Showing posts with label Daampatya. Show all posts
Showing posts with label Daampatya. Show all posts

Wednesday, June 17, 2026

ವಿಷಮ ದಾಂಪತ್ಯ



ಇಡ್ಲಿ-ಚಟ್ನಿ ಅಥವಾ ಇಡ್ಲಿ-ಸಾಂಬಾರ್, ಇಲ್ಲವೇ ಇನ್ನೂ ಹೆಚ್ಚಿನ ರಸಕವಳ ಬೇಕೆಂದರೆ ತುಪ್ಪದ ಜೊತೆ ಇಡ್ಲಿ-ಸಾಂಬಾರ್-ಚಟ್ನಿ ತಿನ್ನುವವರ ಮನೆಯಲ್ಲಿ ಕುಕ್ಕರ್ ಒಳಗೆ ಇಡ್ಲಿಹಿಟ್ಟು ಹಾಕಿಟ್ಟು ಇಡ್ಲಿ ಮಾಡಲು ಇಡುವ ಇಡ್ಲಿ ಸ್ಟ್ಯಾoಡು ಇರುತ್ತವೆ. ಮನೆಯಲ್ಲಿ ವಾಸವಿರುವ ಜನರು ಮತ್ತು ಅವರ ಆಹಾರ ಸೇವನೆಯ ಸಾಮರ್ಥ್ಯ ಅವಲಂಬಿಸಿ ಅದಕ್ಕೆ ಸರಿಯಾದ ಕುಕ್ಕರ್ ಮತ್ತು ಇಡ್ಲಿ ಸ್ಟ್ಯಾಂಡುಗಳನ್ನು ಇಟ್ಟುಕೊಂಡಿರುತ್ತಾರೆ. ಎರಡು ಅಥವಾ ಮೂರು ಮಂದಿ ಇರುವ ಮನೆಯಲ್ಲಿ 3x3=9 ಇಡ್ಲಿ ಮಾಡುವ ಸ್ಟಾಂಡ್ ಇರಬಹುದು. ಮನೆಯಲ್ಲಿ ಹೆಚ್ಚು ಹಸಿವಿರುವ ನಾಲ್ಕು ಮಂದಿ ಇದ್ದರೆ 4x6=24 ಇಡ್ಲಿ ಮಾಡುವ ಸ್ಟಾಂಡ್ ಇರಬಹುದು. ಪಕ್ಕದ ರಸ್ತೆಯಲ್ಲಿರುವ ದರ್ಶಿನಿಯಲ್ಲಿ 6x6=36 ಇಡ್ಲಿ ಮಾಡುವ ಹತ್ತು ಚೌಕಾಕಾರದ ತಟ್ಟೆಗಳ ದೊಡ್ಡ ಇಡ್ಲಿ ಮೇಕರ್ ಇರುತ್ತದೆ. ಒಂದೇ ಸಲ 360 ಇಡ್ಲಿಗಳು! SLV ರೀತಿಯ ಇಡ್ಲಿ ಸ್ಥಳಗಳಲ್ಲಿ ಇವೂ ಸಾಲುವುದಿಲ್ಲ. ಇಂತಹ ಎರಡು-ಮೂರು ಇಟ್ಟುಕೊಂಡು ಸರತಿಯ ಮೇಲೆ ಬಳಸುತ್ತಾರೆ. 

ಚತುರ್ಮುಖ ಬ್ರಹ್ಮದೇವರು ಆದಿ ಸೃಷ್ಟಿಕರ್ತರು. ಅವರೂ ಇದೇ ತತ್ವವನ್ನು ಅನುಸರಿಸಿದ್ದಾರೆ. ವಾಸ್ತವವಾಗಿ ಅವರು ಮೊದಲು ಪ್ರಾರಂಭಿಸಿದ ಮಾದರಿಯನ್ನು ನಾವು ಮುಂದುವರೆಸಿದ್ದೇವೆ ಅನ್ನುವುದು ಹೆಚ್ಚು ಸರಿಯಾದೀತು. ಮಹಾಪ್ರಳಯದ ನಂತರ ಸೃಷ್ಟಿ ಪ್ರಾರಂಭದಲ್ಲಿ ಹೆಚ್ಚು ಜೀವಿಗಳು ಬೇಕಾಗಿದ್ದರಿಂದ ಈ ಕೆಲಸಕ್ಕಾಗಿ ಸಹಾಯಕವಾಗಲು ಅವರು ಮೊದಲಿಗೆ "ಪ್ರಜಾಪತಿ" ಅನ್ನುವವರನ್ನು ತಮ್ಮ ಮಾನಸಪುತ್ರರಾಗಿ ಹೊರತಂದರು. ಈ ಪ್ರಜಾಪತಿಗಳ ಮೂಲಕ ಮುಂದೆ ಸೃಷ್ಟಿ ದೊಡ್ಡದಾಗುತ್ತಾ ಹೋಯಿತು. ಈ ರೀತಿಯ ಪ್ರಜಾಪತಿಗಳ ಹೆಸರಿಗೆ ಉದಾಹರಣೆ ಕೊಡಬೇಕೆಂದರೆ ದಕ್ಷ ಪ್ರಜಾಪತಿ, ಕರ್ದಮ ಪ್ರಜಾಪತಿ, ಮುಂತಾದವರು. ಮರೀಚಿ, ಅಂಗೀರಸ ಮುಂತಾದವರೂ ಪ್ರಜಾಪತಿಗಳೇ. ಆದರೂ ಪ್ರಜಾಪತಿ ಅನ್ನುವ ಪದ ಕೇಳಿದ ತಕ್ಷಣ ನಮ್ಮ ನೆನಪಿಗೆ ಬರುವುದು ದಕ್ಷನ ಹೆಸರೇ ಅಲ್ಲವೇ? 

ಸಂತಾನವಾಗುವುದು ಹೇಗೆ? ಸಂತಾನ ಸೃಷ್ಟಿಯಲ್ಲಿ ಎಷ್ಟು ವಿಧ? ಈ ಪ್ರಶ್ನೆಗಳಿಗೆ ಹಿಂದೊಂದು ಸಂಚಿಕೆಯಲ್ಲಿ ಉತ್ತರ ಹುಡುಕಿದ್ದೇವೆ. ಆಸಕ್ತರು "ಸಂತಾನ ಸೃಷ್ಟಿಯ ವಿಧಗಳು" ಎಂಬ ಶೀರ್ಷಿಕೆಯಲ್ಲಿರುವ ಆ  ಲೇಖನವನ್ನು ಇಲ್ಲಿ ಕ್ಲಿಕ್ ಮಾಡಿ ಓದಬಹುದು. ಸ್ತ್ರೀ-ಪುರುಷರ ಸಂಸರ್ಗದ ಮೂಲಕ ಮಕ್ಕಳನ್ನು ಪಡೆಯುವ ವ್ಯವಸ್ಥೆಯನ್ನು ಮೊದಲು ತಂದವನು ಈ ದಕ್ಷ ಪ್ರಜಾಪತಿ ಎಂದು ಹೇಳುತ್ತಾರೆ. 

*****

"ನಿನ್ನೆ ಕೃಷ್ಣ ಮೂರ್ತಿ ಬಂದಿದ್ದ" ಎಂದು ಯಾರಾದರೂ ಹೇಳಿದರೆ ತಕ್ಷಣ ಕೇಳುವ ಪ್ರಶ್ನೆ "ಯಾವ ಕೃಷ್ಣ ಮೂರ್ತಿ?" ಎಂದು. ಏಕೆ ಹೀಗೆ? ಅನೇಕ ಕೃಷ್ಣ ಮೂರ್ತಿಗಳು ನಮಗೆ ಗೊತ್ತು. ಅವರಲ್ಲಿ ಯಾರು ಎಂದು ತಿಳಿಯಬೇಕು. "ತರಲೆ ಕೃಷ್ಣಮೂರ್ತಿ ಬಂದಿದ್ದ" ಅಂತ ಹೇಳಿದರೆ ತಕ್ಷಣ ಗೊತ್ತಾಗುತ್ತದೆ. ಅಥವಾ ಒಬ್ಬರ ಕುಟುಂಬದಲ್ಲಿ "ಕಮಲು ಮಗ ಕೃಷ್ಣಮೂರ್ತಿ" ಅನ್ನಬಹುದು. ಇನ್ನೊಬ್ಬರ ಮನೆಯಲ್ಲಿ ರಮಾ ಗಂಡ ಕೃಷ್ಣಮೂರ್ತಿ ಇರಬಹುದು. ಹೀಗೆ. 

