ದೊಡ್ಡ ಹೊಟ್ಟೆಯ ಗೂನು ಬೆನ್ನಿನಅಡ್ಡ ಮೋರೆಯ ಗಂಟು ಮೂಗಿನದೊಡ್ಡ ಕೈಕಾಲುಗಳ ಉದುರಿದ ರೋಮ ಮೀಸೆಗಳಜಡ್ಡು ದೇಹದ ಗುಜ್ಜುಗೊರಲಿನಗಿಡ್ಡ ರೂಪಿನ ಹರಕುಗಡ್ಡದಹೆಡ್ಡನಾದ ಕುರೂಪಿತನದಲಿ ನೃಪತಿ ವಿಷದಿಂದ
ಹೀಗೆ ಬದಲಾದ ನಳನು ಬಾಹುಕ ಎನ್ನುವ ಹೆಸರಿನಿಂದ ಅಯೋಧ್ಯೆಯ ರಾಜನಾದ ಋತುಪರ್ಣನ ಬಳಿ ಸಾರಥಿಯ ಕೆಲಸಕ್ಕೆ ಸೇರಿಕೊಳ್ಳುತ್ತಾನೆ. ಗಂಡನನ್ನು ಹುಡುಕಿಸಿ ಮತ್ತೆ ಅವನನ್ನು ಸೇರಲು ದಮಯಂತಿಯು ತನಗೆ ಇನ್ನೊಂದು ಸ್ವಯಂವರ ನಡೆಯುತ್ತಿದೆ ಎನ್ನುವ ಸುದ್ದಿ ಹಬ್ಬಿಸಿ ಅದು ಋತುಪರ್ಣ ಮಹಾರಾಜನಿಗೆ ತಲುಪುವಂತೆ ಮಾಡುತ್ತಾಳೆ.
*****
ದಮಯಂತಿಯ ಮತ್ತೊಂದು ಸ್ವಯಂವರದ ಸುದ್ದಿ ಕೇಳಿದ ಋತುಪರ್ಣನು ಸಮಯಕ್ಕೆ ಸರಿಯಾಗಿ ವಿದರ್ಭ ನಗರ ತಲುಪಲು ರಥವನ್ನು ತಯಾರು ಮಾಡಲು ಸಾರಥಿ ಬಾಹುಕನಿಗೆ ಹೇಳುತ್ತಾನೆ. ಇಂತಹ ಸುದ್ದಿ ಕೇಳಿದ ದುಃಖದಲ್ಲೂ ಬಾಹುಕನ ರೂಪದ ನಳನು ರಥವನ್ನು ಸಿದ್ಧಪಡಿಸುತ್ತಾನೆ. ಪ್ರಯಾಣದ ಕಾಲದಲ್ಲಿ ಗಾಳಿಯಿಂದ ಋತುಪರ್ಣನ ಮೇಲುಹೊದಿಕೆ ಹಾರಿಹೋಗುತ್ತದೆ. ರಥ ನಿಲ್ಲಿಸಿ ಉತ್ತರೀಯವನ್ನು ತರುವಂತೆ ಋತುಪರ್ಣ ಬಾಹುಕನಿಗೆ ಹೇಳುತ್ತಾನೆ. ಬಾಹುಕನು "ಮಹಾರಾಜ, ಈ ಕುದುರೆಗಳು ಸಾಮಾನ್ಯವಲ್ಲ. ನಾಗಾಲೋಟದಲ್ಲಿ ಓಡುತ್ತಿವೆ. ನಿಮ್ಮ ಉತ್ತರೀಯ ಬಿದ್ದ ಕಡೆಯಿಂದ ಎಷ್ಟೋ ಯೋಜನ ದಾಟಿ ಬಂದಿದ್ದೇವೆ. ಅದನ್ನು ಮರೆತುಬಿಡಿ" ಅನ್ನುತ್ತಾನೆ. ಋತುಪರ್ಣನಿಗೆ ಆಶ್ಚರ್ಯ.
ಮುಂದೊಂದು ಕಡೆ ವಿಶ್ರಾಂತಿಗೆ ನಿಲ್ಲಿಸಿದಾಗ ಅಲ್ಲಿ ಕಂಡ ತಾರೆಯ ಮರದಲ್ಲಿರುವ ಎಲೆಗಳು ಮತ್ತು ಹಣ್ಣುಗಳ ನಿಖರವಾದ ಸಂಖ್ಯೆಯನ್ನು ಋತುಪರ್ಣ ಬಾಹುಕನಿಗೆ ಹೇಳುತ್ತಾನೆ. ಈಗ ಬಾಹುಕನಿಗೆ ಆಶ್ಚರ್ಯ. ಮರದ ಬಳಿ ಹೋಗಿ ಎಣಿಸಿದರೆ ಋತುಪರ್ಣನು ಹೇಳಿದ ಸಂಖ್ಯೆ ಸರಿಯಾಗಿದೆ. "ಈ ವಿದ್ಯೆ ತನಗೆ ಗೊತ್ತಾದರೆ ತಮ್ಮ ಪುಷ್ಕರನನ್ನು ಮತ್ತೆ ಜೂಜಿನಲ್ಲಿ ಸೋಲಿಸಿ ರಾಜ್ಯ ಹಿಂದೆ ಪಡೆಯಬಹುದು" ಎಂದು ನಳನು ಚಿಂತಿಸುತ್ತಾನೆ.
