ಶ್ರೀ ರಾಘವೇಂದ್ರ ಸ್ವಾಮಿಗಳ 354 ವರ್ಷದ ಆರಾಧನೆಯ ಸಂದರ್ಭದಲ್ಲಿ ಅವರ ಅವತಾರದ ಬಗ್ಗೆ ಇರುವ ಶಾಪದ ಸಂಗತಿ ನೆನೆಸಿಕೊಳ್ಳುವುದು ಯೋಗ್ಯವೇ. ಆ ಶಾಪವು ಹೇಗೆ ಅನೇಕರಿಗೆ ವರವಾಗಿ ಪರಿಣಮಿಸಿತು ಎನ್ನುವುದನ್ನು ಸ್ವಲ್ಪ ಮಟ್ಟಿಗೆ ನೋಡೋಣ. 

"ಕ್ರೋಧೋಪಿ ದೇವಸ್ಯ ವರೇಣ ತುಲ್ಯ:" ಎಂದು ಒಂದು ಸಂಸ್ಕೃತದ ಹೇಳಿಕೆಯಿದೆ. ಕನ್ನಡದ ಗಾದೆಯಂತೆ. ಮಹಾಭಾರತದ ಶಾಂತಿ ಪರ್ವದ ಸಂದರ್ಭದಲ್ಲಿ ಇದರ ವಿಸ್ತಾರ ಸಿಗುತ್ತದೆ. ಇದರ ಸಂಕ್ಷಿಪ್ತ ಅರ್ಥ "ದೊಡ್ಡವರ ಕೋಪವೂ ವರಕ್ಕೆ ಸಮವು. ಅವರ ಕೋಪವೂ ಮಾನ್ಯವೇ!" ಎಂದು. ಒಬ್ಬರು ಇನ್ನೊಬ್ಬರನ್ನು  ಕಂಡಾಗ ಮೂರು ರೀತಿಗಳಲ್ಲಿ ಪ್ರತಿಕ್ರಯಿಸಬಹುದು. ಮೊದಲನೆಯದು ಉದಾಸೀನತೆ. ನೋಡಿಯೂ ನೋಡದಂತೆ ವ್ಯವಹರಿಸುವುದು. ಇದರಿಂದ ಏನೂ ಪ್ರಯೋಜನವಿಲ್ಲ. ಅದು ನೋವಿನ ಸಂಗತಿಯೇ. ಎರಡನೆಯದು ಸಂತೋಷದಿಂದ ನೋಡುವುದು. ಇದು ಬೇಕಾದದ್ದು. ಮೂರನೆಯದು ಕೋಪದಿಂದ ಗದರಿಸುವುದು ಇತ್ಯಾದಿ. ಇದರಲ್ಲಿ ಪ್ರೀತಿಯಿಲ್ಲದಿದ್ದರೂ ಉದಾಸೀನತೆ ಇಲ್ಲ. ನೋಡಿಯೂ ನೋಡದಿರುವಂತೆ ಇರುವುದಕ್ಕಿಂತ ಇದು ವಾಸಿ! ದೊಡ್ಡವರು ಹುಸಿ ಕೋಪದಿಂದ ಗದರಿಸಿದಂತೆ ಮಾಡಿದರೂ ಅವರು ನಮ್ಮನ್ನು ಗಮನಿದರಲ್ಲಾ, ಅಷ್ಟು ಸಾಕು ಎನ್ನುವ ಸಮಾಧಾನ. ಅದೇ ನಮ್ಮ ಭಾಗ್ಯೋದಯಕ್ಕೆ ದಾರಿ ಮಾಡುತ್ತದೆ ಎನ್ನುವ ಬಲವಾದ ನಂಬಿಕೆ. 

ಗುರುರಾಯ ಶ್ರೀ ರಾಘವೇಂದ್ರ ಸ್ವಾಮಿಗಳ ಅವತಾರವೂ ಈ ರೀತಿಯ ದೊಡ್ಡವರ ಒಂದು ಕೋಪದಿಂದಾದ ಶಾಪರೂಪಿ ವರದ ಪ್ರಭಾವ ಎಂದು ಅವರನ್ನು ನಂಬಿದ ಜನ ತಿಳಿಯುತ್ತಾರೆ.  

