Showing posts with label Deha. Show all posts
Showing posts with label Deha. Show all posts

Wednesday, December 17, 2025

ರಾಮನಾಮ ಎಂಬ ರಸವುಳ್ಳ ನೀರಿಗೆ


ಕಳೆದ ಸಂಚಿಕೆಯಲ್ಲಿ "ತಾರಕ್ಕ ಬಿಂದಿಗೆ ನಾ ನೀರಿಗ್ಹೋಗುವೆ" ಎನ್ನುವ ಶೀರ್ಷಿಕೆಯ ಅಡಿಯಲ್ಲಿ ಬಹು ಜನಪ್ರಿಯ ದೇವರನಾಮ ಶ್ರೀ ಪುರಂದರದಾಸರ ಕೃತಿ "ತಾರಕ್ಕ ಬಿಂದಿಗೆ ನಾ ನೀರಿಗ್ಹೋಗುವೆ, ತಾರೇ ಬಿಂದಿಗೆಯ" ವಿಶೇಷಾರ್ಥಗಳ ಅನ್ವೇಷಣೆಯಲ್ಲಿ ಕೃತಿಯ ಪಲ್ಲವಿಯ ಎರಡು ಸಾಲುಗಳಲ್ಲಿ ತುಂಬಿರುವ ಅರ್ಥವಿಶೇಷಗಳನ್ನು ನೋಡುವ ಪ್ರಯತ್ನ ಮಾಡಿದ್ದೆವು. ಈ ಸಂಚಿಕೆಯನ್ನು ಇಲ್ಲಿ ಕ್ಲಿಕ್ ಮಾಡಿ ಓದಬಹುದು.

ಈಗ ಈ ಹಾಡಿನ ಉಳಿದ ಭಾಗಗಳ ವಿಶೇಷ ಅರ್ಥಗಳನ್ನು ನೋಡೋಣ. 

*****

ಬಿಂದಿಗೆ ಕೊಡು ಎಂದು ಕೇಳಿದ್ದು ನೀರು ತರಲು. ಯಾವ ನೀರು? ನಾವು ನಮ್ಮ ಸುತ್ತ-ಮುತ್ತ ಕಾಣುವ ಮತ್ತು ದಿನಂಪ್ರತಿ ಉಪಯೋಗಿಸುವ ನೀರು ಎನ್ನುವುದು ಸಾಮಾನ್ಯವಾದ ಹೊರ ಅರ್ಥ. ನೀರಿಲ್ಲದೆ ಜೀವನವಿಲ್ಲ. ಗಾಳಿಯ ನಂತರ ಜೀವಿಗೆ ಬೇಕಾದ ಅತ್ಯಂತ ಮುಖ್ಯ ಅವಶ್ಯಕತೆ ನೀರು. ನೀರನ್ನು ಶೇಖರಿಸಿ ತರಲು ಒಂದು ಸಾಧನ ಬೇಕು. ಬಿಂದಿಗೆಯು ಅಂತಹ ಒಂದು ಸಾಧನ. ನೀರಿಲ್ಲದೆ ಕರ್ಮವಿಲ್ಲ. ಏನಾದರೂ ಮಾಡುವ ಮೊದಲು ಕೈ, ಕಾಲುಗಳನ್ನಾದರೂ ತೊಳೆದುಕೊಳ್ಳುತ್ತೇವೆ. ಅದಕ್ಕೆ ನೀರು ಬೇಕು. ಸ್ನಾನ ಮಾಡಿದರೆ ನೀರು ಬೇಕು. ಪೂಜೆ-ಹೋಮಾದಿಗಳನ್ನು ಮಾಡಲು ಮೊದಲು ನೀರಿನಿಂದಲೇ ಪ್ರಾರಂಭ. ಕಡೆಯಲ್ಲಿ ಸಮರ್ಪಣ ಮಾಡಲೂ ನೀರು ಬೇಕು. ನೀರಿನಿಂದ ಪ್ರಾರಂಭವಾದ ಕೆಲಸಗಳು ನೀರಿನಿಂದಲೇ ಕೊನೆ! ಬೇರೆ ಯಾವುದಾದರೂ ಪದಾರ್ಥ ಇಲ್ಲದಿದ್ದರೆ ಹೇಗೋ ಕೆಲಸ ತೂಗಿಸಬಹುದು. ನೀರಿಲ್ಲದಿದ್ದರೆ ಮುಂದೆ ಹೋಗಲು ಆಗುವುದೇ ಇಲ್ಲ.  

ನೀರಿಗೆ ಒಂದು ವಿಶೇಷಾರ್ಥವಿದೆ. ಬಿಂದಿಗೆ ಅನ್ನುವುದು ದೇಹವಾದಾಗ (ಏಕೆ ಅನ್ನುವುದನ್ನು ಹಿಂದಿನ ಸಂಚಿಕೆಯಲ್ಲಿ ನೋಡಿದ್ದೇವೆ) ನೀರು ಅನ್ನುವುದು ಜೀವಿಯು ಮಾಡುವ "ಕರ್ಮ" ಸೂಚಕವಾಗುತ್ತದೆ. ಬಿಂದಿಗೆಯಲ್ಲಿ ನೀರನ್ನು ತರುವಂತೆ ದೇಹದಿಂದ ಜೀವಿಯು ಕರ್ಮಗಳನ್ನು ಮಾಡಿ ಆ ಮೂಲಕ ಸಾಧನೆಗಳನ್ನು ಮಾಡುತ್ತಾನೆ. 

ಈಶಾವಾಸ್ಯ ಉಪನಿಷತ್ತು ತನ್ನ ನಾಲ್ಕನೆಯ ಮಂತ್ರದಲ್ಲಿ "ತಸ್ಮಿನ್ ಆಪಃ ಮಾತರಿಶ್ವಾ ದಧಾತಿ" ಎಂದು ಹೇಳುತ್ತದೆ. "ಆಪಃ" ಅಂದರೆ ನೀರು. "ಮಾತರಿಶ್ವ" ಅಂದರೆ ವಾಯು. ವಾಯುವು ಕೊಡುವ ನೀರು ಯಾವುದು? ಕೊಡುವುದು ಯಾರಿಗೆ? ಜೀವಿಯ ಎಲ್ಲ ಕರ್ಮಗಳಿಗೆ ಪ್ರತ್ಯಕ್ಷ ಸಾಕ್ಷಿ ಪ್ರಾಣವಾಯು. ಮೊದಲ ಉಸಿರಿನಿಂದ ಪ್ರಾರಂಭವಾದ ಜೀವನದಿಂದ ಕರ್ಮ ಪ್ರಾರಂಭ. ಕೊನೆಯ ಉಸಿರಿನೊಡನೆ ಅದು ಮುಗಿಯಿತು. ಬೇರೆಯವರ ಕಣ್ಣು ತಪ್ಪಿಸಿ ಅನೇಕ ಕೆಲಸಗಳನ್ನು ಮಾಡಬಹುದು. ಹಾಗೆ ಏನಾದರೂ ಮಾಡಿ ಅರಗಿಸಿಕೊಳ್ಳಬಹುದು. ಆದರೆ ಮಾತರಿಶ್ವನ ಕಣ್ಣು ತಪ್ಪಿಸಲಾಗದು. ಇದನ್ನೇ "ಅಂತಃಸಾಕ್ಷಿ" ಎಂದೂ ಹೇಳುತ್ತೇವೆ.  ಜೀವನ ಕಾಲ ಮುಗಿದ ಮೇಲೆ ಜೀವಿಯನ್ನು ಪರಮಾತ್ಮನ ಮುಂದೆ ನಿಲ್ಲಿಸಿ ವಾಯುದೇವನು ಅವನ ಸಮಸ್ತ ಕರ್ಮಗಳನ್ನು ಹಾಜರು ಮಾಡುತ್ತಾನೆ. 

ಈ ಕಾರಣದಿಂದ "ನಾ ನೀರಿಗ್ಹೋಗುವೆ" ಅಂದರೆ "ನೀನು ಕೊಟ್ಟ ದೇಹದಿಂದ ನಾನು ಕರ್ಮಗಳನ್ನು ಆಚರಿಸಿ ಸಾಧನೆಗಳನ್ನು ಮಾಡುವೆ, ಮಹಾಲಕ್ಷ್ಮಿ ಅಕ್ಕಾ" ಎಂದು ಹೇಳುವುದು. ಇದು ಅಂತರಾರ್ಥ. 
***** 

"ರಾಮನಾಮ ಎಂಬೋ ರಸವುಳ್ಳ ನೀರಿಗೆ" ಬಿಂದಿಗೆ ಬೇಕು. ರಾಮನಾಮದ ವಿಶೇಷವೇನು? ಅನಂತರೂಪಿ ಪರಮಾತ್ಮನಿಗೆ ಅನಂತ ಹೆಸರುಗಳು. ಸೃಷ್ಟಿಯಲ್ಲಿ ಇರುವ ಸಕಲ ಶಬ್ದಗಳೂ ಪರಮಾತ್ಮನನ್ನೇ ಹೇಳುತ್ತವೆ ಎನ್ನುವುದು ಒಂದು ಪ್ರಮೇಯ. (ಧ್ವನ್ಯಾತ್ಮಕ ಮತ್ತು ವರ್ಣಾತ್ಮಕ ಶಬ್ದಗಳ ಬಗ್ಗೆ ಹಿಂದೊಂದು ಸಂಚಿಕೆಯಲ್ಲಿ ನೋಡಿದ್ದೇವೆ). "ರಮಯತಿ ಇತಿ ರಾಮಃ". "ಆನಂದ (ಸಂತೋಷ) ಕೊಡುವವನು ರಾಮ" ಎಂದು ಇದರ ಅರ್ಥ. ಜೀವಿಗಳಿಗೆ ಈ ಸುತ್ತುವ ಸಂಸಾರದ ಹುಟ್ಟು-ಸಾವುಗಳಿಂದ ಬಿಡುಗಡೆ ಕೊಟ್ಟು ಶಾಶ್ವತ ಆನಂದ ಕೊಡುವವನು ರಾಮ. ಈ ಮೋಕ್ಷದ ನಂತರದ ಆನಂದಕ್ಕೆ ಅದರ ಪ್ರಮಾಣದಲ್ಲಿ ಆಗಾಗ ಹೆಚ್ಚು-ಕಡಿಮೆ ಆಗುವ ಭಯವಿಲ್ಲ. ಎಂದೋ ಒಂದು ದಿನ ಮುಗಿದುಹೋಗುವುದು ಎನ್ನುವ ಆತಂಕವಿಲ್ಲ. ಅದು ಶಾಶ್ವತವಾದ, ಕೊನೆಯಿಲ್ಲದ, ಪರಿಪೂರ್ಣ ಆನಂದ. 

