Tuesday, July 8, 2025

ಮಲಗಿಲ್ಲದವನನ್ನು ಎಬ್ಬಿಸುವುದು!


ಈಗ ಎಲ್ಲೆಲ್ಲೂ ಶಯನೀ ಏಕಾದಶಿಯ ಆಚರಣೆ ವೈಭವ. ಆಷಾಢ ಶುದ್ಧ ಏಕಾದಶಿ "ಶಯನೀ ಏಕಾದಶಿ" ಎಂದು ಪ್ರಸಿದ್ಧಿ. ಅಂದು ದೇಶದ ಎಲ್ಲೆಡೆ ವೈಷ್ಣವ ದೇವಾಲಯಗಳಲ್ಲಿ ಭಕ್ತರ ದಂಡು. ಫಂಡರಾಪುರದ ವಿಠಲ ಮತ್ತು ಶ್ರೀರಂಗದ ರಂಗನಾಥರ ದರ್ಶನಕ್ಕೆ ಸಾಲು ಸಾಲು ಜನ ಸಮೂಹ. ತಿರುಪತಿಯಲ್ಲಂತೂ ಕೇಳುವುದೂ ಬೇಡ. ಎಲ್ಲೆಲ್ಲೂ "ಗೋವಿಂದ" ನಾಮ ಸಂಕೀರ್ತನೆ. 

ಮುಂದೆ, ನಾಲ್ಕು ತಿಂಗಳ ನಂತರ ಬರುವ ಕಾರ್ತೀಕ ಶುದ್ಧ ಏಕಾದಶಿ "ಪ್ರಬೋಧಿನಿ ಏಕಾದಶಿ" ಎಂದು ಪ್ರಸಿದ್ಧಿ. "ಶಯನೀ ಏಕಾದಶಿ"ಯಲ್ಲಿ ಕ್ಷೀರಸಾಗರದಲ್ಲಿ ಪವಡಿಸಿದ ಲಕ್ಷ್ಮೀನಾರಾಯಣನು "ಪ್ರಬೋಧಿನಿ ಏಕಾದಶಿ"ಯಂದು ಏಳುತ್ತಾನಂತೆ. ನಾಲ್ಕು ತಿಂಗಳ ಕಾಲದ ದೀರ್ಘ ನಿದ್ರೆ. ಮಲಗಲೂ ಅವನಿಗೆ ಹಾಲಿನ ಸಮುದ್ರವೇ ಬೇಕು. ಈ ಮಧ್ಯದ ನಾಲ್ಕು ತಿಂಗಳು "ಚಾತುರ್ಮಾಸ ವ್ರತ" ಎಂದು ಆಚರಣೆ. ಏಕಾದಶಿಯ ಆಚರಣೆ ಮತ್ತು ನಾಲ್ಕು ತಿಂಗಳುಗಲ್ಲಿ ಕ್ರಮವಾಗಿ ಶಾಕ (ತರಕಾರಿಗಳು), ದಧಿ (ಮೊಸರು), ಕ್ಷೀರ (ಹಾಲು), ಮತ್ತು ದ್ವಿದಳ (ಬೇಳೆ-ಕಾಳುಗಳು) ಸೇವಿಸುವುದು ಕೂಡದು. ಹಾಲಿನ ಕಡಲಲ್ಲಿ ಮಲಗಿದಂತೆ ನಟಿಸುವವನಿಗೆ ಮುದಕೊಡಲು ಹಾಲು ಮತ್ತು ಅದರಿಂದಾದ ಮೊಸರು ಬಿಡುವ ವ್ರತಗಳು! ಏಕಾದಶಿ ಆಚರಣೆ ಮತ್ತು ಇವುಗಳ ವಿವರವನ್ನು "ಏಕಾದಶಿಯ ದಿನ ಹಾಲು-ಹಣ್ಣು ಸೇವಿಸಿ" ಎನ್ನುವ ಹಿಂದಿನ ಒಂದು ಸಂಚಿಕೆಯಲ್ಲಿ ನೋಡಿದ್ದೆವು. (ಇದನ್ನು ಓದಲು ಇಲ್ಲಿ ಕ್ಲಿಕ್ ಮಾಡಿ). 

ಹಸಿವು, ನಿದ್ರೆ, ಬಾಯಾರಿಕೆ, ಬಸವಳಿಕೆ, ಜನನ, ಮರಣ, ಹಿಂದು, ಮುಂದು, ಮುಂತಾದುವು ಇಲ್ಲದ ಮಹಾಶಯನನಿಗೆ ದೀರ್ಘ ನಿದ್ರೆ ಬರಿಸಿ, ಆ ಕಾಲದಲ್ಲಿ ಈ ಪದಾರ್ಥಗಳಿಲ್ಲದ ಆಹಾರ ಸೇವಿಸಿ, ವ್ರತಾದಿಗಳನ್ನು ಮಾಡಿ ಅವನನ್ನು ಪ್ರೀತನನ್ನಾಗಿಸಿ, ನಂತರ ತಾನು ಕೇಳಿದ್ದು ಸಂಪಾದಿಸುವನು ಈ ಮನುಷ್ಯ. ನಿದ್ದೆ ಮಾಡದವನನ್ನು ಮೊದಲು ಮಲಗಿಸುವುದು. ನಂತರ ಮಲಗಿರದಿದ್ದವನ್ನು ಎಬ್ಬಿಸುವುದು. ಇದೊಂದು ಬಹಳ ವಿಚಿತ್ರದ ವಿನೋದ!

*****

ಒಬ್ಬ ದೊಡ್ಡ ಶ್ರೀಮಂತ. ಜೊತೆಗೆ ಅಷ್ಟೇ ದೊಡ್ಡ ಅಧಿಕಾರವುಂಟು. ನೂರಾರು ಜನರಿಗೆ ಅವನಿಂದ ಸಾವಿರಾರು ಕೆಲಸಗಳು ದಿನ ದಿನವೂ ಆಗಬೇಕು. ಅವನನ್ನು ನೋಡಲು ಕೆಲವರು ಪ್ರತಿದಿನ ಬರುತ್ತಾರೆ. ಬೇರೆ ಕೆಲವರು ಕೆಲಸವಿದ್ದಾಗ ಮಾತ್ರ ಬರುತ್ತಾರೆ. ಮತ್ತೆ ಕೆಲವರು ಅವರ ಕೆಲಸಗಳು ಆಗುವವರೆಗೂ ಬರುತ್ತಿರುತ್ತಾರೆ. ಹಲವರು ದಿನಂಪ್ರತಿ ಹೊಸ ಹೊಸ ಕೆಲಸಗಳನ್ನು ಹೂಡಿಕೊಂಡು ಅವನನ್ನು ನೋಡಲು ಬರುತ್ತಾರೆ. ಒಂದು ಗುಂಪಿನ ಜನರಿಗಂತೂ ಅವನನ್ನು ತಪ್ಪಷ್ಟೇ ದಿನವೂ ನೋಡುವುದೇ ಒಂದು ಉದ್ಯೋಗ. ಹೀಗೆ ಅವನ ಮನೆಯ ಮುಂದೆ ಬೆಳಗಿನಿಂದಲೇ ಜನಜಂಗುಳಿ. 

ಅವನು ಅನೇಕ ವಾಹನಗಳ ಧಣಿಯಾಗಿದ್ದರೂ ಒಂದು ವಿಶೇಷವಾದ ವಾಹನ ಅವನಿಗೇ ಮೀಸಲಾಗಿದೆ. ಅವನು ಅದನ್ನು ಉಪಯೋಗಿಸಲಿ, ಇಲ್ಲದಿರಲಿ, ಪ್ರತಿದಿನ ಅದರ ಚಾಲಕ  ಬೇಗನೆ ಬಂದು ಅದನ್ನು ತಯಾರಿ ಮಾಡುತ್ತಾನೆ. ಅದರ ಮರಮ್ಮತ್ತು ಮಾಡಿ, ತೊಳೆದು, ಒರಸಿ, ಅದರ ಪಕ್ಕದಲ್ಲಿ  ಕಾದು ನಿಂತಿರುತ್ತಾನೆ.  ಅವನಿಗೆ ಇಡೀ ದಿನ ಕೆಲಸವಿಲ್ಲದಿರಬಹುದು. ಯಜಮಾನನು ವಾಹನವನ್ನು ಉಪಯೋಗಿಸದೇ ಬಿಡಬಹುದು. ಆದರೂ ಚಾಲಕನು ಅವನ ಕೆಲಸವನ್ನು ಅವನು ಮಾಡುತ್ತಾನೆ! ಹಾಗೆಂದು, ಬಂದವನು ಯಜಮಾನನು ಮಲಗಿರುವಲ್ಲಿ ಹೋಗಿ ಕೂಗುವುದಿಲ್ಲ. ಬಾಗಿಲ ಹೊರಗೆ ನಿಂತಿರುತ್ತಾನೆ ಅಷ್ಟೇ. ಮನೆಯ ಮಂದಿ ಯಜಮಾನನಿಗೆ ಚಾಲಕ ಬಂದು ನಿಂದಿರುವುದು ಹೇಳಬೇಕು. ಇದೇ ವ್ಯವಸ್ಥೆ. 

ಬೆಳಗಿನ ವಾತಾವರಣ ಹೇಗಿರುತ್ತದೆ? ಹಕ್ಕಿ-ಪಕ್ಷಿಗಳು ಚಿಲ್ಲಿ-ಪಿಲಿಗುಟ್ಟುತ್ತಾ ಅಂದಿನ ಆಹಾರ ಅರಸುತ್ತಾ, ಆಗಸದಲ್ಲಿ ಹಾರಾಡುತ್ತವೆ. ಮೊದಲು ಬೆಟ್ಟಗಳ ಮೇಲೆ ಅರುಣೋದಯವಾಗುತ್ತದೆ. ಶುಭ್ರವಾದ ಆಕಾಶ ಬಣ್ಣಗಳಿಂದ ಬೆಳಗುತ್ತದೆ. ನಂತರ ಸೂರ್ಯದೇವನು ಕೆಂಪಗೆ, ಮೆಲ್ಲಗೆ ಬಂದು ತನ್ನ ಕಿರಣಗಳನ್ನು ಹರಡುತ್ತಾನೆ. ಮೈಮೇಲೆ ಪ್ರಜ್ಞೆ ಅನ್ನುವ ಜ್ಞಾನ ಇರುವ ಯಾವನೂ ಸೂರ್ಯನು ಉದಯಿಸುವ ನಂತರ ನಿದ್ರಿಸಬಾರದು ಎನ್ನುವುದು ಒಂದು ನಿಯಮ. ಪ್ರತಿದಿನ ದೊಡ್ಡವರನ್ನು ನೋಡುವ ಕ್ರಮ ಇಟ್ಟುಕೊಂಡವರು ಆ ಸಮಯಕ್ಕೆ ಬಂದು ನಿಂತು, ನೋಡುವ ಅವಕಾಶಕ್ಕೆ ಕಾದಿರುತ್ತಾರೆ. 

ಆಳುವ ಪ್ರಭುಗಳನ್ನು ಹೊಗಳಲು ವಂದಿ-ಮಾಗಧರು ಎನ್ನುವ ಗುಂಪುಗಳಿರುತ್ತಿದ್ದವು. ಅವರ ಕೆಲಸವೇ ಸುಸ್ವರವಾಗಿ, ರಾಗವಾಗಿ, ಗಟ್ಟಿಯಾಗಿ, ಎಲ್ಲರಿಗೂ ಕೇಳುವಂತೆ ಯಜಮಾನನ ಗುಣಗಳನ್ನು ಕೂಗುವುದು. ಅನೇಕರಿಗೆ ಬೆಳಗಿನ ಕೆಲಸಗಳನ್ನು ಮಾಡುತ್ತಿರುವಾಗ ತಮಗೆ ಪ್ರಿಯವಾದ ಹಾಡುಗಳನ್ನು ಹೇಳುತ್ತಾ ಕೆಲಸಗಳನ್ನು ಮಾಡುವುದು ಅಭ್ಯಾಸ. ಒಂದು ಕಡೆ ಹಾಡು ಹಾಡಿದ ಅನುಭವ. ಮತ್ತೊಂದು ಕಡೆ ಕೆಲಸಗಳೂ ಸಲೀಸಾಗಿ ನಡೆದುವು. ಉಭಯ ರೀತಿಯಲ್ಲಿಯೂ ಅನುಕೂಲ. ಎಲ್ಲೋ ದೂರದಲ್ಲಿರುವವರು ಬೆಳ್ಳಂಬೆಳಿಗ್ಗೆ ತಮ್ಮ ಪ್ರಿಯಜನರ ನೆನಪು ಮಾಡಿಕೊಳ್ಳುವುದೂ ಉಂಟು, 

ಪ್ರಪಂಚದ ಅತಿ ಕಷ್ಟದ ಕೆಲಸಗಳಲ್ಲಿ ಮಲಗಿರುವವರನ್ನು ಎಬ್ಬಿಸುವುದೂ ಒಂದು. ಎಚ್ಚರವಿದ್ದರೂ ಮಲಗಿದಂತೆ ಇರುವವರನ್ನು ಎಬ್ಬಿಸುವುದಂತೂ ಮತ್ತೂ ಕಷ್ಟದ ಕೆಲಸವೇ ಸರಿ. ಒಂದು, ಎರಡು, ಮೂರು ಬಾರಿ ತಾಳ್ಮೆಯಿಂದ ಎಬ್ಬಿಸುವುದು. ನಾಲ್ಕನೆಯ ಬಾರಿ ಧ್ವನಿ ಸ್ವಲ್ಪ ಗಡಸು ಆಗುವುದು ಸಾಮಾನ್ಯ. ಐದನೆಯ ಬಾರಿಯಂತೂ "ಇನ್ನು ಏಳಪ್ಪ! ಎಬ್ಬಿಸಿ, ಎಬ್ಬಿಸಿ, ಸಾಕಾಯಿತು" ಎಂದು ಜೋರಾಗಿ ಕೂಗುವುದು ಆಗಲೇಬೇಕು.  
*****

"ನವಕೋಟಿ ನಾರಾಯಣ" ಎನ್ನುವ ಬಿರುದು ಹೊಂದಿದ್ದ ಶ್ರೀನಿವಾಸ ನಾಯಕರು ಎಲ್ಲವನ್ನೂ ಬಿಟ್ಟು ಹರಿದಾಸರಾದ ಮೇಲೆ ದೇಶದ ಮೂಲೆ ಮೂಲೆ ತಿರುಗಿ ಅನೇಕ ಕ್ಷೇತ್ರಗಳನ್ನು ಸಂದರ್ಶಿಸಿದರು. ಹೀಗೆ ಕಂಡ ಒಂದೊಂದು ದಿವ್ಯ ಮೂರ್ತಿಯ ಮುಂದೆಯೂ ಮೈಮರೆತು ಹಾಡಿ ಕುಣಿದರು. ಈ ರೀತಿ ಸಂಚರಿಸುತ್ತಿದ್ದಾಗ ಒಮ್ಮೆ ಶ್ರೀರಂಗಕ್ಕೆ ಬಂದು ರಂಗನಾಥನನ್ನು ನೋಡಿದರು. ಮಲಗಿದಂತೆ ಇರುವ ಸ್ವಾಮಿಯನ್ನು ಮೇಲಿನ ಎಲ್ಲ ಅಂಶಗಳನ್ನೂ ಸೇರಿಸಿ, ಮಹಾಲಕ್ಷ್ಮಿ ದೇವಿಯು ಅವನನ್ನು ಎಬ್ಬಿಸುತ್ತಿರುವಂತೆ ಒಂದು ಕೃತಿ ರಚಿಸಿ ಹಾಡಿದರು. ಅದೇ "ರಂಗನಾಯಕ, ರಾಜೀವಲೋಚನ, ರಮಣನೇ ಬೆಳಗಾಯ್ತು , ಎಳೆನ್ನುತ" ಎಂಬ ಕೃತಿ. 

ಇದರ ಐದು ನುಡಿಗಳಲ್ಲಿ ಮೇಲೆ ನಾವು ಬೆಳಗಿನಲ್ಲಿ ಕಾಣುವ ಶ್ರೀಮಂತ, ಅಧಿಕಾರಿಯ ಮನೆಯ ಮುಂದಿನ ದೃಶ್ಯವನ್ನು ಕಾಣಬಹುದು. ಶ್ರೀರಂಗದಲ್ಲಿ ಮಲಗಿರುವವನು ಸಾಮಾನ್ಯ ಶ್ರೀಮಂತನಲ್ಲ. ಅವಂತಹ ಶ್ರೀಮಂತ ಇನ್ನೊಬ್ಬನಿಲ್ಲ. ಅವನು ಅಂತಿಂತಹ ಅಧಿಕಾರಿಯಲ್ಲ. ಅವನಿಗಿರುವ ಅಧಿಕಾರ ಬೇರೆ ಯಾರಿಗೂ ಇಲ್ಲ. ಎಬ್ಬಿಸುವವಳೂ ಜಗದಾಂಬೆಯಾದ ಮಹಾಲಕ್ಷ್ಮಿ ದೇವಿ. 

  1. ಮೊದಲನೆಯ ನುಡಿಯಲ್ಲಿ ವಾಹನನಾದ ಗರುಡನ ಬರವು, ದ್ವಾರದಲ್ಲಿ ಅವನ ನಿರೀಕ್ಷೆ, ಮತ್ತು ಹಕ್ಕಿ-ಪಕ್ಷಿಗಳ ಕಲರವ ರೂಪದ ಪ್ರಾರ್ಥನೆ. ಸೃಷ್ಟಿಯಲ್ಲಿಯ ಸಕಲ ಶಬ್ದಗಳೂ ಪರಮಾತ್ಮನ ಕುರಿತೇ ಹೇಳುತ್ತವೆ ಎನ್ನುವ ಪ್ರಮೇಯದ ನಿರೂಪಣೆ. 
  2. ಎರಡನೆಯ ನುಡಿಯಲ್ಲಿ ಅವನ ದರ್ಶನ ಮಾಡಲು ಪ್ರತಿ ದಿನ ಆಗಮಿಸುವ ಸನಕ, ಸನಂದನ, ಸನತ್ಸುಜಾತ, ಸನತ್ಕುಮಾರರ ಬರವು, ಪರಮಾತ್ಮನ ಕುರಿತು ವಿಶೇಷ ಕೃತಿ ರಚನೆ ಮಾಡಿದ ವ್ಯಾಸ-ವಾಲ್ಮೀಕಿಗಳು, ಮತ್ತು ಅವನ್ನು ಹಾಡಿ-ಹೇಳುತ್ತಾ ಪ್ರಚುರಪಡಿಸಿದ ಶುಕ-ಶೌನಕರ ನೆನಪು. 
  3. ಮೂರನೆಯ ನುಡಿಯಲ್ಲಿ ದೇವತೆಗಳು, ಕಿನ್ನರರು, ಕಿಂಪುರುಷರು, ಉರಗರು ಮೊದಲಾದ ಗುಂಪುಗಳ ಸದಸ್ಯರು ಅವನ ಗುಣಗಳನ್ನು ಹೊಗಳುವ ಪರಿ. ಅರುಣೋದಯ ಮತ್ತು ಬಾಲ ಸೂರ್ಯನ ಕಿರಣಗಳ ಪಸರಿಸುವ ವಿವರಣೆ. 
  4. ನಾಲ್ಕನೆಯ ನುಡಿಯಲ್ಲಿ ವೈಕುಂಠದವರೆಗೂ ಬರಲಾಗದ, ಆದರೆ ಅವರಿದ್ದ ಕಡೆಯೇ ಉದಯರಾಗ ಹಾಡುತ್ತ ತಮ್ಮ ಮನೆ ಕೆಲಸಗಳನ್ನು ಮಾಡುವ ಗೃಹಿಣಿಯರು. ಅವನನ್ನು ಕುರಿತು ಹಾಡುವಾಗ ಮೊಸರು ಕಡೆದರೆ, ಹಾಡು ಮುಗಿಯುವ ವೇಳೆಗೆ ಬೆಣ್ಣೆಯೂ ಬಂತು. 
  5. ಐದನೆಯ ನುಡಿಯಲ್ಲಿ ಪರಿಪರಿಯಿಂದ ಹಾಡುತ್ತಾ ದರ್ಶನ ಬೇಡುವ ಅಸಂಖ್ಯಾತ ಭಕ್ತರ ಆರ್ತನಾದ. ಲೌಕಿಕದಲ್ಲಿ ಮಲಗಿದವರನ್ನು ಎಬ್ಬಿಸುವವರ ತಾಳ್ಮೆ ಕಳೆದುಕೊಳ್ಳುವ ಸೂಚನೆ. "ಪುರಂದರ ವಿಠಲ, ನೀನೇಳೋ!" ಎನ್ನುವ ಗಡಸು ಧ್ವನಿ!
ಶ್ರೀಮತಿ ಸಾಧ್ವಿನಿ ಕೊಪ್ಪ ಅವರು ಹೆಚ್ಚಿನ ವಾದ್ಯಗಳ ಆಡಂಬರವಿಲ್ಲದೆ ಈ ಎಲ್ಲ ಅಂಶಗಳನ್ನು ಗಮನಿಸಬಹುದಾದ ರೀತಿಯಲ್ಲಿ ಹಾಡಿರುವ ಈ ಕೃತಿಯನ್ನು ಇಲ್ಲಿ ಕೇಳಬಹುದು:


ನಮ್ಮ ಹೆಮ್ಮೆಯ ಯಕ್ಷಗಾನ ಕಲಾವಿದರು ಈ ಕೃತಿಯನ್ನು (ರಾತ್ರಿಯೆಲ್ಲ ಯಕ್ಷಗಾನ ಪ್ರಸಂಗ ನಡೆದ ನಂತರ ಬೆಳಗಾಗುತ್ತಿದ್ದಂತೆ ಮುಗಿವ ಸಮಯದಲ್ಲಿ) ಮಂಗಳ ಪದ್ಯವಾಗಿ ಸೊಗಸಾಗಿ ಉಪಯೋಗಿಸುತ್ತಾರೆ. ಇದರಲ್ಲಿ ಅವರ ವಿಶಿಷ್ಟ ಸಂಗೀತ, ಅಭಿನಯ, ಎರಡನ್ನೂ ನೋಡಬಹುದು. ಹಾಡಿನ ಕೇವಲ ಒಂದೇ ಒಂದು ನುಡಿ ಉಪಯೋಗಿಸಿಕೊಂಡರೂ ಸೊಗಸಾದ ಅನುಭವ ಕೊಡುತ್ತದೆ:


ಈ ಹಾಡಿನ ಜೊತೆಗೆ ಅವರ ಕಾರ್ಯಕ್ರಮದ ಭರತವಾಕ್ಯ ಕೂಡ ಸೇರಿಸಿ ಮಂಗಳ ಹಾಡುತ್ತಾರೆ. ಸಾಹಿತ್ಯ, ಸಂಗೀತ, ಅಭಿನಯಗಳ ಅಪೂರ್ವ ರಸಾಯನ. 