*****

ಚತುರ್ಮುಖ ಬ್ರಹ್ಮದೇವರೂ ಪ್ರತಿದಿನ ದೇವತಾರ್ಚನೆ ಮಾಡುತ್ತಾರಂತೆ. ಅದು ಮಾಡುವುದು ಒಂದು ತಪ್ಪಿಸಬಾರದ ಕರ್ತವ್ಯವೆಂದು ಎಲ್ಲರಿಗೆ ತೋರಿಸುವ ಸಲುವಾಗಿ. ಅವರು ಪ್ರತಿಕ್ಷಣ ಮಾಡುವುದೂ ಅದನ್ನೇ ಎನ್ನುವುದು ಬೇರೆ ಮಾತು. ಆದರೆ ದಿನಚರಿಯಲ್ಲಿ ಅದೂ ಒಂದು ಕಟ್ಟಲೆ. ಅವರ ಅಪ್ಪ-ಅಮ್ಮನಾದ ಲಕ್ಷ್ಮೀ-ನಾರಾಯಣರ ಅತಿ ದಿವ್ಯವಾದ ಪೂಜೆ-ಪುನಸ್ಕಾರಗಳು. ಅವರ ದೇವರಪೂಜೆ ಅಂದರೆ ಸಾಮಾನ್ಯವಲ್ಲ. ನಮ್ಮಂತೆ ಮನಸ್ಸು ಒಂದು ಕಡೆ, ಮಾತು ಇನ್ನೊಂದರ ಕುರಿತು, ದೇಹ ಮಾತ್ರ ಪೂಜೆಯಲ್ಲಿ. ಹೀಗಲ್ಲ. ಆದ್ದರಿಂದ ಅವರ ಪೂಜೆಯಲ್ಲಿ ಇನ್ನಿಲ್ಲದ ಸೊಗಸು. ಅವರು "ಕೇಶವಾಯ ನಮಃ" ಎಂದರೆ ಕೇಶವರೂಪಿ ಪರಮಾತ್ಮನು ಎದುರು ನಿಂತು ನಗೆಮೊಗದಿಂದ ಸ್ವೀಕರಿಸುತ್ತಾನಂತೆ. ಮತ್ತೆ "ನಾರಾಯಣಾಯ ನಮಃ" ಎಂದರೆ ನಾರಾಯಣ ರೂಪದಲ್ಲಿ ಬಂದು ನಿಲ್ಲುವನು. "ಮತ್ಸ್ಯಾಯ ನಮಃ" ಅಂದರೆ ಮತ್ಸ್ಯರೂಪಿ ಪರಮಾತ್ಮ ಹಾಜರು. "ಕೂರ್ಮಾಯ ನಮಃ" ಎಂದರೆ ಕೂರ್ಮರೂಪದಲ್ಲಿ.  ಹೀಗೆ ಉದ್ದಕ್ಕೂ.  ಅದನ್ನು ನೆನೆಸಿಕೊಂಡರೇ ಅದೊಂದು ದಿವ್ಯವಾದ ಅನುಭವ. 