ಇದೇ ರೀತಿ ವೈದಿಕ ವಾಗ್ಮಯದಲ್ಲಿಯೂ ಒಂದೇ ಹೆಸರಿನ ಅನೇಕರು ಇದ್ದಾರೆ. "ರಾಮ" ಎಂದರೆ ಯಾರು? ಪರಶುರಾಮ ಇದ್ದಾನೆ. ಬಲರಾಮ ಇದ್ದಾನೆ. ಶ್ರೀರಾಮನೂ ಇದ್ದಾನೆ. ಅದೇ ರೀತಿ ಒಬ್ಬನಿಗೆ ಅನೇಕ ಹೆಸರುಗಳೂ ಉಂಟು. ತ್ರೇತಾಯುಗದ ರಾಮ ಹುಟ್ಟಿದ ಕೂಡಲೇ "ಶ್ರೀರಾಮ". ಕೌಸಲ್ಯೆಯ ಮಡಿಲಲ್ಲಿದ್ದಾಗ "ಕೌಸಲ್ಯಾರಾಮ". ದಶರಥನ ತೊಡೆಯ ಮೇಲೆ ಏರಿದಾಗ "ದಶರಥರಾಮ". ಅಯೋಧ್ಯೆಯಲ್ಲಿ ಓಡಾಡುತ್ತಿದ್ದಾಗ "ಅಯೋಧ್ಯಾರಾಮ". ಸೀತೆಯನ್ನು ಮದುವೆಯಾದಾಗ "ಸೀತಾರಾಮ". (ಅವಳಿಗೂ ಅನೇಕ ಹೆಸರು! ಅದಕ್ಕೇ "ಜಾನಕಿರಾಮ" ಸೇರಿಕೊಂಡಿತು). ಬಿಲ್ಲು ಹಿಡಿದಾಗ "ಕೋದಂಡರಾಮ". ಕಡೆಗೆ ಪಟ್ಟಾಭಿಷಿಕ್ತನಾದಾಗ "ಪಟ್ಟಾಭಿರಾಮ". ಮುಂದೆ ರಾಜ್ಯ ಆಳುವಾಗ "ರಾಜಾರಾಮ". ಈ ರೀತಿ. ಒಂದು ಹೆಸರಿನ ಅನೇಕರು ಮತ್ತು ಅನೇಕ ಹೆಸರಿನ ಒಬ್ಬರು. ಹೀಗೂ ಉಂಟು. ಹಾಗೂ ಉಂಟು. 

ದಕ್ಷನ ಸಂದರ್ಭದಲ್ಲಿಯೂ ಇದೇ ರೀತಿ. ಇಬ್ಬರು ದಕ್ಷರಿದ್ದಾರೆ. ಭಾಗವತ ಹೇಳುವಂತೆ ಸ್ವಾಯಂಭುವ ಮನ್ವಂತರದ ದಕ್ಷ ಒಬ್ಬ. ಚಾಕ್ಷುಷ ಮನ್ವಂತರದ ದಕ್ಷ ಇನ್ನೊಬ್ಬ. ಈ ಚಾಕ್ಷುಷ ಮನ್ವಂತರದ ದಕ್ಷ ಪ್ರಜಾಪತಿಗೆ ಅನೇಕ ಹೆಣ್ಣುಮಕ್ಕಳು. ಅವರಲ್ಲಿ ಒಟ್ಟಿಗೆ ಇಪ್ಪತ್ತೇಳು ಹೆಣ್ಣುಮಕ್ಕಳನ್ನು (ಬೇಕಿದ್ದರೆ ಒಂದು ಬ್ಯಾಚ್ ಅಂದುಕೊಳ್ಳಬಹುದು) ಚಂದ್ರನಿಗೆ ಮದುವೆ ಮಾಡಿಕೊಟ್ಟ. ಅಶ್ವಿನಿ, ಭರಣಿ, ಕೃತ್ತಿಕಾ, ಮುಂತಾಗಿ ಅವರ ಹೆಸರುಗಳು. ಕಡೆಯವಳು ರೇವತಿ. (ರೈವತರಾಜನ ಮಗಳು, ಬಲರಾಮನ ಹೆಂಡತಿ ರೇವತಿ ಬೇರೆ). ಇಪ್ಪತ್ತೇಳು ಅಕ್ಕ-ತಂಗಿಯರ ಮಧ್ಯದಲ್ಲಿ ರೋಹಿಣಿ ಎನ್ನುವ ಹೆಸರಿನ ಒಬ್ಬಳು. ಹೀಗೆ. 

*****

ನಾವು ಶಾಲಾ-ಕಾಲೇಜುಗಳಲ್ಲಿ ಓದುತ್ತಿದ್ದಾಗ ವರುಷಕ್ಕೊಮ್ಮೆ "ವಿಜ್ಞಾನದ ವಸ್ತುಪ್ರದರ್ಶನ" ನಡೆಸುತ್ತಿದ್ದರು. ಈಗ ಇನ್ನೂ ಚೆನ್ನಾಗಿ ನಡೆಸುತ್ತಿರಬಹುದು. ಅದರಲ್ಲಿ ಖಗೋಳದ ಒಂದು ಮಾದರಿ ಇಟ್ಟಿರುತ್ತಿದ್ದರು. ಗ್ರಹಗಳು ತಮ್ಮ ಅಕ್ಷದ ಮೇಲೆ ಸುತ್ತುತ್ತಾ ಸುತ್ತುತ್ತಾ ಹಾಗೆಯೇ ಸೂರ್ಯನ ಸುತ್ತ ಕೂಡ ಸುತ್ತುತ್ತಿದ್ದವು. ಭೂಮಿ ಹೀಗೆ ತನ್ನ ಅಕ್ಷದ ಸುತ್ತ ಸುತ್ತುವುದರಿಂದ ಹಗಲು-ರಾತ್ರಿಗಳೂ, ಸೂರ್ಯನ ಸುತ್ತ ಸುತ್ತುವುದರಿಂದ ಋತುಗಳೂ ಆಗುವುವು ಎಂದು ತಿಳಿಹೇಳುತ್ತಿದ್ದರು. ಹೀಗೆ ಸುತ್ತುವುದರಿಂದ ಅವು 360 ಡಿಗ್ರಿ ಕ್ರಮಿಸುತ್ತವೆ. ಸರಳ ರೇಖೆಯಲ್ಲಿ ಅಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಈ 360 ಡಿಗ್ರಿ ವರ್ತುಲವನ್ನು ಮೂವತ್ತು ಡಿಗ್ರಿಗಳ 12 ಭಾಗ ಮಾಡಿ ಅವುಗಳನ್ನು "ಹನ್ನೆರಡು ರಾಶಿಗಳು" ಅಂದರು. ಆಯಾ ಭಾಗಗಳಲ್ಲಿರುವ ನಕ್ಷತ್ರಪುಂಜಗಳ ಹೆಸರಿನಲ್ಲಿ ಮೇಷ, ವೃಷಭ, ಮಿಥುನ ಮುಂತಾಗಿ ಹೆಸರಿಟ್ಟರು. ಹನ್ನೆರಡನೇಯದು ಮೀನ ರಾಶಿಯಾಯಿತು. 

ಸರಳ ರೇಖೆಗೆ (Straight Line) ಮೊದಲು ಮತ್ತು ಕೊನೆ ಉಂಟು. ವರ್ತುಲಕ್ಕೆ (Circle) ಕೊನೆಮೊದಲಿಲ್ಲ. ರಾಶಿಚಕ್ರ ನಾವು ನಮ್ಮ ಅನುಕೂಲಕ್ಕೆ ಮಾಡಿಕೊಂಡಿರುವ ವ್ಯವಸ್ಥೆ. ಸೂರ್ಯನು ಏಪ್ರಿಲ್ ಮಧ್ಯದಲ್ಲಿ ಮೇಷ ರಾಶಿಗೆ ಬರುತ್ತಾನೆ. ಆಗ ಸೌರಮಾನ ಲೆಕ್ಕದ  ಹೊಸ ವರ್ಷ. ಜ್ಯೋತಿಷ್ಯದಲ್ಲಿ ಸೂರ್ಯನು ಯಾವ ರಾಶಿಯಲ್ಲಿ ಇದ್ದಾನೋ, ಆ ತಿಂಗಳಿಗೆ ಅದೇ ಹೆಸರು. ಸೂರ್ಯನ ಗತಿಗೆ (ಅಥವಾ ಸೂರ್ಯನ ಸುತ್ತ ಸುತ್ತುವ ಗ್ರಹಗಳ ಗತಿಗೆ) ಕೊನೆ ಮೊದಲಿಲ್ಲ. ಮೀನ ರಾಶಿ ಕಳೆಯಿತು ಎಂದು ಸುಮ್ಮನೆ ಕೂಡುವಂತಿಲ್ಲ. ತಕ್ಷಣ ಮೇಷಕ್ಕೆ. ಹೀಗೆ ಚಲನೆ. ಅದಕ್ಕೆ ರಾಶಿಗಳನ್ನು ಎಣಿಸಿದಾಗ ಮೀನ ಆದನಂತರ ಮೇಷ ಬಂದೇಬಿಟ್ಟಿತು. ಈ ಕಾರಣದಿಂದ "ಮೀನ-ಮೇಷ ಎಣಿಸುವುದು" ಎನ್ನುವ ಗಾದೆ ಬಂದಿತು. "ಎಣಿಸುವುದರಲ್ಲೇ ಕಾಲ ಕಳೆಯಬೇಡ. ಬೇಗ ಕೆಲಸ ಶುರು ಮಾಡು" ಎನ್ನುವ ಅರ್ಥದಲ್ಲಿ. 