*****

ಶ್ರೀ ಪುರಂದರದಾರ ಕೃತಿಗಳು ಕೇವಲ ಭಕ್ತಿ ಪ್ರಧಾನವಾಗಿರದೆ ತಮ್ಮ ಸುತ್ತ-ಮುತ್ತಲ ಪ್ರಾಪಂಚಿಕ ವಿವರಗಳನ್ನೂ ಹೇಗೆ ಒಳಗೊಂಡಿರುತ್ತವೆ ಎನ್ನುವುದಕ್ಕೆ ಇದೊಂದು ಸೊಗಸಾದ ಉದಾಹರಣೆ. 

Sunday, July 6, 2025

ಐದು ರೀತಿಯ ಮಕ್ಕಳು


ಹಿಂದಿನ ಸಂಚಿಕೆಗಳಲ್ಲಿ ಅಷ್ಟ ಭೋಗಗಳು, ಅಷ್ಟ ಭಾಗ್ಯಗಳು ಮತ್ತು ಅಷ್ಟ ಐಶ್ವರ್ಯಗಳು ಎಂಬ ವಿಷಯಗಳ ಬಗ್ಗೆ ಸ್ವಲ್ಪಮಟ್ಟಿಗೆ ನೋಡಿದ್ದೆವು. ಅಷ್ಟ ಐಶ್ವರ್ಯಗಳಲ್ಲಿ ಸಂತಾನವೂ ಒಂದು ಎಂದು ಚರ್ಚಿಸಿದ್ದೆವು. (ಈ ಕೊನೆಯ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ).  ಅನೇಕ ದಂಪತಿಗಳಿಗೆ ಎಲ್ಲ ಭೋಗ-ಭಾಗ್ಯ-ಐಶ್ವರ್ಯಗಳು ದೊರಕಿದ್ದರೂ ಸಂತಾನ ಇಲ್ಲ ಎನ್ನುವ ಒಂದು ಕೊರತೆ ಕಾಡುವುದು ಉಂಟು. ಅನೇಕ ಪುರಾಣದ ಕಥೆಗಳು ಪ್ರಾರಂಭವಾಗುವುದು ಈ ಕೊರತೆಯ ಕಾರಣದಿಂದಲೇ. ಮತ್ತೆ ಕೆಲವು ಕಥೆಗಳು ಪ್ರಾರಂಭವಾಗುವುದು ಈ ಸಂತಾನದ ಕಾರಣದಿಂದ ಉದ್ಭವವಾಗುವ ಸಮಸ್ಯೆಗಳಿಂದಲೂ ಹೌದು. ಹೀಗೆ, ಇದ್ದರೂ ಸಮಸ್ಯೆ, ಇಲ್ಲದಿದ್ದರೂ ಸಮಸ್ಯೆ ಸೃಷ್ಟಿಸುವುದು ಈ ಸಂತಾನವೆಂಬ ಒಂದು ಆಸ್ತಿಯ ವಿಶೇಷತೆ. ಕೆಲವೊಮ್ಮೆ ಈ ಆಸ್ತಿ ಭಾದ್ಯತೆ ಆಗುವುದೂ ಸಾಧ್ಯ. ಹೀಗೂ ಉಂಟು. ಹಾಗೂ ಉಂಟು! 

ನಮ್ಮ ಎರಡು ಮಹಾಕಾವ್ಯಗಳು ಮತ್ತು ವಾಂಗ್ಮಯದ ಎರಡು ಕಣ್ಣುಗಳಾದ ರಾಮಾಯಣ ಮತ್ತು ಮಹಾಭಾರತ ನಿಜವಾಗಿ ಪ್ರಾರಂಭವಾಗುವುದು ಈ ಸಮಸ್ಯೆಯಿಂದಲೇ. ರಾಮಾಯಣದ ತಿರುಳು ದಶರಥನ ಮಕ್ಕಳಿಲ್ಲವೆಂಬ ಕೊರಗು ಮತ್ತು ಪುತ್ರಕಾಮೇಷ್ಟಿಯಿಂದ ಹುಟ್ಟುತ್ತದೆ. ಮಹಾಭಾರತದ ಅಸಲಿ ಪ್ರಾರಂಭ ಧೃತರಾಷ್ಟ್ರನ ನೂರಾಒಂದು ಮಕ್ಕಳಿಂದ! 

***** 

ನಮ್ಮ ಬಾಲ್ಯದ ಕಾಲದಲ್ಲಿ ಹಿರಿಯರು ಸಂವಾದದಲ್ಲಿ ತೊಡಗಿದಾಗ ಮೊದಲನೇ ಪ್ರಶ್ನೆ "ಮಕ್ಕಳೆಷ್ಟು?" ಎನ್ನುವುದೇ ಆಗಿರುತ್ತಿತ್ತು. ಕೆಲವರಿಗೆ ಹೆಚ್ಚು ಮಕ್ಕಳು. ನಾಲ್ಕು, ಆರು, ಎಂಟು ಮಕ್ಕಳಿರುತ್ತಿದ್ದುದು ಸಾಮಾನ್ಯವಾಗಿರುತ್ತಿತ್ತು. ಹೆಚ್ಚು ಮಕ್ಕಳಿರುವವರಿಗೆ ಕಡಿಮೆಯಿರುವವರು ಸಮಾಧಾನ ಹೇಳುವಂತೆ "ಇರಲಿ ಬಿಡಿ. ಯಾರಾದರೂ ಕೇಳುವುದು 'ಎಷ್ಟು ಮಕ್ಕಳು?' ಎಂದಲ್ಲವೇ? 'ಎಷ್ಟು ಆಸ್ತಿ?' ಎಂದು ಯಾರೂ ಕೇಳುವುದಿಲ್ಲವಲ್ಲ?" ಎನ್ನುತ್ತಿದ್ದರು. ಯಾರಿಗಾದರೂ ಮಕ್ಕಳಿಲ್ಲದಿದ್ದರೆ ಇದ್ದವರು ಇದೇ ರೀತಿ "ಆಗುತ್ತವೆ ಬಿಡಿ. ದೇವರು ಕಣ್ಣು ಬಿಟ್ಟು ನೋಡಿದರೆ ಎಷ್ಟು ಹೊತ್ತು?" ಅನ್ನುತ್ತಿದ್ದರು. ಈಗ ಮಕ್ಕಳ ವಿಷಯ ಮಾತಾಡುವುದೇ ಒಂದು ಕಷ್ಟದ ಕೆಲಸ. ಅದರ ಪ್ರಸ್ತಾಪ ಮಾಡಬೇಕೋ ಮಾಡಬಾರದೋ ಗೊತ್ತಾಗುವುದಿಲ್ಲ. ರಾಜಕೀಯ ವಿಷಯಗಳು ಮತ್ತು ಹವಾಮಾನ ವಿವರದಿಂದ ಮಾತುಕತೆ ಪ್ರಾರಂಭಿಸುವುದು ಉಭಯತ್ರರಿಗೂ ಒಳ್ಳೆಯದು ಎಂದು ಎಲ್ಲರಿಗೂ ಗೊತ್ತು. 

ನಮ್ಮ ದೇಶ ಸ್ವಾತಂತ್ರ್ಯ ಪಡೆದಾಗಿನಿಂದ "ಅತಿಸಂತಾನ" ಒಂದು ದೊಡ್ಡ ಸಮಸ್ಯೆ ಎಂದು ಗುರುತಿಸಿದ ಸರ್ಕಾರ "ಮಿತಸಂತಾನ" ಎನ್ನುವ ಕಾರ್ಯಕ್ರಮ ರೂಪಿಸಿತು. ಅರವತ್ತರ ದಶಕದಲ್ಲಿ "ಒಂದು ಎರಡು ಬೇಕು; ಮೂರು ಸಾಕು" ಎನ್ನುವ ಘೋಷಣೆ ಚಾಲ್ತಿಯಲ್ಲಿತ್ತು. ಎಪ್ಪತ್ತರ ದಶಕದಲ್ಲಿ ಅದು "ಆರತಿಗೊಬ್ಬ ಮಗಳು; ಕೀರುತಿಗೊಬ್ಬ ಮಗ" ಎಂದು ಬದಲಾಯಿತು. ಎಲ್ಲಾ ಸರ್ಕಾರೀ ಕಟ್ಟಡಗಳ ಮೇಲೆ ಈ ಘೋಷವಾಕ್ಯಗಳು ರಾರಾಜಿಸಿದವು. "ಸ್ತ್ರೀ ಸ್ವಾತಂತ್ಯವಾದಿಗಳು" ಎರಡನೆಯ ಘೋಷಣೆಗೆ ನ್ಯಾಯವಾಗಿಯೇ ಆಕ್ಷೇಪಿಸಿದರು. "ಮಗಳಿಂದ ಕೀರ್ತಿ ಇಲ್ಲವೇ?" ಎಂದು ಪ್ರಬಲವಾಗಿ ಪ್ರತಿರೋಧ ಬಂತು. "ಆರೋಗ್ಯ ಮತ್ತು ಕುಟುಂಬ ಯೋಜನೆ" ಇಲಾಖೆ ತನ್ನ ಹೆಸರು ಬದಲಾಯಿಸಿಕೊಂಡು "ಆರೋಗ್ಯ ಮತ್ತು ಕುಟುಂಬ ಕಲ್ಯಾಣ" ಇಲಾಖೆ ಆಯಿತು. ಎಂಭತ್ತರ ದಶಕದಲ್ಲಿ ಸರ್ಕಾರ ಕಷ್ಟ ಪಡುವ ಕಾಲ ಕಳೆದು ಜನರೇ "ಒಂದು ಮಗು ಸಾಕು" ಎನ್ನತೊಡಗಿದರು. ತೊಂಬತ್ತರ ದಶಕದಲ್ಲಿ "ಇರುವುದಕ್ಕಿಂತ ಇಲ್ಲದಿರುವುದೇ ಒಳ್ಳೆಯದು" ಎಂದು ಬಾಯಲ್ಲಿ ಹೇಳದಿದ್ದರೂ ಆಚರಣೆಯಲ್ಲಿ ತಂದರು. 

ಹೊಸ ಶತಮಾನದಲ್ಲಿ ಇನ್ನೂ ಪ್ರಚಂಡ ಬದಲಾವಣೆಗಳಾದುವು. ಸಮಸ್ಯೆಯ ಮೂಲಕ್ಕೇ ಕೊಡಲಿ ಪೆಟ್ಟು ಬೀಳತೊಡಗಿತು. ಮದುವೆಯೆನ್ನುವುದು ಇದ್ದರೆ ತಾನೇ ಮಕ್ಕಳು ಎನ್ನುವ ಸಮಸ್ಯೆ? ಮದುವೆಯೇ ಬೇಡ. ಹಾಗೆಯೇ ಜೊತೆಯಲ್ಲಿ ಇರೋಣ. ಜೊತೆ ಬೇಡ ಎಂದಾಗ ಸುಮ್ಮನೆ ಬೇರೆ ಹೋದರಾಯಿತು. ಇದರಿಂದ ವಿವಾಹ ವಿಚ್ಚೇದನ ಮತ್ತು ಅದರಿಂದಾಗುವ ಸಮಸ್ಯೆಗಳೇ ರದ್ದು ಎಂದು ಯುವ ಜನಾಂಗ ತೀರ್ಮಾನಿಸಿತು. ಆದರೂ ಕೆಲವೆಡೆ ಅಪಘಾತಗಳಾಗಿ ಮದುವೆಯಿಲ್ಲದೇ ಮಕ್ಕಳಾಗತೊಡಗಿದವು. ಕಳೆದ ದಶಕದಲ್ಲಿ ಈ ಎಲ್ಲ ರೀತಿಯ ಮಕ್ಕಳ ಸಮಸ್ಯೆಗೆ ಅತಿ ದೊಡ್ಡ ಪರಿಹಾರ ಸಿಕ್ಕಿದೆ. ಗಂಡು-ಹೆಣ್ಣು ಮದುವೆಯಾದರೆ ಅಥವಾ ಜೊತೆಯಲ್ಲಿದ್ದರೆ ತಾನೇ ಮಕ್ಕಳ ಸಮಸ್ಯೆ? ಸಲಿಂಗ ವಿವಾಹದಿಂದ ಈ ತೊಂದರೆಯೇ ಇರುವುದಿಲ್ಲವಲ್ಲ. ಗಂಡು-ಗಂಡು ಮತ್ತು ಹೆಣ್ಣು-ಹೆಣ್ಣು ಮದುವೆಯಾದರೆ ಮಕ್ಕಳಾಗುವ ಸಂಭವವೇ ಇಲ್ಲವಲ್ಲ! ಈಗ ಇದರ ಕಾಲ ನಡೆಯುತ್ತಿದೆ. 

*****

ದಂಪತಿಗಳಿಗೆ ಮಕ್ಕಳು ಏಕೆ ಹುಟ್ಟುತ್ತಾರೆ? ಹುಟ್ಟುವ ಮಕ್ಕಳು ಯಾವ ರೀತಿಯವು? ಜನ್ಮ-ಜನ್ಮಗಳ ಸಂಬಂಧಗಳು ಉಂಟೋ? ಈ ರೀತಿಯ ಪ್ರಶ್ನೆಗಳಿಗೆ "ಪದ್ಮ ಪುರಾಣ" ತನ್ನ ಒಂದು ಪ್ರಸಂಗದಲ್ಲಿ ಉತ್ತರ ಕೊಡುತ್ತದೆ. 

ನರ್ಮದಾ ನದಿಯ ತೀರದ "ವಾಮನ ತೀರ್ಥ" ಎನ್ನುವ ಪ್ರದೇಶದಲ್ಲಿ ಸೋಮಶರ್ಮ ಎಂಬ ಒಬ್ಬ ಸಾತ್ವಿಕನು ವಾಸವಾಗಿರುತ್ತಾನೆ. ಅವನ ವಿವಾಹ ಚ್ಯವನ ಋಷಿಗಳ ಮಗಳಾದ ಸುಮನಾ ಎನ್ನುವ ಯುವತಿಯೊಡನೆ ಆಗುತ್ತದೆ. ("ಸತಿ ಸುಕನ್ಯ" ಚಲನಚಿತ್ರ ನೋಡಿದವರಿಗೆ ಸುಕನ್ಯಳ ಗಂಡ ಚ್ಯವನ ಋಷಿ ಎಂದು ನೆನಪಿಗೆ ಬರಬಹುದು. "ಚ್ಯವನಪ್ರಾಶ" ಅನ್ನುವುದನ್ನು ಅಶ್ವಿನಿ ದೇವತೆಗಳ ಕಡೆಯಿಂದ ಭೂಮಿಗೆ ತಂದ ತಪಸ್ವಿಗಳು ಅವರು. ಭೃಗು ಋಷಿಗಳ ವಂಶಜರು).  ತಂದೆಗೆ ತಕ್ಕ ಮಗಳಾದ ಸುಮನಾ ಬಹಳ ತಿಳುವಳಿಕೆಯುಳ್ಳ ಹೆಣ್ಣು ಮಗಳು. ಹೆಸರಿಗೆ ತಕ್ಕಂತೆ ಒಳ್ಳೆಯ ಮನಸ್ಸಿನವಳು. ಸೋಮಶರ್ಮನೂ ಜ್ಞಾನಿಯೇ. ಚೆನ್ನಾಗಿ ಸಂಸಾರ ಮಾಡುತ್ತಿದ್ದ ಈ ದಂಪತಿಗಳಿಗೆ ಮಕ್ಕಳಿರುವುದಿಲ್ಲ. ಸೋಮಶರ್ಮನಿಗೆ ಎರಡು ಚಿಂತೆಗಳು. ಮೊದಲನೆಯದು ದಾರಿದ್ರ್ಯ. ಎರಡನೆಯದು ಮಕ್ಕಳಿಲ್ಲ ಎನ್ನುವುದು. ಹೀಗೆ ಚಿಂತಾಕ್ರಾಂತನಾಗಿರುವ ಸೋಮಶರ್ಮನನ್ನು ಗಮನಿಸಿದ ಸುಮನಾ ಒಂದು ದಿನ ಅವನಿಗೆ ಸಮಾಧಾನ ಹೇಳುತ್ತಾಳೆ. ದಾರಿದ್ರ್ಯದ ವಿಷಯದಲ್ಲಿ ಹೇಳಿದ ಸಮಾಧಾನದ ವಿಷಯ ಮುಂದೊಮ್ಮೆ ನೋಡೋಣ. ಈಗ ಮಕ್ಕಳ ಸಮಸ್ಯೆ ಪ್ರಸ್ತಾಪ ಬಂದಿರುವುದರಿಂದ ಅದನ್ನು ಗಮನಿಸೋಣ. 