ಶ್ರೀಮಠಗಳ ಆಸ್ಥಾನ ಪೂಜೆ ವ್ಯವಸ್ಥೆ ಅವನ್ನು ನೋಡಿದವರಿಗೆ ಗೊತ್ತು. ಮಠದ ಶ್ರೀಗಳು ಪೂಜಾದಿಗಳನ್ನು ಮಾಡುವಾಗ ಅವರ ಸಹಾಯಕರಾಗಿ ಶಿಷ್ಯರಿರುತ್ತಾರೆ. ಕಾಲಕಾಲಕ್ಕೆ ತಕ್ಕಂತೆ ಪೂಜಾಸಾಮಗ್ರಿಗಳನ್ನು ಒದಗಿಸಿ ಕೊಡುವುದು ಅವರ ಕೆಲಸ. ಹೂವುಗಳು, ಹಣ್ಣುಗಳು, ಧೂಪ, ದೀಪ ಇತ್ಯಾದಿಗಳು ಅವರು ಕೈ ನೀಡಿದಾಗ ಸಮಯಕ್ಕೆ ಅನುಗುಣವಾಗಿ ಸಿಗಬೇಕು. ಮಂಗಳಾರತಿಯೇ ಒಂದು ಹದಿನೈದು-ಇಪ್ಪತ್ತು ರೀತಿಯವು. ಸಣ್ಣ ತಟ್ಟೆಯಲ್ಲಿ, ದೊಡ್ಡ ತಟ್ಟೆಯಲ್ಲಿ, ಹಲಗಾರತಿ, ಕುಂಭಾರತಿ, ಏಕಾರತಿ, ಅನೇಕಾರತಿ, ಹೀಗೆ ವೈವಿಧ್ಯಪೂರ್ಣ ಮಾದರಿಗಳು. ಎಲ್ಲವೂ ಸರಿಯಾಗಿ ತಯಾರಿರಬೇಕು. ಪೂಜೆ ಎಲ್ಲೂ ಮಧ್ಯೆ ತಡವರಿಸದಂತೆ ಸಾಂಗವಾಗಿ ನಡೆಯಬೇಕು. ಇದು ಒಂದು ಕಟ್ಟುನಿಟ್ಟಾದ ಕ್ರಮ. 

ಚತುರ್ಮುಖ ಬಹ್ಮದೇವರಿಗೆ ಹೀಗೆ ಪೂಜಾಸಮಯದಲ್ಲಿ ಸಹಾಯಕನಾಗಿರುವುದು "ಶಂಖುಕರ್ಣ" ಎಂಬ ಒಬ್ಬ ಕರ್ಮಜದೇವತೆಯ ಕೆಲಸ. ಕಾಲಕಾಲಕ್ಕೆ ಹೂವು ತುಂಬಿದ ತಟ್ಟೆಗಳನ್ನು ಕೈಗೆ ಕೊಡುವುದು ಅದರಲ್ಲಿ ಒಂದು. ಒಂದು ಹರಿವಾಣ ಅರ್ಪಿಸಿ ಬರಿದಾದಂತೆ ಅದನ್ನು ಹಿಂತೆಗೆದುಕೊಂಡು ಹೂವು ತುಂಬಿದ ಮತ್ತೊಂದನ್ನು ತಕ್ಷಣ ಕೊಡಬೇಕು. ಗಮನವೆಲ್ಲ ಇದರ ಮೇಲೆಯೇ ಇರಬೇಕು. ಒಂದು ಕ್ಷಣವೂ ತಪ್ಪಬಾರದು. ಹೀಗೆಯೇ ನಡೆಯಬೇಕು. 

ಒಂದು ದಿನ ಹೀಗೆ ಪೂಜಾಸಮಯದಲ್ಲಿ ಮತ್ಸ್ಯ, ಕೂರ್ಮರ ನಂತರ ವರಾಹರೂಪಿ ಪರಮಾತ್ಮನ ಸ್ಮರಣೆ ಬಂತು. ಅಚ್ಚ ಬಿಳಿಯ ಬಣ್ಣದ "ಶ್ವೇತ ವರಾಹಮೂರ್ತಿ" ಮೈದೋರಿದ. ಆ ಮೂರ್ತಿಯ ದಿವ್ಯ ಸುಂದರ ರೂಪ ನೋಡುತ್ತಾ ಶಂಖುಕರ್ಣ ಮೈಮರೆತ. ಬ್ರಹ್ಮದೇವರು ಕೈ ನೀಡಿದಾಗ ಹೂವು ತುಂಬಿದ ತಟ್ಟೆಯ ಬದಲು ಪಕ್ಕದಲ್ಲಿದ್ದ ಖಾಲಿ ತಟ್ಟೆ ಸಿಕ್ಕಿತು. ಬ್ರಹ್ಮದೇವರು ನೋಡಿದರೆ ಕೈಯಲ್ಲಿ ಖಾಲಿ ತಟ್ಟೆ! ದೊಡ್ಡ ಅಪಚಾರ. ಥಟ್ಟೆ೦ದು ಶಂಖುಕರ್ಣನನ್ನು ನೋಡಿ "ನೀನು ಭೂಲೋಕದಲ್ಲಿ ಅನೇಕ ಜನ್ಮಗಳನ್ನು ತಾಳು" ಎಂದು ಶಪಿಸಿಬಿಟ್ಟರು. 
*****

ಶಪಿಸುವ ಕ್ರಿಯೆಯೆನೋ ನಡೆದುಹೋಯಿತು. ಪಕ್ಕದಲ್ಲಿ ಸಂಗೀತ, ನೃತ್ಯಸೇವೆಗಳಿಗೆ ತಯಾರಾಗಿ ನಿಂತಿದ್ದ ತಾಯಿ ಶಾರದೆ ಇದನ್ನು ಕಂಡಳು. 