ಭೂಮಿ ಸೂರ್ಯನ ಸುತ್ತ ಒಂದು ಸುತ್ತು ಬರುವುದಕ್ಕೆ (360 ಡಿಗ್ರಿ) ಹನ್ನೆರಡು ತಿಂಗಳು ಕಾಲ. ಅಂದರೆ 30 ಡಿಗ್ರಿಗೆ ಒಂದು ತಿಂಗಳು. ಆದರೆ ಚಂದ್ರ ಇಪ್ಪತ್ತೆಂಟು ದಿನಕ್ಕೆ ಒಂದು ಸುತ್ತು ಬರುತ್ತಾನೆ. ಆದ್ದರಿಂದ ಚಾಂದ್ರಮಾನ ತಿಂಗಳಿಗೆ ದಿನ ಕಡಿಮೆಯಾಯಿತು. ಈ ತಿಂಗಳುಗಳಿಗೆ ಚೈತ್ರ, ವೈಶಾಖ, ಮುಂತಾಗಿ ಹೆಸರು. ಈ ಎರಡು ರೀತಿಯ ವರ್ಷಗಳಿಗೆ ವ್ಯತ್ಯಾಸ ಸರಿ ಮಾಡಿ ಸಮಸ್ಥಿತಿಗೆ ತರಲು ಚಂದ್ರಮಾನದಲ್ಲಿ ಆಗಾಗ "ಅಧಿಕ ಮಾಸ" ಬರುತ್ತದೆ. 33 ತಿಂಗಳಿಗೆ ಒಂದು ಅಧಿಕ ಮಾಸ. ಈಗ ತಾನೇ "ಅಧಿಕ ಜ್ಯೇಷ್ಠ ಮಾಸ" ಮುಗಿಯಿತು. 

*****

ಚಂದ್ರನು ಇಪ್ಪತ್ತೇಳು ಅಕ್ಕ-ತಂಗಿಯರನ್ನು ಒಟ್ಟಿಗೆ ಮದುವೆಯೇನೋ ಆದನು. ಆದರೆ ಅವನಿಗೆ ಎಲ್ಲರಿಗಿಂತ ರೋಹಿಣಿ ಮೇಲೆ ಅಧಿಕ ಮನಸ್ಸು. ಅವಳ ಮನೆಯಲ್ಲಿಯೇ ಹೆಚ್ಚು ಕಾಲ ಕಳೆಯುತ್ತಿದ್ದನಂತೆ. ಇದರಿಂದ ಅಸೂಯೆಗೊಂಡ ಮಿಕ್ಕ ಇಪ್ಪತ್ತಾರು ಸೋದರಿಯರು ಅಪ್ಪನಾದ ದಕ್ಷನ ಬಳಿ ದೂರು ಹೇಳಿದರು. ದಕ್ಷ ಚಂದ್ರನಿಗೆ ಕ್ಷಯಿಸಿಹೋಗು ಎಂದು ಶಾಪ ಕೊಟ್ಟ. ಕೊನೆಗೆ ಕುಟುಂಬದ ಎಲ್ಲರೂ ಸೇರಿ ನ್ಯಾಯ ತೀರ್ಮಾನ ಆಯಿತು. ಚಂದ್ರನಿಗೆ ಭಾಗಶಃ ವಿಶಾಪ ಆಯಿತು. ನಮ್ಮ ಕೋರ್ಟುಗಳು "Partial Relief" ಕೊಡುವಂತೆ. ಹದಿನೈದು ದಿನ ಕುಗ್ಗುವುದು. ಮತ್ತೆ ಹದಿನೈದು ದಿನ ಹಿಗ್ಗುವುದು. ಹೀಗೆ ಕೃಷ್ಣಪಕ್ಷ-ಶುಕ್ಲಪಕ್ಷ ಆಯಿತು. ಮತ್ತೆ ಅಕ್ಕ-ತಂಗಿಯರ ಗತಿ? ಪ್ರತಿಯೊಬ್ಬರ ಮನೆಯಲ್ಲಿ ಒಂದೊಂದು ದಿನ ಇರುವುದು ಎಂದು ತೀರ್ಮಾನ ಆಯಿತು. ಒಂದು ಸುತ್ತು ಎಲ್ಲರ ಮನೆ ವಾಸ ಮುಗಿಸುವ ಹೊತ್ತಿಗೆ ತಿಂಗಳೂ ಕಳೆಯಿತು. ಮತ್ತೆ ಮುಂದಿನ ಪರ್ಯಾಯ. ಹೀಗೆ ನಡೆಯುತ್ತಿದೆ. ಚಂದ್ರನು ತನ್ನ ವರ್ತುಲದ ದಾರಿಯಲ್ಲಿ ಉದ್ದಕ್ಕೂ ಇಪ್ಪತ್ತೇಳು ಮನೆಗಳು ಕಟ್ಟಿಕೊಟ್ಟು ಈ ಹೆಂಡತಿಯರ ಜೊತೆ ಇರುತ್ತಾನಂತೆ. 

ಈ ಸೂರ್ಯನ ಹನ್ನೆರಡು ಮನೆಗಳಿಗೂ ಚಂದ್ರನ ಇಪ್ಪತ್ತೇಳು ಮನೆಗಳಿಗೂ ತಾಳೆ ಹಾಕುವುದು ಹೇಗೆ? ಚಂದ್ರನ ಇಪ್ಪತ್ತೇಳು ಮನೆಗಳನ್ನು ಹನ್ನೆರಡರಿಂದ ಭಾಗಿಸಿದರೆ (2.25) ಎರಡೂಕಾಲು ಭಾಗ ಬಂತು. ಹೀಗಾಗಿ ಅಶ್ವಿನಿ, ಭರಣಿಯರಿಗೆ ಮೇಷದಲ್ಲಿ ಮನೆ ಸಿಕ್ಕಿತು. ಕೃತ್ತಿಕೆಗೆ ಕಾಲುಭಾಗ ಮೇಷದಲ್ಲಿ ಮತ್ತು ಮೂರು ಭಾಗ ವೃಷಭದಲ್ಲಿ. ರೋಹಿಣಿಗೆ ಪೂರ್ತಿ ವೃಷಭದಲ್ಲಿ. ಮೃಗಶಿರಳಿಗೆ ಅರ್ಧ ವೃಷಭದಲ್ಲಿ ಮತ್ತು ಇನ್ನರ್ಧ ಮಿಥುನದಲ್ಲಿ.  ಹೀಗೆ ನಡೆಯುತ್ತಾ ಹೋಗುತ್ತದೆ. ಒಂದು ನಕ್ಷತ್ರಕ್ಕೆ ನಾಲ್ಕು ಭಾಗ. ಇಪ್ಪತ್ತೇಳು ನಕ್ಷತ್ರಕ್ಕೆ ಒಂದು ನೂರ ಎಂಟು ಭಾಗ. ಹೀಗೆ ಹಂಚಿದ್ದರಿಂದ ಪ್ರತಿಭಾಗವೂ ಒಂದು "ಪಾದ" (Quarter) ಎಂದಾಯಿತು. ಜ್ಯೋತಿಷ್ಯ ಬಲ್ಲವರಿಗೆ ಸೂತ್ರಗಳು (formula) ಗೊತ್ತು. "ಕೃತ್ತಿಕಾ: ಪ್ರಥಮಂ ಮೇಷ:" ಅನ್ನುತ್ತಾರೆ. ಅಂದರೆ ಕೃತ್ತಿಕಾ ನಕ್ಷತ್ರ ಮೊದಲನೇ ಪಾದದವರೆಗೆ ಮೇಷ ರಾಶಿ ಎಂದು. ಹೀಗೆಯೇ ಬೇರೆ ಮನೆಗಳಿಗೂ ಲೆಕ್ಕ. ಜ್ಯೋತಿಷ್ಯವೆಂದರೆ ಬಹುಪಾಲು ಗಣಿತವೇ. Mathematics is the language of Science" ಎಂದು ಹೇಳುತ್ತಾರೆ ತಿಳಿದವರು. ಜ್ಯೋತಿಷ್ಯವೂ ಹಾಗೆಯೇ.

ಹೀಗೆ ಲೆಕ್ಕ ಮಾಡಿದ ಮಾತ್ರಕ್ಕೇ ಅವರ ಮನೆಗಳು ಚೂರು ಚೂರಾಗಿವೆ ಎಂದು ಅರ್ಥವಲ್ಲ. ಅಮೇರಿಕ ಮತ್ತು ಕೆನಡಾ ದೇಶಗಳ ನಡುವೆ ಗಡಿಯಾಗಿ ಹರಿಯುವ ವಿಶಾಲವಾದ ಸೈನ್ಟ್ ಲಾರೆನ್ಸ್ ನದಿಯ ಮಧ್ಯ ಜಲರಾಶಿಯ ಪ್ರದೇಶಗಳಲ್ಲಿ ಬಹಳ ಸುಂದರ, ಅತಿ ಪ್ರೇಕ್ಷಣೀಯ "Thousand Islands" ಅನ್ನುವ ಹೆಸರಿನ ಪ್ರದೇಶವಿದೆ. ಒಟ್ಟು ಸುಮಾರು ಒಂದು ಸಾವಿರದ ಎಂಟು ನೂರು ದ್ವೀಪಗಳು. ಇವುಗಳಲ್ಲಿ ಕೆಲವು ಯು.ಎಸ.ಏ. ದೇಶಕ್ಕೂ, ಮತ್ತೆ ಕೆಲವು ಕೆನಡಾ ದೇಶಕ್ಕೂ ಸೇರುತ್ತವೆ. ಒಂದು ಮನೆಯ ಬಹುಭಾಗ ಕೆನಡಾದಲ್ಲಿ ಇದ್ದರೆ ಸ್ವಲ್ಪ ಭಾಗ ಇನ್ನೊಂದು ದೇಶದಲ್ಲಿ! ಅಡಿಗೆ, ಊಟ, ಟಿ.ವಿ. ನೋಡುವುದು ಕೆನಡಾದಲ್ಲಿ. ಮಲಗುವುದು ಯು.ಎಸ.ಎ. ದೇಶದಲ್ಲಿ. ಮನೆಯ ಮಧ್ಯೆ ಗಡಿ ರೇಖೆ ಹಾದು ಹೋಗುತ್ತದೆ. 