ರಾಮನು ಎಲ್ಲ ಕಾಲದಲ್ಲೂ ಇದ್ದನು. ಎಲ್ಲ ಕಾಲದಲ್ಲೂ ಇರುತ್ತಾನೆ. ತ್ರೇತಾಯುಗದ ಶ್ರೀರಾಮಚಂದ್ರನು ಅವತಾರ ಮಾಡುವ ಮೊದಲೂ ಇದ್ದನು. ಆ ಅವತಾರ ಮುಗಿದಮೇಲೂ ಇರುತ್ತಾನೆ. ಇಂತಹ ರಾಮನ ಹೆಸರನ್ನೇ ದಶರಥ-ಕೌಸಲ್ಯೆಯರ ಮಗನಿಗೂ ಕೊಟ್ಟರು. ಇಬ್ಬರೂ ಒಂದೇ. ಭೇದವಿಲ್ಲ. 

ಪರಮಾತ್ಮನ ಅನಂತ ನಾಮಗಳಲ್ಲಿ ರಾಮನಾಮ ಅತ್ಯಂತ ಸುಲಭವಾದದ್ದು. ಒತ್ತಕ್ಷರಗಳ ಗೊಂದಲವಿಲ್ಲ. ಆರು-ಎಂಟು-ಹತ್ತು ಅಕ್ಷರಗಳ ದೊಡ್ಡ ಹೆಸರಲ್ಲ. ಈಗ ತಾನೇ ಮಾತು ಕಲಿಯುತ್ತಿರುವ ಮಗುವೂ ಸುಖವಾಗಿ "ರಾಮ" ಎಂದು ಹೇಳುವುದು. "ಹೃಷಿಕೇಶ" "ತ್ರಿವಿಕ್ರಮ" "ಪದ್ಮನಾಭ" "ಸಂಕರ್ಷಣ" "ಅಧೋಕ್ಷಜ" ಮುಂತಾದುವನ್ನು ಹೇಳಲು ಅನೇಕರಿಗೆ ಕಷ್ಟವಾಗುತ್ತದೆ. ರಾಮನಾಮಕ್ಕೆ ಇಂತಹ ಬಂಧವಿಲ್ಲ. ಅದು ಗಟ್ಟಿಯಾದ ಚಕ್ಕುಲಿ, ಕೋಡುಬಳೆ, ಪುಳ್ಳಂಗಾಯಿ ಉಂಡೆ ತಿಂದು ಅರಗಿಸಿಕೊಂಡಂತೆ ಅಲ್ಲ. ಪಾಯಸ ಕುಡಿದಂತೆ ಸುಲಭ. ಸಿಹಿಯೂ ಹೌದು. ಆದ್ದರಿಂದ "ರಾಮನಾಮ ಪಾಯಸ"!
*****

ರಾಮನಾಮ ಎಂಬ ನೀರು ಎಂದಾಯಿತು. "ರಸವುಳ್ಳ ನೀರು" ಎಂದೇಕೆ ಹೇಳಿದರು? ನೀರಿನಲ್ಲಿ ಎಂತಹ ರಸ? ನಮಗೆ ಬಾಯಾರಿಕೆ ಆದಾಗ ಕುಡಿಯಲು ನೀರು ಬೇಕು. ಒಳ್ಳೆಯ ಬಾದಾಮಿ ಹಾಲೋ, ಎಳನೀರೋ ಕೊಟ್ಟರೆ ಹೇಗೆ? ಸೊಗಸಾದ ಕಾಫಿ? ಅಥವಾ ಕಿತ್ತಳೆ ರಸ? "ಅದೆಲ್ಲಾ ಇರಲಿ. ಕೊಡುವಿರಂತೆ. ಮೊದಲು ಒಂದು ಲೋಟ ನೀರು ಕೊಡಿ, ಆಮೇಲೆ ಬೇರೆಯದು" ಎನ್ನುತ್ತೇವೆ. ಆಯಿತು. ಕೊಟ್ಟರು. ಎಲ್ಲ ನೀರೂ ಒಂದೇ ರೀತಿ ಇರುವುದಿಲ್ಲ. ಬೆಂಗಳೂರಿನಲ್ಲಿ ಬೋರ್ವೆಲ್ ನೀರು ಕೊಡಬಹುದು. ಯಾವುದೊ ಕೆರೆಯಿಂದ ತಂಡ ಟ್ಯಾಂಕರ್ ನೀರು ಇರಬಹುದು. ಕಾವೇರಿ, ಅರ್ಕಾವತಿ ನೀರು ತಂದಿರಬಹುದು. ಎಲ್ಲವೂ ಒಂದೇ ರೀತಿ ಇರುವುದಿಲ್ಲ. ಕೆಲವು ನೀರು ಕುಡಿದರೆ ಮುಖ ಸಿಂಡರಿಸುತ್ತೇವೆ. "ಈ ನೀರು ಅಷ್ಟು ಸರಿ ಇಲ್ಲ" ಅನ್ನುತ್ತೇವೆ. ಯಾಕೆ? ನೀರು ಚೆನ್ನಾಗಿರಬೇಕು. "ಇಂತಹ ಒಳ್ಳೆಯ ನೀರು ತರುತ್ತೇನೆ, ಬಿಂದಿಗೆ ಕೊಡು" ಅನ್ನುವುದು ಸಾಮಾನ್ಯ ಅರ್ಥ. 

"ರಸ" ಅನ್ನುವುದಕ್ಕೆ ವಿಶೇಷಾರ್ಥವೂ ಉಂಟು. ಅದು ತಿಳಿಯಬೇಕಾದರೆ ಶ್ರೀಮದ್ ಭಗವದ್ಗೀತೆಯ ಏಳನೆಯ ಅಧ್ಯಾಯ ನೋಡಬೇಕು. ಎಂಟನೆಯ ಶ್ಲೋಕದಲ್ಲಿ ಶ್ರೀಕೃಷ್ಣ ಹೇಳುತ್ತಾನೆ:

ರಸೋಹಂ ಅಪ್ಸು ಕೌಂತೇಯ ಪ್ರಭಾಸ್ಮಿ ಶಶಿ ಸೂರ್ಯಯೋ: 
ಪ್ರಣವಃ ಸರ್ವವೇದೇಷು ಶಬ್ದ: ಖೇ ಪೌರುಷಮ್ ನೃಷು 

"ನೀರಿನಲ್ಲಿ ನಾನು ರಸ ಆಗಿದ್ದೇನೆ. ಚಂದ್ರ-ಸೂರ್ಯರಲ್ಲಿ ಬೆಳಕಾಗಿದ್ದೇನೆ. 
ವೇದಗಳಲ್ಲಿ ಓಂಕಾರವಾಗಿದ್ದೇನೆ. ಆಕಾಶದಲ್ಲಿ ಶಬ್ದ ರೂಪದಲ್ಲಿ ಇದ್ದೇನೆ. 
ಮನುಷ್ಯರಲ್ಲಿ ಕ್ರಿಯಾಶಕ್ತಿಯ ರೂಪವಾಗಿ ನಿಂತಿದ್ದೇನೆ"

ಪರಮಾತ್ಮನ ಸನ್ನಿಧಾನ ಇದ್ದಾಗ ನೀರು ರುಚಿಸುತ್ತದೆ. ಪದಾರ್ಥಗಳ ಸೊಗಸು ನಾಲಿಗೆಗೆ ಸಿಗುತ್ತದೆ. ಕಿತ್ತಳೆ ತೊಳೆ ನೋಡಲು ಕೆಂಪಾಗಿದೆ. ದಪ್ಪಗೂ ಇದೆ. ಆದರೆ ತಿಂದಾಗ ಬರೀ ಬೆಂಡು ಬೆಂಡು. ಯಾಕೆ? ಅಲ್ಲಿ ಪರಮಾತ್ಮನ ಅಭಿವ್ಯಕ್ತಿ ಇಲ್ಲ. ಬಾದಾಮಿ, ಗೋಡಂಬಿ ಬಹಳ ಚೆನ್ನಾಗಿವೆ. ಬಾಯಿಯಲ್ಲಿ ಹಾಕಿಕೊಂಡು ಎಷ್ಟು ಹೊತ್ತು ಇಟ್ಟುಕೊಂಡರೂ ಏನೂ ರುಚಿಯಿಲ್ಲವಲ್ಲ? ಅಗಿದು ಅದಕ್ಕೆ ಸ್ವಲ್ಪ ರಸರೂಪದ ನೀರು ಸೇರಿದರೆ ತಕ್ಷಣ ರುಚಿ ಸಿಕ್ಕಿತು!  

ಮನುಷ್ಯನು ಮಾಡುವ ಕೆಲಸಗಳೂ ಅಂತೆಯೇ. ಯಾವುದೋ ಕಾರಣಕ್ಕೆ ಮಾಡಿದ ಕಾರ್ಯಗಳು ನೀರಸ. "ಪರಮಾತ್ಮನಿಗೆ ಪ್ರೀತಿಯಾಗಲಿ" ಎಂದು ಮಾಡಿದ ತಕ್ಷಣ ಅಲ್ಲಿ ರಸ ಬಂದು ಕೂತಿತು. ಮಾಡಿದ ಕರ್ಮ ಸತ್ಕರ್ಮ ಆಯಿತು. ಅವನಿದ್ದರೆ ಅದು ಸರಸ. ರಸದಿಂದ ಕೂಡಿದ್ದು. ಅವನಿಲ್ಲದಿದ್ದರೆ ಅದು ನೀರಸ. ರಸವಿಲ್ಲದ್ದು. ಅವನಿಗೆ ವಿರುದ್ಧವಾಗಿದ್ದರೆ ವಿರಸ. ಇದೇ ಸತ್ಕರ್ಮಗಳ ರಹಸ್ಯ!