ಸುಮನಾ ಹೇಳುವ ಸೂತ್ರರೂಪವಾದ ಮಕ್ಕಳ ನಾಲ್ಕು ವಿಧಗಳ ವಿವರಣೆ ಹೀಗಿದೆ:

ಋಣಸಂಬಂಧಿನಃ ಕೇಚಿತ್ ಕೇಚಿತ್ ನ್ಯಾಸಾಪಹಾರಕಾ:
ಲಾಭಪ್ರದಾ ಭವಂತೇ ಕೇ ಉದಾಸೀನಾ ತಥಾಪರೇ  

  1. ಮೊದಲನೆಯ ವರ್ಗದ ಮಕ್ಕಳು "ಸಾಲ ವಸೂಲಿಗೆ ಬಂದವರು".  ಹಿಂದಿನ ಜನ್ಮಗಳಲ್ಲಿ ನಾವು ಯಾರಿಂದಲಾದರೂ ಹಣ-ಕಾಸು, ವಸ್ತುಗಳನ್ನು ಸಾಲ ಪಡೆದು ಹಿಂದಿರುಗಿಸದಿದ್ದರೆ ಹಾಗೆ ಸಾಲಕೊಟ್ಟವರು ಈ ಜನ್ಮದಲ್ಲಿ ನಮ್ಮ ಮಕ್ಕಳಾಗಿ ಹುಟ್ಟಿ ನಮ್ಮಿಂದ ಅದನ್ನು ಬಡ್ಡಿ ಸಹಿತ ವಸೂಲಿ ಮಾಡಲು ಹುಟ್ಟಿದ ಮಕ್ಕಳು ಇವರು. ಇವರಿಂದ ತಂದೆ-ತಾಯಿಗಳಿಗೆ ಯಾವುದೇ ಪ್ರಯೋಜನ ಇರುವುದಿಲ್ಲ. ತಮ್ಮ ಸಾಲ ವಸೂಲಾಗುವವರೆಗೂ ಜೊತೆಯಲ್ಲಿದ್ದು, ಅದು ಮುಗಿದ ಕೂಡಲೇ ಹೊರಟು ಹೋಗುತ್ತಾರೆ. ಇವರು "ಋಣಸಂಬಂಧಿ ಮಕ್ಕಳು". 
  2. ಎರಡನೆಯ ವರ್ಗದ ಮಕ್ಕಳು "ತಿಂದದ್ದು ಕಕ್ಕಿಸುವವರು". ಯಾವುದೋ ಜನ್ಮದಲ್ಲಿ ಇನ್ನೊಬ್ಬರ ಹಣವನ್ನು ಅಥವಾ ವಸ್ತು-ಆಸ್ತಿಗಳನ್ನು ಅನ್ಯಾಯವಾಗಿ ತಿಂದುಹಾಕಿದ್ದರೆ ಆ ರೀತಿ ಕಳೆದುಕೊಂಡವರು ಈ ಜನ್ಮದಲ್ಲಿ ಮಕ್ಕಳಾಗಿ ಬಂದು ಅದನ್ನು ಹಿಂಪಡೆಯುವವರು. ಮೊದಲನೆಯ ವರ್ಗದವರಿಗೂ ಇವರಿಗೂ ಏನು ವ್ಯತ್ಯಾಸ? ಮೊದಲನೆಯದು ನಾವು ಸಾಲ ಕೇಳಿ ಅವರು ಒಪ್ಪಿ ಕೊಟ್ಟವರು. ಎರಡನೆಯವರು ಅವರಿಂದ ನಾವು ಅನ್ಯಾಯವಾಗಿ ಕಿತ್ತುಕೊಂಡುದರಿಂದ ನಷ್ಟ ಅನುಭವಿಸಿದವರು. ಆದುದರಿಂದ  ಇವರ ವ್ಯವಹಾರ ಮೊದಲನೆಯ ವರ್ಗಕ್ಕಿಂತ ಹೆಚ್ಚು ಕಠಿಣವಾಗಿರುತ್ತದೆ. 
  3. ಮೂರನೆಯ ವರ್ಗದ ಮಕ್ಕಳು "ಲಾಭಪ್ರದರು". ಕಳೆದ ಜನ್ಮಗಳಲ್ಲಿ ನಾವು ಮತ್ತೊಬ್ಬರಿಗೆ ಉಪಕಾರ ಮಾಡಿದ್ದರೆ ಅದರ ಸ್ಮರಣೆಯಿಂದ ಈ ಜನ್ಮದಲ್ಲಿ ನಮಗೆ ಉಪಕಾರ ಮಾಡಲು ಹುಟ್ಟಿದವರು. ಇವರು ತಂದೆ-ತಾಯಿಯರಿಗೆ ಬಹಳ ಅನುಕೂಲ ಮಾಡಿಕೊಡುವ ಮಕ್ಕಳಾಗುತ್ತಾರೆ. ಕೆಲವೊಮ್ಮೆ ಮಕ್ಕಳು ತಾಯಿ ಮತ್ತು ತಂದೆ ಇಬ್ಬರಲ್ಲಿ ಒಬ್ಬರಿಗೆ ಮಾತ್ರ ಅನುಕೂಲರಾಗಿರಬಹುದು. ಇದು ಮಕ್ಕಳಾಗಿ ಹುಟ್ಟಿದವರು ಯಾರಿಂದ ಹಿಂದೆ ಉಪಕೃತರಾಗಿದ್ದರೋ ಅದರ ಮೇಲೆ ಅವಲಂಬಿಸುತ್ತದೆ. 
  4. ನಾಲ್ಕನೆಯ ವರ್ಗದ ಮಕ್ಕಳು "ಉದಾಸೀನ ಪುತ್ರರು". ಇವರು ಮೇಲಿನ ಮೂರೂ ಕಾರಣಗಳಿಲ್ಲದ ಮಕ್ಕಳು. ಇವರು ಅವರ ಹಿಂದಿನ ಜನ್ಮಗಳ ಫಲಗಳನ್ನು ಅನುಭವಿಸಲು ಹುಟ್ಟಿದವರು. ಜನ್ಮ ಪಡೆಯುವುದಕ್ಕಾಗಿ ಮಾತ್ರವೇ ತಾಯಿ-ತಂದೆಯರ ಆಶ್ರಯ ಪಡೆದವರು. ಇಂತಹವರು ತಮ್ಮ ಪಾಡು ತಾವು ನೋಡಿಕೊಂಡು ತಂದೆ-ತಾಯಿಯರ ವಿಷಯದಲ್ಲಿ ಉದಾಸೀನರಾಗಿರುತ್ತಾರೆ. 
ಹಾಗಿದ್ದರೆ ಐದನೆಯ ಗುಂಪಿನ ಮಕ್ಕಳು ಯಾರು? ಹಿಂದಿನ ಯಾವುದೂ ಸಂಬಂಧಗಳಿರದೆ ಈ ಜನ್ಮದಲ್ಲಿ ಮಾಡಿದ ಸತ್ಕರ್ಮಗಳಿಂದ ತಂದೆ-ತಾಯಿಯರ ಮಕ್ಕಳಾಗಿ ಹುಟ್ಟಿದವರು ಈ ಗುಂಪಿಗೆ ಸೇರಿದವರು. ಹಿಂದಿನ ಜನ್ಮಗಳ ಸತ್ಕರ್ಮಗಳ ಕಾರಣವಾಗಿ ವರರೂಪವಾಗಿ ಈಗ ಹುಟ್ಟಿದವರೂ ಆಗಬಹುದು. ವಿವಾಹ ಪೂರ್ವದಲ್ಲಿ ಮಾಡಿದ ಒಳ್ಳೆಯ ಕೆಲಸಗಳ ಕಾರಣ ವಿವಾಹದ ನಂತರ ಶೀಘ್ರದಲ್ಲಿ ಹುಟ್ಟಬಹುದು. ಇಲ್ಲವೇ, ಮಕ್ಕಳಿಲ್ಲವೆಂದು ಕೊರಗುವಾಗ ಮಾಡುವ ಒಳ್ಳೆಯ ಕಾರ್ಯಗಳ ಫಲಸ್ವರೂಪವಾಗಿ ತಡವಾಗಿ ಹುಟ್ಟಿದವರು ಇರಬಹುದು. ಇಂತಹ ಮಕ್ಕಳಿಂದ ಮಾತಾ-ಪಿತೃಗಳಿಗೆ ಅತ್ಯಂತ ಸುಖವೂ, ಕೀರ್ತಿಯೂ, ಸಮಾಜದಲ್ಲಿ ಮನ್ನಣೆಯೂ ದೊರೆಯುವುದು. 

*****

ನಾವು ನಮ್ಮ ತಂದೆ-ತಾಯಿಯರಿಗೆ ಎಂತಹ ಮಕ್ಕಳಾಗಿದ್ದೆವು? ನಮ್ಮ ಮಕ್ಕಳು ಮೇಲಿನ ಯಾವ ಗುಂಪಿಗೆ ಸೇರಿದವರು? ಈ ಪ್ರಶ್ನೆಗಳಿಗೆ ಉತ್ತರ ಅವರವರೇ ಕಂಡುಕೊಳ್ಳಬೇಕು. 

ಜನ್ಮ-ಜನ್ಮಾಂತರಗಳು, ಪುನರ್ಜನ್ಮ, ಪಾಪ-ಪುಣ್ಯಗಳು, ವರ ಪಡೆಯುವುದು ಮುಂತಾದುವನ್ನು ನಂಬುವವರೂ ಇದ್ದಾರೆ. ನಂಬದವರೂ ಇದ್ದಾರೆ. ನಂಬಿದವರು ಮೇಲಿನ ವರ್ಗೀಕರಣವನ್ನು ಒಪ್ಪಿಕೊಳ್ಳಬಹುದು. ನಂಬದವರು ಅಪಹಾಸ್ಯ ಮಾಡಬಹುದು. ಆದರೆ, ಮೇಲಿನ ವರ್ಗೀಕರಣ ಒಂದು ಬಲವಾದ ತರ್ಕದ ತಳಹದಿಯ ಮೇಲೆ ನಿಂತಿದೆ ಎನ್ನುವುದನ್ನು ಖಂಡಿತವಾಗಿ ಒಪ್ಪಬಹುದು. 

Saturday, July 5, 2025

ಮನಸ್ಸು ಮತ್ತು ಗಜಚರ್ಮಾ೦ಬರಧರ


ಹಿಂದಿನ ಒಂದು ಸಂಚಿಕೆಯಲ್ಲಿ "ಮನವ ಕಬ್ಬಿಣ ಮಾಡು, ಹೇ ಮೃಡನೇ" ಎನ್ನುವ ಶೀರ್ಕಿಕೆಯಡಿ, ಜನಪ್ರಿಯ ರುದ್ರ-ಚಮಕಗಳ ಮೂಲಕ ಮಾಡುವ ಆರಾಧನೆಯಲ್ಲಿ ಶ್ರೀಶಂಭುವಿನ ಬಳಿ ಅನೇಕ ಲೌಕಿಕ ಸಂಪತ್ತುಗಳನ್ನು ಕೇಳುವುದರ ಔಚಿತ್ಯವನ್ನು ಪ್ರಶ್ನಿಸಿಕೊಂಡು ಅದಕ್ಕೆ ಉತ್ತರ ಹುಡುಕುವ ಪ್ರಯತ್ನ ಮಾಡಿದ್ದೆವು. (ಈ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ). ಅದರ ಕೊನೆಯಲ್ಲಿ "ಮನಸು ಕಾರಣವಲ್ಲ" ಮತ್ತು "ದನುಜ ಗಜ ಮದಹಾರಿ" ಎಂಬ ಎರಡು ಅಭಿವ್ಯಕಿಗಳಿಗೆ  ವಿಶೇಷಾರ್ಥಗಳನ್ನು ನೋಡುವ ಪ್ರಯತ್ನ ಮಾಡಬೇಕಿತ್ತು. ಈಗ ಅದನ್ನಿಷ್ಟು ನೋಡೋಣ. 

*****

ರುದ್ರದೇವರು ಮನೋಭಿಮಾನಿಗಳು. ನಮ್ಮ ಮನಸ್ಸು ನಾವು ಮಾಡುವ ಎಲ್ಲ ಕೆಲಸ-ಕಾರ್ಯಗಳಿಗೂ ಮೂಲ ಶಕ್ತಿ. ಎಲ್ಲ ರೀತಿಯ ಸಾಧನ-ಸಲಕರಣೆಗಳಿದ್ದರೂ ಮನಸ್ಸು ಕೆಲಸ ಮಾಡದಿದ್ದರೆ ಮನುಷ್ಯನು ನಿಷ್ಕ್ರಿಯನಾಗುತ್ತಾನೆ. ಅದೇ ರೀತಿ ಕೆಲವು ಅವಶ್ಯಕ ಸಂಪತ್ತುಗಳಿಲ್ಲದಿದ್ದರೂ ಕೂಡ ಮನುಷ್ಯನು ಮನಸ್ಸು ಮಾಡಿದರೆ ಅವುಗಳನ್ನು ಹೇಗೋ ಹೊಂದಿಸಿಕೊಂಡು, ಅಥವಾ ಅವುಗಳಿಗೆ ಪರ್ಯಾಯ ಪರಿಕರಗಳನ್ನು ಹುಡುಕಿಕೊಂಡು, ಉದ್ದೇಶಿತ ಕೆಲಸಗಳನ್ನು ಸಾಧಿಸುತ್ತಾನೆ.  ಇದು ನಾವು ನಮ್ಮ ನಮ್ಮ ಅನುಭವಗಳಿಂದ ಕಂಡುಕೊಂಡಿರುವ ಸತ್ಯ. 

"ನೀನು ಮನಸ್ಸು ಮಾಡಿದರೆ ಇದನ್ನು ಸುಲಭವಾಗಿ ಮಾಡಿ ಮುಗಿಸುವೆ. ಮುಖ್ಯ, ನೀನು ಮನಸ್ಸು ಮಾಡಬೇಕು" ಎನ್ನುವ ಮಾತನ್ನು ನಾವು ಮತ್ತೆ ಮತ್ತೆ ಆಡುತ್ತಿರುತ್ತೇವೆ ಅಥವಾ ಕೇಳುತ್ತಿರುತ್ತೇವೆ. "ಎಷ್ಟು ಹೇಳಿದರೂ ಅವನು ಮನಸ್ಸು ಮಾಡಲಿಲ್ಲ. ಕೆಲಸ ಆಗಲಿಲ್ಲ" ಅನ್ನುತ್ತೇವೆ. "ವೇರ್ ದೇರ್ ಈಸ್ ಎ ವಿಲ್, ದೇರ್ ಈಸ್ ಎ ವೇ" ಎಂದು ಇಂಗ್ಲಿಷಿನಲ್ಲಿ ಹೇಳುವುದೂ ಇದನ್ನೇ. "ಮನ ಏವ ಮನುಷ್ಯಾಣಾ೦ ಕಾರಣಂ ಬಂಧ ಮೊಕ್ಷಯೋ:" ಎನ್ನುವುದಂತೂ ಬಹಳ ಪ್ರಸಿದ್ಧವಾದ ನುಡಿ. ಮನುಷ್ಯನ ಕರ್ತೃತ್ವ ಶಕ್ತಿಗೆ ಮನಸ್ಸೇ ಕೀಲಿಕೈ. ಮನಸ್ಸು ಈ ಕಡೆ ತಿರುಗಿದರೆ ಅದನ್ನು ಮುಚ್ಚಿ ಬೀಗ ಹಾಕುತ್ತದೆ. ಆ ಕಡೆ ತಿರುಗಿದರೆ ಅದನ್ನು ತೆಗೆದು ದಾರಿಮಾಡುತ್ತದೆ. ನಮ್ಮ ಕೈಯಲ್ಲಿ ಇರುವ ಮತ್ತು ಸಿಕ್ಕುವ ಎಲ್ಲ ಶಕ್ತಿಗಳಲ್ಲಿ ಅತ್ಯಂತ ಪ್ರಮುಖವಾದವುಗಳಲ್ಲಿ  ಮನಸ್ಸು ಒಂದು ಮುಖ್ಯ ಶಕ್ತಿ. 

ನಾವು ಮಾಡುವ ಕೆಲಸಗಳು ಸರಿಯಾಗಿ, ನೇರವಾಗಿ, ಸಾರ್ಥಕವಾದರೆ, ನ್ಯಾಯಯುತವಾಗಿದ್ದರೆ ಅವುಗಳಿಂದ ಪುಣ್ಯ ಸಂಪಾದನೆ. ಅನ್ಯಾಯದ, ಅಧರ್ಮದ ಕೆಲಸಗಳಾದರೆ ಅವುಗಳಿಂದ ಪಾಪ ಸಂಪಾದನೆ. ಪಾಪ, ಪುಣ್ಯಗಳೆಂಬುವು ಮಾಡುವ ಕೆಲಸಗಳಿಂದ ಬಂದ ಫಲಿತಾಂಶಗಳು. ಆದ್ದರಿಂದಲೇ ಈ ರೀತಿ ಹೇಳುವುದು:

ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲ 
ಅನಲಾಕ್ಷ ನಿನ್ನ ಪ್ರೇರಣೆ ಇಲ್ಲದೇ 
ದನುಜಗಜ ಮದಹಾರಿ ದಂಡ ಪ್ರಣಾಮ ಮಾಳ್ಫೆ   
ಮಣಿಸೋ ಈ ಶಿರವನ್ನು ಸಜ್ಜನರ ಚರಣದಲಿ 
 
ಹೀಗಿರುವಲ್ಲಿ, ಮೇಲೆ ಏಕೆ "ಮನಸು ಕಾರಣವಲ್ಲ" ಎಂದು ಹೇಳಿರುವುದು? ಇದೊಂದು ವಿಚಿತ್ರ ಅಲ್ಲವೇ? ಇದು ಒಂದು ಸಾಧುವಾದ ಪ್ರಶ್ನೆಯೇ.  ಪಾಪ ಪುಣ್ಯಕ್ಕೆಲ್ಲಾ ಮನಸ್ಸೇ ಕಾರಣ ಎನ್ನುವುದು ಸರಿ. ಆದರೆ ಮನಸ್ಸು ಒಂದು ವಾಹನವಿದ್ದಂತೆ. ವಾಹನ ಸರಿಯಾಗಿ ನಡೆದರೆ ಅದರಿಂದ ಪ್ರಯೋಜನ. ಅದೇ ವಾಹನ ಅಡ್ಡಾದಿಡ್ಡಿಯಾಗಿ ನಡೆದು ಅಪಘಾತ ಮಾಡಿದರೆ? ಆಗ ವಾಹನದಿಂದ ಆಗುವ ಪ್ರಯೋಜನಕ್ಕಿಂತ ಹಾನಿಯೇ ಹೆಚ್ಚು. ಆದರೆ ಅದು ಅಪಘಾತ ಮಾಡಿದರೆ ಅದಕ್ಕೆ ವಾಹನ ಹೊಣೆ ಅಲ್ಲ. ಒಂದು ಕಾರು ರಸ್ತೆಯಲ್ಲಿ ನಡೆಯುತ್ತಿರುವ ಜನಗಳ ಮೇಲೆ ಹಾದು ಹೋಯಿತು ಎಂದರೆ ಅದು ಕಾರಿನ ತಪ್ಪಲ್ಲ. ಅದು ಅದನ್ನು ನಡೆಸುತ್ತಿರುವ ಚಾಲಕನ ಹೊಣೆ. ಹೀಗೆಯೇ ಮನಸ್ಸಿನ ಕೆಲಸಗಳಿಗೆ ಅದರ ಒಡೆಯನಾದ ಜೀವನೇ ಹೊಣೆ ಹೊರಬೇಕು. 

ಯಾವುದೋ ಒಂದು ಅಪಘಾತವಾದಾಗ ಸಂಬಂಧಿಸಿದ ವಾಹನದ ಚಾಲಕನು "ನನಗೇನೂ ಗೊತ್ತಿಲ್ಲ. ನಾನೇನು ಮಾಡಲಿ? ಕಾರು ಅಡ್ಡಾದಿಡ್ಡಿ ಚಲಿಸಿತು. ಅಪಘಾತಕ್ಕೆ ಅದೇ ಕಾರಣ. ಅದನ್ನೇ ಕೇಳಿ. ನನ್ನನ್ನೇನು ಕೇಳುತ್ತೀರಿ?" ಎಂದು ಹೇಳಿದರೆ ಕೇಳಿದವರು ನಗುತ್ತಾರೆ. ಮನಸ್ಸಿನ ವಿಷಯವೂ ಹೀಗೆ. ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಅದರಿಂದ ಪ್ರಯೋಜನ ಪಡೆಯುವುದು ಜೀವನ ಜವಾಬ್ದಾರಿ. ಚಾಲಕನು ವಾಹನವನ್ನು ಅಂಕೆಯಲ್ಲಿಟ್ಟುಕೊಂಡು ಸರಿಯಾಗಿ ನಡೆಸಬೇಕು. ಹೀಗೆ ಸರಿಯಾಗಿ ನಡೆಸಲು ತಿಳಿದವರಿಂದ ವಾಹನ ಚಾಲನೆ ಮೊದಲು ಕಲಿಯಬೇಕು. ಟ್ರ್ಯಾಫಿಕ್ ಸಿಗ್ನಲ್ಲುಗಳು ಸರಿಯಾಗಿ ಕೆಲಸ ಮಾಡಬೇಕು. ವಾಹನಗಳು ಸುಸ್ಥಿತಿಯಲ್ಲಿರಬೇಕು. ಮನಸ್ಸಿನೆಂಬ ವಾಹನ ನಡೆಸಲು ಕಲಿಸುವ ಪ್ರಭುಗಳು ಮಹಾರುದ್ರದೇವರು. ನಿಯಮಗಳಿಗೆ ವಿರುದ್ಧವಾಗಿ ಹೋಗದಂತೆ, ಸರಿದಾರಿಯಲ್ಲಿ ನಡೆಯುವಂತೆ ಮೇಲ್ವಿಚಾರಣೆ ಮಾಡುವವರು ಅವರು. ಚಾಲಕನು ಕಲಿಸುವ ಗೈಡನ್ನು ಪಕ್ಕದಲ್ಲಿ ಕೂಡಿಸಿಕೊಂಡರೆ ಅಪಘಾತ ಆಗುವ ಸಂದರ್ದಗಳಲ್ಲಿ ಅವರು ಅವನ್ನು ನಿವಾರಣೆ ಮಾಡುತ್ತಾರೆ. ಅವರ ಪ್ರಾರ್ಥನೆ ಮಾಡಿ, ಅವರ ಮೇಲ್ವಿಚಾರಣೆಯಲ್ಲಿ ಮನಸ್ಸೆಂಬ ವಾಹನ ನಡೆಸಿದರೆ ದುರ್ಘಟನೆಗಳು ಆಗುವುದಿಲ್ಲ. 

ಮನಸ್ಸು ಸರಿದಾರಿಯಲ್ಲಿ ಹರಿಯಬೇಕಾದರೆ ಏನು ಮಾಡಬೇಕು? ಕೆಟ್ಟವರ ಸಹವಾಸ ಮಾಡಿದರೆ ಮನಸ್ಸು ಕೆಡುತ್ತದೆ. ಅದೇ ಒಳ್ಳೆಯವರ ಜೊತೆ ಸಿಕ್ಕರೆ ಮನಸ್ಸು ಒಳ್ಳೆಯ ನಡತೆ ತೋರಿಸುತ್ತದೆ. ಹೀಗೆ ಸಜ್ಜನರ ಜೊತೆ ಸಿಗುವಂತೆ ಮಾಡುವವರು ಮಹಾದೇವರು. ಈ ಹಿನ್ನೆಲಿಯಲ್ಲಿ "ಪಾಪ-ಪುಣ್ಯಕ್ಕೆಲ್ಲ ಮನಸು ಕಾರಣವಲ್ಲ. ನಿನ್ನ ಪ್ರೇರಣೆ ಮುಖ್ಯ. ನನ್ನನ್ನು ಸತ್ಕಾರ್ಯಗಳಲ್ಲಿ ಪ್ರೇರೇಪಿಸು. ಈ ಮನಸ್ಸು ರಸ್ತೆಯ ಅಕ್ಕ-ಪಕ್ಕದ ಹಳ್ಳ-ಕೊಳ್ಳಗಳೊಳಗೆ ಬೀಳದಂತೆ ತಡೆ. ಯಾವಾಗಲೂ ನನ್ನನ್ನು ರಕ್ಷಿಸು" ಎಂದು ಹೇಳುವುದು ಮೇಲಿನ ಪ್ರಾರ್ಥನೆಯ ತಿರುಳು. 