ಒಂದು ಮನೆಯಂತೂ ಎರಡು ಪುಟ್ಟ ದ್ವೀಪಗಳಲ್ಲಿ ಕಟ್ಟಿದ್ದಾರೆ. ಮನೆಯೆಲ್ಲ ಒಂದು ದೊಡ್ಡ ದ್ವೀಪದಲ್ಲಿ (ಎರಡರಲ್ಲಿ ದೊಡ್ಡದು ಅಷ್ಟೇ. ಅದೂ ಪುಟ್ಟ ದ್ವೀಪವೇ!) ಇದೆ. ದೋಣಿ ನಿಲ್ಲಿಸುವ ಗ್ಯಾರೇಜು ಮಾತ್ರ ಇನ್ನೊಂದು ದೇಶದಲ್ಲಿ. ಎರಡರ ಮಧ್ಯೆ ಒಂದು ಸಣ್ಣ ಮರದ ಸೇತುವೆ ಇದೆ. ಪ್ರಾರಂಭದಲ್ಲಿ ಮೇಲೆ ಕೊಟ್ಟಿರುವ ದೊಡ್ಡ ಚಿತ್ರದಲ್ಲಿ ಅದನ್ನು ನೋಡಬಹುದು. (ಚಿತ್ರವನ್ನು ಇನ್ನಷ್ಟು ದೊಡ್ಡದು ಮಾಡಿ ನೋಡಿದರೆ ಸೇತುವೆಯ ಒಂದು ಕಡೆ ಕೆನಡಾ ದೇಶದ ಬಾವುಟ ಮತ್ತು ಇನ್ನೊಂದು ಕಡೆ ಯುಎಸ್ಏ ಬಾವುಟ ನೋಡಬಹುದು). ಇದು ಪ್ರಪಂಚದಲ್ಲಿ ಎರಡು ದೇಶಗಳ ನಡುವೆ ಇರುವ ಅತಿ ಚಿಕ್ಕ ಸೇತುವೆ! "Just Room Enough" ಅನ್ನುವ ಒಂದು ದ್ವೀಪದ ಮನೆ ಪಕ್ಕದ ಚಿತ್ರದಲ್ಲಿ ಕೊಟ್ಟಿದೆ. ಅಲ್ಲಿ ಮನೆಯಿಂದ ಹೊರಗಡೆ ಕಾಲಿಟ್ಟರೆ ನೀರು. ಕಾರಿನಲ್ಲಿ ಓಡಾಟವಿಲ್ಲ. ಎಲ್ಲಾ ದೋಣಿಗಳ (ಬೋಟ್) ಮೇಲೆ ಅವಲಂಬನೆ.  ಈ ರೀತಿ! ಆದರೆ ಜನ ಸಂತೋಷವಾಗಿಯೇ ಇದ್ದಾರೆ. ಈ ಮನೆಗಳೆಲ್ಲಾ ಮಿಲಿಯನ್ ಡಾಲರ್ ಮನೆಗಳು. 

ಚಂದ್ರನ ಕೆಲವು ಹೆಂಡತಿಯರ ಮನೆಗಳೂ ಹೀಗೆಯೇ ಎಂದು ತಿಳಿಯಬೇಕು. 

ಪಂಚಾಂಗಗಳಲ್ಲಿ ಪ್ರತಿದಿನ ಗ್ರಹಗಳು ಯಾವ ಸ್ಥಳದಲ್ಲಿ ಇವೆ ಎಂದು ತೋರಿಸಿರುತ್ತಾರೆ. ಒಂದು ವ್ಯಕ್ತಿ ಹುಟ್ಟಿದ ದಿನ, ಸಮಯದಲ್ಲಿ ಚಂದ್ರ ಇರುವ ನಕ್ಷತ್ರ, ಅದರ ಪಾದ ನೋಡುತ್ತಾರೆ. ಅದೇ ಜನ್ಮ (ಹುಟ್ಟಿದ) ನಕ್ಷತ್ರ. ಉದಾಹರಣೆಗೆ ಅನುರಾಧ ಎರಡನೇ ಪಾದ ಅಂದಂತೆ. ಅದಕ್ಕೆ ಸರಿಯಾದ ರಾಶಿಯೇ  ಜನ್ಮ ರಾಶಿ. ಈ ರೀತಿ ಲೆಕ್ಕ ಹಾಕಿ ಕುಂಡಲಿ ಬರೆಯುತ್ತಾರೆ. ಚಂದ್ರನಿಗೆ ಅಷ್ಟು ಮಹತ್ವ.

ಈ ಲೆಕ್ಕ ಮೊದಲಿಗೆ ಸ್ವಲ್ಪ ಕಷ್ಟ. ಗೊತ್ತಾಗದಿದ್ದರೆ ನಷ್ಟವಿಲ್ಲ. ಪಂಚಾಂಗದಲ್ಲಿ ಸುಲಭವಾಗಿ ನೋಡಬಹುದು. ಇಲ್ಲದಿದ್ದರೆ ಜ್ಯೋತಿಷ್ಕರನ್ನು ಕೇಳಬಹುದು. ಜ್ಯೋತಿಷ್ಯ ನಂಬದಿದ್ದರೆ ಎರಡೂ ಬೇಕಿಲ್ಲದೆ ನಿರಾಳವಾಗಿ ಇರಬಹುದು. 
*****

ಕಳೆದ ತಿಂಗಳು "ಅನುಕೂಲ ದಾಂಪತ್ಯ" ಅನ್ನುವ ಒಂದು ಸಂಚಿಕೆಯಲ್ಲಿ ಗಂಡ-ಹೆಂಡಿರ ಸಹಜೀವನದ ಬಗ್ಗೆ ವಿಚಾರ ಮಾಡುತ್ತಾ "ಅನುರೂಪ ದಾಂಪತ್ಯ" ಮತ್ತು "ಅನುಕೂಲ ದಾಂಪತ್ಯ" ಅನ್ನುವ ಬಗ್ಗೆ ಸ್ವಲ್ಪ ಯೋಚಿಸಿದ್ದೆವು. "ಅನುಕೂಲ ದಾಂಪತ್ಯ" ಸಂಚಿಕೆಯನ್ನು ಇಲ್ಲಿ ಕ್ಲಿಕ್ ಮಾಡಿ ಓದಬಹುದು. 

ಇವೆರಡು ರೀತಿಯ (ಅನುರೂಪ ಮತ್ತು ಅನುಕೂಲ) ದಾಂಪತ್ಯಗಳ ಜೊತೆಯಲ್ಲಿ "ವಿಷಮ ದಾಂಪತ್ಯ" ಅಂತ ಕೂಡ ಒಂದು ಉಂಟು. ಇದು ಕಷ್ಟದ ದಾಂಪತ್ಯ. ಹೆಣಗಾಡಿಕೊಂಡು ಜೊತೆಯಲ್ಲಿ ಬದುಕುವುದು! "ನವಜೀವನ" ಕನ್ನಡ ಚಲನಚಿತ್ರದ "ಹೆಣಗಾಟದೀ ಜನ್ಮ ಏಕೆ ಕೊಟ್ಟನೋ ಆ ಬ್ರಹ್ಮ" ಅನ್ನುವ ಹಾಡಿನಂತೆ. (ಬಾಮಾ-ಭಾಮಾ, ನಾನರಿಯೆ ಮನದ ಮರ್ಮ...... ಅನ್ನುವ ಹಾಡು).

ಅರವತ್ತು-ಎಪ್ಪತ್ತು ವರುಷಗಳ ಹಿಂದೆ ವಿವಾಹ ಮಾಡುವ ಮುನ್ನ ವಧು ಮತ್ತು ವರರ ಜಾತಕ ಪರಿಶೀಲಿಸಿ ತಾಳೆ ಹಾಕುತ್ತಿದ್ದರು. ಕೆಲವು "ಕೂಟ" ನೋಡುತ್ತಿದ್ದರು. ರಾಶಿ ಕೂಟ, ಗ್ರಹಮೈತ್ರ ಕೂಟ, ರಜ್ಜು ಕೂಟ, ಯೋನಿ ಕೂಟ, ಹೀಗೆ ಹೆಸರುಗಳು. ಪರೀಕ್ಷೆಯಲ್ಲಿ ಅಂಕಗಳನ್ನು ಕೊಟ್ಟಂತೆ ಲೆಕ್ಕ ಮಾಡಿ ಸರಿಹೊಂದಿದರೆ ಮದುವೆಗೆ ಒಪ್ಪಿಗೆ ಕೊಡುತ್ತಿದ್ದರು. ಎಲ್ಲಾ ಕೂಟಗಳು "ಅತ್ಯುತ್ತಮ" ಆಗಿದ್ದರೆ ಗರಿಷ್ಟ (Maximum) 36 ಮಾರ್ಕ್ಸ್. ಕನಿಷ್ಠ (Minimum) 18 ಬರಬೇಕು. ಇಲ್ಲದಿದ್ದರೆ ಒಪ್ಪುತ್ತಿರಲಿಲ್ಲ. ಕೆಲವರು ಮೊದಲು ರಾಶಿಕೂಟ ಮತ್ತು ಗ್ರಹಮೈತ್ರ ಕೂಟಗಳನ್ನು ನೋಡುತ್ತಿದ್ದರು. ಇವು ಕೂಡಲಿಲ್ಲ ಅಂದರೆ ಹದಿನೆಂಟಕ್ಕಿಂತಲೂ ಹೆಚ್ಚು ನಂಬರು ಬಂದರೂ ಮದುವೆಯಿಲ್ಲ. ಪರೀಕ್ಷೆಯಲ್ಲಿ compulsory paper ಇದ್ದಂತೆ. ಬೇರೆಲ್ಲ ಪೇಪರ್ ಮೊದಲ ದರ್ಜೆಯಲ್ಲಿ ಪಾಸಾದರೂ ಇದು ಆಗಲಿಲ್ಲ ಅಂದರೆ ಫೇಲ್ ಅಂದಂತೆ. ಅನೇಕರಿಗೆ ಹುಡುಗ ಅಥವಾ ಹುಡುಗಿ ಒಪ್ಪಿಗೆಯಾಗದಿದ್ದರೆ "ಬೇಡ" ಅನ್ನುವುದಕ್ಕೆ "ಜಾತಕ ಹೊಂದಲಿಲ್ಲ" ಅನ್ನುವುದು ಸುಲಭ ಕಾರಣ ಆಗುತ್ತಿತ್ತು. 