"ರಾಮನಾಮವೆಂಬ ರಸವುಳ್ಳ ನೀರು ತರುತ್ತೇನೆ, ಬಿಂದಿಗೆ ಕೊಡು ಅಕ್ಕಾ" ಅಂದಾಗ "ಸತ್ಕರ್ಮಗಳನ್ನು ಮಾಡಿ ರಸರೂಪವಾದ ಸಾಧನೆಯನ್ನು ದೇಹದಲ್ಲಿ ತುಂಬಿಕೊಳ್ಳುತ್ತೇನೆ" ಎಂದು ಅರ್ಥ. ಇದೇ ಇಲ್ಲಿನ ವಿಶೇಷಾರ್ಥ. 
*****

"ಗೋವಿಂದ ಎಂಬ ಗುಣವುಳ್ಳ ನೀರಿಗೆ ತಾರೆ ಬಿಂದಿಗೆಯ, ಆವಾವ ಪರಿಯಲ್ಲಿ ಅಮೃತದ ನೀರಿಗೆ ತಾರೇ ಬಿಂದಿಗೆಯ" ಅನ್ನುವುದು ಮುಂದಿನದು. "ಗೋವಿಂದ" ಅನ್ನುವ ಪದಕ್ಕೆ ಅನೇಕ ಅರ್ಥಗಳು. ಗೋ ಅನ್ನುವ ಪದಕ್ಕೆ "ನೀರು" "ಹಸು" "ಭೂಮಿ" "ವೇದಗಳು" ಇನ್ನೂ ಮುಂತಾಗಿ ವಿವರಣೆಗಳಿವೆ. "ಉತ್ತಮವಾದದ್ದು" ಎಂದೂ ಅರ್ಥವುಂಟು. "ನೀರಿನಲ್ಲಿ ಶ್ರೇಷ್ಠವಾದ ರೀತಿಯ ನೀರು ತರುತ್ತೇನೆ" ಎಂದು ಹೇಳುವುದು ಸಾಮಾನ್ಯ ಅರ್ಥ. 

ಅಮೃತದ ನೀರು ಹೇಗೆ? ಸತ್ಕರ್ಮ ಮಾಡಿದ ಮೇಲೆ ಮುಂದೆ ಜನ್ಮವಿಲ್ಲದ ಮುಕ್ತಿ ಸಿಗುತ್ತದೆ. ಸಾವಿಲ್ಲದ್ದು ಅಮೃತ. ಗೋವಿಂದನ ಪ್ರೀತಿಗಾಗಿ ಮಾಡಿದ ಕರ್ಮಗಳನ್ನು, ನಿಷ್ಕಾಮ ಕರ್ಮಗಳನ್ನು, ತುಂಬಿಕೊಂಡಮೇಲೆ ಮತ್ತೆ ಮರಣವಿಲ್ಲ. ಅಂದರೆ ಅಮೃತತ್ವ ಸಿಕ್ಕಿತು. ಆದ್ದರಿಂದ "ಅಮೃತದ ನೀರು". 

"ಕಾಮಿನಿಯರ ಕೂಡೆ ಏಕಾಂತವಾಡೆನು, ತಾರೆ ಬಿಂದಿಗೆಯ" ಎಂದರೇನು? ನೀರು ತರಲು ನದಿಗೋ, ಭಾವಿಗೋ ಹೋದಾಗ ಅಲ್ಲಿ ನಮ್ಮಂತೆಯೇ ಅನೇಕರು ಬಂದಿರುತ್ತಾರೆ. ಸಾಮಾನ್ಯವಾಗಿ ನೀರು ತರಲು ಹೋಗುತ್ತಿದ್ದುದು ಲೋಕಾರೂಢಿಯಾಗಿ ಹೆಣ್ಣುಮಕ್ಕಳು. ಕಾಮಿನಿ ಅನ್ನುವ ಪದಕ್ಕೆ ಹೆಣ್ಣು ಎಂದೂ ಒಂದು ಅರ್ಥ. ಒಂದರ್ಥವೇನು, ಇದೇ ಅರ್ಥದಲ್ಲಿ ಆ ಪದವನ್ನು ಸಾಮಾನ್ಯವಾಗಿ ಬಳಸುವುದು. ಕೆಲವರು ಅಲ್ಲಿ ಕಂಡಾಗ ಸಹಜವಾಗಿ ಸ್ವಲ್ಪ ಅದು-ಇದು ಮಾತಾಡುವಂತೆ ಆಗುತ್ತದೆ. ಹರಟೆಯಲ್ಲಿ ಕಾಲಹರಣ ನಡೆಯುತ್ತದೆ. "ನಾನು ಹರಟೆಯಲ್ಲಿ ಕಾಲ ವ್ಯಯ ಮಾಡುವುದಿಲ್ಲ. ಅಲ್ಲಿ ಹೋಗಿ, ನೀರು ತುಂಬಿಕೊಂಡು ಬೇಗ ಬಂದುಬಿಡುತ್ತೇನೆ" ಎನ್ನುವುದು ಸಾಮಾನ್ಯ ಅರ್ಥ. 

"ಕಾಮ" ಅಂದರೆ ಆಸೆ. ಆಸೆ ಯಾವಾಗಲೂ ಒಂದೇ ಒಂದಾಗಿ ಬರುವುದಿಲ್ಲ. ಆಸೆಗಳು ಗುಂಪಾಗಿ ಮನುಷ್ಯನನ್ನು ಕಾಡುತ್ತವೆ. ಕಾಮದಿಂದ ಹುಟ್ಟಿದ್ದು ಕಾಮಿನಿ ಎಂದಾಗುತ್ತದೆ. "ಅಕ್ಕ, ನೀನು ದೇಹವನ್ನು ಕೊಟ್ಟರೆ ಅದನ್ನು ಇತರೆ ಆಸೆಗಳ, ಪ್ರಾಪಂಚಿಕ ಸುಖ-ಭೋಗಗಳ, ತೃಪ್ತಿಗೆ ಬಳಸುವುದಿಲ್ಲ. ಕೇವಲ ಸಾಧನೆಗಾಗಿಯೇ ಜೀವಿತ ಕಾಲವನ್ನು ಬಳಸಿಕೊಳ್ಳುತ್ತೇನೆ" ಎಂದು ಹೇಳುವುದೇ ವಿಶೇಷಾರ್ಥ. 

ನೀರು ತರಲೆಂದು ಬಿಂದಿಗೆ ಹಿಡಿದು ಹೊರಟು, ಜಲಾಶಯದ ಬಳಿ ಸಮಯವೆಲ್ಲ ಹರಟೆಯಲ್ಲಿ ಕಳೆದು, ಕಡೆಗೆ ಮನೆಗೆ ಖಾಲಿ ಬಿಂದಿಗೆ ಹಿಡಿದು ಬಂದರೆ ಹೇಗಿರುತ್ತದೆ? ಅಮೂಲ್ಯವಾದ ಮತ್ತು ಅಪರೂಪವಾದ ಮನುಷ್ಯ ಜನ್ಮ ಪಡೆದು. ಲೌಕಿಕ ಸುಖಗಳಲ್ಲಿ ಎಲ್ಲ ಕಾಲ ಕಳೆದು, ಕಡೆಗೆ ಅಲ್ಲಿ ಹೋಗಿ ನಿಂತಾಗ ಖಾಲಿ ಕೈ ಆಗುವಂತಾದರೆ ಹೇಗೆ? ಕಾಡಿ-ಬೇಡಿ ಪಡೆದ ದೇಹ, ಜನ್ಮ ವ್ಯರ್ಥವಾಯಿತು. ಹೀಗಾಗಲು ಬಿಡುವುದಿಲ್ಲ ಎಂದು ಮಹಾಲಕ್ಷ್ಮಿ ದೇವಿಗೆ ವಚನ ಕೊಟ್ಟಂತೆ ಈ ಮಾತು. 
***** 

"ಬಿಂದು ಮಾಧವನ ಘಟ್ಟಕ್ಕೆ ಹೋಗುವೆ, ಪುರಂದರ ವಿಠಲಗೆ ಅಭಿಷೇಕ ಮಾಡುವೆ" ಎನ್ನುವುದು ಕಡೆಯ ನುಡಿಯ ತಿರುಳು. ಕಾಶಿಯಲ್ಲಿ ಬಿಂದುಮಾಧವನ ದೇವಾಲಯ ಇದೆ. ಗಂಗಾನದಿಯ ಪಕ್ಕದಲ್ಲೇ ಇದೆ. "ಒಳ್ಳೆಯ ಗಂಗೆ ನೀರು ಬಿಂದಿಗೆಯಲ್ಲಿ ತುಂಬಿಕೊಂಡು ಬಂದು ವಿಠಲನ ಇನ್ನೊಂದು ರೂಪನಾದ ಮಾಧವನಿಗೆ ಅಭಿಷೇಕ ಮಾಡುತ್ತೇನೆ" ಅನ್ನುವುದು ಸಾಮಾನ್ಯ ಅರ್ಥ. 

"ನೀನು ನನ್ನ ಈ ಬೇಡಿಕೆಯ ಫಲವಾಗಿ ಕೊಡುವ ದೇಹದಲ್ಲಿ ಅನೇಕ ಸಾಧನೆಗಳನ್ನು ಮಾಡಿ ಅವುಗಳನ್ನೆಲ್ಲಾ ಪರಮಾತ್ಮನಿಗೆ ಸಮರ್ಪಣ ಮಾಡುತ್ತೇನೆ" ಎಂದು ಮಹಾಲಕ್ಷ್ಮೀದೇವಿಯ ಮುಂದೆ ಪ್ರತಿಜ್ಞೆ ಮಾಡುವುದೇ ಒಟ್ಟು ತಾತ್ಪರ್ಯ ಮತ್ತು ವಿಶೇಷಾರ್ಥ. 

"ಪ್ರತ್ಯಕ್ಷರಂ ಪ್ರತಿಪದಂ ಅನೇಕಾಕೂತಿ ಗರ್ಭಿತಂ" ಎಂದು ಒಂದು ಮಾತಿದೆ. ದೊಡ್ಡವರ ಮಾತುಗಳಲ್ಲಿ ಅವರ ಅನೇಕ ಕಾಲದ ಅನುಭವದ, ಅಧ್ಯಯನದ ಸಾರ ತುಂಬಿರುತ್ತದೆ. ಶ್ರೀ ಪುರಂದರದಾಸರ ಪದಗಳಲ್ಲಿ ಇವನ್ನು ಚೆನ್ನಾಗಿ ಕಾಣಬಹುದು. ಒಂದೊಂದು ಸಾಲಿನಲ್ಲೂ, ಒಂದೊಂದು ಪದದಲ್ಲೂ, ಸಾಮಾನ್ಯ ಅರ್ಥಗಳೂ, ಅವುಗಳ ಜೊತೆ-ಜೊತೆಯಾಗಿ ವಿಶೇಷ ಅರ್ಥಗಳೂ, ಗೂಡಾರ್ಥಗಳೂ ತುಂಬಿರುತ್ತವೆ. ಒಂದು ಸಲ ಓದಿದರೆ ಅಥವಾ ಕೇಳಿದರೆ ಅಷ್ಟಿಷ್ಟು ಅರ್ಥವೇನೋ ಆಗುತ್ತದೆ. ಸರಿಯಾದ ಮೌಲ್ಯ ನಮಗೆ ಸಿಗಬೇಕಾದರೆ ಹೆಚ್ಚಿನ ಅಧ್ಯಯನ ಅಗತ್ಯ. 