*****

ಪರಶಿವನ ಆರಾಧನೆ ಮಾಡುವಾಗ ಅವನ ಅನೇಕ ಹೆಸರುಗಳನ್ನೂ, ವಿಶೇಷಣಗಳನ್ನೂ  ಉಪಯೋಗಿಸುತ್ತೇವೆ. ಹೀಗೆ ಅವನ ಅನೇಕ ಹೆಸರುಗಳನ್ನು ಹೇಳುವಾಗ "ಕೃತ್ತಿವಾಸ" "ಚರ್ಮಾ೦ಬರ" "ಚರ್ಮಾ೦ಬರಧರ" 'ಗಜಚರ್ಮಾ೦ಬರಧರ" ಮುಂತಾಗಿ ಹೇಳುತ್ತೇವೆ. ಏಕೆ? "ದನುಜ ಗಜ ಮದಹಾರಿ" ಎಂದು ಏಕೆ ಹೇಳಿದರು? 

ಅನೇಕ ಜನ ರಕ್ಕಸರು ಸಜ್ಜನರ ಹಿಂಸಕರಾಗಿ ಅವರ ಜೀವನಗಳಿಗೆ ಉಪದ್ರವ ಕೊಡುವುದೇ ವೃತ್ತಿ ಮಾಡಿಕೊಂಡಿದ್ದರು. ಈಗಲೂ ಇದ್ದಾರೆ. ಇಂತಹ ದನುಜರ ಉಪಟಳದಿಂದ ತಮ್ಮನ್ನು ರಕ್ಷಿಸಲು ಸುಜೀವರು ರುದ್ರದೇವರನ್ನು ಪ್ರಾರ್ಥಿಸುತ್ತಾರೆ. ಶಂಭುವು ಸುರಗುರುವು. ಹಿಂದೆ ಒಬ್ಬ ರಾಕ್ಷಸನು ಸಜ್ಜನರಿಗೆ ಬಹಳ ತೊಂದರೆಯನ್ನು ಕೊಡುತ್ತಿದ್ದ. ಆಗಾಗ ಆನೆಯ ರೂಪವನ್ನು ಧರಿಸಿ ಮದಿಸಿದ ಆನೆ ಮನಸ್ಸು ಬಂದಂತೆ ಎಲ್ಲ ಕಡೆ ಧಾಂಧಲೆ ಮಾಡುವಂತೆ ನಡೆದುಕೊಳ್ಳುತ್ತಿದ್ದ. ಆರ್ತ ಭಕ್ತರ ಮನವಿಗೆ ಸ್ಪಂದಿಸಿ ಮಹಾದೇವನು ಆ ಗಜಾಸುರನನ್ನು ಕೊಂದನು. ಅವನ ಚರ್ಮವನ್ನು ಸುಲಿದು ಅದನ್ನೇ ವಸ್ತ್ರದಂತೆ ಧರಿಸಿ "ಒಳ್ಳೆಯ ಜೀವಿಗಳಿಗೆ ಕಷ್ಟ ಕೊಡುವ ದುರುಳರಿಗೆ ಇದೇ ಗತಿ" ಎಂದು ಮಾದರಿ ಮಾಡಿ ತೋರಿಸಿದನು. ಮದಿಸಿದ ಆನೆಯ ರೂಪದ ಗಜಾಸುರನ ಸೊಕ್ಕನ್ನು ಅಡಗಿಸಿ ಕೊಂದುದರಿಂದ "ದನುಜ ಗಜ ಮದ ಹಾರಿ" ಆದನು. ಚರ್ಮವನ್ನು ಹೊದ್ದುದರಿಂದ "ಚರ್ಮಧಾರಿ" ಆದನು. ಆನೆಯ ಚರ್ಮವಾದುದರಿಂದ "ಗಜಚರ್ಮಾ೦ಬರಧರ" ಎಂದು ಹೆಸರಾಯಿತು. 

"ವಲುವೂರು" ಎನ್ನುವ ಹೆಸರಿನ ಸ್ಥಳ ತಮಿಳುನಾಡಿನ "ಮಯಿಲಾಡುತುರೈ" (ಹಿಂದಿನ "ಮಾಯಾವರಂ") ಜಿಲ್ಲೆಯ ಒಂದು ಊರು. ಜಿಲ್ಲಾಕೇಂದ್ರದಿಂದ ಆರು ಮೈಲಿ ದೂರದ ಸಣ್ಣ ಪಟ್ಟಣ. ಇಲ್ಲರುವ ದೇವಾಲಯದಲ್ಲಿ ಎಂಟು ಕೈಗಳುಳ್ಳ "ಗಜಾಸುರಸಂಹಾರಿ" ಈಶ್ವರನ ಕಂಚಿನ ಪ್ರತಿಮೆಯನ್ನು ಆರಾಧಿಸುತ್ತಾರೆ. ಕರ್ನಾಟಕದ ಹೆಸರಾಂತ ಹಳೇಬೀಡಿನ "ಶಾಂತಲೇಶ್ವರ" ದೇವಾಲಯದಲ್ಲಿ ಗಜಾಸುರಸಂಹಾರಿ ಪ್ರತಿಮೆಯ ಕೆತ್ತನೆಯಿದೆ. ಪಕ್ಕದ ಚಿತ್ರದಲ್ಲಿ ಅದನ್ನು ನೋಡಬಹುದು. 

ಮಹೇಶ್ವರನು ಕೇವಲ ದುಷ್ಟರ ಶಿಕ್ಷೆಗೆ ಮಾತ್ರವಲ್ಲದೆ ಒಳ್ಳೆಯವರಿಗೆ  ಬಹುಪ್ರೀತಿ ತೋರಿಸುವ ಕರುಣಾಳು. ಉಮಾಪತಿಗೆ ಕೆಟ್ಟವರನ್ನು ಕಂಡರೆ ಎಷ್ಟು ಕೋಪವೋ, ಒಳ್ಳೆಯವರನ್ನು ಕಂಡರೆ ಅಷ್ಟೇ ಪ್ರೀತಿ. "ಖಳಜನ ಕೃತರೋಷ:". ಹಾಗೆಯೇ "ಭಕ್ತಜನಾಶ್ರ್ರಯ ವರದ". ಪೊಲೀಸು ಅಧಿಕಾರಿಗೆ ಕಳ್ಲರು ಹೆದರುವಂತೆ ದುಷ್ಟರು ಅವರನ್ನು ಕಂಡರೆ ಹೆದರುತ್ತಾರೆ. ಸಜ್ಜನರು ರಕ್ಷಣೆಗೆ ಅವರ ಮೊರೆ ಹೋಗುತ್ತಾರೆ. 

*****

ದೇವೇಂದ್ರನು ಎಲ್ಲ ದೇವತೆಗಳಿಗೆ ಅಧಿಪತಿಯು. ಸಕಲ ಮಂತ್ರಪೂತ ಅಸ್ತ್ರಗಳೂ ಅವನ  ಬಳಿ ಇವೆ. ಯಾವ ಅಸ್ತ್ರ ಬೇಕಾದರೂ ಅವನನ್ನೇ ಕೇಳಬೇಕು. ಮಹಾಭಾರತದ ಕುರುಕ್ಷೇತ್ರ ಯುದ್ಧಕ್ಕೆ ತಯಾರಾಗಲು ಅರ್ಜುನನು ವನವಾಸ ಕಾಲದಲ್ಲಿ ಅಸ್ತ್ರಗಳ ಶೇಖರಣೆಗೆ ಹೊರಡುತ್ತಾನೆ. ತಪಸ್ಸಿನಿಂದ ದೇವೇಂದ್ರನನ್ನು ಮೆಚ್ಚಿಸುತ್ತಾನೆ. ಅಸ್ತ್ರಗಳನ್ನು ಕೇಳುತ್ತಾನೆ. ದೇವೇಂದ್ರನು ಅರ್ಜುನನು ತನ್ನ ಮಗನಾದರೂ ಅವನಿಗೆ ಕೊಡುವುದಿಲ್ಲ. "ಎಲ್ಲ ಅಸ್ತ್ರಗಳೂ ನನ್ನ ಬಳಿ ಇವೆ.  ಆದರೆ ನಾನು ಅವುಗಳ ನ್ಯಾಸಾಧಿಕಾರಿ (ಟ್ರಸ್ಟಿ) ಇರುವಂತೆ. ಮಹಾದೇವರು ಅವುಗಳ ಒಡೆಯರು. ಅವರ ಅಪ್ಪಣೆ ಇಲ್ಲದೆ ನಾನು ಕೊಡುವುದಿಲ್ಲ. ಮೊದಲು ಅವರನ್ನು ಮೆಚ್ಚಿಸಿ ಅವರ ಪ್ರೀತಿ ಸಂಪಾದಿಸು. ಅವರಿಂದ "ಪಾಶುಪತ" ಅನ್ನುವ ಅಸ್ತ್ರವನ್ನು ಪಡೆದುಕೋ. ನಂತರ ಅವರ ಅಪ್ಪಣೆಯಾಗುವುದರಿಂದ ನಾನು ಬೇರೆ ಎಲ್ಲ ಅಸ್ತ್ರಗಳನ್ನೂ ಕೊಡುತ್ತೇನೆ" ಅನ್ನುತ್ತಾನೆ. 

ಅಂತಹ ದೇವೆತೆಗಳ ಅಧಿಪತಿಗೂ ದಳಪತಿಗಳಾದವರು ಮಹಾರುದ್ರದೇವರು. 

Thursday, July 3, 2025

ಗೀತೆ ಎಂಬ ಹಾಲು; ಭಾಗವತವೆಂಬ ಹಣ್ಣು


ಪ್ರತಿಯೊಂದು ವಿಷಯವನ್ನೂ ಸಂದರ್ಭಗಳ ಹಿನ್ನೆಲೆಯಲ್ಲಿ ಸರಿಯಾಗಿ ತಿಳಿಯುವ ಸಲುವಾಗಿ ಅದಕ್ಕೆ ಸಂಬಂಧಿಸಿದ ಗ್ರಂಥಗಳನ್ನೂ, ವಿಶಿಷ್ಟ ವಾಂಗ್ಮಯವನ್ನೂ ಕೂಲಂಕುಷವಾಗಿ ಅಭ್ಯಸಿಸಿ, ಅವುಗಳ ಹಿಂದು-ಮುಂದಿನ ವಿವರಗಳ ಬೆಳಕಿನಲ್ಲಿ ನಿಖರವಾಗಿ ಅರ್ಥ ಮಾಡಿಕೋಳ್ಳಬೇಕೆಂಬ ಪ್ರಮೇಯವನ್ನು ಮುಕುಂದರಾಯರ "ಏಕಾದಶಿಯ ದಿನ ಹಾಲು-ಹಣ್ಣು ಸೇವಿಸಿ" ಎಂಬ ಸಂಚಿಕೆಯ ಅನುಭವದಿಂದ ತಿಳಿದೆವು. ಈ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮುಕುಂದರಾಯರ ಎಡವಟ್ಟಿನ ಪರಿಸ್ಥಿತಿಯನ್ನು ಕಂಡ ಹಿರಿಯರೊಬ್ಬರು "ನಾಳೆ ಪುರಾಣಕ್ಕೆ ಸ್ವಲ್ಪ ಬೇಗ ಬನ್ನಿ. ಹಾಲು ಎಂದರೆ ಭಗವದ್ಗೀತೆ. ಹಣ್ಣು ಎಂದರೆ ಶ್ರೀಮದ್ ಭಾಗವತ.  ಅದು ಹೇಗೆ ಎಂದು ನಿಮಗೆ ವಿವರಿಸುತ್ತೇನೆ" ಎಂದು ಹೇಳಿದ್ದರು. ಅದರ ವಿವರಗಳನ್ನು ಈಗ ನೋಡೋಣ. 

*****

ಮುಕುಂದರಾಯರು ದೇವಾಲಯವನ್ನು ಬೇಗ ತಲುಪಿ ಹಿರಿಯರ ಬರವಿಗೆ ಕಾತುರದಿಂದ ಕಾಯುತ್ತಿದ್ದರು. ಹೇಳಿದ ಮಾತಿಗೆ ಸರಿಯಾಗಿ ಆ ವೃದ್ಧರು ಬಂದರು. ಇನ್ನೂ ಪುರಾಣ ಕೇಳುವ ಜನಗಳ ಆಗಮನ ಆಗಿರಲಿಲ್ಲ. ಇಬ್ಬರೂ ಪರಸ್ಪರ ಮಾತಾಡಲು ಅನುಕೂಲವಾಗಿರುವ ಒಂದು ಜಾಗದಲ್ಲಿ ಕುಳಿತರು. ಮಾತುಕತೆ ಪ್ರಾರಂಭವಾಯಿತು. 

"ಏನು, ನಿರೀಕ್ಷಿದಂತೆ ಬೇಗ ಬಂದಿದ್ದೀರಿ"
"ನಿನ್ನೆ ಮನೆಗೆ ಹೋದಮೇಲೆ ರಾತ್ರಿಯೆಲ್ಲ  ನೀವು ಹೇಳಿದ "ಗೀತೆಯೇ ಹಾಲು. ಭಾಗವತವೇ ಹಣ್ಣು" ಎಂಬುದನ್ನೇ ಯೋಚಿಸುತ್ತಿದ್ದೆ. ಅದು ಹೇಗೆ ಈ ರೀತಿ ಪ್ರಚುರವಾಯಿತು ಎಂದು ತಿಳಿಯುವ ಕುತೂಹಲ. ನೀವು ವಿವರಿಸುತ್ತೇನೆ ಎಂದು ಹೇಳಿದುದು  ಒಳ್ಳೆಯದಾಯಿತು. ಅದನ್ನು ಸ್ವಲ್ಪ ಬಿಡಿಸಿ ಹೇಳಿದರೆ ನನಗೆ ಬಹಳ ಅನುಕೂಲವಾಗುತ್ತದೆ"
"ಭಗವದ್ಗೀತೆಯನ್ನು ಕ್ರಮವಾಗಿ ಅಭ್ಯಾಸ ಮಾಡುವವರನ್ನು, ಪಾರಾಯಣ ಮಾಡುವವರನ್ನು ನೀವು ನೋಡಿದ್ದೀರಲ್ಲ"
"ಅನೇಕರನ್ನು ನೋಡಿದ್ದೇನೆ"
"ಅವರು ಹೇಗೆ ಪ್ರಾರಂಭಿಸುತ್ತಾರೆ?"
"ಅಂದರೆ ಅರ್ಥವಾಗಲಿಲ್ಲ"
"ನೇರವಾಗಿ ಮೊದಲನೇ ಅಧ್ಯಾಯದಿಂದ ಪ್ರಾರಂಭಿಸುತ್ತಾರೋ, ಅಥವಾ ಅದಕ್ಕೆ ಮೊದಲು ಏನಾದರೂ ಮಾಡುತ್ತಾರೋ?"
"ಮೊದಲು  ಬೇರೆ ಕೆಲವು ಶ್ಲೋಕಗಳನ್ನು ಹೇಳುತ್ತಾರೆ"
"ಅವುಗಳಿಗೆ "ಧ್ಯಾನ ಶ್ಲೋಕಗಳು" ಎನ್ನುತ್ತಾರೆ"
"ಹಾಗಂದರೆ ಏನು?"
"ಕೃತಿಯನ್ನು ಪ್ರಾರಂಭ ಮಾಡುವ ಮೊದಲು ಅದರ ಹುಟ್ಟಿಗೆ ಕಾರಣರಾದವರನ್ನು ನೆನೆಯುವ ಶ್ಲೋಕಗಳನ್ನು ಹೇಳುತ್ತಾರೆ"
"ಹೀಗೆ ಮಾಡುವುದು ಏಕೆ?"
"ಲೌಕಿಕದಲ್ಲಿ ಯಾವುದಾದರೂ ಪುಸ್ತಕ ಓದುವ ಮುಂಚೆ ಅದರ ಬಗ್ಗೆ ಏನಾದರೂ ತಿಳಿದುಕೊಳ್ಳಲು ಪ್ರಯತ್ನ ಪಡುತ್ತೀರೋ? ಅದನ್ನು ಬರೆದವರು ಯಾರು, ಅದರ ಕಥಾವಸ್ತು, ಏನು? ರಚನೆ ಎಲ್ಲಿ ಮತ್ತು ಏಕೆ ಆಯಿತು, ಈ ರೀತಿ"
"ನಾವು ಶಾಲೆಗಳಲ್ಲಿ ಓದುವಾಗ ಕವಿ-ಕಾವ್ಯ ವಿಚಾರ ಎಂದು ಸ್ವಲ್ಪ ಹಿನ್ನೆಲೆ ಓದುತ್ತಿದ್ದೆವು"
"ಯಾವುದಾದರೂ ಅಮೂಲ್ಯವಾದ ಗ್ರಂಥ ಓದುವ ಮೊದಲು ಅದರ ಹಿನ್ನೆಲೆ ಇದೇ ರೀತಿ ತಿಳಿಯುವುದು, ತಿಳಿದಮೇಲೆ ಮತ್ತೆ ಓದುವಾಗ ಅದನ್ನು ನೆನೆಸಿಕೊಳ್ಳುವುದು ನಡೆದುಬಂದಿರುವ ಪದ್ಧತಿ"
"ಭಗವದ್ಗೀತೆ ಓದುವಾಗ ಅಥವಾ ಪಾರಾಯಣ ಮಾಡುವಾಗ ಯಾವ ಶ್ಲೋಕಗಳನ್ನು ಹೇಳುತ್ತಾರೆ?"
"ಅವರವರ ಮನೆತನದ ರೀತಿಯಂತೆ ಅಥವಾ ಗುರುಗಳು ಹೇಳಿಕೊಟ್ಟ ಪದ್ಧತಿಯ ಪ್ರಕಾರ ಹೇಳುತ್ತಾರೆ"
"ಇದರಲ್ಲಿ ಏನು ವಿವರಗಳು ಇರುತ್ತವೆ?"
"ಗ್ರಂಥಕರ್ತೃವಾದ ಭಗವಾನ್ ವೇದವ್ಯಾಸರು ಮತ್ತು ಗೀತೆಯನ್ನು ಉಪದೇಶಿಸಿದ ಶ್ರೀಕೃಷ್ಣ, ಇವರುಗಳ ನೆನಪು ಮಾಡಿಕೊಂಡು ಅವರಿಗೆ ಕೃತಜ್ಞತೆಗಳನ್ನು ಹೇಳುವ ಶ್ಲೋಕಗಳು. ಇದರ ಜೊತೆಗೆ ಭಗವದ್ಗೀತೆಯ ಶ್ರೇಷ್ಠತೆಯನ್ನು ಹೇಳುವ ಶ್ಲೋಕಗವಿರುತ್ತದೆ"
"ಭಗವದ್ಗೀತೆಯ ಉತ್ತಮತೆಯನ್ನು ಹೇಳುವ ಶ್ಲೋಕವೇನು?'
"ಅದು ಹೀಗಿದೆ. ಕೇಳಿ"

ಸರ್ವೋಪನಿಷದೋ ಗಾವಃ ದೋಗ್ಧಾ ಗೋಪಾಲನಂದನಃ 
ಪಾರ್ಥೋ ವತ್ಸ: ಸುಧೀರ್ಭೋಕ್ತಾ ದುಗ್ಧಮ್ ಗೀತಾಮೃತಮ್ ಮಹತ್

"ಎಲ್ಲ ಉಪನಿಷತ್ತುಗಳೇ ಹಸುಗಳು. ಶ್ರೀಕೃಷ್ಣನು ಈ ಹಸುಗಳ ಹಾಲನ್ನು ಕರೆದು ಕೊಡುವ ಗೋಪಾಲಕನು. ಪಾರ್ಥನೆಂಬ ಹೆಸರಿನ ಅರ್ಜುನನೇ ಕರುವು. ಭಕ್ತಮಹಾಜನರೇ ಆ ಅಮೃತಸಮವಾದ ಹಾಲನ್ನು ಸೇವಿಸುವವರು"