ಕೆಲವರು "ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು" ಅನ್ನುವ ಗಾದೆಯನ್ನು ಮನೆದೇವರಂತೆ ಪ್ರೀತಿಸುತ್ತಿದ್ದರು. ಸುಳ್ಳು ಜಾತಕ ಬರೆಸುವುದೂ ನಡೆಯುತ್ತಿತ್ತು. ಈ ಕಾರಣಕ್ಕೆ ಕೆಲವರು ಉಪಾಯವಾಗಿ ಹುಟ್ಟಿದ ದಿನ ಅಕ್ಕ-ಪಕ್ಕದ ಮನೆಯವರಿಂದ ತಿಳಿದುಕೊಂಡು ತಾವೇ ಜಾತಕ ಬರೆಸಿ ತಾಳೆ ನೋಡುತ್ತಿದ್ದರು. ರಾಜಕುಮಾರ್-ಮಾಧವಿ-ಗೀತಾ ನಟಿಸಿರುವ ಕನ್ನಡ ಚಲನಚಿತ್ರ "ಶ್ರುತಿ ಸೇರಿದಾಗ" ಹೀಗೆ ಜಾತಕದ ಕಾರಣ ಮದುವೆಯೊಂದು ನಿಂತು ಹೋದ ಕಥೆಯದ್ದು. 

ಒಂದು ಹುಡುಗ ಇದ್ದಾನೆ. ಅವನ ಜಾತಕದಲ್ಲಿ ಚಂದ್ರ ಮೇಷ ರಾಶಿಯಲ್ಲಿದ್ದಾನೆ. ಮದುವೆಗೆ ಒಂದು ಹುಡುಗಿಯ ಜಾತಕ ಬಂದಿದೆ. ಅವಳ ಜಾತಕದಲ್ಲಿ ಚಂದ್ರ ಕನ್ಯಾ ರಾಶಿಯಲ್ಲಿದ್ದಾನೆ. ಲೆಕ್ಕ ಮಾಡಿದರೆ ವರನ ಕಡೆಯಿಂದ ವಧುವಿನದು ಆರನೆಯ ಮನೆ. ವಧುವಿನ ಕಡೆಯಿಂದ ವರನದು ಎಂಟನೆಯ ಮನೆ. ಇದು ಆರು-ಎಂಟರ ನಂಟು. ಸಂಸ್ಕೃತದಲ್ಲಿ ಇದನ್ನು "ಷಷ್ಟಾಷ್ಟಕ" ಅನ್ನುತ್ತಾರೆ. ಇಂತಹವರ ದಾಂಪತ್ಯ ಹೇಗೆ? 

ವಿಷಮ ದಾಂಪತ್ಯಕ್ಕೆ ಅನೇಕ ಕಾರಣಗಳು ಇರುತ್ತವೆ. ಈ ಆರು-ಎಂಟರ ನಂಟು ಒಂದು ಕಾರಣ ಅನ್ನುತ್ತಾರೆ ಜ್ಯೋತಿಷ್ಕರು. ಗಂಡ "ಆರು" ಎಂದರೆ ಹೆಂಡತಿ "ಇಲ್ಲ, ಎಂಟು" ಅನ್ನುವಂತೆ. "ಹೋಗಲಿ, ಏಳಕ್ಕೆ ಒಪ್ಪಿಕೊಳ್ಳೋಣ" ಅನ್ನಲು ಇಬ್ಬರೂ ತಯಾರಿಲ್ಲ. ಇಂತಹ ದಂಪತಿಗಳಲ್ಲಿ ತಾಳ-ಮೇಳ ಇರುವುದಿಲ್ಲ ಎಂದು ಕೆಲವರ ನಂಬಿಕೆ. "ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು" ಅನ್ನುವ ಗಾದೆ ಇಂತಹ ಜೋಡಿಗೇ ಹೇಳಿ ಮಾಡಿಸಿದ್ದು. ಜಾತಕ ನಂಬುವವರು ಈ ರೀತಿಯ ಮದುವೆಗಳನ್ನು ಒಪ್ಪುವುದಿಲ್ಲ. ಇದು ಅವರವರ ಜೀವನದ ದೃಷ್ಟಿಕೋನಕ್ಕೆ, ನಂಬಿಕೆಗಳಿಗೆ ಸಂಬಂಧಿಸಿದ್ದು. 

*****

ಮುಂದಿನ ಸಂಚಿಕೆಯಲ್ಲಿ ಇದರ ಬಗ್ಗೆ ಇನ್ನಷ್ಟು ವಿವರಣೆ ನೋಡೋಣ. ಹಾಗೆಯೇ "ಸಾವಿರ ದ್ವೀಪಗಳು" (Thousand Islands) ಬಗೆಗೂ ಬೇರೊಂದು ಸಂಚಿಕೆಯಲ್ಲಿ ತಿಳಿಯೋಣ.

Thursday, May 28, 2026

ಅನುಕೂಲ ದಾಂಪತ್ಯ


ಯಾವುದೋ ಕುಟುಂಬದ ಒಂದು ಹುಡುಗ. ಮತ್ಯಾವುದೋ ಕುಟುಂಬದ ಒಂದು ಹುಡುಗಿ. ತಂದೆ-ತಾಯಿಯರೋ, ಮತ್ಯಾರೋ ಹಿರಿಯರೋ ಗೊತ್ತು ಮಾಡಿ ನಡೆದ ವಿವಾಹ. ಹೀಗೆ ನಡೆಯುತ್ತಿದ್ದ ಸಮಾಜ. ಅಲ್ಲೊಂದು-ಇಲ್ಲೊಂದು ವಿಷಮ ವಿವಾಹಗಳು. ಹೆಚ್ಚಿನವು ಬಹಳ ಕಾಲ ನಿಂತ ದಾಂಪತ್ಯಗಳು. ಕಾಲ ಮುಂದುವರೆದಂತೆ ಹುಡುಗ-ಹುಡುಗಿ ತಾವೇ ತಮ್ಮ ಇಚ್ಛೆಯಿಂದ ಆದ ವಿವಾಹಗಳು. ಇವೂ ಬಹಳ ಕಾಲ ನಿಲ್ಲುತ್ತಿದ್ದುದೇ ಹೆಚ್ಚು.

ವಿವಾಹದ ಐವತ್ತು ವರ್ಷದ, ಅರವತ್ತು ವರ್ಷದ ವಾರ್ಷಿಕೋತ್ಸವಗಳು ಸಾಮಾನ್ಯವಾಗಿದ್ದವು. ಚಿಕ್ಕ ವಯಸ್ಸಿನಲ್ಲಿ ಮದುವೆಗಳು ನಡೆಯುತ್ತಿದ್ದುದರಿಂದ ಇವು ಸಾಧ್ಯವಾಗಿದ್ದವು. ಮೊಮ್ಮಕ್ಕಳ ಜೊತೆಗೆ ಮರಿಮಗ ಹುಟ್ಟಿದ ಸಮಯದಲ್ಲಿ "ಪ್ರಪೌತ್ರ ದರ್ಶನ ಶಾಂತಿ" ಎಂದು ಕನಕಾಭಿಷೇಕ ಸಹ ನಡೆಯುತ್ತಿತ್ತು. ನಂತರ ಇಪ್ಪತ್ತೈದು ವರ್ಷದ "ರಜತೋತ್ಸವ" ನಡೆಯುವುದೇ ದೊಡ್ಡದಾಯಿತು. 