*****

ಹಿಂದಿನ ಮತ್ತು ಈ ಸಂಚಿಕೆಯನ್ನು ಓದಿದ ನಂತರ ಹಾಡನ್ನು ಕೇಳಿದರೆ ಹೆಚ್ಚು ಉಪಯೋಗವಾಗುತ್ತದೆ. ಆದ್ದರಿಂದ ಅದನ್ನು ಈ ಕೆಳಗೆ ಕೊಟ್ಟಿದೆ:


ಒಂದು ಬಾರಿ ಓದಿದರೆ ವಿಶೇಷಾರ್ಥಗಳು ಮನಸ್ಸಿನಲ್ಲಿ ನಿಲ್ಲುವುದಿಲ್ಲ. ಅದಕ್ಕೆ ಎರಡು ಮೂರು ಬಾರಿ ಓದುವ ತಾಳ್ಮೆ ಬೇಕು. ಒಮ್ಮೆ ಮನಸ್ಸಿನಲ್ಲಿ ನಿಂತರೆ ಮುಂದೆ ಬೇರೆ ಬೇರೆ ವಿಷಯಗಳ ಅಧ್ಯಯನ ಕಾಲದಲ್ಲಿ ಮತ್ತಷ್ಟು ಹೊಸ ವಿಷಯಗಳು ತೆರೆದುಕೊಳ್ಳುತ್ತವೆ. 

Wednesday, September 17, 2025

ಒಂದು ದೇಹದಲ್ಲಿ ಅನೇಕ ದೇಹಗಳು!

ಶ್ರೀಮದ್ ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ವಿವರಿಸಿರುವ ಬಹಳ ವಿಷಯಗಳು ಅನೇಕ ಸಾಂದರ್ಭಿಕ  ಕಾರಣಗಳಿಂದ ಮತ್ತೆ ಮತ್ತೆ ನಮ್ಮ ಗಮನಕ್ಕೆ ಬರುತ್ತಿರುತ್ತವೆ. ಹುಟ್ಟು ಮತ್ತು ಸಾವು, ಅವುಗಳ ತಪ್ಪಿಸಲಾಗದ ಚಕ್ರ, ಅವುಗಳ ವಿಷಯದಲ್ಲಿ ಅತಿಯಾಗಿ ದುಃಖಿಸಬಾರದೆಂಬುದು, ಇವುಗಳ ಚರ್ಚೆ ಬೇರೆ ಬೇರೆ ಸಂವಾದಗಳಲ್ಲಿ ಆಗಾಗ ನಡೆಯುತ್ತಿರುತ್ತದೆ. ಇದೇ ಭಗವದ್ಗೀತೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಹೇಳಿರುವ ಇನ್ನೊಂದು ವಿಷಯವು ಹೆಚ್ಚಾಗಿ ಚರ್ಚಿತವಾಗುವುದಿಲ್ಲ.

ಕಳೆದ ತಿಂಗಳು ಹಿಂದಿನ ಒಂದು ಸಂಚಿಕೆಯಲ್ಲಿ, "ಸಾವು ಎದುರಲ್ಲಿ ಬಂದು ನಿಂತಾಗ" ಎನ್ನುವ ಶೀರ್ಷಿಕೆಯಡಿಯಲ್ಲಿ, ಈ ಸಂಬಂಧದ ಕೆಲವು ಪದರಗಳನ್ನು ಚರ್ಚಿಸಿದ್ದೆವು. (ಇಲ್ಲಿ ಕ್ಲಿಕ್ ಮಾಡಿ ಈ ಸಂಚಿಕೆಯನ್ನು ಓದಬಹುದು).  

ಸಾವಿನ ಕಾಲದಲ್ಲಿ ಜೀವನು ಈಗ ಪಡೆದಿರುವ ದೇಹವು ಕೊನೆಗೊಂಡು ಮತ್ತೆ ಮುಂದೆ ಬೇರೊಂದು ದೇಹ ಪಡೆಯುವ ಜನನ-ಮರಣ ಚಕ್ರದ ಜೊತೆಯಲ್ಲಿಯೇ, ಈಗಿನ ಒಂದು ಜೀವಿತಕಾಲದಲ್ಲಿಯೇ ಜೀವಿಯು ಪಡೆದ ದೇಹವೊಂದರಲ್ಲಿ ಅನೇಕ ದೇಹಗಳು ಅಡಗಿರುವ ಗುಟ್ಟನ್ನು ಶ್ರೀಕೃಷ್ಣನು ಹೇಳಿದ್ದಾನೆ. ಇದೇನೂ ಅಂತಹ ಗುಟ್ಟಿನ ವಿಷಯವಲ್ಲ. ಅದು ಎಲ್ಲರಿಗೂ ಚೆನ್ನಾಗಿ ತಿಳಿದಿದ್ದರೂ, ಅದರ ಸುಪ್ತವಾಗಿ ಉಳಿಯುವ ಗುಣದಿಂದ,  ಹೆಚ್ಚಾಗಿ ಗಮನಕ್ಕೆ ಬರುವುದಿಲ್ಲ. 

*****

ಯಾವುದೇ ಪ್ರಾಣಿಯಿರಲಿ, ಅದರಲ್ಲಿ ವಿಶೇಷವಾಗಿ ಮನುಷ್ಯ, ಹುಟ್ಟುವಾಗ ಇದ್ದ ದೇಹಕ್ಕೂ ಜೀವನದ ಕೊನೆಯ ಕಾಲದಲ್ಲಿ ಇರುವ ದೇಹಕ್ಕೂ ಅಜ-ಗಜಾಂತರ (ಆಡು-ಆನೆ) ವ್ಯತ್ಯಾಸ. ತಾಯಿಯ ಗರ್ಭದಿಂದ ಮಗು ಅಥವಾ ಪ್ರಾಣಿಯ ಮರಿ ಹೊರಬಂದಾಗ, ಅಥವಾ ಮೊಟ್ಟೆಯೊಡೆದು ಮರಿ ಹೊರಗೆ ಬಂದಾಗ ಅದರ ಗಾತ್ರ ಬಹಳ ಸಣ್ಣದಿರುತ್ತದೆ. ನಂತರ ಕಾಲಕ್ರಮದಲ್ಲಿ ಅದರ ಗಾತ್ರ ದೊಡ್ಡದಾಗುತ್ತ ಹೋಗುತ್ತದೆ. ಇನ್ನೂ ಮುಂದೆ ಅದು ಮೊದಲಿನಂತೆ ಪೂರ್ತಿ ಚಿಕ್ಕದಾಗದೇ ಇದ್ದರೂ ಸಾಮಾನ್ಯವಾಗಿ ಕುಗ್ಗಿ ಅಥವಾ ಕೃಶವಾಗಿ ಹೋಗುತ್ತದೆ. ಇದು ಎಲ್ಲರಿಗೂ ದಿನಂಪ್ರತಿ ಕಣ್ಣಿಗೆ ಕಾಣುವ ವಾಸ್ತವ ಸಂಗತಿ. 

ಏಕೆ ಹೀಗೆ? ಇದು ಪ್ರಸವ ಅಥವಾ ಮೊಟ್ಟೆಯೊಡೆದು ಮರಿ ಸುಖವಾಗಿ ಹೊರಬರಲು ಪ್ರಕೃತಿ ಮಾಡಿರುವ ಒಂದು ಉಪಾಯ. ಇದರಿಂದ ಮರಿ ಮತ್ತು ತಾಯಿ ಇಬ್ಬರಿಗೂ ಕ್ಷೇಮ. ಒಂದು ಆನೆಯ ಮರಿ ಆನೆಯ ಗಾತ್ರದ್ದೇ ಆಗಿ ಹುಟ್ಟುವ ಪರಿಯನ್ನು ನೆನೆಸಿಕೊಂಡರೆ ಮೊದಲು ನಗು ಬರುತ್ತದೆ. ಇದೇನು, ಇಂತಹ ಹಾಸ್ಯಾಸ್ಪದ ವಿಷಯ ಎನಿಸುತ್ತದೆ. ಕೆಲವೊಮ್ಮೆ ನಾಕೂವರೆ ಅಡಿ ಎತ್ತರವಿರುವ ತಾಯಿ ಮತ್ತು ಆರೂವರೆ ಅಡಿ ಎತ್ತರ ಇರುವ ಮಗನನ್ನು ಜೊತೆಯಾಗಿ ನೋಡಿದಾಗ ಇದರ ವಾಸ್ತವತೆ ಅರಿವಾಗುತ್ತದೆ. 

ಶಿಶುಪಾಲನೆ ಅನೇಕ ಪ್ರಾಣಿಗಳಲ್ಲಿ ಮತ್ತು ಮನುಷ್ಯರಲ್ಲಿ ಒಂದು ದೊಡ್ಡ ಕೆಲಸವೇ. ಕೆಲವು ಪ್ರಾಣಿಗಳಲ್ಲಿ ಜನನವಾದ ನಂತರ ತಾಯಿ ಮತ್ತು ಮಗುವಿಗೆ ಯಾವುದೇ ಸಂಬಂಧವಿರುವುದಿಲ್ಲ. ಇನ್ನು ಕೆಲವು ಪ್ರಾಣಿಗಳಲ್ಲಿ ಸ್ವಲ್ಪ ಕಾಲ ಮರಿ ತಾಯಿಗೆ ಅಂಟಿಕೊಂಡಂತೆ ಇರುತ್ತದೆ. ಮನುಷ್ಯರಲ್ಲಿ ಪ್ರಾಯಶಃ ಇದರ ಅವಧಿ ಅತ್ಯಂತ ಹೆಚ್ಚು. ಮಗು ಎಷ್ಟು ದೊಡ್ಡದಾದರೂ ತಾಯಿ-ಮಗ ಅಥವಾ ತಾಯಿ-ಮಗಳ ಸಂಬಂಧ ಕೊಂಚವೂ ಮಾಸುವುದಿಲ್ಲ. 

