Showing posts with label Rasa. Show all posts
Showing posts with label Rasa. Show all posts

Friday, August 28, 2026

ಹನುಮನ ಭಕ್ತಿ ಮತ್ತು ಕಾವ್ಯದಲ್ಲಿ "ಧ್ವನಿ"


ಹನುಮನ ಶಕ್ತಿ ಅಸಾಮಾನ್ಯವಾದದ್ದು. ಅದರ ಸರಿಯಾದ ಅನುಭವವನ್ನು ರಾವಣನಂತಹ ಮಹಾಬಲಶಾಲಿಯನ್ನು ತನ್ನ ಬಾಲದಲ್ಲಿ ಕಟ್ಟಿಕೊಂಡು ನಾಲ್ಕು ದಿಕ್ಕುಗಳ ಸಮುದ್ರಗಳಲ್ಲಿ ಮುಳುಗಿಸಿದ್ದ ಧೀರ ವಾಲಿ ಪಡೆದ್ದಿದ್ದ. ಹನುಮನ ಭಕ್ತಿ ಕೂಡ ಅಂತೆಯೇ. ಅತಿಹೆಚ್ಚು ಶಕ್ತಿವಂತನಿಗೂ, ಅತ್ಯಂತ ಭಕ್ತಿವಂತನಿಗೂ ಒಂದು ಉದಾಹರಣೆ ಕೊಡಲು ಹನುಮನೇ ಆಗಬೇಕು. ಅಂತೆಯೇ, ಒಂದು ಅಗಾಧವಾದ ಕೆಲಸ ಮಾಡಲು ಬೇಕಾದ ಶಕ್ತಿ, ಯುಕ್ತಿ ಮತ್ತು ಸಮಯ ಪ್ರಜ್ಞೆ, ಇವೆಲ್ಲಕ್ಕೂ ಹನುಮನೇ ಕೊನೆಯ ಮಾತು. ಅನೇಕ ಅತಿ ಬಲವಂತರ ಅಹಂಕಾರ ಮುರಿಯಲು ಅವರನ್ನು ಹನುಮನ ಬಳಿ ಕಳಿಸಿದ ಕಥೆಗಳು ಬಹಳವಿವೆ.

ಭಾರತದ ಈಗಿನ ವಿದೇಶಾಂಗ ಮಂತ್ರಿಗಳಾದ ಶ್ರೀ ಎಸ್. ಜೈಶಂಕರ್ ಅವರ ಅನೇಕ ವಿಡಿಯೋಗಳಲ್ಲಿ ಒಂದು ಬಹಳ ಪ್ರಚಲಿತವಿದೆ. "ಒಬ್ಬ ಒಳ್ಳೆಯ ರಾಜದೂತ ಮತ್ತು ರಾಯಭಾರಿ ಯಾರು? ಅವರಲ್ಲಿ ಇರಬೇಕಾದ ಗುಣಗಳು ಯಾವುವು?" ಎಂದು ಅವರನ್ನು ಒಮ್ಮೆ ಪ್ರಶ್ನೆ ಮಾಡಲಾಯಿತು. "ನನ್ನ ಪ್ರಕಾರ ಒಬ್ಬ ಒಳ್ಳೆಯ ರಾಜದೂತನಿಗೆ ಉದಾಹರಣೆ ಹನುಮಂತ. ಒಬ್ಬ ಒಳ್ಳೆಯ ರಾಯಭಾರಿಗೆ ಉದಾಹರಣೆ ಶ್ರೀಕೃಷ್ಣ" ಎಂದು ಉತ್ತರಿಸಿ, ಅವರಿಗೆ ಇರಬೇಕಾದ ಗುಣಗಳ ಪಟ್ಟಿ ಮಾಡಿರುವ ಜೈಶಂಕರ್ ಅವರ ವಿಡಿಯೋ ಒಂದನ್ನು ಪ್ರಾಯಶಃ ಎಲ್ಲರೂ ನೋಡಿದ್ದಾರೆ.

ಹನುಮನು ಲಂಕೆಗೆ ಹಾರಿ ಹೋಗಿ, ಬೇಕೆಂದೇ ಸೆರೆ ಸಿಕ್ಕಿ, ರಾವಣನ ಮುಂದೆ ಕುಳಿತು ಮಾತನಾಡಿದ ಭಾಗ ಶ್ರೀಮದ್ ರಾಮಾಯಣದಲ್ಲಿ ಬಹಳ ರಸವತ್ತಾದ ಭಾಗ. "ಏಳೇಳು ಶರಧಿಯು ಏಕವಾಗಿದೆ ಕಂಡ್ಯ, ಹೇಗೆ ಬಂದೆಯೋ ಹೇಳೋ ಕೋತಿ" ಎನ್ನುವ ರಾವಣನ ಪ್ರಶ್ನೆಗೆ "ಏಳೇಳು ಶರಧಿಯು ಎನಗೇಳು ಕಾಲುವೆಯು, ಹಾರಿ ಲಂಘಿಸಿ ಬಂದೆ ಭೂತ" ಎಂದು ಹೇಳುವ ಶ್ರೀ ಪುರಂದರದಾಸರ ದೇವರನಾಮ ಬಹಳ ಪ್ರಸಿದ್ಧ. ಇದನ್ನು ಯಕ್ಷಗಾನ ಪ್ರಸಂಗಗಳಲ್ಲಿ ಬಹಳ ಚೆನ್ನಾಗಿ ಉಪಯೋಗಿಸಿಕೊಳ್ಳುತ್ತಾರೆ. "ಭಲೇ ಭಾಸ್ಕರ್" ಹೆಸರಿನ ಕನ್ನಡ ಚಲನಚಿತ್ರದಲ್ಲಿ (1971) ಇದರ ಭಾಗವೊಂದನ್ನು ಸೊಗಸಾಗಿ ಸೇರಿಸಿದ್ದಾರೆ. ಯುಟ್ಯೂಬ್ನಲ್ಲಿ ಲಭ್ಯವಿದೆ. ಶ್ರೀ ಬಾಲಮುರಳಿಕೃಷ್ಣ ಅವರು ಹಾಡಿರುವ ಪೂರ್ಣ ಹಾಡೂ ಅಲ್ಲಿ ಸಿಗುತ್ತದೆ. ಆಸಕ್ತರು ಕೇಳಬಹುದು. 

ಶ್ರೀ ವಾದಿರಾಜರ "ಎಷ್ಟು ಸಾಹಸವಂತ, ನೀನೇ ಬಲವಂತ! ದಿಟ್ಟ ಮೂರುತಿ, ಭಳಿರೆ ಭಳಿರೇ ಹನುಮಂತ" ಅನ್ನುವ ಕೃತಿಯಲ್ಲಿ, ಇನ್ನೊಂದು ಸಂದರ್ಭದಲ್ಲಿ, ಹನುಮ ರಾವನಿಗೆ ಬುದ್ಧಿವಾದ ನೀಡುವಾಗ ಹೇಳಿದ ಈ ಭಾಗವುಂಟು:

ದುರುಳ ರಾವಣನೆ ನಿನ್ನ ಬಡಿದು ಹಾಕುವೆನು 
ರಾಮರಪ್ಪಣೆ ಇಲ್ಲ ಎಂದು ತಾಳಿಹೆನು 

ಹನುಮ ಮನಸ್ಸು ಮಾಡಿದ್ದರೆ, ಸಂಯಮ ತೋರದಿದ್ದರೆ, ರಾವಣನ ಕಥೆ ಅಂದೇ ಮುಗಿದು ರಾಮಾಯಣ "ಹನುಮಾಯಣ" ಆಗುತ್ತಿತ್ತು.

*****

ರಾಮ-ರಾವಣರ ಯುದ್ಧದಲ್ಲಿ ಕಡೆಯ ಭಾಗ ನಡೆಯುತ್ತಿತ್ತು. ಮಗ ಮೇಘನಾದ ಮತ್ತು ತಮ್ಮ ಕುಂಭಕರ್ಣನನ್ನು ಯುದ್ಧದಲ್ಲಿ ಕಳೆದುಕೊಂಡಿದ್ದ ರಾವಣ ಬಹಳ ಕುಪಿತನಾಗಿದ್ದ. ಯುದ್ಧ ಭೂಮಿಯಲ್ಲಿ ವಿಭೀಷಣನನ್ನು ನೋಡಿದ ಕೂಡಲೇ ಅವನಿಗೆ ತಡೆಯಲಾರದ ಕೋಪ ಬಂದಿತು. ಇವನಿಂದಲೇ ತನ್ನ ಎಲ್ಲ ನಷ್ಟಗಳು ಎಂದು ತನ್ನ ಅತ್ಯಂತ ಶಕ್ತಿಯುತ ಆಯುಧವನ್ನು ವಿಭೀಷಣನ ಕಡೆ ಎಸೆದ. ಅವನನ್ನು ಉಳಿಸುವ ಸಲುವಾಗಿ ಲಕ್ಷ್ಮಣ ಅಡ್ಡ ಬಂದ. ಶಕ್ತಿಯ ಹೊಡೆತಕ್ಕೆ ಮೂರ್ಛೆ ಹೋದ. ವೈದ್ಯ ಸುಷೇಣನನ್ನು ಕರೆದು ತಂದರು. ಅವನು ಅಮೂಲ್ಯ ಮೂಲಿಕೆಗಳನ್ನು ತಕ್ಷಣ ತರಿಸಿ ಅಂದ. ಅವು ಇದ್ದದ್ದು ಹಿಮಾಲಯದಲ್ಲಿ. ಬೆಳಗಾಗುವುದರಲ್ಲಿ ಅವನ್ನು ತಂದು ಕೊಡಬೇಕು. ಯಾರು ಮಾಡಬೇಕು? ಹನುಮ ಆ ಕೆಲಸ ಮಾಡಿದ.

ಇಂದ್ರಜಿತ್ ಎಸೆದ ಶಕ್ತಿಯಿಂದ ಲಕ್ಷ್ಮಣ ಮೂರ್ಛೆ ಹೋದ ಎಂದು ಅನೇಕರು ತಿಳಿದಿರುವುದು ತಪ್ಪು ಕಲ್ಪನೆ. ಶ್ರೀಮದ್ ರಾಮಾಯಣದ ಯುದ್ಧಕಾಂಡದ 101ನೆಯ ಸರ್ಗ ಇದನ್ನು ವಿವರಿಸಿದೆ. ಆಸಕ್ತರು ಇಲ್ಲಿ ಕ್ಲಿಕ್ ಮಾಡಿ ಇಂಗ್ಲಿಷಿನಲ್ಲಿ ಇರುವ ಸಂಬಂಧಿಸಿದ ಬ್ಲಾಗ್ ಪೋಸ್ಟ್ ಓದಬಹುದು. 

ಹನುಮ ಹೀಗೆ ತಂದ ಪರ್ವತದ ಸುತ್ತಳತೆ ಒಂದು ನೂರು ಯೋಜನ! ಅದು ಇದ್ದದ್ದು ಯುದ್ಧಭೂಮಿಯಿಂದ ಒಂದು ಸಾವಿರ ಯೋಜನ ದೂರ! ಅಂತಹ ಪರ್ವತವನ್ನು ಆಕಾಶ ಮಾರ್ಗವಾಗಿ ಹನುಮ ತರುವಾಗ ಹಿಡಿದುಕೊಂಡಿದ್ದದ್ದು ಒಂದೇ ಕೈಯ್ಯಲ್ಲಿ. ಅದಕ್ಕೆ ಎರಡೂ ಕೈಗಳು ಬೇಕಾಗಲಿಲ್ಲ. ಹಿಡಿದದ್ದು ಅಂತಹ ದೊಡ್ಡ ಪರ್ವತ. ಹಾರುತ್ತಿದ್ದುದು ಆಕಾಶ ಮಾರ್ಗದಲ್ಲಿ. ವೇಗವೋ ಕೆಲವೇ ಗಂಟೆಗಳಲ್ಲಿ ಎರಡು ಸಾವಿರ ಯೋಜನ ದೂರ ಕ್ರಮಿಸಿದುದು. ಹೋಗಲು ಒಂದು ಸಾವಿರ ಯೋಜನ. ಹಿಂದಿರುಗಲು ಇನ್ನೊಂದು ಸಾವಿರ ಯೋಜನ. 