ದಶಕಗಳು ಕಳೆದಂತೆ ವಿಚ್ಛೇದನಗಳು ಹುಟ್ಟಿದವು. ವಿಚ್ಛೇದನಗಳು ಸುಲಭವಾಗುತ್ತಿದ್ದಂತೆ ಪುನರ್ವಿವಾಹಗಳು ಹುಟ್ಟಿಬಂದವು. ಅದರ ಮುಂದಿನ ಹಂತದಲ್ಲಿ ವಿವಾಹಗಳೇ ಇಲ್ಲದೆ ನಡೆಯುತ್ತಿರುವ "ಅನುಕೂಲ ಸಿಂಧು ದಾಂಪತ್ಯಗಳು" ಅನ್ನಬಹುದಾದ ಜೊತೆ-ಜೀವನ ನಡೆಸುವ ಕಾಲ ಬಂದು ನಿಂತಿದೆ. ದಿನಂಪ್ರತಿ ಪತ್ರಿಕೆಗಳಲ್ಲಿ, ಮಾಧ್ಯಮಗಳಲ್ಲಿ ಇಂತಹ ಸಂಬಂಧಗಳು ಕೋರ್ಟಿನ ಮೆಟ್ಟಲುಗಳನ್ನು ಹತ್ತಿರುವ ಸುದ್ದಿಗಳು ಉಂಟು. ಯಾವುದೋ ಯುವಕ ಅಥವಾ ಮತ್ಯಾವುದೋ ಯುವತಿ ತುಂಡು-ತುಂಡಾಗಿ ಪೆಟ್ಟಿಗೆಗಳಲ್ಲಿ ಸಿಕ್ಕುತ್ತಿರುವುದೂ ಹೌದು. ಮೊದಮೊದಲು ಇಂತಹ ಪ್ರಕರಣಗಳು ಭೀತಿ ಹುಟ್ಟಿಸುತ್ತಿದ್ದವು. ಈಗ ಅಷ್ಟು ಭಯಾನಕ ಅನ್ನಿಸದು. ರೋಚಕ ಅನಿಸುವುದೂ ಇಲ್ಲವಾಗಿದೆ. 

ಬಹಳಕಾಲ ಗಂಡ-ಹೆಂಡತಿ ಜೊತೆಯಲ್ಲಿ ಬದುಕಿ, ಇಬ್ಬರ ನಡುವೆ ಒಂದೇ ರೀತಿಯ, ಜೊತೆಯಲ್ಲಿ ಹೆಜ್ಜೆ ಹಾಕುವ ತಾಳ-ಮೇಳ ಏರ್ಪಡುತ್ತಿತ್ತು. ಬಾಯಿಬಿಟ್ಟು ಮಾತುಗಳಲ್ಲಿ ಹೇಳದೆ ಇದ್ದರೂ ಇಬ್ಬರ ನಡುವೆ ಒಂದು ರೀತಿಯ ಸದಾಕಾಲ ನಡೆಯುವ ಸಂವಾದ ಇರುತ್ತಿತ್ತು. "ಇಂಗಿತ" ಅನ್ನುವ ಪದಕ್ಕೆ ಬಹಳ ಬೆಲೆ ಇತ್ತು. "ಮನದ ಇಂಗಿತ ಅರಿಯಬೇಕು" ಅನ್ನುತ್ತಿದ್ದರು. ಇಲ್ಲಿ ಶಬ್ದಪೂರ್ವಕ ಹುಟ್ಟಿದ ಮಾತಿನ ಸಂಭಾಷಣೆ ಇಲ್ಲ. ಮನಸ್ಸು ಮನಸ್ಸನ್ನು ಅರಿವ, ಮೌನದ, ಏನೋ ಒಂದು ಸನ್ನೆಯ, ಅಥವಾ ಏನೂ ಇಲ್ಲದ ಕೇವಲ ಒಂದು ನೋಟದ ಮೂಲಕ ವಿಚಾರ ವಿನಿಮಯ. ಹೀಗೆ ಹುಟ್ಟಿದ "ಇಂಗಿತಜ್ಞತೆ" ಅಂದರೆ ಅದಕ್ಕೆ ಬಹಳ ಬೆಲೆ. 

*****

ಲೇಖನಿಯಿಂದ ಕಾಗದದ ಮೇಲೆ ಬರೆದ "ಕ್ರಯ ಪತ್ರ" ಅನ್ನುವ ದಾಖಲೆಗಿಂತ ಕೊಟ್ಟ ಮಾತು ಹೆಚ್ಚಿನದು ಎಂದು ಜನ ನಂಬಿದ ಕಾಲ. ಆ ಹಳ್ಳಿಯಲ್ಲಿ ಸುಡು ಬಿಸಿಲಿನ ಬೇಗೆ. ತಡೆಯಲಾಗದ ಧಗೆ. ವಾಸವಿರುವ ಜನ ಬೇರೆ ವಿಧಿ ಇಲ್ಲದೆ ಬಾಳುತ್ತಿದ್ದಾರೆ. ತಾಪ ತಡೆಯಲು ಸಾಧ್ಯವಿಲ್ಲದಿದ್ದರೂ ಜೀವನ ನಡೆಯುತ್ತಿದೆ. 

"ತಾಲ್ಲೂಕಿನ ಧಣಿ" ಎಂದು ಕರೆಸಿಕೊಳ್ಳುವ ಅಮಲ್ದಾರರು ನಾಳೆ ಆ ಹಳ್ಳಿಯ ದಾರಿಯಲ್ಲಿಯೇ ಹಾದು ಮುಂದಿನ ಊರಿಗೆ ಹೋಗಬೇಕು. ಈ ಸಂಗತಿ ಊರಿನ ಹಿರಿಯರಲ್ಲಿ ಒಬ್ಬನಾದ ನರಹರಿಗೆ ತಿಳಿಯಿತು. ಬರುವ ಅಧಿಕಾರಿಗೆ ಯೋಗ್ಯ ಸ್ವಾಗತ-ಆತಿಥ್ಯ ಕೊಡಲು ಮುಂದಾಳಾಗಲು ಊರಿನ ದೊಡ್ಡ ಕುಳವಾದ ತನ್ನ ಸ್ನೇಹಿತ ಶಿವನಂಜೇಗೌಡ ಸರಿಯಾದವನು ಎಂದು ನರಹರಿ ಅಭಿಪ್ರಾಯ. ಇವರಿಬ್ಬರ ನೇತೃತ್ವದಲ್ಲಿ ಹಳ್ಳಿಯ ಜನ ಮಾರನೆಯ ದಿನ ಅವರ ಬರವನ್ನು ಕಾಯುತ್ತಾರೆ.

ಮಧ್ಯಾನ್ಹದ ಉರಿಬಿಸಿಲಿನಲ್ಲಿ ಅಮಲ್ದಾರ್ ಕುದುರೆಯ ಮೇಲೆ ಕುಳಿತು ಬಂದರು. ಸ್ವಾಗತವಾಯಿತು. "ಇದೆಂತಹ ಊರು? ಈ ಬಿಸಿಲಿನಲ್ಲಿ ಹೇಗೆ ಬದುಕಿದ್ದೀರಿ?" ಎಂದು ಬಸವಳಿದ ಅಮಲ್ದಾರ್ ಬೇಸರ ವ್ಯಕ್ತಪಡಿಸುತ್ತಾರೆ. "ಏನು ಮಾಡುವುದು ಸ್ವಾಮಿ. ಹಿರಿಯರು ಮಾಡಿದ ಊರು. ಹೇಗೋ ಬಾಳುತ್ತಿದ್ದೇವೆ. ಹಾಲು-ಸಕ್ಕರೆ ಇಡಿಸಿದ್ದೇನೆ. ತೆಗೆದುಕೊಂಡು ಹೊಟ್ಟೆ ತಂಪು ಮಾಡಿಕೊಳ್ಳಿ" ಅನ್ನುತ್ತಾನೆ ಶಿವನಂಜೇಗೌಡ. 

"ಹಾಲು-ಸಕ್ಕರೆ ಬೇಡ. ಎರಡು ಎಳನೀರು ತರಿಸಿ" ಅನ್ನುತ್ತಾರೆ ಅಮಲ್ದಾರ್. "ಸುತ್ತ-ಮುತ್ತ ಎಲ್ಲ ಹುಡುಕಿಸಿದೆವು. ಎಲ್ಲೂ ತೆಂಗಿನ ಮರಗಳಿಲ್ಲ. ಮಜ್ಜಿಗೆ ತರಿಸಲೇ?" ಎಂದು ಕೇಳುತ್ತಾನೆ ನರಹರಿಯಪ್ಪ. 

"ಎಳನೀರು ಇಲ್ಲದ ಮೇಲೆ ಇನ್ನೇನು. ತೆಂಗಿನ ಮರ ಇಲ್ಲದ ಊರೂ ಒಂದು ಊರೇ? ಅದು ಊರಲ್ಲ. ಒಂದು ಸ್ಮಶಾನವೇ ಸರಿ. ಹೋಗಲಿ ಬಿಡಿ. ಮಜ್ಜಿಗೆಯೊ, ಕಲಗಚ್ಚೋ, ಯಾವುದೋ ಒಂದು ತರಿಸಿ" ಅನ್ನುತ್ತಾರೆ, ಕೋಪದಿಂದ ಅಮಲ್ದಾರ್. 
*****

ಜಮಾಬಂದಿಯ ಕೆಲಸ ಮುಗಿದು ಅಮಲ್ದಾರರು ತಮ್ಮ ಹಾದಿ ಹಿಡಿದು ಹೊರಟುಹೋದರು. ಶಿವನಂಜೇಗೌಡನಿಗೆ ತೆಂಗಿನ ಮರ ಇಲ್ಲದ ಕಾರಣ ಅಮಲ್ದಾರರು ತನ್ನ ಊರು ಒಂದು ಸುಡುಗಾಡು ಎಂದುಬಿಟ್ಟರಲ್ಲ ಅನ್ನುವ ನೋವು. ಪೆಚ್ಚಾಗಿ ಹಿಂದಿರುಗುತ್ತಿದ್ದಾಗ ನರಹರಿ ಅವನ ಚಿಂತೆಗೆ ಕಾರಣ ವಿಚಾರಿಸುತ್ತಾನೆ. "ಹೋಗಲಿ ಬಿಡು, ಶಿವನಂಜು. ಅವರು ಹಾಗೆ ಅಂದಮಾತ್ರಕ್ಕೇ ನಮ್ಮ ಊರು ಸುಡುಗಾಡಾಯಿತೇ?" ಅನ್ನುತ್ತಾನೆ ನರಹರಿ.