ಸುಮಾರು ಇಪ್ಪತ್ತು ವರುಷಗಳ ಹಿಂದಿನ ಮಾತು. ನಮ್ಮ ಹಿರಿಯ ಸ್ನೇಹಿತರೊಬ್ಬರಿಗೆ ಎಂಭತ್ತರ ವಯಸ್ಸು. ಅವರ ನಿವೃತ್ತಿಯ ನಂತರ ಪರಸ್ಪರ ಈಮೈಲ್ ಮುಖಾಂತರ ಸಂಪರ್ಕ ಇದ್ದರೂ ಮುಖಾಮುಖಿ ಆಗಿರಲಿಲ್ಲ. ಅಪರೂಪಕ್ಕೆ ಅಮೆರಿಕೆಯ ಸಿಯಾಟಲ್ ನಗರದಲ್ಲಿ ಸಿಕ್ಕರು. ಅದು ಒಂದು ಅವಸರದ ಭೇಟಿ ಆಗಿತ್ತು. ಸಿಕ್ಕಾಗ ಬಹಳ ಉಲ್ಲಸಿತರಾಗಿದ್ದರು. "ಏನು, ಇಷ್ಟು ಸಂತೋಷದಲ್ಲಿದ್ದೀರಿ?" ಎಂದೆ. "ಹೌದಪ್ಪ, ಬಹಳ ಆನಂದದ ದಿನ. ನಾಳೆ ಬೆಂಗಳೂರು ಮಾರ್ಗವಾಗಿ ನನ್ನ ದಕ್ಷಿಣ ಕನ್ನಡದ ಹಳ್ಳಿಗೆ ಹೋಗುತ್ತಿದ್ದೇನೆ. ಅಲ್ಲಿ ನನ್ನ ತಾಯಿಯಿದ್ದಾಳೆ. ಅವಳನ್ನು ನೋಡಿ ಹತ್ತು ವರುಷವಾಗಿದೆ. ಕೆಲವು ತಿಂಗಳಲ್ಲಿ ಅವಳಿಗೆ ಶತಮಾನೋತ್ಸವ. ಕುಟುಂಬದ ಎಲ್ಲರೂ ಅಲ್ಲಿ ಸೇರುತ್ತಾರೆ. ಅವಳನ್ನು ನೋಡುವುದೇ ಒಂದು ಪುಳಕ. ಅದರಿಂದ ಈ ಸಂತೋಷ" ಅಂದರು. ಇವರಿಗೆ ಸ್ವಲ್ಪದರಲ್ಲಿ ಸಹಸ್ರ ಪೂರ್ಣ ಚಂದ್ರ ದರ್ಶನ! ಆಕೆಗೆ ಅದರ ಜೊತೆಯಲ್ಲಿ ಶತಮಾನೋತ್ಸವ! ತಾಯಿ-ಮಕ್ಕಳ ಸಂಬಂಧ ಅಂತಹುದು. 

*****

ಮಗು ಪುಟ್ಟದಿರುವಾಗ ಬಲು ಚೆಂದ. ಸ್ವಲ್ಪ ದೊಡ್ಡದಾಗಿ ಓಡಾಡಲು ಪ್ರಾರಂಭಿಸಿದರೆ ಎಲ್ಲರಿಗೂ ಸಂತಸ. ಹುಟ್ಟಿದ ದೇಹ ಈಗ ಹೋಗಿದೆ. ಬೇರೆ ದೇಹ ಬಂದಿದೆ. ಒಂದು ಕಡೆ ಬಿದ್ದುಕೊಂಡಿರುವ ಕೂಸೆಲ್ಲಿ? ಈಗ ಹಿಡಿಯಲು ಕಷ್ಟಪಡುವ ಈ ಮಗುವೆಲ್ಲಿ? ಆದರೆ ನಮ್ಮ ಮಗುವಿನ ಹಳೆಯ ದೇಹ ಹೋಯಿತಲ್ಲಾ ಎಂದು ಯಾರೂ ಗೋಳಾಡುವುದಿಲ್ಲ. ಒಮ್ಮೆಮ್ಮೆ "ಮಗು ಬೆಳೆಯಿತು. ಮೊದಲಿನಂತೆ ಕೈಗೆ ಸಿಗುವುದಿಲ್ಲ" ಎಂದು ಸ್ವಲ್ಪ ಬೇಜಾರಾಗಬಹುದು. ಆದರೆ ಅದರಿಂದ ದುಃಖವಿಲ್ಲ. ಮುಂದೆ ಯುವಕನಾದಾಗ ಅಥವಾ ಯುವತಿಯಾದಾಗ ಬಾಲಕ ಅಥವಾ ಬಾಲಕಿಯ ದೇಹ ಹೋಗಿದೆ. ಬೇರೆ ದೇಹ ಬಂದಿದೆ. ಹಳೆಯ ದೇಹ ಹೋಯಿತು ಎಂದು ದುಃಖವಿಲ್ಲ. ಹೊಸತು ಬಂದಿತು ಎಂದು ಉತ್ಸಾಹ. ವಿವಾಹ ಮಾಡುವ ಚಿಂತೆ. ನಂತರ ಮುಪ್ಪಿನಲ್ಲಂತೂ ಸರಿಯೇ ಸರಿ. ಬೇರೆ ದೇಹವಾಗಿರುವುದು ಕಣ್ಣು ಮುಚ್ಚಿಕೊಂಡವರಿಗೂ ಕಾಣುವುದು. 

ಹೀಗೆ ಪ್ರತಿ ಹಂತದಲ್ಲೂ ಹೊಸ ದೇಹವೇ ಬಂದಿರುತ್ತದೆ. ಹಿಂದೆ ಕನ್ನಡದಲ್ಲಿ "ಕೊರವಂಜಿ' ಎಂದೊಂದು ಹಾಸ್ಯಪತ್ರಿಕೆ ಬರುತ್ತಿತ್ತು. ಅದರಲ್ಲಿ ಒಂದು ನಗೆಹನಿ. ತಾಯಿಯು ನಾಲ್ಕೈದು ವರುಷದ ಮಗನ ಜೊತೆ ತನ್ನ ಹದಿನೈದು ವಷಗಳ ಹಿಂದಿನ ಮದುವೆಯ ಫೋಟೋ ಆಲ್ಬಮ್ ನೋಡುತ್ತಿದ್ದಾಳೆ. ಆರತಕ್ಷತೆಯ ಸುಂದರ ಫೋಟೋ. ಮಗುವಿಗೆ ತಾಯಿಯ ಗುರುತು ಥಟ್ಟೆ೦ದು ಸಿಕ್ಕಿತು. ಅವಳ ಪಕ್ಕದಲ್ಲಿದ್ದ ಗುಂಗುರು ಕೂದಲಿನ ಸುಂದರ ವ್ಯಕ್ತಿಯ ಗುರುತು ಸಿಗಲಿಲ್ಲ. "ಅಮ್ಮ, ಇವನು ಯಾರು?" ಅಂದಿತು ಮಗು. "ಅಯ್ಯೋ ಮರೀ, ಗೊತ್ತಾಗಲಿಲ್ಲವೇ? ಇದು ನಿಮ್ಮಪ್ಪ ಕಾಣೋ" ಅಂದಳು. ತಕ್ಷಣ ಮಗು, "ಹಾಗಿದ್ದರೆ ನಮ್ಮ ಜೊತೆಯಲ್ಲಿದ್ದಾನಲ್ಲ ಬೋಡಮುಂಡ, ಅವನು ಯಾರು?" ಅಂದಿತು. (ಭಾಷೆಗೆ ಕ್ಷಮೆ ಇರಲಿ. ಕೊರವಂಜಿಯಲ್ಲಿ ಇದ್ದಂತೆ ಹೇಳದಿದ್ದರೆ ಅದರ ನಿಜವಾದ ಮೋಜು ಸಿಗದು).   

ಹೀಗೆ ಬೆಳೆಯುವ ಕಾಲದಲ್ಲಿ ಆಗಾಗ ಹಳೆಯ ದೇಹ ಹೋಗಿ ಹೊಸದು ಬರುತ್ತಿದ್ದರೂ ಅದು ಅಷ್ಟಾಗಿ ನಮಗೆ ಭಾಸವಾಗುವುದಿಲ್ಲ. ಮುಂದೆ ಕಾಲಕ್ರಮದಲ್ಲಿ ಯೌವನ ಮತ್ತು ಮಧ್ಯ ಕಾಲಗಳು ಕಳೆದು ವೃದ್ಧಾಪ್ಯ ಬಂದಾಗ ಅದು ಮಾತ್ರ ಚೆನ್ನಾಗಿ ಕಂಡುಬರುತ್ತದೆ. "ಏನಿದು? ಇಷ್ಟು ಮುದುಕನೇ? ಹಲ್ಲೆಲ್ಲಾ ಬಿದ್ದು ಹೋಗಿವೆ. ಕೂದಲು ನರೆತು ಹೋಗಿದೆ" ಎನ್ನಬಹುದು. "ಎಲಬು ಸೊಟ್ಟಗಾಗಿದೆ. ಬೊಕ್ಕತಲೆ ಆಗಿದೆ" ಎಂದು ಆಶ್ಚರ್ಯಪಡಬಹುದು. ನೆಟ್ಟಗೆ ನಡೆಯುತ್ತಿದ್ದವರಿಗೆ ಈಗ ಕೋಲು ಹಿಡಿಯುವಂತಾಗಿದೆ. ಜೀವನದಲ್ಲಿ ಮುಖ್ಯ ಕಾರ್ಯಕ್ರಮವೆಂದರೆ ಮುಂದಿನ ವೈದ್ಯರ ಸಂದರ್ಶನದ ಸಮಯ ನಿಗದಿಮಾಡುವುದು. ಬೇಜಾರಾದಾಗಲೆಲ್ಲಾ ಒಂದು ಗುಳಿಗೆ ನುಂಗುವುದು. ಜೊತೆಗಾರರ ಸಕ್ಕರೆಯ ಅಂಶ ಎಷ್ಟಿದೆ ಎಂದು ಕೇಳಿ, ಅದು ನಮಗಿಂತ ಕಡಿಮೆ ಇದ್ದಾಗ ಸಮಾಧಾನ ಪಟ್ಟುಕೊಳ್ಳುವುದು.  ಹೀಗೆ. 

ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ 'ಒಂದು ದೇಹದಲ್ಲಿ ಅನೇಕ ದೇಹಗಳು" ಎನ್ನುವುದು. 

*****

ಹಾಗಿದ್ದರೆ ಭಗವದ್ಗೀತೆಯಡ್ನಲ್ಲಿ ಶ್ರೀಕೃಷ್ಣನು ಇದರ ಬಗ್ಗೆ ಹೇಳಿರುವುದು ಏನು? ಎರಡನೆಯ ಅಧ್ಯಾಯದ ಹದಿಮೂರನೆಯ ಶ್ಲೋಕ ಹೀಗಿದೆ:

देहिनोऽस्मिन्यथा देहे कौमारं यौवनं जरा |
तथा देहान्तरप्राप्तिर्धीरस्तत्र न मुह्यति ||  

ದೇಹಿನೋಸ್ಮಿನ್ ಯಥಾ ದೇಹೇ ಕೌಮಾರಂ ಯೌವನಂ ಜರಾ
ತಥಾ ದೇಹಾಂತರಪ್ರಾಪ್ತಿ: ಧೀರಸ್ತತ್ರ ನ ಮುಹ್ಯತಿ 


ಹೇಗೆ ಆತ್ಮನು ತನ್ನ ದೇಹದಲ್ಲಿಯೇ ಬಾಲ್ಯ, ಯೌವನ ಮತ್ತು ಮುಪ್ಪಿನಲ್ಲಿ ದೇಹ ಬಲಾವಣೆಗಳನ್ನು ಕಾಣುತ್ತಾನೋ, ಹಾಗೆ  ಸಾವಿನ ನಂತರ ಮತ್ತೊಂದು ದೇಹವನ್ನು ಪಡೆಯುತ್ತಾನೆ. ಆದ್ದರಿಂದ ತಿಳಿದವರು ಇದರ ಬಗ್ಗೆ ಚಿಂತಿಸುವುದಿಲ್ಲ. 


"ಬದುಕಿರುವಾಗ ಹಂತ ಹಂತಗಳಲ್ಲಿ ಹೇಗೆ ಇದೇ ದೇಹದಲ್ಲಿ ಬದಲಾವಣೆಗಳಾಗುವುದೋ, ಹಾಗೆಯೇ ಸಾವಿನ ನಂತರ ಬರುವ ಬೇರೆ ದೇಹವೂ ಒಂದು ಬಲಾವಣೆಯೇ ಆಗಿರುತ್ತದೆ. ಆದ್ದರಿಂದ ಜ್ಞಾನಿಗಳು ಸಾವಿನ ವಿಷಯದಲ್ಲಿ ಯಾವ ದುಃಖವನ್ನೂ ಹೊಂದುವುದಿಲ್ಲ" ಎನ್ನುವುದು ಇದರ ಭಾವ. 

*****

"ಹೆರಾಕ್ಲಿಟಸ್" ಎನ್ನುವ ಗ್ರೀಕ್ ತತ್ವಜ್ಞಾನಿಯೊಬ್ಬ ಸುಮಾರು ಎರಡು ಸಾವಿರದ ಐದು ನೂರು ವರುಷಗಳ ಹಿಂದೆ "No man ever steps into a river twice" ಎಂದು ಹೇಳಿರುವುದೂ ಹೀಗೆ ಸಮಯದಿಂದ ಆಗುವ ಬದಲಾವಣೆಗಳ ಬಗ್ಗೆಯೇ. ಆಸಕ್ತರು ಇಂಗ್ಲೀಷಿನಲ್ಲಿರುವ ಬ್ಲಾಗ್ ಪೋಸ್ಟನ್ನು ಇಲ್ಲಿ ಕ್ಲಿಕ್ ಮಾಡಿ ಓದಬಹುದು. 

Saturday, June 14, 2025

ಸುಖ ಮರಣ, ಅಕಾಲ ಮರಣ ಮತ್ತು ಅಪಮೃತ್ಯು


ಪರಮಾತ್ಮನ ಸೃಷ್ಟಿಯಲ್ಲಿ ಅನೇಕ ಮರ-ಗಿಡಗಳಿವೆ. ಈ ಅನಂತ ವಿಶ್ವದ ಲೆಕ್ಕವಿಲ್ಲದ ವಿಸ್ಮಯಗಳಲ್ಲಿ ಸಸ್ಯಲೋಕದ ಅನೇಕ ವಿಚಿತ್ರಗಳೂ ಸೇರಿವೆ. ಕೆಲವನ್ನು ನಾವು ಪ್ರತಿದಿನ ಗಮನಿಸುತ್ತೇವೆ. ಕೆಲವನ್ನು ಆಗೊಮ್ಮೆ-ಈಗೊಮ್ಮೆ ಗುರುತಿಸುತ್ತೇವೆ. ಮತ್ತನೇಕ ವಿಷಯಗಳು ನಮ್ಮ ನೋಟಕ್ಕೆ ಸಿಲುಕುವುದೇ ಇಲ್ಲ. ಈ ಸಸ್ಯಲೋಕವಿಲ್ಲದೇ ನಮ್ಮ ಜೀವನವಿಲ್ಲ. ನಮ್ಮ ಉಸಿರಾಟದ ಮೂಲಾಧಾರವಾದ ಪ್ರಾಣವಾಯು (ಆಕ್ಸಿಜನ್) ವಾತಾವರಣಕ್ಕೆ ಬಿಡುಗಡೆಯಾಗುವುದರಲ್ಲಿ ಮರ-ಗಿಡಗಳ ಪಾತ್ರ ಬಲು ದೊಡ್ಡದು ಎಂದು ವಿಜ್ಞಾನದ ತರಗತಿಗಳಲ್ಲಿ ಓದಿದ್ದೇವೆ. ಆದರೂ ನಮ್ಮ ಸುಖ ಜೀವನಕ್ಕೆ ಬೇಕಾದ ಪೀಠೋಪಕರಣ, ಗೃಹ ನಿರ್ಮಾಣ, ಇತ್ಯಾಗಳನ್ನು ಮಾಡಲು ಮತ್ತು ವಾಸಯೋಗ್ಯ ಸ್ಥಳ ಪಡೆದುಕೊಳ್ಳಲು ಸಸ್ಯರಾಶಿಯ ನಿರ್ಮೂಲನಕ್ಕೆ ಯಥಾಶಕ್ತಿ ಪ್ರತಿದಿನ ದುಡಿಯುತ್ತಲೇ ಇದ್ದೇವೆ!  

ಈ ಸಸ್ಯರಾಶಿಯಲ್ಲಿ ನಮ್ಮ ಜೀವನ ಯಾತ್ರೆಗೆ ಇಂಬು ಕೊಡುವ ಅನೇಕ ದವಸ-ಧಾನ್ಯ ಬೆಳೆದುಕೊಡುವ ಗಿಡಗಳೂ, ಹಣ್ಣು-ಹಂಪಲು ಕೊಡುವ ಸಸ್ಯಗಳೂ ಉಂಟು. ಕೆಲವು ಹಣ್ಣು ಕೊಡುವ ಮರಗಳು ಪ್ರಕೃತಿಯಲ್ಲಿ ತಾವೇತಾವಾಗಿ ಬೆಳೆಯುತ್ತವೆ. ಹುಣಿಸೆ, ಬೇಲದ ಮತ್ತು ನೇರಿಳೆ ಮರಗಳನ್ನು ಯಾರೂ ಕೃಷಿ ಮಾಡಿ ಬೆಳೆಸುತ್ತಿರಲಿಲ್ಲ. ಕೆಲವು ಹಣ್ಣು ಕೊಡುವ ಮರಗಳನ್ನು ಬೇಸಾಯದಲ್ಲಿ ಬೆಳೆಸಿ ಫಸಲು ಕಟಾವು ಮಾಡುತ್ತಾರೆ. ಈ ರೀತಿ ಬೆಳೆಸುವ ಒಂದು ಹಣ್ಣಿನ ಮರವನ್ನು ತೆಗೆದುಕೊಳ್ಳೋಣ. ಮಾವಿನ ಮರ ಎನ್ನಿ. ವರುಷಕ್ಕೊಮ್ಮೆ ಮಾವಿನ ಫಸಲು ಬರುತ್ತದೆ. ಮನುಷ್ಯ ಸಮಯ ಕಾದು, ಹಣ್ಣಾಗಲು ತಯಾರಿರುವ ಕಾಯಿಗಳನ್ನು ಕಿತ್ತು, ಹಣ್ಣು ಮಾಡಿ ಉಪಯೋಗಿಸುತ್ತಾನೆ. ಕೆಲವೊಂದು ಮಾವಿನಕಾಯಿಗಳನ್ನು ಉಪ್ಪಿನಕಾಯಿ ಮಾಡಲು, ಇಲ್ಲವೇ ಚಿತ್ರಾನ್ನ ಮಾಡಿಕೊಂಡು ಬಾಯಿ ಚಪ್ಪರಿಸಲು, ಹಣ್ಣಾಗುವ ಸಮಯ ಬರುವುದರ ಮೊದಲೇ, ಬೇರೆ ಬೇರೆ ಕಾಲದಲ್ಲಿ, ಕೇಳುತ್ತಾನೆ. ತೀರಾ ಎಳೆಯ ಮಿಡಿಯೂ ಬೇಕು ಅವನಿಗೆ. ಬಲಿತ ಕಾಯಿಗಳೂ ಹೀಗೆ ಉಪ್ಪಿನಕಾಯಿಗೆ, ಚಿತ್ರಾನ್ನಕ್ಕೆ ಬೇಕು. ಹಣ್ಣಾದರಂತೂ ಕೇಳುವುದೇ ಬೇಡ. 