ಹೀಗೆ ಪರ್ವತ ಹಿಡಿದು ತಂದ ಹನುಮನಿಗೆ ಸುಸ್ತಾಗಿತ್ತೇ? ಬಂದ ತಕ್ಷಣ ಕುಡಿಯಲು ನೀರು ಕೇಳಿದನೇ? ಯಾರಾದರೂ ಗಾಳಿ ಹಾಕಿದರೇ? (ಅವನೇ ವಾಯುಪುತ್ರ. ಗಾಳಿ ಹಾಕುವವರು ಯಾರು?). ಸ್ವಲ್ಪ ಹೊತ್ತು ಕುಳಿತು ಸುಧಾರಿಸಿಕೊಂಡನೇ? ಒಂದೂ ಇಲ್ಲ. ಸುಷೇಣನ ಕೆಲಸ ಆಯಿತು. ಈಗ ಬೆಟ್ಟವನ್ನು ಯುದ್ಧ ಭೂಮಿಯಲ್ಲಿ ಇಟ್ಟುಕೊಳ್ಳುವಂತಿಲ್ಲ. ಏನು ಮಾಡುವುದು? ಹನುಮನನ್ನು ಇನ್ನೊಂದು ಬಾರಿ ಕಳಿಸಿ ಬೆಟ್ಟ ಅಲ್ಲಿ ಇಟ್ಟು ಬರುವಂತೆ ಹೇಳುವುದೇ?

ಹನುಮ ಮತ್ತೊಮ್ಮೆ ಒಂದು ಕೈಯ್ಯಲ್ಲಿ ಪರ್ವತ ಹಿಡಿದ. ಹಿಡಿದವನು ನಿಂತಲ್ಲಿಂದಲೇ ಅದನ್ನು ಎಸೆದ. ಎಸೆದ ಬೆಟ್ಟ ಒಂದು ಸಾವಿರ ಯೋಜನ ಹೋಗಿ ಮೊದಲಿದ್ದ ಜಾಗದಲ್ಲಿ ಕುಳಿತಿತು. ಹೇಗೆ ಕುಳಿತಿತು? ನಾವು ಯಾವುದಾದರೂ ಪದಾರ್ಥ ಎತ್ತಿಕೊಂಡು ಮತ್ತೆ ಅದು ಇದ್ದಲ್ಲಿ ಇಟ್ಟರೆ ಸ್ಥಳ ಪಲ್ಲಟ ಆಗಿದ್ದು ಕೂಡಲೇ ಗೊತ್ತಾಗುತ್ತದೆ. ಹನುಮ ಎಸೆದ ಪರ್ವತ ಅದನ್ನು ಕಿತ್ತು ಕೊಂಡುಹೋಗಿದ್ದ ಗುರುತೂ ಇಲ್ಲದಂತೆ ಮೊದಲಿನ ಜಾಗದಲ್ಲಿ ಕುಳಿತುಕೊಂಡಿತು. ಆಯಾಸವೇ? ಹಾಗೆಂದರೇನು? ಹನುಮನಿಗೆ ಗೊತ್ತಿಲ್ಲ.

*****

ಎಲ್ಲಾ ಪದಾರ್ಥಗಳಿಗಿಂತ ಹೂವು ಬಹಳ ಸೂಕ್ಷ್ಮ. ಅದೊಂದು ತೂಕವಿಲ್ಲದ ವಸ್ತು. ಕಷ್ಟದ ಕೆಲಸ ಸುಲಭವಾಗಿ ಆದಾಗ "ನಮ್ಮ ಕೆಲಸ ಹೂವು ಎತ್ತಿದಂತೆ ಸುಲಭವಾಗಿ ಆಯಿತು" ಎಂದು ಹೇಳುವುದುಂಟು. ಬೆಳಗಿನ ಪೂಜೆಗೆ ಹೂವು ತಂದಾಗ ಅದೊಂದು ಆಯಾಸದ ಕೆಲಸ ಎಂದು ಯಾರೂ ಹೇಳುವುದಿಲ್ಲ.

ಹನುಮನ "ರಾಮಭಕ್ತಿ" ಮಾತಿನಲ್ಲಿ ಹೇಳುವಂಥದಲ್ಲ. ಅದಕ್ಕೆ ಸಾಟಿಯಾದದ್ದು ಇನ್ನೊಂದಿಲ್ಲ. ದೇವರ ಪೂಜೆಗೆ ಹೂವು ಬೇಕು. ಹೂವನ್ನು ತರಬೇಕು. ಒಮ್ಮೆ ಉಪಯೋಗಿಸಿದ ಹೂವನ್ನು ಮತ್ತೆ ಉಪಯೋಗಿಸುವಂತಿಲ್ಲ. ಆದ್ದರಿಂದ ಹನುಮ ಹೂವು ತರುವಾಗ ಅದರ ಸುವಾಸನೆ ಸೇವಿಸಬಾರದು. (ಈ ರೀತಿ ನೋಡಿದರೆ ನಾವು ಅರ್ಪಿಸುವ ಎಲ್ಲ ಹೂವುಗಳೂ ನಿರ್ಮಾಲ್ಯವೇ!) ಶ್ರೀರಾಮರ ಪೂಜೆಗೆ ಹೂವು ತರುವಾಗ ಹನುಮನಿಗೆ ಎರಡೂ ಕೈ ಸೇರಿಸಿ ಬೊಗಸೆ ಆಗಬೇಕು. ತರುವ ಹೂವು ಬೇರೆ ಕೆಲಸಕ್ಕೆ ಉಪಯೋಗಿಸುವ ಆಲೋಚನೆ ಕೂಡ ಬರಬಾರದು. ವಾಸನೆ ಸ್ವಲ್ಪ ಕೂಡ ಅಘ್ರಾಣಿಸಬಾರದು. ಹಾಗೆ ಜೋಪಾನವಾಗಿ ತರಬೇಕು.

ಈ ಕಾರಣದಿಂದ ಅತಿ ಗಮನವಿಟ್ಟು, ಎರಡೂ ಕೈಗಳಿಂದ ಮಾಡಿದ ಬೊಗಸೆಯಲ್ಲಿ, ನಡು ಬಗ್ಗಿಸಿ, ಬಹಳ ಭಕ್ತಿಯಿಂದ ಹನುಮ ಹೂವುಗಳನ್ನು ತರುತ್ತಾನೆ.

ಬೆಟ್ಟ ಎತ್ತಲು, ಎತ್ತಿಕೊಂಡು ಹಾರಲು, ಹಿಂದಿರುಗಿ ಎಸೆಯಲು ಒಂದೇ ಕೈ ಸಾಕು. ಮೈ ಬಗ್ಗಿಸುವ ಅಗತ್ಯವಿಲ್ಲ. ಆದರೆ ಶ್ರೀರಾಮರ ಪೂಜೆಗೆ ಹೂವು ತರುವಾಗ ಎರಡೂ ಕೈಗಳ ಬೊಗಸೆ ಬೇಕು. ಮೈ ಬಗ್ಗಿಸಬೇಕು. ಹೀಗೆ ಭಯ-ಭಕ್ತಿಯಿಂದ ತರಬೇಕು!

*****  

ಯುದ್ಧಕಾಲದಲ್ಲಿ ಪರ್ವತ ತಂದಿದ್ದು, ಮತ್ತು ಪೂಜಾಕಾಲದಲ್ಲಿ ಹೂವುಗಳನ್ನು ತರುವುದು, ಈ ಎರಡೂ ಕೆಲಸಗಳನ್ನು ಹನುಮ ಮಾಡಿದ ರೀತಿಯನ್ನು ಶ್ರೀ ನಾರಾಯಣ ಪಂಡಿತಾಚಾರ್ಯರು ತಮ್ಮ "ಶ್ರೀಮಧ್ವ ವಿಜಯ" ಕಾವ್ಯದಲ್ಲಿ ("ಸುಮಧ್ವ ವಿಜಯ" ಎಂದು ಹೇಳುವು ಹೆಚ್ಚು ಬಳಕೆ), ಮೊದಲ ಸರ್ಗದ 19ನೆಯ ಶ್ಲೋಕದಲ್ಲಿ, ಹೀಗೆ ವರ್ಣಿಸುತ್ತಾರೆ: 

ರಾಮರ್ಚನೇ ಯೋ ನಯತಃ ಪ್ರಸೂನಂ 
ದ್ವಾಭ್ಯಾ೦ ಕರಾಭ್ಯಾ೦ ಅಭವತ್ ಪ್ರಯತ್ನ: 
ಏಕೇನ ದೋಷ್ಣಾ ನಯತೋ ಗಿರೀ೦ದ್ರಂ 
ಸಂಜೀವನಾದ್ಯಾಶ್ರಯಮಸ್ಯ ನಾಭೂತ್ 

ಶ್ರೀರಾಮರ ಅರ್ಚನೆಗೆ ಹೂವುಗಳನ್ನು ತರುವಾಗ (ಹನುಮನಿಗೆ) ಬೇಕಾದ ಎರಡೂ ಕೈಗಳ ಅವಶ್ಯಕತೆ ಅನೇಕ ಗಿಡ, ಮೂಲಿಕೆ, ಕಲ್ಲು, ಮಣ್ಣು, ಪಶು-ಪಕ್ಷಿ ಮುಂತಾವುದುವುಗಳಿಂದ ತುಂಬಿದ  ಪರ್ವತವನ್ನು ತರುವಾಗ ಬೇಕಾಗಲಿಲ್ಲ.

ಹನುಮನಿಗೆ ಬೇರೆ ಎಲ್ಲಾ ಕೆಲಸಗಳೂ ಹೂವು ಎತ್ತುವುದಕ್ಕಿಂತ ಸುಲಭ. ರಾಮರ ಪೂಜೆಗೆ ಹೂವುಗಳನ್ನು ತರುವುದು ಅವೆಲ್ಲಕ್ಕಿಂತ ಹೆಚ್ಚು ಮುಖ್ಯ. (ಅದರಿಂದ ಪ್ರಯಾಸವೆಂದಲ್ಲ. ಹೆಚ್ಚಿನ ಗಮನ ಮತ್ತು ಭಯ-ಭಕ್ತಿ ಕಾರಣದಿಂದ ಎರಡೂ ಕೈಗಳ ಉಪಯೋಗ ಆಯಿತು ಎಂದು ತಿಳಿಯಬೇಕು). 

*****
 
ಕಾವ್ಯಮೀಮಾಂಸೆಯ ಸಂದರ್ಭದಲ್ಲಿ "ರಸ" ಮತ್ತು "ಧ್ವನಿ" ಎನ್ನುವ ಎರಡು ಪದಗಳಿಗೆ ವಿಶೇಷ ಮಹತ್ವವಿದೆ. ರಸ ಅನ್ನುವುದು ಸಾಮಾನ್ಯವಾಗಿ ತಿಳಿದಿರುವ ವಿಷಯ. ಈ "ಧ್ವನಿ" ಎಂದರೇನು? 