ಶಿವನಂಜೇಗೌಡನಿಗೆ ತನ್ನ ಊರಿನಲ್ಲಿ ಒಂದು ತೆಂಗಿನ ತೋಟ ಮಾಡಲೇಬೇಕೆಂಬ ಹಠ ಬಂದಿದೆ. "ಇಲ್ಲ, ನರಹರಿಯಪ್ಪ. ಒಂದು ತೆಂಗಿನ ತೋಟ ಮಾಡಲೇ ಬೇಕು. ಇಲ್ಲದಿದ್ದರೆ ನಾನು ನನ್ನ ಅಪ್ಪನ ಮಗನೇ ಅಲ್ಲ. ಊರಿನ ಮರ್ಯಾದೆ ಪ್ರಶ್ನೆ" ಎಂದು ಬಿಗಿಹಿಡಿದು ಕೂಡುತ್ತಾನೆ. "ಅದು ಸುಲಭದ ಮಾತಲ್ಲ. ತೋಟ ಮಾಡಲು ನೆಲ ಸರಿಯಿದೆಯೇ ಎಂದು ತಿಳಿಯಬೇಕು. ತೋಟ ನಿನಗೆ ಆಗಿ ಬರುತ್ತದೆಯೇ ಎಂದು ಕೇಳಿ ತಿಳಿದುಕೊಳ್ಳಬೇಕು" ಎಂದು ಹೇಳಿ ನರಹರಿ ಅವನ ಮನಸ್ಸು ಬದಲಿಸಲು ನೋಡುತ್ತಾನೆ. 

"ಮಣ್ಣು ಸರಿ ಇಲ್ಲ ಅಂದರೆ ನೂರು ಮೈಲಿ ದೂರದಿಂದಲಾದರೂ ಬೇಕಾದ ಮಣ್ಣು ತರಿಸುತ್ತೇನೆ. ಜ್ಯೋತಿಷ್ಯಕ್ಕೆ ನೀನೇ ಇದ್ದೀಯಲ್ಲ. ನೋಡಿ ಹೇಳು" ಅನ್ನುತ್ತಾನೆ ಶಿವನಂಜು. "ಇಂತಹ ವಿಷಯಕ್ಕೆ ನನ್ನ ಪುಡಿ ಜ್ಯೋತಿಷ್ಯ ಸಾಲುವುದಿಲ್ಲ. ಇಂತಹದಕ್ಕೆ ಕುರಿತೇಟಿನಂತೆ ಹೇಳಲು ತಾವರೆಕೆರೆ ವೆಂಕಟರಮಣ ಜೋಯಿಸರೇ ಸರಿ" ಅನ್ನುತ್ತಾನೆ ನರಹರಿ, ಹೀಗಾದರೂ ವಿಷಯ ಮುಂದೆ ಹೋಗಲಿ ಅನ್ನುವ ಬಯಕೆಯಿಂದ.  

ಶಿವನಂಜೇಗೌಡ ಸುಮ್ಮನೆ ಕೂಡುವವನಲ್ಲ. ತಾವರೆಕೆರೆ ಜೋಯೀಸರನ್ನೇ ಕರೆಸಿಬಿಡುತ್ತಾನೆ. ಅವರು ಎಲ್ಲಾ ಲೆಕ್ಕಹಾಕಿ ನೋಡುತ್ತಾರೆ. "ಶಿವನಂಜೇಗೌಡ, ನಿನಗೆ ತೋಟ ಮಾಡೋ ಯೋಗ ಏನೋ ಇದೆ. ಆದರೆ ಅದರಿಂದ ಸುಖ ಪಡೋ ಯೋಗ ಇಲ್ಲ" ಅಂದುಬಿಡುತ್ತಾರೆ. ಬೇರೆ ಉಪಾಯ ಕೇಳುತ್ತಾನೆ. "ಯಾರ ಹೆಸರಿಗೆ ಆಗಿ ಬರುತ್ತೋ ಅವರ ಹೆಸರಿನಲ್ಲಿ ಮಾಡಬಹುದು" ಅನ್ನುತ್ತಾರೆ ಜೋಯಿಸರು. ಶಿವನಂಜು ಇದಕ್ಕೂ ತಯಾರು. ಅಂತಹವರಿಗೆ ತನ್ನ ಭೂಮಿ ದಾನ ಕೊಡಲೂ ಸಿದ್ಧ. ಅವನ ಕುಟುಂಬದ ಹಿತ ದೃಷ್ಟಿಯಿಂದ ಈ ಹುಚ್ಚಾಟ ತಪ್ಪಿಸಲು ನರಹರಿ "ನಿನ್ನ ಹೆಂಡತಿ, ಮಕ್ಕಳನ್ನು ಕೇಳಿ ಮಾಡು" ಎನ್ನುತ್ತಾನೆ. 

"ಆಯಿತು. ನನ್ನ ಮಕ್ಕಳು ಇನ್ನೂ ಚಿಕ್ಕವರು. ಇನ್ನು ನನ್ನ ಹೆಂಡತಿ. ಅವಳನ್ನು ಈಗಲೇ ಕರೆತರುತ್ತೇನೆ" ಎಂದು ಶಿವನಂಜೇಗೌಡ ಹೊರಡುತ್ತಾನೆ. "ನೀನು ಹೋಗಬೇಡ. ಅವಳನ್ನು ಹೆದರಿಸಿ-ಬೆದರಿಸಿ ಕರೆದುಕೊಂಡು ಬರುವುದು ನನಗೆ ಗೊತ್ತು. ನೀನು ಇಲ್ಲೇ ಕೂಡು. ನಾನು ಕರೆಸುತ್ತೇನೆ" ಅನ್ನುತ್ತಾನೆ ನರಹರಿ. ತನ್ನ ಹೆಂಡತಿ ಪಾರ್ವತಿಯನ್ನು ಕಳಿಸಿ ಶಿವನಂಜನ ಹೆಂಡತಿ ಪುಟ್ಟತಾಯಮ್ಮ ಬರುವಂತೆ ಕರೆ ಕಳಿಸುತ್ತಾನೆ.
*****

ಪುಟ್ಟತಾಯಿ ಬಂದಳು. ನರಹರಿ ಮತ್ತು ಪುಟ್ಟತಾಯಿ ಒಂದು ತಾಯಿ ಮಕ್ಕಳಲ್ಲದಿದ್ದರೂ ಅಣ್ಣ-ತಂಗಿ ರೀತಿಯ ಬಾಂಧವ್ಯ. ಉಪಾಯವಾಗಿ ಅವಳನ್ನು ಕರೆದು ನರಹರಿ "ನೋಡು, ಪುಟ್ಟತಾಯಿ, ನಿನ್ನ ಗಂಡ ನಿಮ್ಮ ಭೂಮಿ ಯಾರಿಗೋ ದಾನ ಕೊಟ್ಟು ನೀನು, ನಿನ್ನ ಮಕ್ಕಳ ತಲೆ ಮೇಲೆ ಕಲ್ಲು ಚಪ್ಪಡಿ ಎಳೆದುಬಿಡುತ್ತಾನೆ. ನೀನು ಒಪ್ಪಬೇಡ. ಇದನ್ನು ತಪ್ಪಿಸಿದರೆ ನಿನಗೂ ನಿನ್ನ ಮಕ್ಕಳಿಗೂ ಒಳ್ಳೆಯದು" ಎಂದು ತಿಳಿ ಹೇಳುತ್ತಾನೆ. "ಹೌದಾ ನರಹರಿಯಣ್ಣ? ನೋಡು ನೀನು ಹೀಗೆ ತಿಳಿ ಹೇಳಿದ್ದು ಬಹಳ ಒಳ್ಳೆಯದಾಯಿತು. ನನಗೆ, ನನ್ನ ಮಕ್ಕಳಿಗೆ ಅನ್ಯಾಯ ಆಗಲು ನಾನು ಬಿಡುವುದಿಲ್ಲ" ಎಂದು ಖಚಿತವಾಗಿ ಹೇಳುತ್ತಾಳೆ. ಕಂಟಕ ತಪ್ಪಿತು ಎಂದು ನರಹರಿಗೆ ಬಲು ಸಂತೋಷ. 

ಜೋಯಿಸರ ಮುಂದೆ ಬಂದು ನಿಂತಾಗ ನರಹರಿ ಮತ್ತೊಮ್ಮೆ "ಪುಟ್ಟತಾಯಿ, ಇದು ನಿನ್ನ ಮತ್ತು ನಿನ್ನ ಮಕ್ಕಳ ಭವಿಷ್ಯದ ಪ್ರಶ್ನೆ. ಏನೂ ಹೆದರಬೇಡ. ನಿನಗೆ ಏನು ಅನ್ನಿಸುತ್ತೋ ಅದನ್ನು ಧೈರ್ಯವಾಗಿ ಹೇಳು" ಎಂದು ಪುಸಲಾಯಿಸುತ್ತಾನೆ. ಧೈರ್ಯ ಕೊಡುತ್ತಾನೆ. 