"ಎಲ್ಲ ಉಪನಿಷತ್ತುಗಳೇ ಹಸುಗಳು ಅಂದಮೇಲೆ ಬೇರೆ ಸಂಬಂಧಿಸಿದ ವೇದಾದಿ ವಾಂಗ್ಮಯದ ಪಾತ್ರವೇನು?"
"ಉಪನಿಷತ್ತುಗಳೇ ಹಸುಗಳು ಎಂದರೆ ಬರೀ ಉಪನಿಷತ್ತುಗಳೆಂದು ಅರ್ಥವಲ್ಲ. ಉಪನಿಷತ್ತುಗಳು ವಿಶಾಲ ವಾಂಗ್ಮಯದ ಸಿಹಿ ಕೆನೆ ಎಂದು ನಂಬಿಕೆ. ಆದ್ದರಿಂದ ಭಗವದ್ಗೀತೆ ಈ ಎಲ್ಲ ವಾಂಗ್ಮಯದ ಸಾರಭೂತ ಕೃತಿಯೂ ಹೌದು"
"ಅರ್ಜುನನು ಕರು ಎನ್ನುವುದೇಕೆ?"
"ನೀವು ಹಸುವಿನ ಹಾಲು ಕರೆಯುವುದು ನೋಡಿದ್ದೀರಾ?"
"ನೋಡಿದ್ದೇನೆ"
"ಹಾಲು ಕರೆಯುವ ಮೊದಲು ಕರುವನ್ನು ಹಸುವಿನ ಬಳಿ ಬಿಡುತ್ತಾರೆ. ಕರು ಹತ್ತಿರ ಬಂದಾಗ ಹಸು ಸುಲಭವಾಗಿ ಕೆಚ್ಚಲಿನಿಂದ ಹಾಲನ್ನು ಹರಿಸುತ್ತದೆ. ಕರು ಹಾಲು ಕುಡಿದನಂತರ ಮಿಕ್ಕ ಹಾಲನ್ನು ಕರೆದುಕೊಳ್ಳುತ್ತಾರೆ. (ದುರಾಸೆ ಮನುಷ್ಯರು ಕರು ಪೂರ್ತಿ ಕುಡಿಯುವವರೆಗೂ ಬಿಡುವುದಿಲ್ಲ). ಭಗವದ್ಗೀತೆ ಎಂಬ ಹಾಲನ್ನು ಮೊದಲು ಕುಡಿದವನು ಪಾರ್ಥ. ಆದ್ದರಿಂದ ಅವನು ಕರು. ಎಲ್ಲ ಸಜ್ಜನರಿಗೆ ಅವನ ನಿಮಿತ್ತದಿಂದ, ಮತ್ತು ಅವನ ನಂತರ ಸಿಕ್ಕಿತು. ಆದ್ದರಿಂದ ಅವನೇ ವತ್ಸ"
"ಅರ್ಥವಾಯಿತು"
"ಏನು ಅರ್ಥವಾಯಿತು?"
"ನೀವು ಹೇಳಿದ ಎಲ್ಲ ಅಂಶಗಳು ಮತ್ತು  ಎಲ್ಲಕ್ಕಿಂತ ಹೆಚ್ಚಾಗಿ ಪುರಾಣದಲ್ಲಿ ಹೇಳಿದ "ಏಕಾದಶಿಯ ದಿನ ಹಾಲು ಸೇವಿಸಿರಿ ಎಂದರೆ ಭಗವದ್ಗೀತೆಯೆಂಬ ಹಾಲನ್ನು ಕುಡಿಯಿರಿ. ಅದರ ಪಾರಾಯಣ ಮಾಡುವ ಮೂಲಕ", ಎಂದು"
*****

"ಶ್ರೀಮದ್ ಭಾಗವತ ಹಣ್ಣು ಎಂದು ಹೇಗಾಯಿತು?"
"ಶ್ರೀಮದ್ ಭಾಗವತದ ಮೊದಲ ಸ್ಕಂದ, ಮೊದಲ ಅಧ್ಯಾಯದಲ್ಲಿ ಬರುವ ಶ್ಲೋಕ ಹೀಗಿದೆ. ಕೇಳಿ"

ನಿಗಮಕಲ್ಪತರೋರ್ಗಲಿತಂ  ಫಲಂ 
ಶುಕಮುಖಾತ್ ಅಮೃತದ್ರವ ಸಂಯುತಂ 
ಪಿಬತ ಭಾಗವತರಸಮಾಲಯಂ
ಮುಹುರಹೋ ರಸಿಕ ಭುವಿಭಾವುಕ : 

"ದೊಡ್ಡದನ್ನು ತಿಳಿಯಬೇಕೆಂಬ ಮತ್ತು ತಿಳಿದ ಈ ಜಗತ್ತಿನ ಎಲ್ಲ ಮಹಾಜನಗಳೇ! ಶುಕಮಹಾಮುನಿಗಳಿಂದ ಹೇಳಲ್ಪಟ್ಟ ವೈದಿಕ ವಾಂಗ್ಮಯವೆಂಬ ಕಲ್ಪವೃಕ್ಷದ ಅಮೃತದಂತಹ ರಸಭರಿತವಾದ ಶ್ರೀಮದ್ ಭಾಗವತವೆಂಬ ಹಣ್ಣನ್ನು ತಿನ್ನಿರಿ.  ಶ್ರೀಮದ್ ಭಾಗವತವೆಂಬ ಹಣ್ಣಿನ ದಿವ್ಯ ರಸವನ್ನು ಕುಡಿಯಿರಿ. (ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ)" 

"ಭಗವದ್ಗೀತೆ ಹಾಲು ಎಂದಂತೆ ಶ್ರೀಮದ್ ಭಾಗವತ ಹಣ್ಣು ಎಂದು ಅರ್ಥವಾಯಿತು. ಈ ಹಣ್ಣಿನ ರಸದ ವಿಶೇಷವೇನು?"
"ಬೇರೆ ಹಣ್ಣುಗಳ ರಸಕ್ಕೆ ಕಾಲ ಮಿತಿ ಇದೆ. ಭಾಗವತವೆಂಬ ಹಣ್ಣಿನ ರಸಕ್ಕೆ ಕಾಲ ಮಿತಿ ಇಲ್ಲ. ಅಷ್ಟು ಮಾತ್ರವಲ್ಲ. ಇದು ಬರಿಯ ಸಿಹಿಯಾದ ಹಣ್ಣಿನ ರಸವಲ್ಲ. ಅಮೃತದಂತಹ ರಸ. ಅಮೃತ ಸೇವಿಸಿದರೆ ಸಾವಿಲ್ಲ ಎಂದಂತೆ. ದೇವತೆಗಳು ಅಮೃತ ಸವಿದು ಸಾವಿಲ್ಲದವರಾಗುತ್ತಾರೆ. ಆದರೆ ಮಹಾಪ್ರಳಯದಲ್ಲಿ ಅವರ ಕಾಲವೂ ಮುಗಿಯುತ್ತದೆ. ಶ್ರೀಮದ್ ಭಾಗವತದ ಹಣ್ಣಿನ ರಸ ಅಮೃತಕ್ಕಿಂತಲೂ ಹೆಚ್ಚು. ಇದರ ರಸದಿಂದ ಜೀವನ-ಮರಣ ಅನ್ನುವ ಚಕ್ರದಿಂದ ಬಿಡುಗಡೆಯಾಗಿ ಮೋಕ್ಷವೆಂಬ ಅತಿ ದೊಡ್ಡ, ಎಂದಿಗೂ ಹೋಗದ, ಹಾನಿಯಾಗದ ಪದವಿ  ಸಿಗುತ್ತದೆ"
"ಈಗ ಅರ್ಥವಾಯಿತು"
"ಏನು ಅರ್ಥವಾಯಿತು?"
"ಶ್ರೀಮದ್ ಭಾಗವತವನ್ನು ಹಣ್ಣು ಎಂದುದು ಏಕೆ ಎಂದು. "ಏಕಾದಶಿಯಂದು ಹಾಲು-ಹಣ್ಣು ಸೇವಿಸಿ"  ಎಂದು ಹೇಳಿದುದರ ಅರ್ಥ"
"ನಾನು ನಿಮಗೆ ಸ್ವಲ್ಪವೇ ವಿವರ ಕೊಟ್ಟಿದ್ದೇನೆ. ದೊಡ್ಡವರನ್ನು ಕೇಳಿದರೆ ಇನ್ನೂ ಅನೇಕ ಅರ್ಥಗಳನ್ನು ತಿಳಿಸಿಕೊಡುತ್ತಾರೆ" 
"ಆಗಲಿ. ಹೀಗೆಯೇ ಪ್ರಯತ್ನ ಪಡುತ್ತೇನೆ"

ಅಷ್ಟರಲ್ಲಿ ಪುರಾಣೀಕರು ಬಂದು ಪುರಾಣ ಪ್ರಾರಂಭವಾಯಿತು. 

*****

ಮುಕುಂದರಾಯರು ಮುಂದಿನ ಏಕಾದಶಿಯಿಂದ ಈ ಹಾಲು-ಹಣ್ಣುಗಳನ್ನು ಸೇವಿಸಲು ಪ್ರಾರಂಭ ಮಾಡಿದರು. 

Tuesday, July 1, 2025

ಏಕಾದಶಿಯ ದಿನ ಹಾಲು-ಹಣ್ಣು ಸೇವಿಸಿ


ಹಿಂದಿನ ಸಂಚಿಕೆಯಲ್ಲಿ, "ಮನವ ಕಬ್ಬಿಣ ಮಾಡು, ಹೇ ಮೃಡನೇ!" ಎಂಬ ಶೀರ್ಷಿಕೆಯ ಅಡಿಯಲ್ಲಿ, "ಸಂದರ್ಭ ನೋಡಿ ಮಾತುಗಳಿಗೆ ಅರ್ಥ ಮಾಡಬೇಕು" ಎನ್ನುವ ವಿಷಯವನ್ನು ಎರಡು ಬಾರಿ ನೋಡಿದ್ದೆವು. (ಈ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ). 

ಸಂದರ್ಭ ನೋಡಿ ಮಾತುಗಳಿಗೆ ಅರ್ಥ ಮಾಡಬೇಕು ಎನ್ನುವುದು ಎಲ್ಲ ಕಾಲಗಳಿಗೂ ಒಪ್ಪುವ, ತಪ್ಪಿಸಲಾಗದ, ತಪ್ಪಿಸಬಾರದಾದ ಅವಶ್ಯಕತೆ. ಯಾವುದೇ ಒಂದು ಸಂದರ್ಭದ ಅರ್ಥದ ತಿಳುವಳಿಕೆಗೆ ಆಯಾ ಗ್ರಂಥದ ಎಲ್ಲ ಭಾಗಗಳನ್ನೂ ಪೂರ್ತಿಯಾಗಿ ಓದಿ, ಹಿಂದು ಮುಂದಿನ ಭಾಗಗಳನ್ನು ಸಮನ್ವಯ ಮಾಡಿ, ನಂತರ ಅರ್ಥಗಳನ್ನು ಗ್ರಹಿಸಬೇಕು. ಯಾವುದೋ ಗ್ರಂಥದ ಒಂದು ಅಧ್ಯಾಯ ಓದಿ, ಅದರ ಹಿಂದೆ ಮುಂದೆ ತಿಳಿಯದೆ, ಸಂದರ್ಭಗಳ ಅರ್ಥ ತಿಳಿಯುವುದು ಬಹಳ ಅಪಾರ್ಥಕ್ಕೆ ದಾರಿ ಮಾಡುತ್ತದೆ. ಇದು ಕೃತಿಗಳನ್ನು ಓದದೇ ಇರುವುದಕ್ಕಿಂತಲೂ ಹೆಚ್ಚು ಅಪಾಯಕಾರಿ. ತುಂಬಾ ಆಳವಾದ ವಿಷಯಗಳಲ್ಲಂತೂ ಕೇವಲ ಆ ಒಂದು ಗ್ರಂತಹವನ್ನಲ್ಲ; ಅದಕ್ಕೆ ಸಂಬಂಧಿಸಿದಂತಹ ಇತರೆ ವಾಂಗ್ಮಯವನ್ನೂ ಅವಲೋಕಿಸಿ ಅರ್ಥಗಳನ್ನು ತಿಳಿಯುವ ಅವಶ್ಯಕತೆ ಇರುತ್ತದೆ. ಇಲ್ಲದಿದ್ದರೆ "ಎತ್ತು ಈಯಿತು ಅಂದರೆ ಕರು ಕೊಟ್ಟಿಗೆಯಲ್ಲಿ ಕಟ್ಟು" ಎನ್ನುವ ಗಾದೆಯಂತೆ ಅಪಾರ್ಥಕ್ಕೆ ಎಡೆಗೊಡುತ್ತದೆ. ಎತ್ತು ಕರು ಹಾಕುವುದಿಲ್ಲ ಎಂದು ತಿಳುವಳಿಕೆ ಇರುವವನು "ಎತ್ತು ಈಯಿತು" ಅಂದ ತಕ್ಷಣ ನಕ್ಕು ಸುಮ್ಮನಾಗುತ್ತಾನೆ. ಕರುವಿನ ಬಗ್ಗೆ ಯೋಚಿಸುವ ಪ್ರಸಂಗವೇ ಬರುವುದಿಲ್ಲ. 

ಈ ಸೂತ್ರವನ್ನು ಚೆನ್ನಾಗಿ ಅರಿಯಲು ಒಂದು ಉದಾಹರಣೆಯನ್ನು ನೋಡೋಣ. 

*****

ಸಾಮಾನ್ಯವಾಗಿ ನಮ್ಮ ಸಂಪ್ರದಾಯಗಳನ್ನು ಸ್ವಲ್ಪಮಟ್ಟಿಗೆ ತಿಳಿದ ಎಲ್ಲರಿಗೂ "ಏಕಾದಶಿ" ಅಂದ ತಕ್ಷಣ ನೆನಪಿಗೆ ಬರುವುದು "ಉಪವಾಸ". ಅನೇಕರು ಏಕಾದಶಿ ಉಪವಾಸ ಅಂದರೆ "ಪಕ್ಕದ್ಮನೆ ಸುಬ್ಬಮ್ಮನಿಗೆ ಇಂದು ಏಕಾದಶಿ ಉಪವಾಸ" ಹಾಡನ್ನು ಜ್ಞಾಪಿಸಿಕೊಂಡು, ಅಲ್ಲಿ ಬರುವ ತಿಂಡಿಗಳ ಪಟ್ಟಿಯನ್ನು ನೋಡಿ, ಪ್ರತಿದಿನ ಏಕಾದಶಿ ಯಾಕೆ ಆಗಬಾರದು ಎಂದು ಆತಂಕ ಪಡಬಹುದು. ಕೆಲವರು ಏಕಾದಶಿ ಉಪವಾಸ ಮಾಡುತ್ತಾರೆ. ಇನ್ನು ಕೆಲವರು ಆ ರೀತಿ ಉಪವಾಸ ಮಾಡುವವರನ್ನು ಅಪಹಾಸ್ಯ ಮಾಡುತ್ತಾರೆ. ತಮಾಷೆಯ ಸಂಗತಿಯೆಂದರೆ ಅನೇಕರಿಗೆ ಇದು ಒಂದು ವ್ರತ ಎಂದು ಗೊತ್ತಿಲ್ಲ. ಗೊತ್ತಿದ್ದವರಿಗೂ ಅದರ ಪೂರ್ತಿ ಆಚರಣೆ ಗೊತ್ತಿಲ್ಲ. 

ಯಾವುದಾದರೂ ರೆಸ್ಟೋರೆಂಟ್ ಬಳಿ ಸಂಜೆ ಎಂಟರ ನಂತರ ಹೋದವರಿಗೆ ಅಲ್ಲಿ ನಡೆಯುವ ಚಟುವಟಿಕೆಗಳ ಪರಿಚಯ ಇರುತ್ತದೆ. ಬೆಳಗ್ಗಿನಿಂದ ನಿಲ್ಲದ ಚಟುವಟಿಕೆ ಆದ ನಂತರ, ಗ್ರಾಹಕರ ಸೇವೆ ಮುಗಿದ ಮೇಲೆ, ಅಂದಿನ ದಿನ ಬಾಗಿಲು ಮುಚ್ಚುವ ಮುಂಚೆ ಕೆಲವು ದೈನಿಕ ಕೆಲಸಗಳಿರುತ್ತವೆ. ಅಡಿಗೆ ಮನೆಯವರಿಗೆ ಮಿಕ್ಕ ಪದಾರ್ಥಗಳನ್ನು ಕೆಡದಂತೆ ಎತ್ತಿಟ್ಟು, ಪಾತ್ರೆಗಳನ್ನು ಶುಚಿ ಮಾಡಿ ಒರೆಸಿಟ್ಟು, ಮಾರನೆಯ ದಿನದ ಅಡಿಗೆಗೆ ನೆನೆಹಾಕುವ ಪದಾರ್ಥಗಳ ಕೆಲಸ ಮುಗಿಸಿ, ಎಲ್ಲ ತಯಾರಿ  ಮಾಡಿದಮೇಲೆ ವಿಶ್ರಾಂತಿ. ಸರ್ವರ್ ಮತ್ತು ಕ್ಲೀನರುಗಳಿಗೆ ಮೇಜಿನ ಮೇಲೆ ಕುರ್ಚಿಗಳನ್ನು ಮಗುಚಿಹಾಕಿ, ಎಲ್ಲ ಸಂದಿಗಳನ್ನೂ ಗುಡಿಸಿ, ನೀರಿನಿಂದ ತೊಳೆದು, ಜಾಗ ಒಣಗಿಸಿ, ಮಾರನೆಯ ದಿನಕ್ಕೆ ಗ್ರಾಹಕರನ್ನು ಎದುರುಗೊಳ್ಳಲು ಸಿದ್ಧ ಮಾಡಿಡಬೇಕು. ಬೆಳಗ್ಗೆ ಆರು ಗಂಟೆಗೆ ಮೊದಲ ಗ್ರಾಹಕ ಬರುವ ವೇಳೆಗೆ ಎಲ್ಲಾ ತಯಾರಾಗಿರಬೇಕು. 

ಪ್ರತಿ ಮನೆಯಲ್ಲಿಯೂ ಗೃಹಿಣಿ ಅಥವಾ ಅಡಿಗೆ ಮನೆ ನೋಡಿಕೊಳ್ಳುವವರು ಈ ಕೆಲಸ ಪ್ರತಿದಿನ ಮಾಡುತ್ತಾರೆ. ಸ್ವಲ್ಪ ಪಾಲುಮಾಲಿಕೆ ಪಟ್ಟರೂ (ಈ ಪದ ಈಗ ಮರೆತೇಹೋಗಿದೆ) ಸಹ ಮನೆಮಂದಿಯ ಆರೋಗ್ಯದ ಮೇಲೆ ನೇರ  ಪರಿಣಾಮ ಆಗುತ್ತದೆ. ಜೊತೆಗೆ ಅಡಿಗೆ ಪದಾರ್ಥಗಳ ಅಪವ್ಯಯವಾಗಿ ಮನೆಯ ಆಯ-ವ್ಯಯ ಏರುಪೇರಾಗುತ್ತದೆ. ಮಾರನೆಯ ದಿನ ಬೆಳಿಗ್ಗೆ ಕೆಲಸ ಮಾಡುವಾಗ ಎಡಚೆಡಚು (ತಾಳ-ಮೇಳ ತಪ್ಪುವುದು) ಆಗುತ್ತದೆ. 

ನಮ್ಮ ದೇಹದಲ್ಲೂ ಇದೇ ರೀತಿಯ ವ್ಯವಸ್ಥೆ ಉಂಟು. ಜಠರ, ಸಣ್ಣ ಕರುಳು, ದೊಡ್ಡ ಕರುಳು ಮೊದಲಾದ ಜೀರ್ಣಾಂಗಗಳಿಗೂ ಆಗಾಗ ಸ್ವಲ್ಪ ವಿಶ್ರಾಂತಿ ಬೇಕು. ಭಾನುವಾರ ದಣಿದ ದೇಹಕ್ಕೆ ವಿಶ್ರಾಂತಿ ಬೇಕು ಎಂದು ಜಗಳವಾಡುವವರೂ ಹೊಟ್ಟೆಗೆ ವಿಶ್ರಾಂತಿ ಕೊಡಲು ತಯಾರಿರುವುದಿಲ್ಲ. ಕ್ರಮವಾದ ಉಪವಾಸ ಜೇರ್ಣೇ೦ದ್ರಿಯಗಳಿಗೆ ಈ ರೀತಿಯ ವಿಶ್ರಾಂತಿ ಕೊಡುತ್ತದೆ. ಏಕಾದಶಿ ಉಪವಾಸ ಈ ಕೆಲಸ ಮಾಡುತ್ತದೆ. ಈಗಿನ ತಲೆಮಾರಿನವರು ಇದನ್ನು ಬಿಟ್ಟು "ಇಂಟರ್ಮಿಟೆಂಟ್ ಫಾಸ್ಟಿಂಗ್" ಮತ್ತು "ಡಬ್ಬಿಯ ಆಹಾರ" ಮೊರೆ ಹೋಗುತ್ತಿರುವುದು ಒಂದು ವಿಪರ್ಯಾಸ. 