ಎಲ್ಲೋ ಒಂದು ಮರದಲ್ಲಿ, ಎಲೆಗಳ ಹಿಂದೆ ಒಂದು ಕಾಯಿ ಅವಿತು ಕುಳಿತಿದೆ. ಮನುಷ್ಯನ ಕಣ್ಣಿಗೆ ಬೀಳಲಿಲ್ಲ. ಸ್ವಾಭಾವಿಕವಾಗಿ ಮರದಲ್ಲೇ ಹಣ್ಣಾಯಿತು. ಆಗ ಮರ ಅದನ್ನು ತನ್ನ ಬಳಿ ಇಟ್ಟುಕೊಳ್ಳುವುದಿಲ್ಲ. ಒಂದು ದಿನ "ಇನ್ನು ನೀನು ಹೋಗು" ಎನ್ನುವಂತೆ ಆ ಹಣ್ಣನ್ನು ತಳ್ಳುತ್ತದೆ. ಹಣ್ಣೂ ಸಹ "ಇನ್ನು ನಾನು ಹೋಗಬೇಕು" ಎನ್ನುವಂತೆ ಮರದಿಂದ ಬೇರ್ಪಟ್ಟು ಕೆಳಗೆ ಬೀಳುತ್ತದೆ. ಹೀಗೆ ಬಿದ್ದಾಗ ಮರದಲ್ಲಿ ಹಣ್ಣು ಹುಟ್ಟಿದ ತೊಟ್ಟಿನ ಜಾಗದಲ್ಲಿ ಏನೂ ಗುರುತಿರುವುದಿಲ್ಲ. ಒದ್ದೆ ಇರುವುದಿಲ್ಲ. ರಸ ಸೋರುವುದಿಲ್ಲ. ಹಣ್ಣಿನ ತೊಟ್ಟಿನಲ್ಲೂ ದ್ರವ ಇಲ್ಲ. ಒಣಗಿದ ತೊಟ್ಟು. ಮರಕ್ಕೂ, ಹಣ್ಣಿಗೂ, ಎರಡಕ್ಕೂ ಒಂದು ನಿರ್ವಿಕಾರ ಭಾವ ಇದ್ದಂತೆ! ಬೇರೆ ಆಗುವ ಕಾಲ ಬಂದಿತು. ಬೇರೆಯಾದವು. ಒಂದು ದಿನ ಹಣ್ಣು ಬೀಳಲೇಬೇಕು. ಇಲ್ಲದಿದ್ದರೆ ಮುಂದಿನ ವರುಷ ಹೊಸ ಹಣ್ಣಿನ ಆಗಮನಕ್ಕೆ ದಾರಿಯೆಲ್ಲಿ?

ಅದೇ ಮಿಡಿ ಅಥವಾ ಕಾಯಿ ಕಿತ್ತ ಜಾಗ ನೋಡಿ. ಮರದಲ್ಲಿಯೂ ಹಸಿ ಹಸಿ; ಒಂದು ರೀತಿಯ ಸ್ರಾವ. ಮಿಡಿಯಲ್ಲಿಯೂ ಅಥವಾ ಕಾಯಿಯಲ್ಲಿಯೂ ಅದೇ ರೀತಿಯ ಅಂಟು ಸುರಿಯುತ್ತಿದೆ. ಎರಡಕ್ಕೂ ತಾಯಿ-ಮಗುವನ್ನು ಬಲವಂತದಿಂದ ಬೇರ್ಪಡಿಸಿದ ದುಃಖ. ಇದೊಂದು ಅಕಾಲ ವಿರಹ. ಇದು ಮನುಷ್ಯನಿಗೆ ಬೇಕಾದರೂ ಮರಕ್ಕೆ-ಕಾಯಿಗೆ ಬೇಡವಾದದ್ದು. 

ಭೂಮಿಯ ಮೇಲೆ ಮನುಷ್ಯನಿಗೂ ಪ್ರಕೃತಿಗೂ ಪ್ರಾಯಶಃ ಇದೆ ರೀತಿಯ ಸಂಬಂಧ. ಪೂರ್ತಿ ಜೀವನ ನಡೆಸಿ ಯಾರಾದರೂ ಸತ್ತರೆ ಸಮಾಜವೂ ಅದನ್ನು ಸಹಜವಾಗಿ ಸ್ವೀಕರಿಸುತ್ತದೆ. "ಪೂರ್ಣ ಜೀವನ ನಡೆಸಿದರು. ಬಿಡುಗಡೆ ಆಯಿತು. ಬದುಕಿಕೊಂಡರು" ಅನ್ನುತ್ತಾರೆ ಸುತ್ತಮುತ್ತಲು ಇರುವ ಜನ. ಅರೇ, ಇದೇನಿದು! ಸತ್ತವರನ್ನು ಬದುಕಿಕೊಂಡರು ಅನ್ನುತ್ತಾರಲ್ಲ. ಅದೇ ಪ್ರಪಂಚ. ಆದರೆ ಯಾರಾದರೂ ಅಕಾಲದಲ್ಲಿ ಸತ್ತರೆ ಅದರ ವ್ಯವಹಾರ ಬೇರೆ ರೀತಿಯದು. 

*****

ನಮ್ಮ ಬಾಲ್ಯಕಾಲದಲ್ಲಿ ನಮ್ಮ ಹಿರಿಯರು ಸಂಜೆಯ ಹೊತ್ತು  ಅವರಿಗೆ ತಿಳಿದ ಸ್ತೋತ್ರಗಳನ್ನೋ, ಹಾಡುಗಳನ್ನೋ ಹೇಳಿಕೊಂಡು, ಕೊನೆಯಲ್ಲಿ ಈ ರೀತಿ ಒಂದು ಶ್ಲೋಕ ಹೇಳುತ್ತಿದ್ದರು: 

ಅನಾಯೇಸೇನ ಮರಣಂ ವಿನಾ ದೈನ್ಯೇನ ಜೀವನ೦
ದೇಹಿ ಮೇ ಕೃಪಯಾ ಶಂಭೋ ತ್ವಯಿ ಭಕ್ತಿ೦ ಅಚಂಚಲಂ 

ಈ ಶ್ಲೋಕದಲ್ಲಿ ಅನೇಕ ಪಾಠಾ೦ತರಗಳೂ ಇದ್ದವು. ಕೆಲವರು "ಶಂಭೋ" ಎನ್ನುವ ಬದಲು "ಗೋವಿಂದ" ಎನ್ನುತ್ತಿದ್ದರು. "ವಿನಾ ದೈನ್ಯೇನ ಜೀವನಮ್" ಅನ್ನುವ ಕಡೆ ಅಥವಾ ಮತ್ತೊಂದು ಸಾಲಿನಲ್ಲಿ "ಮಾತೃ ಹಸ್ತೇನ ಭೋಜನಂ" ಎಂದೂ, "ವಿಪ್ರ ಹಸ್ತೇನ ಅಕ್ಷತಾ೦" ಎಂದೂ ಆನ್ನುವವರಿದ್ದರು. ಕೆಲವರು "ಸದಾ ರಾಜಿತ ಗೋವಿಂದಂ" ಅನ್ನುತ್ತಿದ್ದರು. ಒಟ್ಟಿನಲ್ಲಿ "ಇವನ್ನು ಕೊಡು" ಎಂದು ಕೇಳುವ ಒಂದು ಪ್ರಾರ್ಥನೆ. ಇನ್ನೊಬ್ಬರ ಬಳಿ ಯಾಚಿಸುವ, ದೈನ್ಯದ, ಭಿಕಾರಿಭಾವದ ಜೀವನ ಬೇಡ. ತಾಯಿಯ ಕೈಯ ಊಟ ಇರಲಿ. ತಿಳಿದವರ ಸಂಗವಿರಲಿ. ನಿನ್ನಲ್ಲಿ ಧೃಢವಾದ ಭಕ್ತಿ ಇರಲಿ. ಹೀಗೆ ಕೇಳುವುದು. 

ಎಲ್ಲಿಯವರೆಗೆ ತಾಯಿಯ ಕೈಯ ಅನ್ನ ಸಾಧ್ಯ? ತಾಯಿಯೂ ಒಂದು ದಿನ ಹೋಗಲೇಬೇಕಲ್ಲವೇ? ಹಾಗಿದ್ದರೆ ಅವಳ ಸ್ಥಾನದಲ್ಲಿ ತಾಯಿಯಂತಿರುವ ಇನ್ಯಾರೋ ಇರಬಹುದು. ಸಪ್ತಪದಿಯಲ್ಲಿ ಹೇಳುವಂತೆ "ಹತ್ತು ಮಕ್ಕಳನ್ನು ಹೆತ್ತು, ಗಂಡನನ್ನು ಹನ್ನೊಂದನೆಯವನೆಂದು ತಿಳಿ" ಎನ್ನುವಂತೆ ಕಾಪಾಡುವ ಹೆಂಡತಿಯಿರಬಹುದು. ತನ್ನ ಮಕ್ಕಳ ಜೊತೆ ಇನ್ನೊಂದು ಮಗು ಎಂದು ರಕ್ಷಿಸುವ ಮಗಳೋ, ಸೊಸೆಯೋ, ಸೋದರಿಯೋ ಇರಬಹುದು.  ಮಿಕ್ಕ ಭಾಗಗಳು, ಮನವಿಗಳು ಏನಾದರೂ ಇರಲಿ. ಎಲ್ಲಕ್ಕೂ ಮೊದಲಿಗೆ ಬೇಡುವುದು ಅನಾಯಾಸವಾದ ಮರಣ. ಅಂದರೆ ಒದ್ದಾಡಿ, ಹಿಂಸೆ ಅನುಭವಿಸಿ, ಇನ್ನೊಬ್ಬರಿಗೆ ಕಷ್ಟ ಕೊಟ್ಟು, ತಾವೂ ದುಃಖ ಅನುಭವಿಸುವಂತಹ ಸಾವು ಬೇಡ. ಫಟ್ಟಂತ ಪ್ರಾಣ ಹೋಗಲಿ ಎಂದು ಕೋರಿಕೆ. 

ಯಾರಾದರೂ ದೀರ್ಘ ಆಯುಸ್ಸು ಕೇಳುವುದು ಸಹಜ. ಆದರೆ ಸಾವು ಕೇಳಿಕೊಳ್ಳುತ್ತಾರೆಯೇ? ಅದು ಬಂದೇ ಬರುವುದು ಮತ್ತು ಅನಿವಾರ್ಯ ಎಂದಾಗ ಆದಷ್ಟೂ ಕಡಿಮೆ ಕಷ್ಟ ಇರಲಿ ಎಂಬ ಇಚ್ಛೆ. ಎದುರಿನವನು ಹೊಡೆದೇ ಹೊಡೆಯುತ್ತಾನೆ ಅಂದಾಗ ಮೆತ್ತಗೆ ಹೊಡೆಯಲಿ ಎಂದು ಆಶಿಸುವಂತೆ. ಮನುಷ್ಯನ ದೇಹದಿಂದ ಪ್ರಾಣ ಹೊರಗೆ ಹೋಗುವಾಗ ಒಮ್ಮೆಲೇ ಸಾವಿರ ಚೇಳುಗಳು ಕಡಿದಾಗ ಆಗುವಷ್ಟು ನೋವು ಉಂಟಾಗುತ್ತದೆ ಎಂದು "ಗರುಡ ಪುರಾಣ" ಹೇಳುತ್ತದೆ. ಅಂಥದರಲ್ಲಿ ಹೆಚ್ಚು ಕಾಲ ಅದರ ಪ್ರಕ್ರಿಯೆಯಲ್ಲೇ ಕಷ್ಟ ಪಟ್ಟರೆ ಹೇಗೆ? ಅಂತಹ ಹಿಂಸೆ ಉದ್ದವಾಗುವುದು ಬೇಡ ಎಂದು ಈ ರೀತಿ ಕೇಳಿಕೊಳ್ಳುವುದು. 