ಮೇಲಿನ ಶ್ಲೋಕದಲ್ಲಿ ಭಕ್ತಿ ಮತ್ತು ಶಕ್ತಿ ಎನ್ನುವ ಪದಗಳ ಬಳಕೆಯೇ ಇಲ್ಲ. ಬೆಟ್ಟ ಒಂದು ಕೈಯಲ್ಲಿ ಮತ್ತು ಹೂವು ಎರಡೂ ಕೈಯ್ಯಲ್ಲಿ ಎಂದು ಮಾತ್ರ ಹೇಳಿದೆ. ಆದರೆ ಬೆಟ್ಟ ತರುವಾಗ ಶಕ್ತಿ ಬೇಕು. ಹೂವು ತರುವಾಗ ಭಕ್ತಿ ಬೇಕು. ಈ ಎರಡು ವಿಷಯಗಳು ಎಲ್ಲರಿಗೂ ಗೊತ್ತು. ಹೇಳದೆ ಇದ್ದರೂ ಶಕ್ತಿಗಿಂತ ಭಕ್ತಿಗೆ ಹನುಮನ ಪ್ರಾಮುಖ್ಯತೆ ಹೆಚ್ಚು ಎನ್ನುವುದು ಓದಿದ ಅಥವಾ ಕೇಳಿದ ತಕ್ಷಣ ಎಲ್ಲರಿಗೂ ಗೊತ್ತಾಗುತ್ತದೆ. ಇಂತಹ ವಿಷಯವನ್ನು ಮನಸ್ಸಿನಲ್ಲಿ ಚಿಂತಿಸುವಾಗಲೇ ಒಂದು ವಿಶಿಷ್ಟ ರೀತಿಯ ಆನಂದದ ಅನುಭವ ಆಗುವುದು. 

ಒಂದು ದೇಹಕ್ಕೆ ಒಳ್ಳೆಯ ವಸ್ತ್ರ ತೊಡಿಸಿ, ಒಡವೆಗಳನ್ನು ಹಾಕಿ, ಅಲಂಕಾರ ಮಾಡಿ, ಕೂಡಿಸಿದರೆ ಚಂದವಾಗಿ ಏನೋ ಕಾಣಬಹುದು. ಆದರೆ ಆ ದೇಹ ಉಸಿರಾಡದೇ ಇದ್ದರೆ ಏನು ಪ್ರಯೋಜನ? ಅದೇ ರೀತಿ, ಕಾವ್ಯದಲ್ಲಿ ಎಲ್ಲಾ ಕಸರತ್ತುಗಳನ್ನೂ ಸೇರಿಸಿ, ಧ್ವನಿ ಇಲ್ಲದಿದ್ದರೆ ಪ್ರಯೋಜನವಿಲ್ಲ. ಕಾವ್ಯದ ಆತ್ಮವೇ ಧ್ವನಿ ಎನ್ನುವ ವಸ್ತು. ಮಾತಿನಲ್ಲಿ ಹೇಳದಿದ್ದರೂ ಅದರ ಹೂರಣದ ಅರ್ಥ ಓದುಗರಿಗೆ ಅಥವಾ ಕೇಳುಗರಿಗೆ ಆಗಬೇಕು. ಇದೇ ಕಾವ್ಯದಲ್ಲಿ "ಧ್ವನಿ" ಅನ್ನಿಸಿಕೊಳ್ಳುತ್ತದೆ. ಹೀಗೆ ಪದಗಳಲ್ಲಿ ಹೇಳದೆ ಇದ್ದರೂ ಅದರ ಅಂತರಾರ್ಥವನ್ನು ತಿಳಿಯುವಂತೆ ಮಾಡುವುದೇ ಧ್ವನಿಯ ವಿಶೇಷತೆ. 

*****

ಇಂದಿನಿಂದ ಮೂರು ದಿನ ಶ್ರೀ ರಾಘವೇಂದ್ರ ಗುರು ರಾಯರ ಆರಾಧನೆ. ರಾಯರಿಗೆ ಹನುಮನೇ ಆದಿ ಗುರು. ಅವನೇ ಆದರ್ಶ. ಅದಕ್ಕೇ ಮೊದಲು ಹನುಮನನ್ನು ಪ್ರತಿಷ್ಠಾಪಿಸಿ, ಅವನ ಎದುರಿಗೆ ವೃಂದಾವನದಲ್ಲಿ ನೆಲೆಸಿದ್ದಾರೆ. ಮಂತ್ರಾಲಯ ಕ್ಷೇತ್ರಕ್ಕೆ ಹೋದವರು ಶ್ರೀರಾಯರ ಜೊತೆ ಜೊತೆಯಲ್ಲಿ ಹನುಮನನ್ನೂ ನೋಡುತ್ತಾರೆ. 

Wednesday, December 17, 2025

ರಾಮನಾಮ ಎಂಬ ರಸವುಳ್ಳ ನೀರಿಗೆ


ಕಳೆದ ಸಂಚಿಕೆಯಲ್ಲಿ "ತಾರಕ್ಕ ಬಿಂದಿಗೆ ನಾ ನೀರಿಗ್ಹೋಗುವೆ" ಎನ್ನುವ ಶೀರ್ಷಿಕೆಯ ಅಡಿಯಲ್ಲಿ ಬಹು ಜನಪ್ರಿಯ ದೇವರನಾಮ ಶ್ರೀ ಪುರಂದರದಾಸರ ಕೃತಿ "ತಾರಕ್ಕ ಬಿಂದಿಗೆ ನಾ ನೀರಿಗ್ಹೋಗುವೆ, ತಾರೇ ಬಿಂದಿಗೆಯ" ವಿಶೇಷಾರ್ಥಗಳ ಅನ್ವೇಷಣೆಯಲ್ಲಿ ಕೃತಿಯ ಪಲ್ಲವಿಯ ಎರಡು ಸಾಲುಗಳಲ್ಲಿ ತುಂಬಿರುವ ಅರ್ಥವಿಶೇಷಗಳನ್ನು ನೋಡುವ ಪ್ರಯತ್ನ ಮಾಡಿದ್ದೆವು. ಈ ಸಂಚಿಕೆಯನ್ನು ಇಲ್ಲಿ ಕ್ಲಿಕ್ ಮಾಡಿ ಓದಬಹುದು.

ಈಗ ಈ ಹಾಡಿನ ಉಳಿದ ಭಾಗಗಳ ವಿಶೇಷ ಅರ್ಥಗಳನ್ನು ನೋಡೋಣ. 

*****

ಬಿಂದಿಗೆ ಕೊಡು ಎಂದು ಕೇಳಿದ್ದು ನೀರು ತರಲು. ಯಾವ ನೀರು? ನಾವು ನಮ್ಮ ಸುತ್ತ-ಮುತ್ತ ಕಾಣುವ ಮತ್ತು ದಿನಂಪ್ರತಿ ಉಪಯೋಗಿಸುವ ನೀರು ಎನ್ನುವುದು ಸಾಮಾನ್ಯವಾದ ಹೊರ ಅರ್ಥ. ನೀರಿಲ್ಲದೆ ಜೀವನವಿಲ್ಲ. ಗಾಳಿಯ ನಂತರ ಜೀವಿಗೆ ಬೇಕಾದ ಅತ್ಯಂತ ಮುಖ್ಯ ಅವಶ್ಯಕತೆ ನೀರು. ನೀರನ್ನು ಶೇಖರಿಸಿ ತರಲು ಒಂದು ಸಾಧನ ಬೇಕು. ಬಿಂದಿಗೆಯು ಅಂತಹ ಒಂದು ಸಾಧನ. ನೀರಿಲ್ಲದೆ ಕರ್ಮವಿಲ್ಲ. ಏನಾದರೂ ಮಾಡುವ ಮೊದಲು ಕೈ, ಕಾಲುಗಳನ್ನಾದರೂ ತೊಳೆದುಕೊಳ್ಳುತ್ತೇವೆ. ಅದಕ್ಕೆ ನೀರು ಬೇಕು. ಸ್ನಾನ ಮಾಡಿದರೆ ನೀರು ಬೇಕು. ಪೂಜೆ-ಹೋಮಾದಿಗಳನ್ನು ಮಾಡಲು ಮೊದಲು ನೀರಿನಿಂದಲೇ ಪ್ರಾರಂಭ. ಕಡೆಯಲ್ಲಿ ಸಮರ್ಪಣ ಮಾಡಲೂ ನೀರು ಬೇಕು. ನೀರಿನಿಂದ ಪ್ರಾರಂಭವಾದ ಕೆಲಸಗಳು ನೀರಿನಿಂದಲೇ ಕೊನೆ! ಬೇರೆ ಯಾವುದಾದರೂ ಪದಾರ್ಥ ಇಲ್ಲದಿದ್ದರೆ ಹೇಗೋ ಕೆಲಸ ತೂಗಿಸಬಹುದು. ನೀರಿಲ್ಲದಿದ್ದರೆ ಮುಂದೆ ಹೋಗಲು ಆಗುವುದೇ ಇಲ್ಲ.  

ನೀರಿಗೆ ಒಂದು ವಿಶೇಷಾರ್ಥವಿದೆ. ಬಿಂದಿಗೆ ಅನ್ನುವುದು ದೇಹವಾದಾಗ (ಏಕೆ ಅನ್ನುವುದನ್ನು ಹಿಂದಿನ ಸಂಚಿಕೆಯಲ್ಲಿ ನೋಡಿದ್ದೇವೆ) ನೀರು ಅನ್ನುವುದು ಜೀವಿಯು ಮಾಡುವ "ಕರ್ಮ" ಸೂಚಕವಾಗುತ್ತದೆ. ಬಿಂದಿಗೆಯಲ್ಲಿ ನೀರನ್ನು ತರುವಂತೆ ದೇಹದಿಂದ ಜೀವಿಯು ಕರ್ಮಗಳನ್ನು ಮಾಡಿ ಆ ಮೂಲಕ ಸಾಧನೆಗಳನ್ನು ಮಾಡುತ್ತಾನೆ. 

ಈಶಾವಾಸ್ಯ ಉಪನಿಷತ್ತು ತನ್ನ ನಾಲ್ಕನೆಯ ಮಂತ್ರದಲ್ಲಿ "ತಸ್ಮಿನ್ ಆಪಃ ಮಾತರಿಶ್ವಾ ದಧಾತಿ" ಎಂದು ಹೇಳುತ್ತದೆ. "ಆಪಃ" ಅಂದರೆ ನೀರು. "ಮಾತರಿಶ್ವ" ಅಂದರೆ ವಾಯು. ವಾಯುವು ಕೊಡುವ ನೀರು ಯಾವುದು? ಕೊಡುವುದು ಯಾರಿಗೆ? ಜೀವಿಯ ಎಲ್ಲ ಕರ್ಮಗಳಿಗೆ ಪ್ರತ್ಯಕ್ಷ ಸಾಕ್ಷಿ ಪ್ರಾಣವಾಯು. ಮೊದಲ ಉಸಿರಿನಿಂದ ಪ್ರಾರಂಭವಾದ ಜೀವನದಿಂದ ಕರ್ಮ ಪ್ರಾರಂಭ. ಕೊನೆಯ ಉಸಿರಿನೊಡನೆ ಅದು ಮುಗಿಯಿತು. ಬೇರೆಯವರ ಕಣ್ಣು ತಪ್ಪಿಸಿ ಅನೇಕ ಕೆಲಸಗಳನ್ನು ಮಾಡಬಹುದು. ಹಾಗೆ ಏನಾದರೂ ಮಾಡಿ ಅರಗಿಸಿಕೊಳ್ಳಬಹುದು. ಆದರೆ ಮಾತರಿಶ್ವನ ಕಣ್ಣು ತಪ್ಪಿಸಲಾಗದು. ಇದನ್ನೇ "ಅಂತಃಸಾಕ್ಷಿ" ಎಂದೂ ಹೇಳುತ್ತೇವೆ.  ಜೀವನ ಕಾಲ ಮುಗಿದ ಮೇಲೆ ಜೀವಿಯನ್ನು ಪರಮಾತ್ಮನ ಮುಂದೆ ನಿಲ್ಲಿಸಿ ವಾಯುದೇವನು ಅವನ ಸಮಸ್ತ ಕರ್ಮಗಳನ್ನು ಹಾಜರು ಮಾಡುತ್ತಾನೆ. 