"ಇದೇನು! ಹೀಗೆ ಶಪಿಸಿಬಿಟ್ಟಿರಿ?"
"ಅಪಚಾರ ಆಗಲಿಲ್ಲವೇ? ಪರಿಣಾಮ ಅನುಭವಿಸಲೇಬೇಕಲ್ಲ"
"ಪರಮಾತ್ಮನ ದಿವ್ಯ ಮಂಗಳ ಮೂರ್ತಿಯನ್ನು ಕಣ್ಣಾರೆ ಕಂಡು ಮೈ ಮರೆಯದವರು ಯಾರುಂಟು? ಅದಕ್ಕೆ ಹೀಗೆ ಶಾಪ ಕೊಡುವುದೇ?"
"ಕೊಟ್ಟವನು ನಾನಲ್ಲ. ಕೊಡಿಸಿದವನು ಅವನೇ. ಎಲ್ಲರಿಗೂ ಅಪ್ಪನಾದ ನಮ್ಮಪ್ಪ"
"ಶಂಕುಕರ್ಣನ ಮುಂದಿನ ಹಾದಿ?"
"ಅವನಿಗೆ ಈ ಶಾಪವೇ ವರವಾಗುತ್ತದೆ. ಮುಂದೆ ಹಾಗೆ ಜನ್ಮ ತಾಳಿದಾಗ ನರಸಿಂಹ-ರಾಮ-ಕೃಷ್ಣರ ಅಖಂಡ ದರ್ಶನ ಆಗುತ್ತದೆ. ಇನ್ನಿಲ್ಲದಷ್ಟು ಪುಣ್ಯ ಸಂಪಾದನೆಗೆ ಇದೊಂದು ದಾರಿಯಾಗುತ್ತದೆ"
"ಆಮೇಲೆ?"
"ಅಷ್ಟೇ ಅಲ್ಲ. ಅವನ ಅನುಯಾಯಿಗಳಿಗೂ ಬಹುಪರಿಯ ಅನುಗ್ರಹಗಳಾಗುತ್ತವೆ. ನಿನ್ನ ಅನುಗ್ರಹವಂತೂ ಈಗಲೇ ಆಗಿದೆಯಲ್ಲ!"

ಈ ಶಾಪದ ಪರಿಣಾಮವಾಗಿ ಮುಂದೆ ಶಂಖುಕರ್ಣನು ಹಿರಣ್ಯಕಶಿಪು-ಕಯಾದು ದಂಪತಿಗಳ ಮಗನಾದ ಪ್ರಹ್ಲಾದನಾಗಿ ಹುಟ್ಟುತ್ತಾನೆ. ನಂತರ ಕನ್ನಡ ರಾಜ್ಯರಮಾರಮಣ ಶ್ರೀ ಕೃಷ್ಣದೇವರಾಯನ ರಾಜುಗುರು "ವ್ಯಾಸತೀರ್ಥ", ನಂತರ ಗುರು "ರಾಘವೇಂದ್ರ ತೀರ್ಥ" ಆಗಿ ಬರುತ್ತಾರೆ. ಹೀಗೆ ಅವರನ್ನು ನಂಬಿದವರು ಆರಾಧಿಸುತ್ತಾರೆ. ಕ್ರಮವಾಗಿ ನರಸಿಂಹ-ಶ್ರೀಕೃಷ್ಣ-ಮೂಲರಾಮರ ಆರಾಧಕರಾಗಿ, ನಂಬಿದವರ ನೆರವಿಗೆ ನಿಲ್ಲುತ್ತಾರೆ. 
*****