*****

ಏಕಾದಶಿ ಉಪವಾಸ ಒಂದು ದಿನದ ಕಟ್ಟಲೆಯಲ್ಲ. ಅದು ಮೂರು ದಿನದ ಒಂದು ವ್ರತ. ನವಮಿ ಎರಡು ಹೊತ್ತು ಊಟ ಮಾಡಬಹುದು. ಏಕಾದಶಿಯ ಹಿಂದಿನ ದಿನ, ದಶಮಿಯಂದು ಒಂದೇ ಹೊತ್ತಿನ ಊಟ. ರಾತ್ರಿ ಏನೂ ತಿನ್ನುವ ಹಾಗಿಲ್ಲ. (ಇದಕ್ಕೆ "ದಶಮಿ ಏಕಭುಕ್ತ" ಅನ್ನುತ್ತಾರೆ). ಎರಡನೆಯ ದಿನ ಏಕಾದಶಿಯಂದು ಪೂರ್ತಿ ಉಪವಾಸ. ಉಪವಾಸ ಎಂದರೆ ಉಪವಾಸವೇ. ನೀರನ್ನೂ ಕುಡಿಯುವಹಾಗಿಲ್ಲ. (ಇದಕ್ಕೆ "ನಿರ್ಜಲ ಏಕಾದಶಿ" ಅನ್ನುತ್ತಾರೆ). ಮೂರ್ನಾಲ್ಕು ತರಹ ತಿಂಡಿಗಳನ್ನೋ, ಎರಡು-ಮೂರು ಲೀಟರು ಹಾಲನ್ನೋ, ಮೂರು-ನಾಲ್ಕು ಕೆಜಿ ಹಣ್ಣನ್ನೋ ಸೇವಿಸುವುದಲ್ಲ. (ಎಂದೋ ಮಾಡಿಟ್ಟ ಚಕ್ಕುಲಿ-ಕೋಡುಬಳೆ-ರವೆಉಂಡೆ ಮುಂತಾದುವನ್ನು ನೋಡಲೇಬಾರದು). ಮೂರನೆಯ ದಿನ ದ್ವಾದಶಿ ಬೆಳಿಗ್ಗೆ ಬೇಗನೆ ಗೊತ್ತಾದ ಹೊತ್ತಲ್ಲಿ (ಸೂರ್ಯೋದಯದ ವೇಳೆಯಲ್ಲಿ) ಊಟ ಮಾಡುವುದು. ಇದಕ್ಕೆ "ಪಾರಣೆ" ಎನ್ನುತ್ತರೆ. ಹೀಗೆ ದ್ವಾದಶಿ ಪಾರಣೆ ಮಾಡಿದಮೇಲೆ ರಾತ್ರಿ ಊಟವಿಲ್ಲ. ಮತ್ತೆ ಮಾರನೆಯ ದಿನ (ತ್ರಯೋದಶಿ) ಮಧ್ಯಾಹ್ನ ಮತ್ತು ರಾತ್ರಿ ಊಟ ಮಾಡಬಹುದು. 

ಇದಲ್ಲದೆ, ದೇವರ ನೈವೇದ್ಯವಲ್ಲದ ಯಾವ ಪದಾರ್ಥವನ್ನೂ ತಿನ್ನುವಹಾಗಿಲ್ಲ. ಊಟಗಳ ಮಧ್ಯೆ (ಮಧ್ಯೇ ಮಧ್ಯೇ ಪಾನೀಯಂ ಸಮರ್ಪಯಾಮಿ ಅನ್ನುವಂತೆ) ಸ್ವಲ್ಪ ಸ್ವಲ್ಪ ಅದು-ಇದು ಎಂದು ತಿನ್ನುವ-ಕುಡಿಯುವ ಹಾಗಿಲ್ಲ. ಪಾರಣೆಯಂದು (ಪೂರ್ತಿ ಏಕಾದಶಿ ವ್ರತ ಕಾಲದಲ್ಲಿಯೂ) ಈರುಳ್ಳಿ-ಆಲೂಗಡ್ಡೆ-ಬದನೇಕಾಯಿ, ಜೊತೆಗೆ ಒಂದಷ್ಟು ಹಲಸಂದೆಕಾಳು ಸೇರಿಸಿ, ಹುಳಿ ಮಾಡಿಸಿ ಹೊಡೆಯುವಹಾಗಿಲ್ಲ. ವರುಷಕ್ಕೆ ನಾಲ್ಕು ತಿಂಗಳು "ಚಾತುರ್ಮಾಸ" ಕಾಲದಲ್ಲಿ ಆ ವ್ರತದ ನಿಯಮ ಕೂಡ ಪಾಲಿಸಬೇಕು. ಒಂದು ತಿಂಗಳು ಹಾಲು ಏಪಯೋಗಿಸಬಾರದು. ಒಂದು ತಿಂಗಳು ಮೊಸರಿಲ್ಲ. (ಮಜ್ಜಿಗೆ ಆಗಬಹುದು!). ಒಂದು ತಿಂಗಳು ತರಕಾರಿಗಳಿಲ್ಲ. (ತರಕಾರಿ ಇಲ್ಲದ ತಿಂಗಳಲ್ಲಿ ಮೆಣಸಿನಕಾಯಿ ಉಪಯೋಗ ಇಲ್ಲ. ಖಾರಕ್ಕೆ ಬರೀ ಮೆಣಸು).  ಒಂದು ತಿಂಗಳು ಬೇಳೆ-ಕಾಳು ಇಲ್ಲ. (ವಡೆ-ಆಂಬೊಡೆ ಮಾಡುವಂತಿಲ್ಲ. ಮಾಡಲೇಬೇಕಾದರೆ ಅಕ್ಕಿ ವಡೆ ಮಾಡಬಹುದು). ಏಕಾದಶಿ ವ್ರತದ ಕ್ರಮ ಹೀಗೆ. ಕೆಲವೊಮ್ಮೆ ಎರಡೆರಡು ಏಕಾದಶಿ ಬರುವುದುಂಟು. ಹೆದರಬೇಕಿಲ್ಲ. ಇದು ಸುಮಾರು ಮೂರು ವರುಷಗಳಿಗೆ ಒಂದು ಬಾರಿ ಮಾತ್ರ. 

"ಏಕಾದಶಿ ಮನೆಗೆ ಶಿವರಾತ್ರಿ ಬಂದಂತೆ" ಎಂದು ಒಂದು ಗಾದೆ. "ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ" ಎಂದು ಮತ್ತೊಂದು ಗಾದೆ. ಮೊದಲೇ ಖರ್ಚಿಗೆ ಕಾಸಿಲ್ಲದಿದ್ದಾಗ ಹೆಚ್ಚಿನ ವೆಚ್ಚದ ಬಾಬ್ತು ಬಂದಾಗ ಈ ಗಾದೆಗಳನ್ನು ಹೇಳುತ್ತಾರೆ. "ದುರ್ಭಿಕ್ಷದ ಅಧಿಕ ಮಾಸದ ಎರಡು ಏಕಾದಶಿಯಲ್ಲಿ ಶಿವರಾತ್ರಿ ಬಂದಂತೆ" ಎಂದು ಸದ್ಯ ಗಾದೆಯಿಲ್ಲ. (ಶಿವರಾತ್ರಿ ಏಕಾದಶಿಯಂದು ಬರುವುದು ಗಾದೆಯಲ್ಲಿ ಮಾತ್ರ. ನಿಜ ಜೀವನದಲ್ಲಿ ಇದು ಆಗುವುದಿಲ್ಲ). 
*****

ಮುಕುಂದರಾಯರು ದೊಡ್ಡ ಅಧಿಕಾರದ ಹುದ್ದೆಯಲ್ಲಿದ್ದು ನಿವೃತ್ತರಾದರು. ಬಹಳ ಪ್ರಯತ್ನ ಪಟ್ಟರೂ ಎಲ್ಲಿಯೂ ಎರಡನೇ ಕೆಲಸ ಸಿಗಲಿಲ್ಲ. ವಿಧಿಯಿಲ್ಲದೇ ದೇವರ ಬೆನ್ನುಹತ್ತಿದರು. ಯಾರೋ ಬಂಧುಗಳು ಸಂಜೆ ದೇವಸ್ಥಾನದಲ್ಲಿ ಏಳು ಗಂಟೆಯಿಂದ ಎಂಟು ಗಂಟೆವರೆಗೆ ನಡೆಯುವ "ಪುರಾಣ" ಬಹಳ ಒಳ್ಳೆಯದು ಎಂದು ಹೇಳಿದರು. ಮುಕುಂದರಾಯರು ಹೊರಡಲು ತಯಾರಾದರು. ಕೆಲಸದಲ್ಲಿದ್ದಾಗ ಕಾರಿತ್ತು. ಈಗ ಸಿಟಿ ಬಸ್ಸಿನಲ್ಲಿ ಹೋಗಬೇಕು. ಮೊದಲ ದಿನ ಪುರಾಣಕ್ಕೆ ಹೊರಟು ಬಸ್ಸು ಹಿಡಿದು ದೇವಸ್ಥಾನ ತಲುಪುವುದರಲ್ಲಿ ಏಳು ಮುಕ್ಕಾಲು ಗಂಟೆ ಆಯಿತು. ಕಡೆಗೆ ಕೂಡಲು ಜಾಗ ಸಿಗದೇ ಒಂದೆಡೆ ನಿಂತುಕೊಂಡೇ ಕಡೆಯ ಹದಿನೈದು ನಿಮಿಷದ ಪುರಾಣ ಕೇಳಿದರು. 

ಪುರಾಣೀಕರು ಮಾರನೆಯ ದಿನ ವೈಕುಂಠ ಏಕಾದಶಿಯ ಕಾರಣ ಏನು ಮಾಡಬೇಕೆಂದು ವಿವರಿಸುತ್ತಿದ್ದರು. "ನಾಳೆ ವೈಕುಂಠ ಏಕಾದಶಿ ಒಂದು ಪರ್ವಕಾಲ. ನಾನು ವಿವರಿಸಿದಂತೆ ಉಪವಾಸವಿದ್ದು, ಹಾಲು-ಹಣ್ಣು ಚೆನ್ನಾಗಿ ಸೇವಿಸಿ, ದೇವರನಾಮ-ಸ್ತೋತ್ರಾದಿಗಳನ್ನು ಹೇಳಿಕೊಂಡು ಕಾಲ ಕಳೆಯಬೇಕು. ಭೋಜನ ಮಾಡಬಾರದು ಎಂದು ಬೇರೆ ಹೇಳಬೇಕಿಲ್ಲ. ಅವಕಾಶವಿದ್ದವರು ದೇವಾಲಯಗಳಿಗೆ ಅವಶ್ಯ ಹೋಗಿ ದೇವರ ದರ್ಶನ ಪಡೆಯಬೇಕು. ನಾಳೆ ಎಂದಿನಂತೆ ಏಳು ಘಂಟೆಯಿಂದ ಎಂಟು ಘಂಟೆವರೆಗೆ ಇಲ್ಲಿಯೂ ಹಾಲು-ಹಣ್ಣಿಗೆ ವ್ಯವಸ್ಥೆ ಮಾಡಿದೆ. ತಪ್ಪದೇ ಬಂದು ಭಾಗವಹಿಸಿ" ಎಂದು ಹೇಳಿ ಅಂದಿನ ಪ್ರವಚನ ಮುಗಿಸಿದರು. ರಾಯರು ಮನೆಗೆ ಬಂದರು. 

ರಾಯರಿಗೆ ಹಾಲು-ಹಣ್ಣಿನಲ್ಲಿ ದಿನ ಕಳೆದು ಗೊತ್ತಿಲ್ಲ. ಆದರೂ ಅದನ್ನು ಪಾಲಿಸಬೇಕೆಂದು ತೀರ್ಮಾನಿಸಿದರು. ಮನೆಯಲ್ಲಿ ಎಲ್ಲರೂ ಪರ ಊರಿಗೆ ಹೋಗಿ ಅವರು ಒಬ್ಬರೇ ಉಳಿದಿದ್ದರು. ಬೆಳಗ್ಗೆ ಹಾಲಿನಂಗಡಿಗೆ ಹೋದಾಗ ಅಂಗಡಿಯವನು "ಸ್ವಾಮಿ, ಇಂದು ಹಾಲಿಗೆ ಬಹಳ ಬೇಡಿಕೆ. ಎಲ್ಲಾ ಖರ್ಚಾಗಿದೆ. ಐದು ಲೀಟರಿನ ಒಂದು ಪ್ಯಾಕೆಟ್ ಮಾತ್ರ ಇದೆ" ಅಂದ. ರಾಯರು ಅದನ್ನು ಕೊಂಡರು. ಹಣ್ಣಿನ ಅಂಗಡಿಯಲ್ಲಿಯೂ ಎಲ್ಲಾ ಖಾಲಿ ಖಾಲಿ. ಕಡೆಗೆ ಒಂದು ಹಲಸಿನ ಹಣ್ಣು, ಒಂದು ಕಲ್ಲಂಗರೇ ಹಣ್ಣು, ಸ್ವಲ್ಪ  ಮೂಸಂಬಿ, ಬಾಳೆಹಣ್ಣು ಸಿಕ್ಕಿತು. ಅವರ ಹೆಂಡತಿ ಯಾವಾಗಲೋ "ಐದು ತರಹದ ಹಣ್ಣು" ಎಂದು ಹೇಳಿದ್ದುದು ನೆನಪಿಗೆ ಬಂತು. ಕಷ್ಟಪಟ್ಟು ಇನ್ನೊಂದು ಅಂಗಡಿಯಲ್ಲಿ ಒಂದು ಚಕ್ಕೋತ ಕೊಂಡರು. ಇವುಗಳ ಭಾರವನ್ನು ಹೊತ್ತು ಮನೆಗೆ ಬಂದರು.

ಸ್ನಾನ ಮಾಡಿ ಹಲಸಿನ ಹಣ್ಣು ಹೆಚ್ಚಿದರು. ಹಾಲು ದೊಡ್ಡ ಪಾತ್ರೆಯಲ್ಲಿ ಜಾಗರೂಕರಾಗಿ ಉಕ್ಕದಂತೆ  ಕಾಯಿಸಿದರು. ಬಾಳೆಯ ಹಣ್ಣಿನ ಜೊತೆ ಹಲಸಿನ ಹಣ್ಣು ಸೇರಿಸಿ ತಿಂದರು. ಸ್ವಲ್ಪ ಹಾಲೂ ಸೇರಿತು. ವಿಶ್ರಾಂತಿಯ ನಂತರ ಚಕ್ಕೋತ ಹಣ್ಣು ಮತ್ತು ಹಾಲು ನಡೆಯಿತು. ಸಂಜೆಯ ವೇಳೆ ಬೇರೆ ಹಣ್ಣುಗಳು ಮತ್ತು ಮತ್ತಷ್ಟು ಹಾಲು ಹೊಟ್ಟೆ ಸೇರಿತು. ದೇವಸ್ಥಾನದಲ್ಲಿ ಪುರಾಣೀಕರು ಹೇಳಿದ್ದು ನೆನಪಿಗೆ ಬಂತು. "ಅಲ್ಲಿ ಹಣ್ಣು-ಹಾಲಿನ ವಿತರಣೆ ವ್ಯವಸ್ಥೆ ಇದೆ. ಹೋಗಬೇಕು" ಎಂದು ನೆನಪಾಯಿತು. ಬೇಗ ಹೊರಟು ಏಳು ಗಂಟೆಯ ಮುಂಚೆ ಅಲ್ಲಿ ಸೇರಿದರು. 

ಏಳಕ್ಕೆ ಪ್ರಾಂಭವಾದ ಪುರಾಣದಲ್ಲಿ ಭಗವದ್ಗೀತೆ ಮತ್ತು ಭಾಗವತದ ಕೆಲವು ಭಾಗಗಳ ಶ್ಲೋಕಗಳು ಮತ್ತು ಅವುಗಳ ವಿವರಣೆ ನಡೆಯಿತು. ಹಾಲು ಮತ್ತು ಹಣ್ಣುಗಳ ಸುಳಿವೇ ಇಲ್ಲ. ಇರಲಿ, ಪುರಾಣದ ನಂತರ ವಿತರಣೆ ಆಗಬಹುದು ಎಂದು ರಾಯರು ಕಾದರು. ಎಂಟು ಗಂಟೆಗೆ ಪುರಾಣ ಮುಗಿಯುತ್ತಿದ್ದಂತೆಯೇ ಎಲ್ಲರೂ ಅವಸರವಸರವಾಗಿ ಅವರವ ಮನೆಗೆ ಹೊರಟರು. ಒಬ್ಬರು ವಯಸ್ಸಾದ ಯಜಮಾನರು ಮಾತ್ರ ನಿಧಾನವಾಗಿ ಹೋಗುತ್ತಿದ್ದರು. ಮಕುಂದರಾಯರು  ಅವರ ಜೊತೆ ಹೆಜ್ಜೆ ಹಾಕುತ್ತ ಹಾಲು-ಹಣ್ಣಿನ ಬಗ್ಗೆ ಕೇಳಿದರು. 

"ಇದೇನು, ಹೀಗೆ ಕೇಳುತ್ತೀರಿ. ಒಂದು ಗಂಟೆ ಹಾಲು-ಹಣ್ಣೇ ಆಯಿತಲ್ಲ?" ಅಂದರು ಆ ಹಿರಿಯರು. "ಎಲ್ಲಿ ಆಯಿತು? ಬರೀ ಭಗವದ್ಗೀತೆ ಮತ್ತು ಭಾಗವತದ ಕೆಲವು ಭಾಗ ಹೇಳಿದರು, ಅಷ್ಟೇ" ಅಂದರು ರಾಯರು. "ಅದೇ ಸ್ವಾಮಿ. ಹಾಲು ಅಂದರೆ ಭಗವದ್ಗೀತೆ. ಹಣ್ಣು ಅಂದರೆ ಭಾಗವತ" ಅಂದರು ಯಜಮಾನರು. "ಅದು ಹೇಗೆ?" ಎಂದು ರಾಯರು ಕೇಳಿದರು. "ನಿನ್ನೆ ಪುರಾಣದಲ್ಲಿ ಹೇಳಿದ್ದು ನೀವು ಕೇಳಲಿಲ್ಲವೇ? "ದುಗ್ಧಮ್ ಗೀತಾಮೃತಮ್ ಮಹತ್".  ಭಗವದ್ಗೀತೆ ಎಂಬುದೇ ಹಾಲು. ಮತ್ತೆ  "ನಿಗಮಕಲ್ಪ ತರೋರ್ಗಲಿತಂ ಫಲಂ".  ಶ್ರೀಮದ್ಭಾಗವತವೇ ಹಣ್ಣು. ಏಕಾದಶಿಯ ದಿನ ಈ ಹಾಲು-ಹಣ್ಣು ಸೇವಿಸಿ ಎಂದೇ ಪುರಾಣೀಕರು ನಿನ್ನೆ ಹೇಳಿದ್ದು. ಇವತ್ತು ಅದೇ ವಿತರಣೆ ಆಯಿತಲ್ಲ. ಏಕಾದಶಿಯಂದು ಬೇರೆ ಹಣ್ಣು-ಹಾಲು ಯಾರು ಸೇವಿಸುತ್ತಾರೆ?" ಎಂದರು ಆ ಹಿರಿಯರು. 

*****

ಹಲಸಿನ ಹಣ್ಣು, ಕಲ್ಲಂಗಡಿ ಹಣ್ಣು, ಮೂಸಂಬಿ, ಚಕ್ಕೋತ, ಬಾಳೆಹಣ್ಣು ಮತ್ತು ಹಾಲಿನ ಕೊಳಗ ರಾಯರ  ತಲೆಯಸುತ್ತ ಸುತ್ತುವಂತೆ ಅವರಿಗೆ ಭಾಸವಾಯಿತು.  ಹಿರಿಯರು ಅವರ  ಮುಖ ನೋಡಿದರು. ಅವರಿಗೆ ಅರ್ಥ ಆಯಿತು. "ನಾಳೆ ಸ್ವಲ್ಪ ಬೇಗ ಬನ್ನಿ. ಪುರಾಣ ಪ್ರಾರಂಭವಾಗುವುದರ ಮುಂಚೆ ಇದನ್ನು ವಿವರಿಸುತ್ತೇನೆ" ಎಂದು ಹೇಳಿ ಅವರ ಮನೆ ಗಲ್ಲಿಯಲ್ಲಿ ತಿರುಗಿದರು ಆ ವೃದ್ಧರು. 

Sunday, June 29, 2025

ಮನವ ಕಬ್ಬಿಣ ಮಾಡು, ಹೇ ಮೃಡನೇ!