ಈ ಕಾರಣದಿಂದ "ನಾ ನೀರಿಗ್ಹೋಗುವೆ" ಅಂದರೆ "ನೀನು ಕೊಟ್ಟ ದೇಹದಿಂದ ನಾನು ಕರ್ಮಗಳನ್ನು ಆಚರಿಸಿ ಸಾಧನೆಗಳನ್ನು ಮಾಡುವೆ, ಮಹಾಲಕ್ಷ್ಮಿ ಅಕ್ಕಾ" ಎಂದು ಹೇಳುವುದು. ಇದು ಅಂತರಾರ್ಥ. 
***** 

"ರಾಮನಾಮ ಎಂಬೋ ರಸವುಳ್ಳ ನೀರಿಗೆ" ಬಿಂದಿಗೆ ಬೇಕು. ರಾಮನಾಮದ ವಿಶೇಷವೇನು? ಅನಂತರೂಪಿ ಪರಮಾತ್ಮನಿಗೆ ಅನಂತ ಹೆಸರುಗಳು. ಸೃಷ್ಟಿಯಲ್ಲಿ ಇರುವ ಸಕಲ ಶಬ್ದಗಳೂ ಪರಮಾತ್ಮನನ್ನೇ ಹೇಳುತ್ತವೆ ಎನ್ನುವುದು ಒಂದು ಪ್ರಮೇಯ. (ಧ್ವನ್ಯಾತ್ಮಕ ಮತ್ತು ವರ್ಣಾತ್ಮಕ ಶಬ್ದಗಳ ಬಗ್ಗೆ ಹಿಂದೊಂದು ಸಂಚಿಕೆಯಲ್ಲಿ ನೋಡಿದ್ದೇವೆ). "ರಮಯತಿ ಇತಿ ರಾಮಃ". "ಆನಂದ (ಸಂತೋಷ) ಕೊಡುವವನು ರಾಮ" ಎಂದು ಇದರ ಅರ್ಥ. ಜೀವಿಗಳಿಗೆ ಈ ಸುತ್ತುವ ಸಂಸಾರದ ಹುಟ್ಟು-ಸಾವುಗಳಿಂದ ಬಿಡುಗಡೆ ಕೊಟ್ಟು ಶಾಶ್ವತ ಆನಂದ ಕೊಡುವವನು ರಾಮ. ಈ ಮೋಕ್ಷದ ನಂತರದ ಆನಂದಕ್ಕೆ ಅದರ ಪ್ರಮಾಣದಲ್ಲಿ ಆಗಾಗ ಹೆಚ್ಚು-ಕಡಿಮೆ ಆಗುವ ಭಯವಿಲ್ಲ. ಎಂದೋ ಒಂದು ದಿನ ಮುಗಿದುಹೋಗುವುದು ಎನ್ನುವ ಆತಂಕವಿಲ್ಲ. ಅದು ಶಾಶ್ವತವಾದ, ಕೊನೆಯಿಲ್ಲದ, ಪರಿಪೂರ್ಣ ಆನಂದ. 

ರಾಮನು ಎಲ್ಲ ಕಾಲದಲ್ಲೂ ಇದ್ದನು. ಎಲ್ಲ ಕಾಲದಲ್ಲೂ ಇರುತ್ತಾನೆ. ತ್ರೇತಾಯುಗದ ಶ್ರೀರಾಮಚಂದ್ರನು ಅವತಾರ ಮಾಡುವ ಮೊದಲೂ ಇದ್ದನು. ಆ ಅವತಾರ ಮುಗಿದಮೇಲೂ ಇರುತ್ತಾನೆ. ಇಂತಹ ರಾಮನ ಹೆಸರನ್ನೇ ದಶರಥ-ಕೌಸಲ್ಯೆಯರ ಮಗನಿಗೂ ಕೊಟ್ಟರು. ಇಬ್ಬರೂ ಒಂದೇ. ಭೇದವಿಲ್ಲ. 

ಪರಮಾತ್ಮನ ಅನಂತ ನಾಮಗಳಲ್ಲಿ ರಾಮನಾಮ ಅತ್ಯಂತ ಸುಲಭವಾದದ್ದು. ಒತ್ತಕ್ಷರಗಳ ಗೊಂದಲವಿಲ್ಲ. ಆರು-ಎಂಟು-ಹತ್ತು ಅಕ್ಷರಗಳ ದೊಡ್ಡ ಹೆಸರಲ್ಲ. ಈಗ ತಾನೇ ಮಾತು ಕಲಿಯುತ್ತಿರುವ ಮಗುವೂ ಸುಖವಾಗಿ "ರಾಮ" ಎಂದು ಹೇಳುವುದು. "ಹೃಷಿಕೇಶ" "ತ್ರಿವಿಕ್ರಮ" "ಪದ್ಮನಾಭ" "ಸಂಕರ್ಷಣ" "ಅಧೋಕ್ಷಜ" ಮುಂತಾದುವನ್ನು ಹೇಳಲು ಅನೇಕರಿಗೆ ಕಷ್ಟವಾಗುತ್ತದೆ. ರಾಮನಾಮಕ್ಕೆ ಇಂತಹ ಬಂಧವಿಲ್ಲ. ಅದು ಗಟ್ಟಿಯಾದ ಚಕ್ಕುಲಿ, ಕೋಡುಬಳೆ, ಪುಳ್ಳಂಗಾಯಿ ಉಂಡೆ ತಿಂದು ಅರಗಿಸಿಕೊಂಡಂತೆ ಅಲ್ಲ. ಪಾಯಸ ಕುಡಿದಂತೆ ಸುಲಭ. ಸಿಹಿಯೂ ಹೌದು. ಆದ್ದರಿಂದ "ರಾಮನಾಮ ಪಾಯಸ"!
*****

ರಾಮನಾಮ ಎಂಬ ನೀರು ಎಂದಾಯಿತು. "ರಸವುಳ್ಳ ನೀರು" ಎಂದೇಕೆ ಹೇಳಿದರು? ನೀರಿನಲ್ಲಿ ಎಂತಹ ರಸ? ನಮಗೆ ಬಾಯಾರಿಕೆ ಆದಾಗ ಕುಡಿಯಲು ನೀರು ಬೇಕು. ಒಳ್ಳೆಯ ಬಾದಾಮಿ ಹಾಲೋ, ಎಳನೀರೋ ಕೊಟ್ಟರೆ ಹೇಗೆ? ಸೊಗಸಾದ ಕಾಫಿ? ಅಥವಾ ಕಿತ್ತಳೆ ರಸ? "ಅದೆಲ್ಲಾ ಇರಲಿ. ಕೊಡುವಿರಂತೆ. ಮೊದಲು ಒಂದು ಲೋಟ ನೀರು ಕೊಡಿ, ಆಮೇಲೆ ಬೇರೆಯದು" ಎನ್ನುತ್ತೇವೆ. ಆಯಿತು. ಕೊಟ್ಟರು. ಎಲ್ಲ ನೀರೂ ಒಂದೇ ರೀತಿ ಇರುವುದಿಲ್ಲ. ಬೆಂಗಳೂರಿನಲ್ಲಿ ಬೋರ್ವೆಲ್ ನೀರು ಕೊಡಬಹುದು. ಯಾವುದೊ ಕೆರೆಯಿಂದ ತಂಡ ಟ್ಯಾಂಕರ್ ನೀರು ಇರಬಹುದು. ಕಾವೇರಿ, ಅರ್ಕಾವತಿ ನೀರು ತಂದಿರಬಹುದು. ಎಲ್ಲವೂ ಒಂದೇ ರೀತಿ ಇರುವುದಿಲ್ಲ. ಕೆಲವು ನೀರು ಕುಡಿದರೆ ಮುಖ ಸಿಂಡರಿಸುತ್ತೇವೆ. "ಈ ನೀರು ಅಷ್ಟು ಸರಿ ಇಲ್ಲ" ಅನ್ನುತ್ತೇವೆ. ಯಾಕೆ? ನೀರು ಚೆನ್ನಾಗಿರಬೇಕು. "ಇಂತಹ ಒಳ್ಳೆಯ ನೀರು ತರುತ್ತೇನೆ, ಬಿಂದಿಗೆ ಕೊಡು" ಅನ್ನುವುದು ಸಾಮಾನ್ಯ ಅರ್ಥ. 

"ರಸ" ಅನ್ನುವುದಕ್ಕೆ ವಿಶೇಷಾರ್ಥವೂ ಉಂಟು. ಅದು ತಿಳಿಯಬೇಕಾದರೆ ಶ್ರೀಮದ್ ಭಗವದ್ಗೀತೆಯ ಏಳನೆಯ ಅಧ್ಯಾಯ ನೋಡಬೇಕು. ಎಂಟನೆಯ ಶ್ಲೋಕದಲ್ಲಿ ಶ್ರೀಕೃಷ್ಣ ಹೇಳುತ್ತಾನೆ:

ರಸೋಹಂ ಅಪ್ಸು ಕೌಂತೇಯ ಪ್ರಭಾಸ್ಮಿ ಶಶಿ ಸೂರ್ಯಯೋ: 
ಪ್ರಣವಃ ಸರ್ವವೇದೇಷು ಶಬ್ದ: ಖೇ ಪೌರುಷಮ್ ನೃಷು 

"ನೀರಿನಲ್ಲಿ ನಾನು ರಸ ಆಗಿದ್ದೇನೆ. ಚಂದ್ರ-ಸೂರ್ಯರಲ್ಲಿ ಬೆಳಕಾಗಿದ್ದೇನೆ. 
ವೇದಗಳಲ್ಲಿ ಓಂಕಾರವಾಗಿದ್ದೇನೆ. ಆಕಾಶದಲ್ಲಿ ಶಬ್ದ ರೂಪದಲ್ಲಿ ಇದ್ದೇನೆ. 
ಮನುಷ್ಯರಲ್ಲಿ ಕ್ರಿಯಾಶಕ್ತಿಯ ರೂಪವಾಗಿ ನಿಂತಿದ್ದೇನೆ"

ಪರಮಾತ್ಮನ ಸನ್ನಿಧಾನ ಇದ್ದಾಗ ನೀರು ರುಚಿಸುತ್ತದೆ. ಪದಾರ್ಥಗಳ ಸೊಗಸು ನಾಲಿಗೆಗೆ ಸಿಗುತ್ತದೆ. ಕಿತ್ತಳೆ ತೊಳೆ ನೋಡಲು ಕೆಂಪಾಗಿದೆ. ದಪ್ಪಗೂ ಇದೆ. ಆದರೆ ತಿಂದಾಗ ಬರೀ ಬೆಂಡು ಬೆಂಡು. ಯಾಕೆ? ಅಲ್ಲಿ ಪರಮಾತ್ಮನ ಅಭಿವ್ಯಕ್ತಿ ಇಲ್ಲ. ಬಾದಾಮಿ, ಗೋಡಂಬಿ ಬಹಳ ಚೆನ್ನಾಗಿವೆ. ಬಾಯಿಯಲ್ಲಿ ಹಾಕಿಕೊಂಡು ಎಷ್ಟು ಹೊತ್ತು ಇಟ್ಟುಕೊಂಡರೂ ಏನೂ ರುಚಿಯಿಲ್ಲವಲ್ಲ? ಅಗಿದು ಅದಕ್ಕೆ ಸ್ವಲ್ಪ ರಸರೂಪದ ನೀರು ಸೇರಿದರೆ ತಕ್ಷಣ ರುಚಿ ಸಿಕ್ಕಿತು!  