ವೀಣಾ ವೆಂಕಟನಾಥ ಭಟ್ಟರು ಗುರುಗಳಾದ ಶ್ರೀ ಸುದೀಂಧ್ರ ತೀರ್ಥರಿಂದ ಸನ್ಯಾಸ ತೆಗೆದುಕೊಂಡು "ಶ್ರೀ ರಾಘವೇಂದ್ರ ತೀರ್ಥ" ಹೆಸರಿನಿಂದ ಪ್ರಖ್ಯಾತರಾದರು. ಒಂದು ಸಂದರ್ಭದಲ್ಲಿ ವಿದ್ಯೆಯ ಅವಕಾಶವೇ ಇಲ್ಲದ ವೆಂಕಣ್ಣನೆಂಬ ಯುವಕನೊಬ್ಬನಿಗೆ ಅವರ ಅನುಗ್ರಹವಾಗಿ, ಆದವಾನಿ ನವಾಬ ಸಿದ್ದಿ ಮಸೂದ್ ಖಾನ್ ಆಪ್ತನಾಗಿ ಸಂಸ್ಥಾನದ ದಿವಾನನಾದನು. ನವಾಬನು ಒಮ್ಮೆ ಗುರುಗಳನ್ನು ಪರೀಕ್ಷಿಸಲು ಹೋಗಿ ಪಶ್ಚಾತಾಪ ಪಟ್ಟನು. ಅವರಿಗೆ ಏನಾದರೂ ಕೊಡಬೇಕು, ಆ ಮೂಲಕ ತಪ್ಪು ಸರಿಮಾಡಿಕೊಳ್ಳಬೇಕೆಂದು ಆಸೆಪಟ್ಟನು. ರಾಯರು ತಮಗೆ ಏನೂ ಬೇಡವೆಂದರು. ಕಡೆಗೆ ನವಾಬನ ಅನೇಕ ಮನವಿಗಳ ನಂತರ "ಮಂಚಾಲೆ" ಎನ್ನುವ ಗ್ರಾಮವನ್ನು ಕೊಡಲು ಹೇಳಿದರು. ನವಾಬನು "ಅದೊಂದು ಕುಗ್ರಾಮ. ಅದರ ಬದಲು ಬೇರೆ ಕೇಳಿ" ಎಂದನು. ಗುರುಗಳು "ಕೊಡುವುದಿದ್ದರೆ ಅದು ಕೊಡಿ. ಇಲ್ಲದಿದ್ದರೆ ಬೇರೆ ಏನೂ ಬೇಡ" ಎಂದುಬಿಟ್ಟರು. 

ಕಡೆಗೆ ಮಂಚಾಲೆ ಗ್ರಾಮ ಸಿಕ್ಕಿತು. ರಾಯರು ವೆಂಕಣ್ಣನನ್ನು ಅಲ್ಲಿಗೆ ಕರೆದುಕೊಂಡು ಹೋಗಿ ತುಂಗಾನದಿ ತೀರದ ಸ್ಥಳವೊಂದನ್ನು ತೋರಿಸಿ ಅಲ್ಲಿ ಅಗೆಸಲು ಹೇಳಿದರು. ಹಾಗೆ ಅಗೆದಾಗ ಅಲ್ಲಿನ ಭೂಮಿಯಲ್ಲಿ ಬಹಳ ಹಿಂದಿನ ಹೋಮಕುಂಡಗಳ ಅವಶೇಷಗಳು ಸಿಕ್ಕಿದವು. "ಇವು ಹಿಂದೆ ಪ್ರಹ್ಲಾದರಾಜರು ಯಾಗಗಳನ್ನು ಮಾಡಿದ ಸ್ಥಳ. ನಾವು ಇಲ್ಲಿಯೇ ವೃಂದಾವನ ಪ್ರವೇಶ ಮಾಡುತ್ತೇವೆ" ಎಂದರು. 