"ದೇವರಲ್ಲಿ ಬೇಡುವುದು ಸರಿಯೇ?" ಎಂಬ ಹಿಂದಿನ ಸಂಚಿಕೆಯಲ್ಲಿ ನಾವು ನಂಬಿದ, ಆರಾಧಿಸುವ  ದೇವರು-ದೇವತೆಗಳಲ್ಲಿ ಅನೇಕ ವಿಧವಾಗಿ ವರಗಳನ್ನು ಕೇಳಿಕೊಳ್ಳುವ ರೀತಿ, ಮತ್ತು ಅದರ ಸರಿ-ತಪ್ಪು ಎನ್ನುವ ವಿಚಾರವಾಗಿ ಚರ್ಚೆ ಮಾಡಿದೆವು. ಈ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನಾವು ದಿನಂಪ್ರತಿ ಉಪಯೋಗಿಸುವ ಅನೇಕ ಸ್ತೋತ್ರ-ಮಂತ್ರಗಳಲ್ಲಿ ಈ ರೀತಿಯ ಬೇಡುವಿಕೆ ವಿಶಾಲವಾಗಿ ಹರಡಿದೆ. ಅನೇಕರು ಬಹಳ ಭಕ್ತಿ-ಶ್ರದ್ಧೆಗಳಿಂದ ಅನುಷ್ಠಾನ ಮಾಡುವ ಇಂತಹ ಒಂದು ಆಚರಣೆ ರುದ್ರ-ಚಮಕಗಳ ಪಾರಾಯಣಾದಿಗಳು. ಅದರ ತಿರುಳು ಕೆಲವರಿಗೆ ಅರ್ಥವಾಗುತ್ತದೆ. ಅನೇಕರಿಗೆ ಗೊತ್ತಾಗುವುದಿಲ್ಲ. ಆದರೆ ನುರಿತವರು ಅದನ್ನು ಹೇಳುವಾಗ ಕೇಳುಗರೆಲ್ಲರಿಗೂ ಒಂದು ವಿಶೇಷ ಅನುಭವ ಆಗುವುದು ಅಲ್ಲಿ ಕುಳಿತು ಕೇಳಿದವರಿಗೆ ಗೊತ್ತು. ಇಲ್ಲಿಯೂ ಅನೇಕ ಬೇಡಿಕೆಗಳನ್ನು ರುದ್ರದೇವರ ಮುಂದೆ ಇಡುವುದು ಉಂಟು. ಇದರ ಬಗ್ಗೆ ತಿಳಿದವರು ಚೆನ್ನಾಗಿ ವಿವರಿಸಬಲ್ಲರು. ಆದರೂ ನಮ್ಮ ಯೋಗ್ಯತೆ ಇರುವಷ್ಟು ನೋಡುವುದರಲ್ಲಿ ತಪ್ಪೇನೂ ಇಲ್ಲ. 

*****

ಇದೊಂದು ನಮಗೆ ಬೇಕೇ ಬೇಕಾದ ಅತಿ ಹತ್ತಿರದ ಕುಟುಂಬ. ಒಬ್ಬ ಮಗನಾದ ಗಣೇಶನು ವಿಘ್ನಗಳನ್ನು ದೂರಮಾಡಿ ಎಲ್ಲವನ್ನೂ ಸುಗಮ ಮಾಡುವ "ಸುಮುಖ". ಇನ್ನೊಬ್ಬ ಮಗ ದೇವಸೇನಾಪತಿಯಾದ "ಕುಮಾರ". ತಾಯಿಯು ಬುದ್ಧಿ ಶಕ್ತಿಯ ಅಭಿಮಾನಿ ದೇವತೆಯಾದ "ಉಮಾದೇವಿ". ಮತಿ ಪ್ರೇರಕಳು. ತಂದೆಯಾದರೋ ಮನೋಭಿಮಾನಿ "ಮಹರುದ್ರದೇವರು". ಎಲ್ಲ ಸಾಧನೆಗಳ ದಾರಿಯಲ್ಲಿ ಬರುವ ತೊಂದರೆಗಳನ್ನು ನಿವಾರಿಸಲು ವಿಘ್ನೇಶ. ಸಾಧನೆಗಳಿಗೆ ಅಡ್ಡಿ ಪಡಿಸುವ ಆಸುರೀಶಕ್ತಿಗಳನ್ನು ಹತ್ತಿಕ್ಕಲು ದೇವತೆಗಳ ಸೇನಾಧಿಪತಿಯಾದ ಷಣ್ಮುಖ. ಕಪಿಯಂತೆ ದಿಕ್ಕಾಪಾಲಾಗಿ ಓಡುವ ಮನಸ್ಸು ನಿಯಂತ್ರಿಸಿ ಏಕಾಗ್ರತೆ ಸಾಧಿಸಲು ಶಂಭುವಿನ ಕರುಣೆ. ಸಾಧನೆಗೆ ಬುದ್ಧಿಯನ್ನು ಕೇಂದ್ರೀಕರಿಸಲು ಗಿರಿಜೆಯ ಅನುಗ್ರಹ. ಈ ಕುಟುಂಬವನ್ನು ಬಿಟ್ಟು ಸಾಧಕನಿಗೆ ಬೇರೆ ಗತಿಯಿಲ್ಲ. 

ಶ್ರೀ ಪುರಂದರದಾಸರು ತಮ್ಮ ಒಂದು ಉಗಾಭೋಗದಲ್ಲಿ ಇದನ್ನು ಹೀಗೆ ಒಟ್ಟುಗೂಡಿಸಿ ಹೇಳುತ್ತಾರೆ:

ಸತತ ಗಣನಾಥ ಸಿದ್ಧಿಯನೀವ ಕಾರ್ಯದಲಿ 
ಮತಿಪ್ರೇರಿಸುವಳು ಪಾರ್ವತಿದೇವಿ 
ಮುಕುತಿಪಥಕೆ ಮನವೀವ ಮಹರುದ್ರದೇವರು

ರುದ್ರದೇವರು ಸ್ವತಃ ವೈರಾಗ್ಯ ಮೂರ್ತಿಗಳು. ಅವರಿಗಾಗಿ ಏನನ್ನೂ ಇಟ್ಟುಕೊಂಡವರಲ್ಲ. ಆದರೆ ಭಕ್ತರಿಗಾಗಿ ಎಲ್ಲವನ್ನೂ ಕೊಡಬಲ್ಲವರು!
***** 

ನಮ್ಮ ಕುಟುಂಬದಲ್ಲಿ ಒಂದು ಸೊಗಸು. ನಮ್ಮ ಅಪ್ಪನ ತಂದೆಯ ಕಡೆ (ಪಿತಾಮಹ ವಂಶ) ಮಹಾವಿಷ್ಣುವಿನ ಆರಾಧಕರು. ನಮ್ಮ ಅಪ್ಪನ ತಾಯಿಯ ಕಡೆ (ಮಾತಾಮಹ ವಂಶ) ರುದ್ರದೇವರ ಆರಾಧಕರು. ಇವರ ಮನೆಯಲ್ಲಿ ಎಲ್ಲ ಆಚರಣೆಗಳೂ ಈ ರೀತಿ. ಅವರ ಮನೆಯಲ್ಲಿ ಎಲ್ಲ ಆಚರಣೆಗಳೂ ಆ ರೀತಿ. ಇದು ಹಿಂದಿನ ಮೂರು ತಲೆಮಾರುಗಳಿಂದ ನಡೆದುಬಂದಿತ್ತು. ಉಭಯ ಕುಟುಂಬಗಳಲ್ಲೂ ಒಳ್ಳೆಯ ಸಾಮರಸ್ಯ ನಡೆದಿತ್ತು. ಈ ವಿಷಯವಾಗಿ ಎಂದೂ ಭಿನ್ನಾಭಿಪ್ರಾಯ ಬಂದಿರಲಿಲ್ಲ. ಅವರವರ ನಂಬಿಕೆ, ಆಚರಣೆಗಳು ಅವರವರಿಗೆ. ಅವರ ಹಬ್ಬ-ಉತ್ಸವಗಳಿಗೆ ಇವರು ಹೋಗುವರು. ಇವರ ಹಬ್ಬ-ಆಚರಣೆಗಳಿಗೆ ಅವರು ಬರುವರು. ಒಂದು ಕುಟುಂಬದ ಉಪಸ್ಥಿತಿಯಿಲ್ಲದೆ ಇನ್ನೊಂದು ಕುಟುಂಬದ ಯಾವ ಸಮಾರಂಭವೂ ನಡೆಯದು.  ಹೀಗೆ ನಡೆದುಬಂದಿತ್ತು. 

ನಮ್ಮ ತಂದೆಯವರಿಗೆ ಇಬ್ಬರು ಸೋದರಮಾವಂದಿರು. ಅವರಿಬ್ಬರೂ ವಯಸ್ಸಿನಲ್ಲಿ ನಮ್ಮ ಅಜ್ಜಿಗಿಂತ (ಅವರ ಅಕ್ಕ) ಚಿಕ್ಕವರು. ದೊಡ್ಡ ಸೋದರಮಾವ ತಂದೆಯವರಿಗಿಂತ ಮೂರು ವರುಷ ದೊಡ್ಡವರು. ಚಿಕ್ಕ ಸೋದರಮಾವ ತಂದೆಯವರಿಗಿಂತ ಕೆಲವು ತಿಂಗಳು ದೊಡ್ಡವರು. ಹೀಗಾಗಿ ಇವರು ಮೂವರೂ ಒಂದೇ ಓರಗೆಯವರು. ಜೊತೆಯಲ್ಲಿ ಬೆಳೆದವರು. ಮಾವಂದಿರು - ಸೋದರಳಿಯ ನೆಂಟತನಕ್ಕಿಂತ ಹೆಚ್ಚಾಗಿ ಸ್ನೇಹಿತರು. ಮೂವರೂ ಸೇರಿದಾಗ ವಿನೋದ ಪ್ರಧಾನವಾಗಿ ಕಾಲ ಕಳೆಯುತ್ತಿತ್ತು. 

ನಾನು ಶಾಲೆಗಳಲ್ಲಿ ಓದುತ್ತಿದ್ದಾಗ ತಂದೆಯವರ ಜೊತೆ ಅವರಿರುವಲ್ಲಿಗೆ ಹೋಗುತ್ತಿದ್ದೆ. ಅವರುಗಳ ಮಾತಿನ ವಿಷಯ ಕೆಲವು ವೇಳೆ ಅರ್ಥವಾಗುತ್ತಿತ್ತು. ಕೆಲವು ವೇಳೆ ಇಲ್ಲ. ಆಗ ಕೇಳಿದ ಕೆಲವು ವಿಷಯಗಳು ಮುಂದೆ ಎಂದೋ ನೆನಪಿಗೆ ಬಂದು, ನಮ್ಮ ಜೀವನಾನುಭವದ ಹಿನ್ನೆಲೆಯಲ್ಲಿ  ಅರ್ಥವಾಗಿವೆ. ಇದು ನನ್ನೊಬ್ಬನ ವಿಶೇಷ ಎಂದು ಮಾತ್ರವಲ್ಲ. ಅನೇಕರಿಗೆ ಅವರವರ ಜೀವನಗಳಲ್ಲಿ ಇದೇ ರೀತಿ ಅನುಭವಗಳು ಆಗಿರುತ್ತವೆ. 
*****

ನಮ್ಮ ಬಾಲ್ಯದಲ್ಲಿ ಪ್ರತಿ ಊರಿನಲ್ಲೂ ಪ್ರತಿವರುಷ ಊರಹಬ್ಬ ಆಚರಿಸುತ್ತಿದ್ದರು. ಈಗಲೂ ಅನೇಕ ಕಡೆ ನಡೆಯುತ್ತವೆ. ಊರಹಬ್ಬಕ್ಕೆ ಬಹಳ ಪ್ರಾಮುಖ್ಯತೆ ಇತ್ತು. ಹೊರಗಡೆ ಪ್ರದೇಶಗಳಲ್ಲಿ ಓದು, ಕೆಲಸ, ವ್ಯವಹಾರ ಮುಂತಾದ ಕಾರಣಗಳಿಂದ ವಾಸಿಸುತ್ತಿದ್ದ ಜನರು ಊರಹಬ್ಬಕ್ಕೆ ಬಂದು ಸೇರುತ್ತಿದ್ದರು. ಬಂಧು-ಬಾಂಧವರನ್ನು ಮತ್ತು ಸ್ನೇಹಿತರನ್ನು ವರುಷಕ್ಕೊಮ್ಮೆ ನೋಡಲು ಇದು ಒಂದು ಒಳ್ಳೆಯ ಅವಕಾಶವಾಗಿತ್ತು. ಬೆಂಗಳೂರಿನಲ್ಲಿ ಪ್ರತಿ ವರುಷ ಚಿತ್ರಾಪೂರ್ಣಿಮೆ (ಉಗಾದಿಯನಂತರ ಬರುವ ಹುಣ್ಣಿಮೆ) ಊರಹಬ್ಬ ನಡೆಯುತ್ತದೆ. ಅದು "ಬೆಂಗಳೂರು ಕರಗ" ಎಂದು ಪ್ರಸಿದ್ಧಿ. "ಕೆಂಪೇಗೌಡ ದಿನಾಚರಣೆ" ಎಂದೂ ಕರೆಯುತ್ತಾರೆ. ಈಗಲೂ ಬಹಳ ವಿಜೃಂಭಣೆಯಿಂದ  ನಡೆಯುತ್ತದೆ. ಹತ್ತಾರು ದೇವಾಲಯಗಳು ತಮ್ಮ ಉತ್ಸವ ಮೂರ್ತಿಗಳನ್ನು ಕರೆತಂದು ಸಿಟಿ ಮಾರ್ಕೆಟ್ ಬಳಿ ಸೇರುತ್ತಾರೆ. ಬೇರೆ ಊರುಗಳಲ್ಲಿಯೂ ಹೀಗೆಯೇ ಉಂಟು. 

ಒಮ್ಮೆ ತಂದೆಯವರ ಜೊತೆಗೆ ಅವರ ತೌರುಮನೆಗೆ (ತನ್ನ ತಾಯಿಯ ಹುಟ್ಟಿದ ಮನೆಯನ್ನು ಅವರು ಕರೆಯುತ್ತಿದ್ದುದು ಹೀಗೆಯೇ. ತೌರುಮನೆ ಅಂದರೆ "ತಾಯಿಯ ಮನೆ". ಅದು ಗಂಡಸರಿಗೆ ಏಕೆ ಇರಬಾರದು? ಎಂದು ಕೇಳುತ್ತಿದ್ದರು!) ಹೋಗಿದ್ದೆ. ಆಗ ಕೆಂಗೇರಿ ಬೇರೆಯ ಊರಾಗಿತ್ತು. ಈಗಿನಂತೆ ಬೆಂಗಳೂರಿನ ಹೊಟ್ಟೆಯೊಳಗೆ ಸೇರಿಕೊಂಡಿರಲಿಲ್ಲ. ಮಧ್ಯಾನ್ಹದ ಊಟದ ನಂತರ ಮೂವರು ಜೊತೆಗಾರರು ಮನೆಯ ಜಗುಲಿಯ ಮೇಲೆ ಕುಳಿತು ಮಾತಾಡುತ್ತಿದ್ದರು. ನಾನು ಸ್ವಲ್ಪದೂರ ಕುಳಿತು ನೋಡುತ್ತಿದ್ದೆ. 

"ಮುಂದಿನ ತಿಂಗಳು ಊರ ಹಬ್ಬ. ತಪ್ಪದೆ ಬಾ. ಹೋದ ವರುಷದಂತೆ ಚಕ್ಕರ್ ಹಾಕಬೇಡ"
"ನೋಡೋಣ. ಶಾಲೆಗೆ ರಜೆ ಇದ್ದರೆ ಬರುತ್ತೇನೆ"
"ಅದೆಲ್ಲ ಆಗದು. ರಜೆ ಇಲ್ಲದಿದ್ದರೆ ರಜೆ ಹಾಕಿ ಬಾ"
"ಓದುತ್ತಿದ್ದಾಗ ಅವಾಗವಾಗ ಚಕ್ಕರ್ ಹೊಡೆಯುತ್ತಿದ್ದೆ. ಈಗ ಏನು ಕಷ್ಟ?"
ಮೂವರೂ ನಕ್ಕರು. 

ಅಷ್ಟರಲ್ಲಿ ಎದುರು ಮನೆ ಗೃಹಿಣಿ ತನ್ನ ಮಕ್ಕಳು ಕಾಣಲಿಲ್ಲವೆಂದು ಮನೆಯ ಹೊರಗಡೆ ಬಂದು ನೋಡಿದಳು. ಇಬ್ಬರು ಮಕ್ಕಳು ಚೆನ್ನಾಗಿ ಮಣ್ಣಿನಲ್ಲಿ ಆಟ ಆಡುತ್ತಿದ್ದರು. ಮೈಯೆಲ್ಲ ಧೂಳಿನಿಂದ ಮುಚ್ಚಿತ್ತು. ನೋಡಿದ ಅವಳಿಗೆ ಕೋಪ ಬಂತು. "ಆಡಿ, ಆಡಿ; ಚೆನ್ನಾಗಿ ಆಡಿ. ಆಮೇಲೆ ಮನೆಗೆ ಬನ್ನಿ. ನಿಮಗೆ ಹಬ್ಬ ಮಾಡುತ್ತೇನೆ" ಅಂದು ಹೇಳಿ ಒಳಗೆ ಹೋದಳು. 

"ಏನಪ್ಪಾ, ನಿಮ್ಮಣ್ಣ ನನ್ನ ಊರಹಬ್ಬಕ್ಕೆ ಕರೀತಿದಾನೆ. ಅವಳು ನೋಡಿದರೆ ಮಕ್ಕಳಿಗೆ "ಹಬ್ಬ ಮಾಡುತ್ತೇನೆ" ಎಂದು ಹೇಳುತ್ತಿದ್ದಾಳೆ"
"ಅಣ್ಣ ನಿನಗೂ ಅಂತದೇ ಹಬ್ಬ ಮಾಡಬಹುದು. ಹುಷಾರಾಗಿರು"
"ಅಯ್ಯೋ, ಹುಚ್ಚಪ್ಪಗಳಾ. ಸಂದರ್ಭ ನೋಡಿ ಮಾತಿಗೆ ಅರ್ಥ ಮಾಡಬೇಕು. ಒಂದು ಮಾತಿಗೆ ಎಲ್ಲ ಕಡೆಯೂ ಒಂದೇ ಅರ್ಥ ಇರುವುದಿಲ್ಲ. ಇದು ಚೆನ್ನಾಗಿ ಗೊತ್ತಿದ್ದೂ ನನ್ನ ಹಾಸ್ಯ ಮಾಡುತ್ತಿದ್ದೀರಾ?"
ಮೂವರು ಮತ್ತೊಮ್ಮೆ ನಕ್ಕರು. 
*****

ನಂತರ ಕೆಲವು ವರುಷಗಳು ಕಳೆದ ಮೇಲೆ ಹಿರಿಯ ಸೋದರಮಾವ ತಿರುಮಕೂಡಲು ನರಸೀಪುರದಲ್ಲಿ (ಟಿ. ನರಸೀಪುರ) ವಾಸವಾಗಿದ್ದರು. ಒಮ್ಮೆ ಅವರ ಹುಟ್ಟಿದ ಹಬ್ಬ ಬಂದಿತು. ಪ್ರಾಯಶಃ "ಭೀಮರಥಿ ಶಾಂತಿ" ಇರಬಹುದು. (70ನೆಯ ವರುಷದ ಹುಟ್ಟಿದ ಹಬ್ಬವನ್ನು ಭೀಮರಥಿ ಶಾಂತಿ ಎಂಬುದಾಗಿ ಆಚರಿಸುತ್ತಾರೆ). ತಿರುಮಕೂಡಲು ಕಪಿಲ-ಕಾವೇರಿ ನದಿಗಳ ಸಂಗಮ ಕ್ಷೇತ್ರ. ಉತ್ತರ ಭಾರತದಲ್ಲಿ ಗಂಗಾ-ಯಮುನಾ-ಸರಸ್ವತಿ ನದಿಗಳ ಸಂಗಮ ಪ್ರಯಾಗದಲ್ಲಿ ಇರುವಂತೆ ಇಲ್ಲಿ ಕಪಿಲಾ-ಕಾವೇರಿ-ಸ್ಫಟಿಕ ಸರೋವರ ನದಿಗಳ ತ್ರಿವೇಣಿ ಸಂಗಮವೆಂದು ಪ್ರತೀತಿ. ಇಲ್ಲಿನ "ಗುಂಜಾ ನರಸಿಂಹಸ್ವಾಮಿ" ಮತ್ತು "ಅಗಸ್ತ್ಯೇಶ್ವರ" ದೇವಾಲಯಗಳು ಇತಿಹಾಸ ಪ್ರಸಿದ್ಧ. 

"ಗರ್ಗೇಶ್ವರಿ" ಅನ್ನುವುದು ತಿರುಮಕೂಡಲಿನಿಂದ ಮೂರು ಮೈಲು ದೂರದ ಒಂದು ಕ್ಷೇತ್ರ. ಇಲ್ಲಿನ ದೊಡ್ಡ ಶಿವಲಿಂಗ "ಅರ್ಧನಾರೀಶ್ವರ" ಅನ್ನುತ್ತಾರೆ. ಈಗ ಈ ಊರೂ ನರಸೀಪುರದಲ್ಲಿಯೇ ಸೇರಿಹೋಗಿದೆ. ಈ ಗರ್ಗೇಶ್ವರಿ ದೇವಸ್ಥಾನದಲ್ಲಿ ಹುಟ್ಟು ಹಬ್ಬದ ಸಮಾರಂಭದ ಪ್ರಯುಕ್ತ "ಏಕಾದಶವಾರ ರುದ್ರಾಭಿಷೇಕ" ಏರ್ಪಡಿಸಿದ್ದರು. ಜ್ಞಾನವೃದ್ಧರೂ, ವಯೋವೃದ್ಧರೂ ಆದ ಘನಪಾಠಿ ಗುರುಗಳು ಶಿಷ್ಯರ ಸಮೇತ ಆಗಮಿಸಿ ರುದ್ರ-ಚಮಕಗಳ ಅದ್ಭುತ ಪಾರಾಯಣ-ಅಭಿಷೇಕಾದಿಗಳನ್ನು ನಡೆಸಿದರು. 