ಮನುಷ್ಯನು ಮಾಡುವ ಕೆಲಸಗಳೂ ಅಂತೆಯೇ. ಯಾವುದೋ ಕಾರಣಕ್ಕೆ ಮಾಡಿದ ಕಾರ್ಯಗಳು ನೀರಸ. "ಪರಮಾತ್ಮನಿಗೆ ಪ್ರೀತಿಯಾಗಲಿ" ಎಂದು ಮಾಡಿದ ತಕ್ಷಣ ಅಲ್ಲಿ ರಸ ಬಂದು ಕೂತಿತು. ಮಾಡಿದ ಕರ್ಮ ಸತ್ಕರ್ಮ ಆಯಿತು. ಅವನಿದ್ದರೆ ಅದು ಸರಸ. ರಸದಿಂದ ಕೂಡಿದ್ದು. ಅವನಿಲ್ಲದಿದ್ದರೆ ಅದು ನೀರಸ. ರಸವಿಲ್ಲದ್ದು. ಅವನಿಗೆ ವಿರುದ್ಧವಾಗಿದ್ದರೆ ವಿರಸ. ಇದೇ ಸತ್ಕರ್ಮಗಳ ರಹಸ್ಯ!

"ರಾಮನಾಮವೆಂಬ ರಸವುಳ್ಳ ನೀರು ತರುತ್ತೇನೆ, ಬಿಂದಿಗೆ ಕೊಡು ಅಕ್ಕಾ" ಅಂದಾಗ "ಸತ್ಕರ್ಮಗಳನ್ನು ಮಾಡಿ ರಸರೂಪವಾದ ಸಾಧನೆಯನ್ನು ದೇಹದಲ್ಲಿ ತುಂಬಿಕೊಳ್ಳುತ್ತೇನೆ" ಎಂದು ಅರ್ಥ. ಇದೇ ಇಲ್ಲಿನ ವಿಶೇಷಾರ್ಥ. 
*****

"ಗೋವಿಂದ ಎಂಬ ಗುಣವುಳ್ಳ ನೀರಿಗೆ ತಾರೆ ಬಿಂದಿಗೆಯ, ಆವಾವ ಪರಿಯಲ್ಲಿ ಅಮೃತದ ನೀರಿಗೆ ತಾರೇ ಬಿಂದಿಗೆಯ" ಅನ್ನುವುದು ಮುಂದಿನದು. "ಗೋವಿಂದ" ಅನ್ನುವ ಪದಕ್ಕೆ ಅನೇಕ ಅರ್ಥಗಳು. ಗೋ ಅನ್ನುವ ಪದಕ್ಕೆ "ನೀರು" "ಹಸು" "ಭೂಮಿ" "ವೇದಗಳು" ಇನ್ನೂ ಮುಂತಾಗಿ ವಿವರಣೆಗಳಿವೆ. "ಉತ್ತಮವಾದದ್ದು" ಎಂದೂ ಅರ್ಥವುಂಟು. "ನೀರಿನಲ್ಲಿ ಶ್ರೇಷ್ಠವಾದ ರೀತಿಯ ನೀರು ತರುತ್ತೇನೆ" ಎಂದು ಹೇಳುವುದು ಸಾಮಾನ್ಯ ಅರ್ಥ. 

ಅಮೃತದ ನೀರು ಹೇಗೆ? ಸತ್ಕರ್ಮ ಮಾಡಿದ ಮೇಲೆ ಮುಂದೆ ಜನ್ಮವಿಲ್ಲದ ಮುಕ್ತಿ ಸಿಗುತ್ತದೆ. ಸಾವಿಲ್ಲದ್ದು ಅಮೃತ. ಗೋವಿಂದನ ಪ್ರೀತಿಗಾಗಿ ಮಾಡಿದ ಕರ್ಮಗಳನ್ನು, ನಿಷ್ಕಾಮ ಕರ್ಮಗಳನ್ನು, ತುಂಬಿಕೊಂಡಮೇಲೆ ಮತ್ತೆ ಮರಣವಿಲ್ಲ. ಅಂದರೆ ಅಮೃತತ್ವ ಸಿಕ್ಕಿತು. ಆದ್ದರಿಂದ "ಅಮೃತದ ನೀರು". 

"ಕಾಮಿನಿಯರ ಕೂಡೆ ಏಕಾಂತವಾಡೆನು, ತಾರೆ ಬಿಂದಿಗೆಯ" ಎಂದರೇನು? ನೀರು ತರಲು ನದಿಗೋ, ಭಾವಿಗೋ ಹೋದಾಗ ಅಲ್ಲಿ ನಮ್ಮಂತೆಯೇ ಅನೇಕರು ಬಂದಿರುತ್ತಾರೆ. ಸಾಮಾನ್ಯವಾಗಿ ನೀರು ತರಲು ಹೋಗುತ್ತಿದ್ದುದು ಲೋಕಾರೂಢಿಯಾಗಿ ಹೆಣ್ಣುಮಕ್ಕಳು. ಕಾಮಿನಿ ಅನ್ನುವ ಪದಕ್ಕೆ ಹೆಣ್ಣು ಎಂದೂ ಒಂದು ಅರ್ಥ. ಒಂದರ್ಥವೇನು, ಇದೇ ಅರ್ಥದಲ್ಲಿ ಆ ಪದವನ್ನು ಸಾಮಾನ್ಯವಾಗಿ ಬಳಸುವುದು. ಕೆಲವರು ಅಲ್ಲಿ ಕಂಡಾಗ ಸಹಜವಾಗಿ ಸ್ವಲ್ಪ ಅದು-ಇದು ಮಾತಾಡುವಂತೆ ಆಗುತ್ತದೆ. ಹರಟೆಯಲ್ಲಿ ಕಾಲಹರಣ ನಡೆಯುತ್ತದೆ. "ನಾನು ಹರಟೆಯಲ್ಲಿ ಕಾಲ ವ್ಯಯ ಮಾಡುವುದಿಲ್ಲ. ಅಲ್ಲಿ ಹೋಗಿ, ನೀರು ತುಂಬಿಕೊಂಡು ಬೇಗ ಬಂದುಬಿಡುತ್ತೇನೆ" ಎನ್ನುವುದು ಸಾಮಾನ್ಯ ಅರ್ಥ. 

"ಕಾಮ" ಅಂದರೆ ಆಸೆ. ಆಸೆ ಯಾವಾಗಲೂ ಒಂದೇ ಒಂದಾಗಿ ಬರುವುದಿಲ್ಲ. ಆಸೆಗಳು ಗುಂಪಾಗಿ ಮನುಷ್ಯನನ್ನು ಕಾಡುತ್ತವೆ. ಕಾಮದಿಂದ ಹುಟ್ಟಿದ್ದು ಕಾಮಿನಿ ಎಂದಾಗುತ್ತದೆ. "ಅಕ್ಕ, ನೀನು ದೇಹವನ್ನು ಕೊಟ್ಟರೆ ಅದನ್ನು ಇತರೆ ಆಸೆಗಳ, ಪ್ರಾಪಂಚಿಕ ಸುಖ-ಭೋಗಗಳ, ತೃಪ್ತಿಗೆ ಬಳಸುವುದಿಲ್ಲ. ಕೇವಲ ಸಾಧನೆಗಾಗಿಯೇ ಜೀವಿತ ಕಾಲವನ್ನು ಬಳಸಿಕೊಳ್ಳುತ್ತೇನೆ" ಎಂದು ಹೇಳುವುದೇ ವಿಶೇಷಾರ್ಥ. 

ನೀರು ತರಲೆಂದು ಬಿಂದಿಗೆ ಹಿಡಿದು ಹೊರಟು, ಜಲಾಶಯದ ಬಳಿ ಸಮಯವೆಲ್ಲ ಹರಟೆಯಲ್ಲಿ ಕಳೆದು, ಕಡೆಗೆ ಮನೆಗೆ ಖಾಲಿ ಬಿಂದಿಗೆ ಹಿಡಿದು ಬಂದರೆ ಹೇಗಿರುತ್ತದೆ? ಅಮೂಲ್ಯವಾದ ಮತ್ತು ಅಪರೂಪವಾದ ಮನುಷ್ಯ ಜನ್ಮ ಪಡೆದು. ಲೌಕಿಕ ಸುಖಗಳಲ್ಲಿ ಎಲ್ಲ ಕಾಲ ಕಳೆದು, ಕಡೆಗೆ ಅಲ್ಲಿ ಹೋಗಿ ನಿಂತಾಗ ಖಾಲಿ ಕೈ ಆಗುವಂತಾದರೆ ಹೇಗೆ? ಕಾಡಿ-ಬೇಡಿ ಪಡೆದ ದೇಹ, ಜನ್ಮ ವ್ಯರ್ಥವಾಯಿತು. ಹೀಗಾಗಲು ಬಿಡುವುದಿಲ್ಲ ಎಂದು ಮಹಾಲಕ್ಷ್ಮಿ ದೇವಿಗೆ ವಚನ ಕೊಟ್ಟಂತೆ ಈ ಮಾತು. 
***** 

"ಬಿಂದು ಮಾಧವನ ಘಟ್ಟಕ್ಕೆ ಹೋಗುವೆ, ಪುರಂದರ ವಿಠಲಗೆ ಅಭಿಷೇಕ ಮಾಡುವೆ" ಎನ್ನುವುದು ಕಡೆಯ ನುಡಿಯ ತಿರುಳು. ಕಾಶಿಯಲ್ಲಿ ಬಿಂದುಮಾಧವನ ದೇವಾಲಯ ಇದೆ. ಗಂಗಾನದಿಯ ಪಕ್ಕದಲ್ಲೇ ಇದೆ. "ಒಳ್ಳೆಯ ಗಂಗೆ ನೀರು ಬಿಂದಿಗೆಯಲ್ಲಿ ತುಂಬಿಕೊಂಡು ಬಂದು ವಿಠಲನ ಇನ್ನೊಂದು ರೂಪನಾದ ಮಾಧವನಿಗೆ ಅಭಿಷೇಕ ಮಾಡುತ್ತೇನೆ" ಅನ್ನುವುದು ಸಾಮಾನ್ಯ ಅರ್ಥ. 

"ನೀನು ನನ್ನ ಈ ಬೇಡಿಕೆಯ ಫಲವಾಗಿ ಕೊಡುವ ದೇಹದಲ್ಲಿ ಅನೇಕ ಸಾಧನೆಗಳನ್ನು ಮಾಡಿ ಅವುಗಳನ್ನೆಲ್ಲಾ ಪರಮಾತ್ಮನಿಗೆ ಸಮರ್ಪಣ ಮಾಡುತ್ತೇನೆ" ಎಂದು ಮಹಾಲಕ್ಷ್ಮೀದೇವಿಯ ಮುಂದೆ ಪ್ರತಿಜ್ಞೆ ಮಾಡುವುದೇ ಒಟ್ಟು ತಾತ್ಪರ್ಯ ಮತ್ತು ವಿಶೇಷಾರ್ಥ. 