ಒಲ್ಲದ ಮನಸ್ಸಿನಿಂದ ವೆಂಕಣ್ಣನು ಒಂದು ಸುಂದರವಾದ ವೃಂದಾವನವನ್ನು ಮಾಡಿಸಿ ಗುರುಗಳಿಗೆ ತೋರಿಸಿದನು. ರಾಯರು ನಕ್ಕು, ವೆಂಕಣ್ಣನನ್ನು ಮಾದಾವರ ಎಂಬ ಗ್ರಾಮಕ್ಕೆ ಕರೆದುಕೊಂಡು ಹೋದರು. (ಈಗಲೂ ಮಂತ್ರಾಲಯಂ ರೋಡ್ ರೈಲು ನಿಲ್ದಾಣದಿಂದ ಮಂತ್ರಾಲಯಕ್ಕೆ ಹೋಗುವ ದಾರಿಯಲ್ಲಿ ಈ ಗ್ರಾಮವಿದೆ). ಅಲ್ಲಿ ಕೆರೆಯ ದಂಡೆಯ ಶಿಲೆಯೊಂದನ್ನು ತೋರಿಸಿದರು. "ಶ್ರೀರಾಮಚಂದ್ರ ದೇವರು ಕಿಷ್ಕಿಂಧೆಯ ಕಡೆ ಬಂದಿದ್ದಾಗ ಇಲ್ಲಿ ಬಂದು ಈ ಶಿಲೆಯ ಮೇಲೆ ಸ್ವಲ್ಪ ಕಾಲ ಕುಳಿತಿದ್ದರು. ಈ ಶಿಲೆಯಲ್ಲಿ ಒಂದು ಮಾರುತಿಯ ವಿಗ್ರಹ ಮಾಡಿಸಿ. ಮಿಕ್ಕಿದ ಶಿಲೆಯಲ್ಲಿಯೇ ನಮ್ಮ ವೃಂದಾವನ ಆಗಬೇಕು" ಎಂದು ಆದೇಶಿಸಿದರು. (ಮಾರುತಿಯ ವಿಗ್ರಹವನ್ನು ಶ್ರೀ ರಾಯರ ಬೃಂದಾವನದ ಮುಂದೆ ಈಗಲೂ ಕಾಣಬಹುದು). 

ವೆಂಕಣ್ಣನಿಗೆ ಸಂಕೋಚವಾಯಿತು. ಈಗ ಮಾಡಿಸಿರುವ ವೃಂದಾವನ ಏನು ಮಾಡುವುದು ಎಂಬ ಯೋಚನೆ. "ಚಿಂತಿಸಬೇಡಿ. ಮುಂದೆ ನಮ್ಮ ಪೀಠದಲ್ಲಿ ಬರುವವರೊಬ್ಬರು ಅದನ್ನು ಉಪಯೋಗಿಸುತ್ತಾರೆ" ಎಂದರು. (ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನದ ಪಕ್ಕದಲ್ಲೇ, ಅದೇ ರೀತಿ ಇರುವ ಭವ್ಯ ಶ್ರೀ ವಾದೀಂದ್ರ ತೀರ್ಥರ ವೃನ್ದಾವನವೇ ಅದು). ತಮ್ಮ ತೀರ್ಮಾನದಂತೆ ಶ್ರಾವಣ ಬಹುಳ ಬಿದಿಗೆಯಂದು ಶ್ರೀ ರಾಯರು ಸಶರೀರವಾಗಿ ವೃಂದಾವನ ಪ್ರವೇಶ ಮಾಡಿದರು. ಅದಾಗಿದ್ದು ಇಂದಿಗೆ 354 ವರುಷಗಳ ಹಿಂದೆ. ಬದುಕಿರುವಾಗಲೇ ವೃಂದಾವನ ಪ್ರವೇಶ ಮಾಡಿದ ಕೆಲವೇ ಮಹನೀಯರಲ್ಲಿ ಶ್ರೀ ರಾಘವೇಂದ್ರ ತೀರ್ಥರೂ ಒಬ್ಬರು. 

ಅವರ ಬೃಂದಾವನದಲ್ಲಿ 732 ಸಾಲಿಗ್ರಾಮಗಳೂ, ಅನೇಕ ದೇವತಾ ಮೂರ್ತಿಗಳೂ ಇವೆ. ಆ ಬೃಂದಾವನಕ್ಕೆ ಒಂದು ಪ್ರದಕ್ಷಿಣೆ ಬಂದರೆ ಒಂದು ಸಾವಿರ ಪ್ರದಕ್ಷಿಣೆಯ ಫಲ ಉಂಟು ಎನ್ನುವುದು ಸುಮ್ಮನೆ  ಹೇಳುವ ಮಾತಲ್ಲ. 