*****

ಈಗ್ಗೆ ಕೆಲವು ದಿನಗಳಲ್ಲಿ ಎರಡು ವಿಡಿಯೋಗಳು ಎಲ್ಲ ಕಡೆ ಸುತ್ತುತ್ತಿವೆ. ಒಂದರಲ್ಲಿ ಗುಜರಾತಿನ ಒಂದು ಅಂಗಡಿಯಲ್ಲಿ ಕುರ್ಚಿಯಲ್ಲಿ ಕುಳಿತು ಜೊತೆಯವರೊಂದಿಗೆ ಮಾತನಾಡುತ್ತಾ ಕುಳಿತಿರುವಾಗ ನೀರಿನ ಬಾಟಲ್ ತೆಗೆದುಕೊಳ್ಳಲು ಕೈ ಚಾಚಿದ ಯುವಕನೊಬ್ಬ ಬಾಟಲ್ ಕೈ ಜಾರಿ ಕುಳಿತಲ್ಲಿಯೇ ಅಸು ನೀಗುವುದು ಸಿ ಸಿ ಟಿವಿಯಲ್ಲಿ ಕಾಣುವುದು. ಮತ್ತೊಂದು, ಹೃದಯ ವಿದ್ರಾವಕವಾದ ವಿಮಾನ ದುರ್ಘಟನೆಯಲ್ಲಿ 11A ಸೀಟಿನಲ್ಲಿ ಕುಳಿತಿದ್ದ ವಿಶ್ವಾಸ್ ಕುಮಾರ್ ದುರ್ಘಟನೆಯಲ್ಲಿ ಬದುಕುಳಿದ ಏಕಮಾತ್ರ ವ್ಯಕ್ತಿಯಾಗಿ ನಡೆದು ಬಂದು ಆಂಬುಲೆನ್ಸ್ ಏರುತ್ತಿರುವುದು. ಒಂದು ಸಾವು. ಇನ್ನೊಂದು ಸಾವಿನ ದವಡೆಯಿಂದ ಅಧ್ಭುತವಾಗಿ ತಪ್ಪಿಸಿಕೊಂಡು ಬಂದ ಸನ್ನಿವೇಶ. 

ಸುಖ ಮರಣ, ಅಕಾಲ ಮರಣ, ದುರ್ಮರಣ, ಅಪಮೃತ್ಯು, ವೀರಮರಣ, ಇಚ್ಚಾಮರಣ, ಸ್ವಾಭಾವಿಕ ಮರಣ ಅನಾಯಾಸ ಮರಣ ಎನ್ನುವ ಪದಗಳನ್ನು ಮತ್ತೆ ಮತ್ತೆ ಉಪಯೋಗಿಸುತ್ತೇವೆ. ಯಾವುದು ಸರಿ? ಯಾವುದು ತಪ್ಪು? ಮನುಷ್ಯನೇ ಹೋದಮೇಲೆ ಯಾವ ಪದ ಪ್ರಯೋಗಿಸಿದರೆ ಏನು? ಅದಕ್ಯಾಕೆ ಚಿಂತಿಸಬೇಕು? ಹೀಗೆ ಹೇಳಬಹುದು. ಆದರೆ, ಸಾಧ್ಯವಾದಷ್ಟೂ ನಾವು ಸರಿಯಾದ ಪದ ಉಪಯೋಗಿಸಬೇಕಲ್ಲವೇ?

  • ಮೇಲೆ ಚರ್ಚಿಸಿದ ಮಾವಿನ ಮರದಿಂದ ಬಿದ್ದ ಹಣ್ಣಿನಂತೆ ಬಂದ ಮರಣ ಸ್ವಾಭಾವಿಕ ಮರಣ. ಇದು ಆಗಲೇಬೇಕಾಗಿತ್ತು. ಆಯಿತು. ಎಲ್ಲರಿಗೂ ಗೊತ್ತಿತ್ತು. ಹೆಚ್ಚಿನ ವಿಷಾದವಿಲ್ಲ. 
  • ಆಕಸ್ಮಿಕವಾದ ದುರ್ಘಟನೆಯಲ್ಲಿ  ಸಾವು ಬಂದರೆ ದುರ್ಮರಣ. ಅತ್ಯಂತ ಅನಿರೀಕ್ಷಿತ. 
  • ಎಲ್ಲರಂತೆ ರಾತ್ರಿ ಮಲಗಿದರು. ಬೆಳಗ್ಗೆ ಏಳಲಿಲ್ಲ. ತುಂಬು ಜೀವನ ನಡೆಸಿದ ಸಜ್ಜನ. ಇದು ಸ್ವಾಭಾವಿಕವಾದ ಅನಾಯಾಸ ಮರಣ. 
  • ಚೆನ್ನಾಗಿಯೇ ಇದ್ದರು. ಒಂದೇ ಕ್ಷಣದಲ್ಲಿ ಹೋದರು. ಗೊತ್ತೇ ಆಗಲಿಲ್ಲ. ಖಾಯಿಲೆ-ಕಸಾಲೆ ಇಲ್ಲ. ಪೂರ್ತಿ ಜೀವನ ನಡೆಸಿದರು. ಹಿಂಸೆ ಅನುಭವಿಸಲಿಲ್ಲ. ಇದು ಸುಖ ಮರಣ. 
  • ದೇಶಕ್ಕಾಗಿ, ಸಮಾಜಕ್ಕಾಗಿ ಹೋರಾಡುತ್ತ ಜೀವ ತೆತ್ತರು. ಇನ್ನೊಬ್ಬರ ರಕ್ಷಣೆಗಾಗಿ ಪ್ರಾಣ ಪಣವಾಗಿಟ್ಟವರು. ಇದು ವೀರಮರಣ. "ಹುತಾತ್ಮ" ಎಂದು ಹೇಳಲು ಯೋಗ್ಯವಾದದ್ದು. 
  • ಇನ್ನೂ ಬದುಕಿ ಬಾಳಬೇಕಾದ ವಯಸ್ಸು. ಸಾವು ಬಂದಿತು. ಹೆಚ್ಚಿನ ನೋವಿನ ಸಂಗತಿ. ಇದು ಅಕಾಲಿಕ ಮರಣ. 
  • ಎಲ್ಲ ದೃಷ್ಟಿಯಿಂದ ನೋಡಿದರೂ ಈ ಸಾವು ಬರಬಾರದಿತ್ತು. ಬಂದುಬಿಟ್ಟಿತು. ಇದು ಅಪಮೃತ್ಯು. ಅಕಾಲ ಮರಣ. 
  • ತಾವು ಹುಟ್ಟಿ ಬಂದು ಸಾಧಿಸಬೇಕಾದ ಕೆಲಸವಾಯಿತು. ಇನ್ನು ಬದುಕು ಸಾಕು. ಹೀಗೆಂದು ಸಾವನ್ನಪ್ಪಿದವರು ಇಚ್ಚಾಮರಣಿಗಳು. ಯಾವಾಗ ದೇಹ ಬಿಡಬೇಕೆಂದು ಅವರೇ ನಿರ್ಧರಿಸುವ ಮಹಾನುಭಾವರು. 
ಇನ್ಯಾವುದಾದರೂ ಸಾವಿನವರ್ಗವಿದ್ದರೆ ಸೇರಿಸಿಕೊಳ್ಳಬಹುದು. 

*****

ಒಬ್ಬ ದೊಡ್ಡ ರಾಜಕೀಯ ನಾಯಕರು. ಬಹುಕಾಲ ಅಧಿಕಾರದಲ್ಲಿದ್ದವರು. ಆ ಸಮಯದಲ್ಲಿ ಲೂಟಿ ಹೊಡೆದು ಏಳು ತಲೆಮಾರಿಗೆ ಸಾಕಾಗುವಷ್ಟು ಆಸ್ತಿ ಮಾಡಿದರು. ಎಲ್ಲರನ್ನೂ ಗೋಳು ಹೊಯ್ದುಕೊಂಡು ದರ್ಪದಿಂದ ಮೆರೆದವರು. ಮೂರು ವರುಷ ಹಾಸಿಗೆ ಹಿಡಿದಿದ್ದರು. ಕಡೆಗೆ ಸತ್ತರು. ಪುಣ್ಯಕ್ಕೆ ಇನ್ನು ಮುಂದೆ ಯಾರಿಗೂ ತೊಂದರೆ ಮಾಡಲಾಗದು. 

ಸುದ್ದಿ ಕೇಳಿದ ಕೂಡಲೇ ಇತರ ರಾಜಕೀಯ ನಾಯಕರು, ಅವರ ಭಟ್ಟಂಗಿಗಳು ತಮ್ಮ ತಮ್ಮ ಹೇಳಿಕೆ ಕೊಟ್ಟರು. "ತುಂಬಲಾರದ ನಷ್ಟ" ಅಂದರು ಒಬ್ಬರು. "ಸಮಾಜ ಬಡವಾಯಿತು" ಅಂದರು ಇನ್ನೊಬ್ಬರು. "ನಾವು ಪರದೇಶಿಗಳಾದೆವು" ಎಂದು ಹೇಳಿದರು ಮಗದೊಬ್ಬರು. ಹೀಗೆ ಸಂತಾಪ ಸೂಚಕ ಸಂದೇಶಗಳ ಸುರಿಮಳೆ. 

ಇದು ಯಾವ ರೀತಿಯ ಮರಣ? ಯಾವ ರೀತಿಯದು ಎಂದು ಹೇಳದಿರುವುದೇ ಒಳ್ಳೆಯದು. ಆದರೆ ಮನಸ್ಸಿನಲ್ಲಿಯೇ ಸಂತಾಪ ಸೂಚಕ ಸಂದೇಶಗಳ ಹಿನ್ನೆಲೆಯಲ್ಲಿ "ವಿಚಿತ್ರ ಮರಣ" ಎಂದುಕೊಳ್ಳಬಹುದು.