"ಪ್ರತ್ಯಕ್ಷರಂ ಪ್ರತಿಪದಂ ಅನೇಕಾಕೂತಿ ಗರ್ಭಿತಂ" ಎಂದು ಒಂದು ಮಾತಿದೆ. ದೊಡ್ಡವರ ಮಾತುಗಳಲ್ಲಿ ಅವರ ಅನೇಕ ಕಾಲದ ಅನುಭವದ, ಅಧ್ಯಯನದ ಸಾರ ತುಂಬಿರುತ್ತದೆ. ಶ್ರೀ ಪುರಂದರದಾಸರ ಪದಗಳಲ್ಲಿ ಇವನ್ನು ಚೆನ್ನಾಗಿ ಕಾಣಬಹುದು. ಒಂದೊಂದು ಸಾಲಿನಲ್ಲೂ, ಒಂದೊಂದು ಪದದಲ್ಲೂ, ಸಾಮಾನ್ಯ ಅರ್ಥಗಳೂ, ಅವುಗಳ ಜೊತೆ-ಜೊತೆಯಾಗಿ ವಿಶೇಷ ಅರ್ಥಗಳೂ, ಗೂಡಾರ್ಥಗಳೂ ತುಂಬಿರುತ್ತವೆ. ಒಂದು ಸಲ ಓದಿದರೆ ಅಥವಾ ಕೇಳಿದರೆ ಅಷ್ಟಿಷ್ಟು ಅರ್ಥವೇನೋ ಆಗುತ್ತದೆ. ಸರಿಯಾದ ಮೌಲ್ಯ ನಮಗೆ ಸಿಗಬೇಕಾದರೆ ಹೆಚ್ಚಿನ ಅಧ್ಯಯನ ಅಗತ್ಯ. 

*****

ಹಿಂದಿನ ಮತ್ತು ಈ ಸಂಚಿಕೆಯನ್ನು ಓದಿದ ನಂತರ ಹಾಡನ್ನು ಕೇಳಿದರೆ ಹೆಚ್ಚು ಉಪಯೋಗವಾಗುತ್ತದೆ. ಆದ್ದರಿಂದ ಅದನ್ನು ಈ ಕೆಳಗೆ ಕೊಟ್ಟಿದೆ:


ಒಂದು ಬಾರಿ ಓದಿದರೆ ವಿಶೇಷಾರ್ಥಗಳು ಮನಸ್ಸಿನಲ್ಲಿ ನಿಲ್ಲುವುದಿಲ್ಲ. ಅದಕ್ಕೆ ಎರಡು ಮೂರು ಬಾರಿ ಓದುವ ತಾಳ್ಮೆ ಬೇಕು. ಒಮ್ಮೆ ಮನಸ್ಸಿನಲ್ಲಿ ನಿಂತರೆ ಮುಂದೆ ಬೇರೆ ಬೇರೆ ವಿಷಯಗಳ ಅಧ್ಯಯನ ಕಾಲದಲ್ಲಿ ಮತ್ತಷ್ಟು ಹೊಸ ವಿಷಯಗಳು ತೆರೆದುಕೊಳ್ಳುತ್ತವೆ. 

Tuesday, July 1, 2025

ಏಕಾದಶಿಯ ದಿನ ಹಾಲು-ಹಣ್ಣು ಸೇವಿಸಿ


ಹಿಂದಿನ ಸಂಚಿಕೆಯಲ್ಲಿ, "ಮನವ ಕಬ್ಬಿಣ ಮಾಡು, ಹೇ ಮೃಡನೇ!" ಎಂಬ ಶೀರ್ಷಿಕೆಯ ಅಡಿಯಲ್ಲಿ, "ಸಂದರ್ಭ ನೋಡಿ ಮಾತುಗಳಿಗೆ ಅರ್ಥ ಮಾಡಬೇಕು" ಎನ್ನುವ ವಿಷಯವನ್ನು ಎರಡು ಬಾರಿ ನೋಡಿದ್ದೆವು. (ಈ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ). 

ಸಂದರ್ಭ ನೋಡಿ ಮಾತುಗಳಿಗೆ ಅರ್ಥ ಮಾಡಬೇಕು ಎನ್ನುವುದು ಎಲ್ಲ ಕಾಲಗಳಿಗೂ ಒಪ್ಪುವ, ತಪ್ಪಿಸಲಾಗದ, ತಪ್ಪಿಸಬಾರದಾದ ಅವಶ್ಯಕತೆ. ಯಾವುದೇ ಒಂದು ಸಂದರ್ಭದ ಅರ್ಥದ ತಿಳುವಳಿಕೆಗೆ ಆಯಾ ಗ್ರಂಥದ ಎಲ್ಲ ಭಾಗಗಳನ್ನೂ ಪೂರ್ತಿಯಾಗಿ ಓದಿ, ಹಿಂದು ಮುಂದಿನ ಭಾಗಗಳನ್ನು ಸಮನ್ವಯ ಮಾಡಿ, ನಂತರ ಅರ್ಥಗಳನ್ನು ಗ್ರಹಿಸಬೇಕು. ಯಾವುದೋ ಗ್ರಂಥದ ಒಂದು ಅಧ್ಯಾಯ ಓದಿ, ಅದರ ಹಿಂದೆ ಮುಂದೆ ತಿಳಿಯದೆ, ಸಂದರ್ಭಗಳ ಅರ್ಥ ತಿಳಿಯುವುದು ಬಹಳ ಅಪಾರ್ಥಕ್ಕೆ ದಾರಿ ಮಾಡುತ್ತದೆ. ಇದು ಕೃತಿಗಳನ್ನು ಓದದೇ ಇರುವುದಕ್ಕಿಂತಲೂ ಹೆಚ್ಚು ಅಪಾಯಕಾರಿ. ತುಂಬಾ ಆಳವಾದ ವಿಷಯಗಳಲ್ಲಂತೂ ಕೇವಲ ಆ ಒಂದು ಗ್ರಂತಹವನ್ನಲ್ಲ; ಅದಕ್ಕೆ ಸಂಬಂಧಿಸಿದಂತಹ ಇತರೆ ವಾಂಗ್ಮಯವನ್ನೂ ಅವಲೋಕಿಸಿ ಅರ್ಥಗಳನ್ನು ತಿಳಿಯುವ ಅವಶ್ಯಕತೆ ಇರುತ್ತದೆ. ಇಲ್ಲದಿದ್ದರೆ "ಎತ್ತು ಈಯಿತು ಅಂದರೆ ಕರು ಕೊಟ್ಟಿಗೆಯಲ್ಲಿ ಕಟ್ಟು" ಎನ್ನುವ ಗಾದೆಯಂತೆ ಅಪಾರ್ಥಕ್ಕೆ ಎಡೆಗೊಡುತ್ತದೆ. ಎತ್ತು ಕರು ಹಾಕುವುದಿಲ್ಲ ಎಂದು ತಿಳುವಳಿಕೆ ಇರುವವನು "ಎತ್ತು ಈಯಿತು" ಅಂದ ತಕ್ಷಣ ನಕ್ಕು ಸುಮ್ಮನಾಗುತ್ತಾನೆ. ಕರುವಿನ ಬಗ್ಗೆ ಯೋಚಿಸುವ ಪ್ರಸಂಗವೇ ಬರುವುದಿಲ್ಲ. 

ಈ ಸೂತ್ರವನ್ನು ಚೆನ್ನಾಗಿ ಅರಿಯಲು ಒಂದು ಉದಾಹರಣೆಯನ್ನು ನೋಡೋಣ. 

*****

ಸಾಮಾನ್ಯವಾಗಿ ನಮ್ಮ ಸಂಪ್ರದಾಯಗಳನ್ನು ಸ್ವಲ್ಪಮಟ್ಟಿಗೆ ತಿಳಿದ ಎಲ್ಲರಿಗೂ "ಏಕಾದಶಿ" ಅಂದ ತಕ್ಷಣ ನೆನಪಿಗೆ ಬರುವುದು "ಉಪವಾಸ". ಅನೇಕರು ಏಕಾದಶಿ ಉಪವಾಸ ಅಂದರೆ "ಪಕ್ಕದ್ಮನೆ ಸುಬ್ಬಮ್ಮನಿಗೆ ಇಂದು ಏಕಾದಶಿ ಉಪವಾಸ" ಹಾಡನ್ನು ಜ್ಞಾಪಿಸಿಕೊಂಡು, ಅಲ್ಲಿ ಬರುವ ತಿಂಡಿಗಳ ಪಟ್ಟಿಯನ್ನು ನೋಡಿ, ಪ್ರತಿದಿನ ಏಕಾದಶಿ ಯಾಕೆ ಆಗಬಾರದು ಎಂದು ಆತಂಕ ಪಡಬಹುದು. ಕೆಲವರು ಏಕಾದಶಿ ಉಪವಾಸ ಮಾಡುತ್ತಾರೆ. ಇನ್ನು ಕೆಲವರು ಆ ರೀತಿ ಉಪವಾಸ ಮಾಡುವವರನ್ನು ಅಪಹಾಸ್ಯ ಮಾಡುತ್ತಾರೆ. ತಮಾಷೆಯ ಸಂಗತಿಯೆಂದರೆ ಅನೇಕರಿಗೆ ಇದು ಒಂದು ವ್ರತ ಎಂದು ಗೊತ್ತಿಲ್ಲ. ಗೊತ್ತಿದ್ದವರಿಗೂ ಅದರ ಪೂರ್ತಿ ಆಚರಣೆ ಗೊತ್ತಿಲ್ಲ. 

ಯಾವುದಾದರೂ ರೆಸ್ಟೋರೆಂಟ್ ಬಳಿ ಸಂಜೆ ಎಂಟರ ನಂತರ ಹೋದವರಿಗೆ ಅಲ್ಲಿ ನಡೆಯುವ ಚಟುವಟಿಕೆಗಳ ಪರಿಚಯ ಇರುತ್ತದೆ. ಬೆಳಗ್ಗಿನಿಂದ ನಿಲ್ಲದ ಚಟುವಟಿಕೆ ಆದ ನಂತರ, ಗ್ರಾಹಕರ ಸೇವೆ ಮುಗಿದ ಮೇಲೆ, ಅಂದಿನ ದಿನ ಬಾಗಿಲು ಮುಚ್ಚುವ ಮುಂಚೆ ಕೆಲವು ದೈನಿಕ ಕೆಲಸಗಳಿರುತ್ತವೆ. ಅಡಿಗೆ ಮನೆಯವರಿಗೆ ಮಿಕ್ಕ ಪದಾರ್ಥಗಳನ್ನು ಕೆಡದಂತೆ ಎತ್ತಿಟ್ಟು, ಪಾತ್ರೆಗಳನ್ನು ಶುಚಿ ಮಾಡಿ ಒರೆಸಿಟ್ಟು, ಮಾರನೆಯ ದಿನದ ಅಡಿಗೆಗೆ ನೆನೆಹಾಕುವ ಪದಾರ್ಥಗಳ ಕೆಲಸ ಮುಗಿಸಿ, ಎಲ್ಲ ತಯಾರಿ  ಮಾಡಿದಮೇಲೆ ವಿಶ್ರಾಂತಿ. ಸರ್ವರ್ ಮತ್ತು ಕ್ಲೀನರುಗಳಿಗೆ ಮೇಜಿನ ಮೇಲೆ ಕುರ್ಚಿಗಳನ್ನು ಮಗುಚಿಹಾಕಿ, ಎಲ್ಲ ಸಂದಿಗಳನ್ನೂ ಗುಡಿಸಿ, ನೀರಿನಿಂದ ತೊಳೆದು, ಜಾಗ ಒಣಗಿಸಿ, ಮಾರನೆಯ ದಿನಕ್ಕೆ ಗ್ರಾಹಕರನ್ನು ಎದುರುಗೊಳ್ಳಲು ಸಿದ್ಧ ಮಾಡಿಡಬೇಕು. ಬೆಳಗ್ಗೆ ಆರು ಗಂಟೆಗೆ ಮೊದಲ ಗ್ರಾಹಕ ಬರುವ ವೇಳೆಗೆ ಎಲ್ಲಾ ತಯಾರಾಗಿರಬೇಕು. 