*****

ಸನ್ಯಾಸ ಪಡೆಯುವುದಕ್ಕೆ ಮೊದಲು, ಗೃಹಸ್ಥರಾಗಿದ್ದಾಗ ವೆಂಕಟನಾಥರು ಅತ್ಯಂತ ಬಡತನದಿಂದ ಬಳಲಿದರು. ವಾರಕ್ಕೆ ಮೂರು-ನಾಲ್ಕು ಏಕಾದಶಿ ಮಾಡುತ್ತಿದ್ದಾರೆಂದು ಹೇಳುತ್ತಾರೆ. ಆದರೂ ಒಬ್ಬರಲ್ಲಿ ಒಂದು ಹಿಡಿ ಧಾನ್ಯವನ್ನೂ ಬೇಡಲಿಲ್ಲ. ತಾವಾಗಿ ಕೊಡಲು ಬಂದ ದಾನಿಗಳನ್ನೂ, ದತ್ತಿಗಳನ್ನೂ ನಿರಾಕರಿಸಿದರು. ಅವರು ಅದ್ವಿತೀಯ ವೀಣಾವಾದಕರಾಗಿದ್ದರು. ವಿಜಯನಗರ ಸಾಮ್ರಾಜ್ಯದ ಆಸ್ಥಾನ ವಿದ್ವಾಂಸರಾಗಿದ್ದ ಕನಕಾಚಲ ಭಟ್ಟರ ಮೊಮ್ಮಗ. ಸಾಮ್ರಾಟರಿಗೆ ವೀಣಾ ಗುರುಗಳಾಗಿದ್ದ ತಿಮ್ಮಣ್ಣ ಭಟ್ಟರ ಮಗ. ಅದೊಂದು ವಿದ್ಯೆಯಿಂದಲೇ ಸಿರಿವಂತರಾಗಿ ಮೆರೆಯಬಹುದಿತ್ತು. ವೈರಾಗ್ಯ ಮೂರ್ತಿಗಳಾಗಿ ಸಾಧನೆ, ವಿದ್ಯೆ, ಪಾಠ-ಪ್ರವಚನಗಳಿಗೆ ಜೀವನ ಮೀಸಲಿಟ್ಟರು. ಅನೇಕ ಅಮೂಲ್ಯ ಗ್ರಂಥಗಳನ್ನು ರಚಿಸಿದರು. 

ಈಗ ಪ್ರತಿದಿನ ಅವರ ವೃಂದಾವನಗಳಿರುವ ಸ್ಥಳಗಳಲ್ಲಿ ಲಕ್ಷ ಲಕ್ಷ ಮಂದಿ ಪ್ರಸಾದ ಪಡೆಯುತ್ತಾರೆ. ಅವರ ಆರಾಧನೆಯ ದಿನಗಳಲ್ಲಿ ಲಕ್ಷೋಪಲಕ್ಷ ಮಂದಿ ಮೃಷ್ಟಾನ್ನ ಸೇವಿಸುತ್ತಾರೆ. ವಿದೇಶಗಳಲ್ಲೂ ಆರಾಧನೆ ಉತ್ಸವಗಳು ವೈಭವದಿಂದ ನಡೆಯುತ್ತವೆ. ಸಾಲುಗಳಲ್ಲಿ ನಿಂತು ಜನರು ಸೇವೆಗೆ ಹಣನೀಡಲು ಹಾತೊರೆಯುತ್ತಾರೆ. ಅಮೆರಿಕಾದಂತಹ ದೇಶಗಳಲ್ಲಿ ಆರಾಧನೆಯ ದಿನದ ಊಟದ ಸರತಿಯ ಸಾಲು ನೋಡಿದರೆ ಇದು ಮನದಟ್ಟಾಗುತ್ತದೆ. 

ಅವರಿಗೆ ಆದ ತಾಯಿ ಶಾರದೆಯ ಅನುಗ್ರಹದ ವಿಚಾರವನ್ನು ಮತ್ತೊಂದು ದಿನ ನೋಡೋಣ.