ಋತುಪರ್ಣನಿಗೆ ಕುದುರೆಗಳ ಬಗ್ಗೆ ತಿಳಿಯುವ ಹಂಬಲ. ಆ ವಿದ್ಯೆಗೆ "ಅಶ್ವ ಹೃದಯ" ಎಂದು ಹೆಸರು. ನಳನಿಗೆ ಋತುಪರ್ಣನ "ಅಕ್ಷ ಹೃದಯ" ವಿದ್ಯೆ ಕಲಿಯುವ ಆಸೆ. ಇಬ್ಬರೂ ಪರಸ್ಪರ ಒಪ್ಪಿಕೊಂಡು ಒಂದು ವಿದ್ಯೆ ಕಲಿಯಲು ಇನ್ನೊಬ್ಬನ ಶಿಷ್ಯರಾಗುತ್ತಾರೆ. ಕಲಿಸಿಕೊಡಲು ಗುರುವಾಗುತ್ತಾರೆ. ಹೀಗೆ ಪರಸ್ಪರ ಗುರು-ಶಿಷ್ಯ ಆಗಿ ವಿದ್ಯೆಗಳ ವಿನಿಮಯ ಮಾಡಿಕೊಳ್ಳುತ್ತಾರೆ.
ಮುಂದೆ ಕಲಿಯು ನಳನನ್ನು ಕಾಡುವುದನ್ನು ನಿಲ್ಲಿಸಿ, ಜಗನ್ಮೋಹನ ಪಕ್ಷಿಗಳು ನಳನ ಅಪಹರಿಸಿದ ಬಟ್ಟೆಯನ್ನು ತಂದುಕೊಡುತ್ತವೆ. ಅದನ್ನು ಉಟ್ಟ ನಂತರ ಬಾಹುಕನಿಗೆ ಕಾರ್ಕೋಟಕನು ಹೇಳಿದ್ದಂತೆ ಕುರೂಪ ಹೋಗಿ ಮತ್ತೆ ನಳನ ಸುರಸುಂದರ ರೂಪ ಬರುತ್ತದೆ. ನಳ-ದಮಯಂತಿ ಒಂದಾಗುತ್ತಾರೆ. ಅಕ್ಷಹೃದಯದ ಬಲದಿಂದ ನಳನು ಪುಷ್ಕರನನ್ನು ಸೋಲಿಸಿ ರಾಜ್ಯ-ಕೋಶಗಳನ್ನು ಹಿಂದೆ ಪಡೆಯುತ್ತಾನೆ. ನಳಚರಿತ್ರೆ ಹೀಗೆ ಮುಕ್ತಾಯವಾಗುತ್ತದೆ.
*****
ಅಶ್ವಹೃದಯದ ಪರಿಣಾಮವಾಗಿ ಕುದುರೆಗಳು ಹೇಗೆ ಓಡಿದುವೆಂದು ಶ್ರೀ ಕನಕದಾಸರು ಹೇಳುವ ರೀತಿ:
ಕರದ ವಾಘೆಯ ಸಡಿಲ ಬಿಡೆ ಮುಂ
ಬರಿದು ಚಿಮ್ಮಿದವಡಿಗಡಿಗೆ ರಥ
ತುರಗ ಹಾಯ್ದುದು ತೇರು ಮುಂದಕೆ ಪವನ ವೇಗದಲಿ
ಇಳಿದು ರಥವನು ಬಂದು ವೃಕ್ಷದಬಳಿಗೆ ನಿಂದಾ ಶಾಖೆಗಳಲಿಹಫಲವದರ ಪರ್ಣಂಗಳೆಣಿಸಿದ ಪದ್ಮಸಂಖ್ಯೆಯಲಿ
ದಮಯಂತಿಯ ರೂಪ-ಲಾವಣ್ಯ, ದೇವತೆಗಳ ಪರೀಕ್ಷೆಗಳು, ನಳ-ಕಾರ್ಕೋಟಕ ಮತ್ತು ನಳ-ಕಲಿ ಇವರ ಸಂವಾದ, ನಳ ಮತ್ತು ದಮಯಂತಿಯರ ಪರಿತಾಪ ಇನ್ನೂ ಮುಂತಾದ ಅನೇಕ ರಸಘಟ್ಟಗಳನ್ನು "ನಳಚರಿತ್ರೆ" ಓದಿ ಸವಿಯಬಹುದು.
*****
ನಳ ಮಹಾರಾಜ ಮತ್ತು ಋತುಪರ್ಣ ಮಹಾರಾಜರು ಗುರು-ಶಿಷ್ಯ ಭಾವದಲ್ಲಿ ಒಬ್ಬರಿಗೊಬ್ಬರು ಕಲಿಸಿ-ಕಲಿತದ್ದು ತಮ್ಮ ತಮ್ಮ ಜ್ಞಾನದ ಮತ್ತು ಸಾಧನೆಯ ಕಾರಣ ಸಮಾಜದಲ್ಲಿ ಉನ್ನತ ಸ್ಥಾನ ಹೊಂದಿರುವವರೂ ಹೇಗೆ ಪರಸ್ಪರ ಗುರು-ಶಿಷ್ಯರಾಗಬಹುದು ಎನ್ನುವುದಕ್ಕೆ ಸೊಗಸಾದ ಉದಾಹರಣೆ. ಅಲ್ಲವೇ?