ಪ್ರತಿ ಮನೆಯಲ್ಲಿಯೂ ಗೃಹಿಣಿ ಅಥವಾ ಅಡಿಗೆ ಮನೆ ನೋಡಿಕೊಳ್ಳುವವರು ಈ ಕೆಲಸ ಪ್ರತಿದಿನ ಮಾಡುತ್ತಾರೆ. ಸ್ವಲ್ಪ ಪಾಲುಮಾಲಿಕೆ ಪಟ್ಟರೂ (ಈ ಪದ ಈಗ ಮರೆತೇಹೋಗಿದೆ) ಸಹ ಮನೆಮಂದಿಯ ಆರೋಗ್ಯದ ಮೇಲೆ ನೇರ  ಪರಿಣಾಮ ಆಗುತ್ತದೆ. ಜೊತೆಗೆ ಅಡಿಗೆ ಪದಾರ್ಥಗಳ ಅಪವ್ಯಯವಾಗಿ ಮನೆಯ ಆಯ-ವ್ಯಯ ಏರುಪೇರಾಗುತ್ತದೆ. ಮಾರನೆಯ ದಿನ ಬೆಳಿಗ್ಗೆ ಕೆಲಸ ಮಾಡುವಾಗ ಎಡಚೆಡಚು (ತಾಳ-ಮೇಳ ತಪ್ಪುವುದು) ಆಗುತ್ತದೆ. 

ನಮ್ಮ ದೇಹದಲ್ಲೂ ಇದೇ ರೀತಿಯ ವ್ಯವಸ್ಥೆ ಉಂಟು. ಜಠರ, ಸಣ್ಣ ಕರುಳು, ದೊಡ್ಡ ಕರುಳು ಮೊದಲಾದ ಜೀರ್ಣಾಂಗಗಳಿಗೂ ಆಗಾಗ ಸ್ವಲ್ಪ ವಿಶ್ರಾಂತಿ ಬೇಕು. ಭಾನುವಾರ ದಣಿದ ದೇಹಕ್ಕೆ ವಿಶ್ರಾಂತಿ ಬೇಕು ಎಂದು ಜಗಳವಾಡುವವರೂ ಹೊಟ್ಟೆಗೆ ವಿಶ್ರಾಂತಿ ಕೊಡಲು ತಯಾರಿರುವುದಿಲ್ಲ. ಕ್ರಮವಾದ ಉಪವಾಸ ಜೇರ್ಣೇ೦ದ್ರಿಯಗಳಿಗೆ ಈ ರೀತಿಯ ವಿಶ್ರಾಂತಿ ಕೊಡುತ್ತದೆ. ಏಕಾದಶಿ ಉಪವಾಸ ಈ ಕೆಲಸ ಮಾಡುತ್ತದೆ. ಈಗಿನ ತಲೆಮಾರಿನವರು ಇದನ್ನು ಬಿಟ್ಟು "ಇಂಟರ್ಮಿಟೆಂಟ್ ಫಾಸ್ಟಿಂಗ್" ಮತ್ತು "ಡಬ್ಬಿಯ ಆಹಾರ" ಮೊರೆ ಹೋಗುತ್ತಿರುವುದು ಒಂದು ವಿಪರ್ಯಾಸ. 

*****

ಏಕಾದಶಿ ಉಪವಾಸ ಒಂದು ದಿನದ ಕಟ್ಟಲೆಯಲ್ಲ. ಅದು ಮೂರು ದಿನದ ಒಂದು ವ್ರತ. ನವಮಿ ಎರಡು ಹೊತ್ತು ಊಟ ಮಾಡಬಹುದು. ಏಕಾದಶಿಯ ಹಿಂದಿನ ದಿನ, ದಶಮಿಯಂದು ಒಂದೇ ಹೊತ್ತಿನ ಊಟ. ರಾತ್ರಿ ಏನೂ ತಿನ್ನುವ ಹಾಗಿಲ್ಲ. (ಇದಕ್ಕೆ "ದಶಮಿ ಏಕಭುಕ್ತ" ಅನ್ನುತ್ತಾರೆ). ಎರಡನೆಯ ದಿನ ಏಕಾದಶಿಯಂದು ಪೂರ್ತಿ ಉಪವಾಸ. ಉಪವಾಸ ಎಂದರೆ ಉಪವಾಸವೇ. ನೀರನ್ನೂ ಕುಡಿಯುವಹಾಗಿಲ್ಲ. (ಇದಕ್ಕೆ "ನಿರ್ಜಲ ಏಕಾದಶಿ" ಅನ್ನುತ್ತಾರೆ). ಮೂರ್ನಾಲ್ಕು ತರಹ ತಿಂಡಿಗಳನ್ನೋ, ಎರಡು-ಮೂರು ಲೀಟರು ಹಾಲನ್ನೋ, ಮೂರು-ನಾಲ್ಕು ಕೆಜಿ ಹಣ್ಣನ್ನೋ ಸೇವಿಸುವುದಲ್ಲ. (ಎಂದೋ ಮಾಡಿಟ್ಟ ಚಕ್ಕುಲಿ-ಕೋಡುಬಳೆ-ರವೆಉಂಡೆ ಮುಂತಾದುವನ್ನು ನೋಡಲೇಬಾರದು). ಮೂರನೆಯ ದಿನ ದ್ವಾದಶಿ ಬೆಳಿಗ್ಗೆ ಬೇಗನೆ ಗೊತ್ತಾದ ಹೊತ್ತಲ್ಲಿ (ಸೂರ್ಯೋದಯದ ವೇಳೆಯಲ್ಲಿ) ಊಟ ಮಾಡುವುದು. ಇದಕ್ಕೆ "ಪಾರಣೆ" ಎನ್ನುತ್ತರೆ. ಹೀಗೆ ದ್ವಾದಶಿ ಪಾರಣೆ ಮಾಡಿದಮೇಲೆ ರಾತ್ರಿ ಊಟವಿಲ್ಲ. ಮತ್ತೆ ಮಾರನೆಯ ದಿನ (ತ್ರಯೋದಶಿ) ಮಧ್ಯಾಹ್ನ ಮತ್ತು ರಾತ್ರಿ ಊಟ ಮಾಡಬಹುದು. 

ಇದಲ್ಲದೆ, ದೇವರ ನೈವೇದ್ಯವಲ್ಲದ ಯಾವ ಪದಾರ್ಥವನ್ನೂ ತಿನ್ನುವಹಾಗಿಲ್ಲ. ಊಟಗಳ ಮಧ್ಯೆ (ಮಧ್ಯೇ ಮಧ್ಯೇ ಪಾನೀಯಂ ಸಮರ್ಪಯಾಮಿ ಅನ್ನುವಂತೆ) ಸ್ವಲ್ಪ ಸ್ವಲ್ಪ ಅದು-ಇದು ಎಂದು ತಿನ್ನುವ-ಕುಡಿಯುವ ಹಾಗಿಲ್ಲ. ಪಾರಣೆಯಂದು (ಪೂರ್ತಿ ಏಕಾದಶಿ ವ್ರತ ಕಾಲದಲ್ಲಿಯೂ) ಈರುಳ್ಳಿ-ಆಲೂಗಡ್ಡೆ-ಬದನೇಕಾಯಿ, ಜೊತೆಗೆ ಒಂದಷ್ಟು ಹಲಸಂದೆಕಾಳು ಸೇರಿಸಿ, ಹುಳಿ ಮಾಡಿಸಿ ಹೊಡೆಯುವಹಾಗಿಲ್ಲ. ವರುಷಕ್ಕೆ ನಾಲ್ಕು ತಿಂಗಳು "ಚಾತುರ್ಮಾಸ" ಕಾಲದಲ್ಲಿ ಆ ವ್ರತದ ನಿಯಮ ಕೂಡ ಪಾಲಿಸಬೇಕು. ಒಂದು ತಿಂಗಳು ಹಾಲು ಏಪಯೋಗಿಸಬಾರದು. ಒಂದು ತಿಂಗಳು ಮೊಸರಿಲ್ಲ. (ಮಜ್ಜಿಗೆ ಆಗಬಹುದು!). ಒಂದು ತಿಂಗಳು ತರಕಾರಿಗಳಿಲ್ಲ. (ತರಕಾರಿ ಇಲ್ಲದ ತಿಂಗಳಲ್ಲಿ ಮೆಣಸಿನಕಾಯಿ ಉಪಯೋಗ ಇಲ್ಲ. ಖಾರಕ್ಕೆ ಬರೀ ಮೆಣಸು).  ಒಂದು ತಿಂಗಳು ಬೇಳೆ-ಕಾಳು ಇಲ್ಲ. (ವಡೆ-ಆಂಬೊಡೆ ಮಾಡುವಂತಿಲ್ಲ. ಮಾಡಲೇಬೇಕಾದರೆ ಅಕ್ಕಿ ವಡೆ ಮಾಡಬಹುದು). ಏಕಾದಶಿ ವ್ರತದ ಕ್ರಮ ಹೀಗೆ. ಕೆಲವೊಮ್ಮೆ ಎರಡೆರಡು ಏಕಾದಶಿ ಬರುವುದುಂಟು. ಹೆದರಬೇಕಿಲ್ಲ. ಇದು ಸುಮಾರು ಮೂರು ವರುಷಗಳಿಗೆ ಒಂದು ಬಾರಿ ಮಾತ್ರ. 

"ಏಕಾದಶಿ ಮನೆಗೆ ಶಿವರಾತ್ರಿ ಬಂದಂತೆ" ಎಂದು ಒಂದು ಗಾದೆ. "ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ" ಎಂದು ಮತ್ತೊಂದು ಗಾದೆ. ಮೊದಲೇ ಖರ್ಚಿಗೆ ಕಾಸಿಲ್ಲದಿದ್ದಾಗ ಹೆಚ್ಚಿನ ವೆಚ್ಚದ ಬಾಬ್ತು ಬಂದಾಗ ಈ ಗಾದೆಗಳನ್ನು ಹೇಳುತ್ತಾರೆ. "ದುರ್ಭಿಕ್ಷದ ಅಧಿಕ ಮಾಸದ ಎರಡು ಏಕಾದಶಿಯಲ್ಲಿ ಶಿವರಾತ್ರಿ ಬಂದಂತೆ" ಎಂದು ಸದ್ಯ ಗಾದೆಯಿಲ್ಲ. (ಶಿವರಾತ್ರಿ ಏಕಾದಶಿಯಂದು ಬರುವುದು ಗಾದೆಯಲ್ಲಿ ಮಾತ್ರ. ನಿಜ ಜೀವನದಲ್ಲಿ ಇದು ಆಗುವುದಿಲ್ಲ). 
*****

ಮುಕುಂದರಾಯರು ದೊಡ್ಡ ಅಧಿಕಾರದ ಹುದ್ದೆಯಲ್ಲಿದ್ದು ನಿವೃತ್ತರಾದರು. ಬಹಳ ಪ್ರಯತ್ನ ಪಟ್ಟರೂ ಎಲ್ಲಿಯೂ ಎರಡನೇ ಕೆಲಸ ಸಿಗಲಿಲ್ಲ. ವಿಧಿಯಿಲ್ಲದೇ ದೇವರ ಬೆನ್ನುಹತ್ತಿದರು. ಯಾರೋ ಬಂಧುಗಳು ಸಂಜೆ ದೇವಸ್ಥಾನದಲ್ಲಿ ಏಳು ಗಂಟೆಯಿಂದ ಎಂಟು ಗಂಟೆವರೆಗೆ ನಡೆಯುವ "ಪುರಾಣ" ಬಹಳ ಒಳ್ಳೆಯದು ಎಂದು ಹೇಳಿದರು. ಮುಕುಂದರಾಯರು ಹೊರಡಲು ತಯಾರಾದರು. ಕೆಲಸದಲ್ಲಿದ್ದಾಗ ಕಾರಿತ್ತು. ಈಗ ಸಿಟಿ ಬಸ್ಸಿನಲ್ಲಿ ಹೋಗಬೇಕು. ಮೊದಲ ದಿನ ಪುರಾಣಕ್ಕೆ ಹೊರಟು ಬಸ್ಸು ಹಿಡಿದು ದೇವಸ್ಥಾನ ತಲುಪುವುದರಲ್ಲಿ ಏಳು ಮುಕ್ಕಾಲು ಗಂಟೆ ಆಯಿತು. ಕಡೆಗೆ ಕೂಡಲು ಜಾಗ ಸಿಗದೇ ಒಂದೆಡೆ ನಿಂತುಕೊಂಡೇ ಕಡೆಯ ಹದಿನೈದು ನಿಮಿಷದ ಪುರಾಣ ಕೇಳಿದರು. 