"ನೀವು ದೊಡ್ಡವರು ಇದ್ದೀರಿ. ಇದು ನನ್ನ, ನನ್ನ ಮಕ್ಕಳ ಮುಂದಿನ ಜೀವನದ ಪ್ರಶ್ನೆ. ಇವರು ನನಗೂ, ನನ್ನ ಮಕ್ಕಳಿಗೂ ಯಜಮಾನರು. ಅವರು ಮಾಡಬೇಕೆನ್ನುವ ಕೆಲಸಕ್ಕೆ ನಾನು ಅಡ್ಡ ಬರಲೇ? ಅವರು ಏನು ಮಾಡಿದರೂ ಅದು ನಮ್ಮ ಒಳ್ಳೆಯದಕ್ಕೇ. ಅವರು ಹೇಳಿದಂತೆ ಮಾಡಿ" ಅಂದುಬಿಡುತ್ತಾಳೆ. ಅಷ್ಟೇ ಅಲ್ಲ. ಭೂಮಿಯನ್ನು ನರಹರಿಗೇ ದಾನ ಕೊಡಿಸಿ ತೋಟ ಮಾಡಲು ಕಾರಣಳಾಗುತ್ತಾಳೆ.
*****

ಇದು ಅರವತ್ತು ವರುಷಗಳ ಹಿಂದೆ ತೆರೆ ಕಂಡ ಕನ್ನಡ ಚಲನಚಿತ್ರ "ಚಂದವಳ್ಳಿಯ ತೋಟ" ಪ್ರಾರಂಭವಾಗುವ ದೃಶ್ಯಗಳು. ಆರು ದಶಕಗಳು ಕಳೆದಿವೆ. ಈಗ ಸಮಾಜವೂ ಬದಲಾಗಿದೆ. ಗಂಡನನ್ನು "ಯಜಮಾನ" ಎಂದು ಒಪ್ಪಿಕೊಳ್ಳುವ ಹೆಣ್ಣುಮಕ್ಕಳು ಕಾಣಸಿಗರು. ಹೆಂಡತಿಯನ್ನು "ನಮ್ಮ ಯಜಮಾನಿ" ಅನ್ನುವ ಗಂಡಂದಿರೂ ಇಲ್ಲ. ಇದು ಸಮಾನತೆಯ ಯುಗ. ಅದರಲ್ಲಿ ತಪ್ಪೇನೂ ಇಲ್ಲ. 

ಎಷ್ಟೇ ಬದಲಾವಣೆಗಳು ಆಗಿದ್ದರೂ ಸಾಮರಸ್ಯ ಇರುವ ಕುಟುಂಬಗಳಲ್ಲಿ ಈ ರೀತಿಯ ಬಾಂಧವ್ಯ ಈಗಲೂ ಕಂಡುಬರುತ್ತದೆ. ಹೊರಗಡೆಯ ಜನರಿಗೆ ಅನೇಕ ವೇಳೆ ಈ ದಂಪತಿಗಳು ಜಗಳ ಕಾಯುತ್ತಲೇ ಇರುತ್ತಾರೆ ಅನ್ನಿಸಿದರೂ, ಒಳಗೊಳಗೇ ಪರಸ್ಪರ ಸರಿಯಾದ ತಿಳುವಳಿಕೆ ಇರುತ್ತದೆ. ಒಬ್ಬರು ಮಾಡಿದ ನಿರ್ಣಯಗಳನ್ನು ಇನ್ನೊಬ್ಬರು ಅನುಮೋದಿಸುತ್ತಾರೆ. "ಹಾಗೆ ಹೇಳಿದ್ದಾರೆ ಅಂದರೆ ಅದಕ್ಕೆ ಏನೋ ಕಾರಣ ಇರುತ್ತದೆ. ಅದು ಸರಿಯೇ ಇರುತ್ತದೆ" ಅನ್ನುವ ನಂಬಿಕೆಯಲ್ಲಿ ಜೀವನ ನಡೆಯುತ್ತದೆ. ಇಷ್ಟರ ಮೇಲೆ ಏನೋ ತಪ್ಪಾಯಿತು ಅನ್ನಿ. "ಏನು ಮಾಡುವುದು? ನಾನೇ ಹಾಗೆ ಮಾಡಬಹುದಿತ್ತು. ಹೋಗಲಿ. ಅಲ್ಲಿಗೇ ಬಿಡೋಣ" ಅನ್ನುವ ತಾಳ್ಮೆಯಿಂದ ಪರಿಹರಿಸಿಕೊಳ್ಳುತ್ತಾರೆ. ಅತಿರೇಕಕ್ಕೆ ಹೋಗುವುದಿಲ್ಲ. 

ದಾಂಪತ್ಯದ ಸಂದರ್ಭದಲ್ಲಿ "ಅನುರೂಪ ದಾಂಪತ್ಯ" ಅನ್ನುವ ಶಬ್ದಗಳನ್ನು ಕೇಳುತ್ತಿರುತ್ತೇವೆ. ಇದು ಹೊರಗಡೆಯ ಜನ ನೋಡುವುದಕ್ಕೆ ಅನ್ವಯಿಸುವಂತಹುದು. ಜೋಡಿ ಚೆನ್ನಾಗಿದೆ. ಹೇಳಿ ಮಾಡಿಸಿದಹಾಗಿದೆ. ನೋಡಲು ಸೊಗಸು. ಹೀಗೆ ತಿಳಿಯಬಹುದು. ಇದರಲ್ಲಿ ಜೀವನಕ್ರಮದ ವಿಶೇಷವೇನೂ ಇಲ್ಲ. ಕೆಲವು ವರುಷಗಳ ನಂತರ, ರೂಪ-ಲಕ್ಷಣ ಮಾಸಿದ ನಂತರ ಅನುರೂಪ ಅಪರೂಪವೇ ಆಗಬಹುದು. 

"ಅನುಕೂಲ ದಾಂಪತ್ಯ" ಹಾಗಲ್ಲ. ಒಂದು ವಸ್ತ್ರವನ್ನು ಕಂಡಾಗ ಅದು ನಮಗೆ ಒಂದಾಗಿ ಕಾಣುತ್ತದೆ. ಅದರಲ್ಲಿ ಹಾಸು-ಹೊಕ್ಕು ಆಗಿ ಅನೇಕ ದಾರಗಳಿವೆ. ಉದ್ದದ ದಾರಗಳು ಒಂದು ಕಡೆ. ಅಡ್ಡದ ದಾರಗಳು ಇನ್ನೊಂದು ಕಡೆ. ಆದರೆ ಅವುಗಳ ಹೊಂದಾಣಿಕೆ ಒಂದೇ ಆಗಿ ವಸ್ತ್ರವಾದಂತೆ ಈ ದಾಂಪತ್ಯ. ಏನೇ ಕಷ್ಟ-ಸುಖ ಬಂದರೂ ಇಂತಹ ದಾಂಪತ್ಯ ಸಮಯದ ಸವಾಲುಗಳು ದಾಟಿ ಗಟ್ಟಿಯಾಗಿ ನಿಲ್ಲುವುದು. ಇಂತಹ ಸಂಬಂಧದಲ್ಲಿ ತರ್ಕಕ್ಕೆ ಮೀರಿ ಪರಸ್ಪರ ಪ್ರೀತಿ-ವಿಶ್ವಾಸಗಳಿಗೆ ಬೆಲೆಯುಂಟು. ಸರಿ-ತಪ್ಪು ಅನ್ನುವುದಕ್ಕಿಂತ ನಂಬಿಕೆ-ಅವಲಂಬನೆ ಇಲ್ಲಿ ಮುಖ್ಯವಾಗುತ್ತದೆ.

*****

ನಲವತ್ತು-ನಲವತ್ತೈದು-ಐವತ್ತು ವರ್ಷಗಳು ಸಾಮರಸ್ಯದಿಂದ ಬಾಳಿ-ಬದುಕಿದ ಜೋಡಿಗಳನ್ನು ನಮ್ಮ ಸುತ್ತ-ಮುತ್ತ ಅಲ್ಲಲ್ಲಿ ಈಗಲೂ ಕಾಣುತ್ತಿರುತ್ತೇವೆ. ಅಂತಹವರನ್ನು ನೋಡಿದಾಗ ಒಂದು ರೀತಿಯ ಸಾತ್ವಿಕ ಸಂತೋಷ ತುಂಬಿ ಬರುತ್ತದೆ. ಹೀಗೆ ಇರುವ ಜೋಡಿಗಳಲ್ಲಿ ಒಬ್ಬರು ಕಾಲಧರ್ಮದ ಕಾರಣ ಇಲ್ಲವಾದಾಗ ಉಳಿದ ಒಂಟಿ ಜೀವಕ್ಕೆ ಎಲ್ಲಿಲ್ಲದ ಚಡಪಡಿಕೆ. ಉಳಿದ ಜೀವನಯಾತ್ರೆ ದುರ್ಭರ. ಆ ಜೋಡಿಯ ಹಿಂದಿನ ಸುಖೀ ಸಹಬಾಳ್ವೆ ಕಂಡ ಸಹೃದಯರಿಗೂ ಅದೊಂದು ವೇದನೆಯ ಸಂಗತಿಯೇ.

ಕೆಲವೇ ದಿನಗಲ್ಲಿ ಈ ರೀತಿಯ ಪ್ರಸಂಗಗಳು ಮತ್ತೆ ಮತ್ತೆ ಎದುರಾದಾಗ, ಈ ಎಲ್ಲ ಅಂಶಗಳೂ ಮನಸ್ಸಿನಲ್ಲಿ ಪುನರಾವರ್ತನೆ ಆಗುವುದು ಸಹಜ.