ಪುರಾಣೀಕರು ಮಾರನೆಯ ದಿನ ವೈಕುಂಠ ಏಕಾದಶಿಯ ಕಾರಣ ಏನು ಮಾಡಬೇಕೆಂದು ವಿವರಿಸುತ್ತಿದ್ದರು. "ನಾಳೆ ವೈಕುಂಠ ಏಕಾದಶಿ ಒಂದು ಪರ್ವಕಾಲ. ನಾನು ವಿವರಿಸಿದಂತೆ ಉಪವಾಸವಿದ್ದು, ಹಾಲು-ಹಣ್ಣು ಚೆನ್ನಾಗಿ ಸೇವಿಸಿ, ದೇವರನಾಮ-ಸ್ತೋತ್ರಾದಿಗಳನ್ನು ಹೇಳಿಕೊಂಡು ಕಾಲ ಕಳೆಯಬೇಕು. ಭೋಜನ ಮಾಡಬಾರದು ಎಂದು ಬೇರೆ ಹೇಳಬೇಕಿಲ್ಲ. ಅವಕಾಶವಿದ್ದವರು ದೇವಾಲಯಗಳಿಗೆ ಅವಶ್ಯ ಹೋಗಿ ದೇವರ ದರ್ಶನ ಪಡೆಯಬೇಕು. ನಾಳೆ ಎಂದಿನಂತೆ ಏಳು ಘಂಟೆಯಿಂದ ಎಂಟು ಘಂಟೆವರೆಗೆ ಇಲ್ಲಿಯೂ ಹಾಲು-ಹಣ್ಣಿಗೆ ವ್ಯವಸ್ಥೆ ಮಾಡಿದೆ. ತಪ್ಪದೇ ಬಂದು ಭಾಗವಹಿಸಿ" ಎಂದು ಹೇಳಿ ಅಂದಿನ ಪ್ರವಚನ ಮುಗಿಸಿದರು. ರಾಯರು ಮನೆಗೆ ಬಂದರು. 

ರಾಯರಿಗೆ ಹಾಲು-ಹಣ್ಣಿನಲ್ಲಿ ದಿನ ಕಳೆದು ಗೊತ್ತಿಲ್ಲ. ಆದರೂ ಅದನ್ನು ಪಾಲಿಸಬೇಕೆಂದು ತೀರ್ಮಾನಿಸಿದರು. ಮನೆಯಲ್ಲಿ ಎಲ್ಲರೂ ಪರ ಊರಿಗೆ ಹೋಗಿ ಅವರು ಒಬ್ಬರೇ ಉಳಿದಿದ್ದರು. ಬೆಳಗ್ಗೆ ಹಾಲಿನಂಗಡಿಗೆ ಹೋದಾಗ ಅಂಗಡಿಯವನು "ಸ್ವಾಮಿ, ಇಂದು ಹಾಲಿಗೆ ಬಹಳ ಬೇಡಿಕೆ. ಎಲ್ಲಾ ಖರ್ಚಾಗಿದೆ. ಐದು ಲೀಟರಿನ ಒಂದು ಪ್ಯಾಕೆಟ್ ಮಾತ್ರ ಇದೆ" ಅಂದ. ರಾಯರು ಅದನ್ನು ಕೊಂಡರು. ಹಣ್ಣಿನ ಅಂಗಡಿಯಲ್ಲಿಯೂ ಎಲ್ಲಾ ಖಾಲಿ ಖಾಲಿ. ಕಡೆಗೆ ಒಂದು ಹಲಸಿನ ಹಣ್ಣು, ಒಂದು ಕಲ್ಲಂಗರೇ ಹಣ್ಣು, ಸ್ವಲ್ಪ  ಮೂಸಂಬಿ, ಬಾಳೆಹಣ್ಣು ಸಿಕ್ಕಿತು. ಅವರ ಹೆಂಡತಿ ಯಾವಾಗಲೋ "ಐದು ತರಹದ ಹಣ್ಣು" ಎಂದು ಹೇಳಿದ್ದುದು ನೆನಪಿಗೆ ಬಂತು. ಕಷ್ಟಪಟ್ಟು ಇನ್ನೊಂದು ಅಂಗಡಿಯಲ್ಲಿ ಒಂದು ಚಕ್ಕೋತ ಕೊಂಡರು. ಇವುಗಳ ಭಾರವನ್ನು ಹೊತ್ತು ಮನೆಗೆ ಬಂದರು.

ಸ್ನಾನ ಮಾಡಿ ಹಲಸಿನ ಹಣ್ಣು ಹೆಚ್ಚಿದರು. ಹಾಲು ದೊಡ್ಡ ಪಾತ್ರೆಯಲ್ಲಿ ಜಾಗರೂಕರಾಗಿ ಉಕ್ಕದಂತೆ  ಕಾಯಿಸಿದರು. ಬಾಳೆಯ ಹಣ್ಣಿನ ಜೊತೆ ಹಲಸಿನ ಹಣ್ಣು ಸೇರಿಸಿ ತಿಂದರು. ಸ್ವಲ್ಪ ಹಾಲೂ ಸೇರಿತು. ವಿಶ್ರಾಂತಿಯ ನಂತರ ಚಕ್ಕೋತ ಹಣ್ಣು ಮತ್ತು ಹಾಲು ನಡೆಯಿತು. ಸಂಜೆಯ ವೇಳೆ ಬೇರೆ ಹಣ್ಣುಗಳು ಮತ್ತು ಮತ್ತಷ್ಟು ಹಾಲು ಹೊಟ್ಟೆ ಸೇರಿತು. ದೇವಸ್ಥಾನದಲ್ಲಿ ಪುರಾಣೀಕರು ಹೇಳಿದ್ದು ನೆನಪಿಗೆ ಬಂತು. "ಅಲ್ಲಿ ಹಣ್ಣು-ಹಾಲಿನ ವಿತರಣೆ ವ್ಯವಸ್ಥೆ ಇದೆ. ಹೋಗಬೇಕು" ಎಂದು ನೆನಪಾಯಿತು. ಬೇಗ ಹೊರಟು ಏಳು ಗಂಟೆಯ ಮುಂಚೆ ಅಲ್ಲಿ ಸೇರಿದರು. 

ಏಳಕ್ಕೆ ಪ್ರಾಂಭವಾದ ಪುರಾಣದಲ್ಲಿ ಭಗವದ್ಗೀತೆ ಮತ್ತು ಭಾಗವತದ ಕೆಲವು ಭಾಗಗಳ ಶ್ಲೋಕಗಳು ಮತ್ತು ಅವುಗಳ ವಿವರಣೆ ನಡೆಯಿತು. ಹಾಲು ಮತ್ತು ಹಣ್ಣುಗಳ ಸುಳಿವೇ ಇಲ್ಲ. ಇರಲಿ, ಪುರಾಣದ ನಂತರ ವಿತರಣೆ ಆಗಬಹುದು ಎಂದು ರಾಯರು ಕಾದರು. ಎಂಟು ಗಂಟೆಗೆ ಪುರಾಣ ಮುಗಿಯುತ್ತಿದ್ದಂತೆಯೇ ಎಲ್ಲರೂ ಅವಸರವಸರವಾಗಿ ಅವರವ ಮನೆಗೆ ಹೊರಟರು. ಒಬ್ಬರು ವಯಸ್ಸಾದ ಯಜಮಾನರು ಮಾತ್ರ ನಿಧಾನವಾಗಿ ಹೋಗುತ್ತಿದ್ದರು. ಮಕುಂದರಾಯರು  ಅವರ ಜೊತೆ ಹೆಜ್ಜೆ ಹಾಕುತ್ತ ಹಾಲು-ಹಣ್ಣಿನ ಬಗ್ಗೆ ಕೇಳಿದರು. 

"ಇದೇನು, ಹೀಗೆ ಕೇಳುತ್ತೀರಿ. ಒಂದು ಗಂಟೆ ಹಾಲು-ಹಣ್ಣೇ ಆಯಿತಲ್ಲ?" ಅಂದರು ಆ ಹಿರಿಯರು. "ಎಲ್ಲಿ ಆಯಿತು? ಬರೀ ಭಗವದ್ಗೀತೆ ಮತ್ತು ಭಾಗವತದ ಕೆಲವು ಭಾಗ ಹೇಳಿದರು, ಅಷ್ಟೇ" ಅಂದರು ರಾಯರು. "ಅದೇ ಸ್ವಾಮಿ. ಹಾಲು ಅಂದರೆ ಭಗವದ್ಗೀತೆ. ಹಣ್ಣು ಅಂದರೆ ಭಾಗವತ" ಅಂದರು ಯಜಮಾನರು. "ಅದು ಹೇಗೆ?" ಎಂದು ರಾಯರು ಕೇಳಿದರು. "ನಿನ್ನೆ ಪುರಾಣದಲ್ಲಿ ಹೇಳಿದ್ದು ನೀವು ಕೇಳಲಿಲ್ಲವೇ? "ದುಗ್ಧಮ್ ಗೀತಾಮೃತಮ್ ಮಹತ್".  ಭಗವದ್ಗೀತೆ ಎಂಬುದೇ ಹಾಲು. ಮತ್ತೆ  "ನಿಗಮಕಲ್ಪ ತರೋರ್ಗಲಿತಂ ಫಲಂ".  ಶ್ರೀಮದ್ಭಾಗವತವೇ ಹಣ್ಣು. ಏಕಾದಶಿಯ ದಿನ ಈ ಹಾಲು-ಹಣ್ಣು ಸೇವಿಸಿ ಎಂದೇ ಪುರಾಣೀಕರು ನಿನ್ನೆ ಹೇಳಿದ್ದು. ಇವತ್ತು ಅದೇ ವಿತರಣೆ ಆಯಿತಲ್ಲ. ಏಕಾದಶಿಯಂದು ಬೇರೆ ಹಣ್ಣು-ಹಾಲು ಯಾರು ಸೇವಿಸುತ್ತಾರೆ?" ಎಂದರು ಆ ಹಿರಿಯರು. 

*****

ಹಲಸಿನ ಹಣ್ಣು, ಕಲ್ಲಂಗಡಿ ಹಣ್ಣು, ಮೂಸಂಬಿ, ಚಕ್ಕೋತ, ಬಾಳೆಹಣ್ಣು ಮತ್ತು ಹಾಲಿನ ಕೊಳಗ ರಾಯರ  ತಲೆಯಸುತ್ತ ಸುತ್ತುವಂತೆ ಅವರಿಗೆ ಭಾಸವಾಯಿತು.  ಹಿರಿಯರು ಅವರ  ಮುಖ ನೋಡಿದರು. ಅವರಿಗೆ ಅರ್ಥ ಆಯಿತು. "ನಾಳೆ ಸ್ವಲ್ಪ ಬೇಗ ಬನ್ನಿ. ಪುರಾಣ ಪ್ರಾರಂಭವಾಗುವುದರ ಮುಂಚೆ ಇದನ್ನು ವಿವರಿಸುತ್ತೇನೆ" ಎಂದು ಹೇಳಿ ಅವರ ಮನೆ ಗಲ್ಲಿಯಲ್ಲಿ ತಿರುಗಿದರು ಆ ವೃದ್ಧರು.