ಕಾರ್ಯಕ್ರಮ ಮುಗಿದ ನಂತರ ಊಟಕ್ಕೆ ತಯಾರಾಗುವ ವೇಳೆಯಲ್ಲಿ ಈ ಮೂವರೂ ಆ ಗುರುಗಳ ಬಳಿ ಕೆಲವು ವಿಷಯಗಳನ್ನು ಪ್ರಸ್ತಾಪಿಸಿದರು. 

"ಗುರುಗಳೇ. ರುದ್ರದೇವರು ಅಖಂಡ ವೈರಾಗ್ಯ ಮೂರ್ತಿಗಳು. ಅವರ ಬಳಿ ನಾವು ಈ ಪ್ರಾರ್ಥನೆಗಳನ್ನು ಮಾಡಿ ಅನೇಕ ವರಗಳನ್ನು ಕೇಳುತ್ತೇವೆ. ಇವುಗಳಲ್ಲಿ ಅನೇಕ ಕೋರಿಕೆಗಳು ಭೌತಿಕ ವಸ್ತುಗಳು. ಈ ನಮ್ಮ ಜೀವನ ಸುಖವಾಗಿರಲು ಕೇಳಿಕೊಳ್ಳುವುವು. ಹೆಚ್ಚೂ-ಕಡಿಮೆ ಪ್ರತಿಯೊಂದು ವಸ್ತುವನ್ನೂ ಕೇಳುತ್ತೇವೆ. ಇದು ಸರಿಯೇ?"
"ಏಕೆ? ಕೇಳಬಾರದೆಂದು ನಿಮ್ಮ ಅಭಿಪ್ರಾಯವೇ?"
"ವೈರಾಗ್ಯ ಮೂರ್ತಿಯ ಬಳಿ ವೈರಾಗ್ಯ ಹುಟ್ಟುವ ರೀತಿಯ ಬೇಡಿಕೆ ಇಡಬೇಕಲ್ಲದೆ ಈ ರೀತಿ ಸುಖ-ಸಾಧನಗಳನ್ನು ಕೇಳುವುದು ನ್ಯಾಯವೇ?"
"ಎಲ್ಲರಿಗೂ ಸುಲಭವಾಗಿ ವೈರಾಗ್ಯ ಬರುವುದಿಲ್ಲವಲ್ಲ?"
"ಅಂದಮಾತ್ರಕ್ಕೆ ವೈರಾಗ್ಯ ಕೇಳದೆ ಈ ಸುಖ ಸಾಧನಗಳನ್ನು ಕೇಳಬಹುದೇ?"

"ಈ ಭೂಮಿಯಲ್ಲಿ ಜೀವನ ಮಾಡುವಾಗ ಇಹ-ಪರ ಎರಡರ ಕುರಿತೂ ಯೋಚಿಸಬೇಕು. ಬಹಳ ಕಡಿಮೆ ಮಂದಿಗೆ ಚಿಕ್ಕ ವಯಸ್ಸಿನಲ್ಲಿ ವೈರಾಗ್ಯ ಬರುತ್ತದೆ. ಸಾಮಾನ್ಯವಾಗಿ ಹೆಚ್ಚಿನ ಮಂದಿಗೆ ಕಾಲಕ್ರಮದಲ್ಲಿ ವೈರಾಗ್ಯ ಬರುವುದು. ಕೆಲವರಿಗಂತೂ ಅದು ಬರುವುದೇಯಿಲ್ಲ. ಸಾಧನೆಗೆ ಅನೇಕ ಪರಿಕರಗಳು ಬೇಕಲ್ಲ. ಇಲ್ಲಿನ ಜೀವನವೂ ಚೆನ್ನಾಗಿ ನಡೆಯಬೇಕು. ನಾವು ವೈಯುಕ್ತಿಕವಾಗಿ ಏನನ್ನೂ ಬೇಡ ಅನ್ನಬಹುದು. ಆದರೆ ಗೃಹಸ್ಥರಾದ ನಮ್ಮನ್ನು ನಂಬಿ ನಮ್ಮ ಜೊತೆ ಬಾಳುವ ಕುಟುಂಬದವರ ವಿಷಯವೇನು? ಸನ್ಯಾಸಿಯಾಗಿ ಗುರುಕುಲ ನಡೆಸುವವನಾದರೂ ಅವನ ಚಿಕ್ಕ ವಯಸ್ಸಿನ ಶಿಷ್ಯವೃಂದದ ಕಥೆ ಏನು? ಒಂಟಿಯಾಗಿ ಸಾಧನೆ ಮಾಡುವವನಿಗೂ, ಅನೇಕ ಮಂದಿಯ ಜೊತೆಯಲ್ಲಿದ್ದು ಸಾಧನೆ ಮಾಡುವವನಿಗೂ ವ್ಯತ್ಯಾಸವಿಲ್ಲವೇ? ಇಲ್ಲಿಯೂ ಚೆನ್ನಾಗಿ ಬಾಳುವೆ ನಡೆಸಬೇಕು. ಮುಂದಿನ ದಾರಿಯೂ ಸರಿಯಾಗಿ ಗೊತ್ತಾಗಬೇಕು. ಈ ಪ್ರಾರ್ಥನೆಗಳು ಎರಡನ್ನೂ ಸರಿತೂಗಿಸಿ ಜೀವನ ನಡೆಸಲು ಬೇಕಾದುವನ್ನು ಕೇಳುತ್ತವೆ. ಇದರಲ್ಲಿ ತಪ್ಪೇನೂ ಕಾಣುವುದಿಲ್ಲ. ಆದರೆ, ಈ ಪರಿಕರಗಳಿಂದ ಸುಖಿಸುವುದರಲ್ಲಿ ಮುಳುಗಿ ಸಾಧನೆಯನ್ನು ಬಿಡಬಾರದು. ಆ ಎಚ್ಚರ ವಹಿಸಬೇಕು. ಆ ರುದ್ರರೇ ಇದನ್ನು ನಡೆಸಿಕೊಡುತ್ತಾರೆ ಎನ್ನುವುದು ಧೃಡವಾದ ನಂಬಿಕೆಯಾಗಿ ಇರಬೇಕು"

"ಒಂದು ಕಡೆ "ಲೋಹವನ್ನು ಕೊಡು ಎಂದು ಕೇಳುತ್ತೇವಲ್ಲ? ಬದುಕು ಹಸನಾಗಲು, ಸುಖಮಯವಾಗಲು ಬೆಳ್ಳಿ-ಬಂಗಾರ ಮುಂತಾದುವನ್ನು ಕೇಳುವ ಬದಲು ಕಬ್ಬಿಣವನ್ನು ಕೇಳುವುದೇ?"

"ಲೋಹ ಎಂದರೆ ಕೇವಲ ಕಬ್ಬಿಣ ಎಂದು ಅರ್ಥ ಮಾಡಬಾರದು. ಬೆಳ್ಳಿ-ಬಂಗಾರಗಳೂ ಲೋಹಗಳೇ ತಾನೇ? ಲೋಹ (ಮೆಟಲ್) ಆನ್ನುವುದು ವಿಜ್ಞಾದಲ್ಲಿಯೂ ಒಂದು ಧಾತುಗಳ ಕುಟುಂಬ. ಇದಲ್ಲದೆ ಅನೇಕ ವ್ಯವಹಾರಗಳಲ್ಲಿ ಮನುಷ್ಯನ ಮನಸ್ಸು ಬೇರೆ ಬೇರೆ ರೀತಿ ಪ್ರಕಟವಾಗುತ್ತದೆ. ಒಮ್ಮೆ "ಅವರದು ಹೂವಿನಂತಹ ಮನಸ್ಸು" ಎನ್ನುತ್ತೇವೆ. ಮತ್ತೊಮ್ಮೆ "ಅವನದು ಕಲ್ಲಿನ ಮನಸ್ಸು" ಅನ್ನುತ್ತೇವೆ. ಏಕೆ ಹೀಗೆ?"

"ವ್ಯವಹರಿಸುವಲ್ಲಿ ಮನಸ್ಸಿನ ಮೃದುತ್ವ ಅಥವಾ ಕಾಠಿಣ್ಯವನ್ನು ಗುರುತಿಸಲು ಹೀಗೆ ಹೇಳುತ್ತೇವೆ"
"ಕಲ್ಲನ್ನು ಭೇದಿಸಲು ಏನು ಬಳಸುತ್ತಾರೆ?"
"ಉಳಿ ಮತ್ತು ಸುತ್ತಿಗೆ"
"ಉಳಿ ಮತ್ತು ಸುತ್ತಿಗೆಯನ್ನು ಬಂಗಾರದಿಂದ ಮಾಡಬಹುದೋ?"
"ಅರ್ಥವಾಗಲಿಲ್ಲ"

"ಕಲ್ಲಿಗಿಂತಲೂ ಕಠಿಣವಾದುದು ಕಬ್ಬಿಣ. ಇಲ್ಲಿ ಲೋಹವನ್ನು ಕೊಡು ಅಂದರೆ ಕಬ್ಬಿಣದ ಉಂಡೆಯನ್ನು ಕೊಡು ಎಂದು ಅರ್ಥವಲ್ಲ. "ಸಾಧನೆಯ ದಾರಿಯಲ್ಲಿ ನಮ್ಮ ಮನಸ್ಸನ್ನು ಕಬ್ಬಿಣದಂತೆ ಗಟ್ಟಿ ಮಾದು" ಎಂದು ಕೇಳುವ ಭಾವ. ಯಾವುದೇ ಪ್ರಲೋಭನೆಗಳಿಗೆ ಮನಸ್ಸು ಮೆದುವಾಗಿ ಸಾಧನೆಯ ದಾರಿಯಿಂದ ವಿಮುಖವಾಗಬಾರದು. ಬೇರೆ ರೀತಿಯ ಸಂಪತ್ತನ್ನು ಕೇಳಿಯಾಗಿದೆ. ಇಲ್ಲಿ ನಮ್ಮ ಮನಸ್ಸನ್ನು ಕಬ್ಬಿಣದಂತೆ ಗಟ್ಟಿ ಮಾಡು ಎಂದು ಕೇಳುವ ಪ್ರಾರ್ಥನೆ. ಸಂದರ್ಭ ನೋಡಿ ಪದಗಳಿಗೆ ಅರ್ಥ ಮಾಡಬೇಕಲ್ಲವೇ?"

ಇನ್ನು ಕೆಲವು ಪ್ರಶ್ನೆಗಳಾದ ಮೇಲೆ ಊಟದ ಕರೆ ಬಂತು.  

*****

ರುದ್ರದೇವರ ಕರುಣೆಯಿಲ್ಲದೆ ಮನಸ್ಸು ಗಟ್ಟಿಯಾಗದು. ಶ್ರೀವಿಜಯದಾಸರು ಶಂಭುವಿನ ಕುರಿತಾದ ಅವರ ಒಂದು ದೇವರನಾಮದಲ್ಲಿ ಹೀಗೆ ಹೇಳುತ್ತಾರೆ:

ಕೈಲಾಸವಾಸ ಗೌರೀಶ ಈಶ 
ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ 
ಕೈಲಾಸವಾಸ ಗೌರೀಶ ಈಶ  
 
ಮನಸು ಕಾರಣವಲ್ಲ ಪಾವ ಪುಣ್ಯಕ್ಕೆಲ್ಲ  
ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೆ 
ದನುಜಗಜ ಮದಹಾರಿ ದಂಡಪ್ರಣಾಮ ಮಾಳ್ಪೆ 
ಮಣಿಸೋ ಈ ಶಿರವನ್ನು ಸಜ್ಜನರ ಚರಣದಲಿ 

ಒಂದು ಪಾತ್ರೆಯಿಂದ ನೀರನ್ನು ಸುರಿಸಿದರೆ ಅದು ಬೀಳುವ ರೀತಿಯನ್ನೂ, ಮತ್ತೊಂದು ಪಾತ್ರೆಯಿಂದ ಎಣ್ಣೆಯನ್ನು ಸುರಿದರೆ ಅದು ಬೀಳುವ ರೀತಿಯನ್ನೂ ಒಟ್ಟಾಗಿ ನೋಡಿದರೆ ವ್ಯತ್ಯಾಸ ಸ್ಪಷ್ಟವಾಗಿ ಕಾಣುತ್ತದೆ. (ಇವನ್ನು ನಾವು ಪ್ರತಿದಿನ ನೋಡುತ್ತಿರುತ್ತೇವೆ. ಗಮನಿಸಿರುವುದಿಲ್ಲ) ಮನಸ್ಸು ಅಲ್ಲಿ-ಇಲ್ಲಿ ಹೋಗದಂತೆ ಒಂದೇ ಧಾರೆಯಾಗಿ ಕೇಂದ್ರೀಕರಿಸಲು ಆ ಶಂಭುವಿನ ಕರುಣೆ ಬೇಕು. 

ಪಂಡಿತ ಭೀಮಸೇನ ಜೋಶಿಯವರು ಹಾಡಿರುವ ಈ ಹಾಡನ್ನು ಇಲ್ಲಿ ಕೇಳಬಹುದು:

https://www.youtube.com/watch?v=KO772laPz3I


******

ಮೇಲಿನ ಹಾಡಿನಲ್ಲಿ "ಮನಸು ಕಾರಣವಲ್ಲ" ಮತ್ತು "ದನುಜ ಗಜ ಮದಹಾರಿ" ಎನ್ನುವ ಪದಗಳ ವಿಶೇಷಾರ್ಥಗಳನ್ನು ಮುಂದೊಮ್ಮೆ ನೋಡೋಣ. 

Friday, June 27, 2025

ದೇವರಲ್ಲಿ ಬೇಡುವುದು ಸರಿಯೇ?


ಹಿಂದಿನ ಸಂಚಿಕೆಗಳಲ್ಲಿ "ಅಷ್ಟ ಭೋಗ", "ಅಷ್ಟ ಭಾಗ್ಯ" ಮತ್ತು "ಅಷ್ಟ ಐಶ್ವರ್ಯ" ಇವುಗಳ ಬಗ್ಗೆ ಸ್ವಲ್ಪಮಟ್ಟಿಗೆ ಚರ್ಚೆ ಮಾಡಿದೆವು. (ಈ ಹಿಂದಿನ ಸಂಚಿಕೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ). ಇವುಗಳು ತಾವಾಗಿಯೇ ಸಿಗುವುದಿಲ್ಲ. ಕೆಲವನ್ನು ಸ್ವಲ್ಪ ಮಟ್ಟಿಗೆ ನಾವೇ ಸ್ವಂತ ಪರಿಶ್ರಮದಿಂದ ಗಳಿಸಬಹುದಾದರೂ ಅವುಗಳ ಪ್ರಮಾಣ ಹೆಚ್ಚಿರುವುದಿಲ್ಲ. ಅಷ್ಟೇ ಅಲ್ಲ, ಮನುಷ್ಯ ಸಹಜ ಬುದ್ಧಿಯ ಕಾರಣವಾಗಿ ಎಷ್ಟು ಸಂಪಾದನೆ ಮಾಡಿದರೂ ತೃಪ್ತಿ ಎನ್ನುವುದು ಬರುವುದಿಲ್ಲ. "ಇಷ್ಟು ದೊರಕಿದರೆ ಇನ್ನಷ್ಟು ಬೇಕೆಂಬಾಸೆ. ಅಷ್ಟು ದೊರಕಿದರೆ ಮತ್ತಷ್ಟು ಬೇಕೆಂಬಾಸೆ. ಕಷ್ಟ ಬೇಡ ಎಂಬಾಸೆ. ಕಡು ಸುಖವ ಕಾಂಬಾಸೆ." ಎಂದು ದಾಸರು ಹೇಳುವಂತೆ ಮನುಷ್ಯನಿಗೆ ಕಷ್ಟ ಬೇಡವೇ ಬೇಡ. ಸುಖ ಬೇಕೇ ಬೇಕು. ಅಷ್ಟೇ ಅಲ್ಲ. ಸುಖ ಇದ್ದಷ್ಟೂ ಇನ್ನೂ ಹೆಚ್ಚು ಬೇಕೆಂಬ ತವಕ. 

ತಾವಾಗಿಯೇ ಸಿಗದ, ನಾವು ಕಷ್ಟ ಪಟ್ಟರೂ ಪೂರ್ಣವಾಗಿ ಎಟುಕದ, ಆದರೆ ಬೇಕೆಂಬ ತುಡಿತವುಳ್ಳ ಈ ವಿಷಯಗಳನ್ನು ಪಡೆಯುವುದು ಹೇಗೆ? ನಮ್ಮ ಅನುಭವ ಹೇಳಿಕೊಟ್ಟಂತೆ ನಮ್ಮಲ್ಲಿ ಇಲ್ಲದಿದ್ದುದನ್ನು ಬೇರೆಯವರಿಂದ ಕೇಳಿ ಪಡೆಯಬಹುದು. ಹಾಗಿದ್ದರೆ ಯಾರನ್ನು ಕೇಳಬೇಕು? ಯಾರಾದರೂ ತಮ್ಮ ಬಳಿ ಇರುವುದನ್ನು ಮಾತ್ರ ಕೊಡಬಲ್ಲರು. ಅವರ ಬಳಿಯೇ ಇಲ್ಲದಿದ್ದುದನ್ನು ಯಾರಾದರೂ ಕೊಡುವುದು ಹೇಗೆ? ಆದಕಾರಣ ನಾವು ನಂಬಿದ ದೇವರನ್ನೋ, ದೇವತೆಯನ್ನೋ ಕೇಳಬಹುದು. ಅದರಲ್ಲಿಯೂ ಯಾರು ಸುಲಭವಾಗಿ ನಮಗೆ ಒಲಿಯುವವರೋ ಅವರನ್ನು ಕೇಳುವುದು. ಅವರಲ್ಲಿ ಕೊಡುವ ಶಕ್ತಿ ಇದ್ದರೂ ಕೇಳಿದರೆ ಕೊಡದವರನ್ನು ಬೇಡಿ ಏನು ಪ್ರಯೋಜನ? 

ಸಾಧನೆಯ ದಾರಿಯಲ್ಲಿ ನಡೆಯುತ್ತಿರುವ ಜಿಜ್ಞಾಸುವಿಗೆ "ಹೀಗೆ ಕೇಳುವುದು ಸರಿಯೇ?" ಎಂಬ ಅನುಮಾನ ಬರುವುದು ಸಹಜ. ವಾಸ್ತವವಾಗಿ ಈ ರೀತಿಯ ಅನುಮಾನ ಬರುವುದೇ ಒಂದು ಒಳ್ಳೆಯ ಸೂಚನೆ. ಎಷ್ಟು ಸಿಕ್ಕಿದರೂ ತೃಪ್ತಿ ಇಲ್ಲದ ಜೀವಕ್ಕೆ ಕೇಳುವುದರ ಎಲ್ಲೆ ಎಲ್ಲಿ? "ಕಿಂಗ್ ಮೈದಾಸ" ಕೇಳಿದಂತೆ ಮುಟ್ಟಿದ್ದೆಲ್ಲವೂ ಚಿನ್ನವಾಗಬೇಕು. ಅದು ನಿಜವಾಗಿ ಮುಟ್ಟಿದ್ದೆಲ್ಲಾ ಚಿನ್ನವಾದಾಗ, ತನ್ನ ಮುದ್ದಿನ ಮಗಳೂ ಒಂದು ಚಿನ್ನದ ಬೊಂಬೆಯಾಗಿ ಕುಳಿತಾಗ, ಅವನ ಕಣ್ಣು ತೆರೆಯಿತು. ಅಂತಹ ಅತಿರೇಕಕ್ಕೆ ಹೋಗದಿದ್ದರೆ ಆ ರೀತಿಯ ಪಾಠ ಕಲಿಯುವುದೂ ಸುಲಭ ಸಾಧ್ಯವಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಒಮ್ಮೆ ಕೇಳುವುದು ಅಭ್ಯಾಸವಾದರೆ ಆ ದುರಭ್ಯಾಸ ನಿಲ್ಲಿಸುವುದು ಕಷ್ಟವೇ. ಇದರಿಂದ ಹೊರಬರುವುದು ಹೇಗೆ?
*****

ಒಬ್ಬ ದೊಡ್ಡ ಧನಿಕ ಇದ್ದಾನೆ. ಅವನ ಬಳಿ ಬೇಕಾದಷ್ಟು ಐಶ್ವರ್ಯ ಇದೆ. ಕೊಡುವ ಶಕ್ತಿಯ ಜೊತೆ ಕೊಡುವ ಮನಸ್ಸೂ ಇದೆ. ಅನೇಕರು ಅವನ ಬಳಿ ಬಂದು, ಬೇಡಿ, ಬೇಕಾದುದನ್ನು ತೆಗೆದುಕೊಂಡು ಹೋಗುತ್ತಾರೆ. ಈ ರೀತಿ ತೆಗೆದುಕೊಂಡು ಹೋಗುವವರ ಸರತಿಯ ಸಾಲೇ ಇದೆ. 

ಒಂದು ದಿನ ಮೊದಲನೆಯವನು ಬಂದ. ಅವನಿಗೆ ಸ್ವಂತ ಖರ್ಚಿಗೆ ಹಣ ಬೇಕು. ಅದನ್ನು ಕೇಳುವುದಕ್ಕಾಗಿ ಬಂದಿದ್ದಾನೆ. ಕೇಳಲು ನಾಚಿಕೆ. ಬಹಳ ಸಂಕೋಚದಿಂದ ತಲೆ ಕೆಳಗೆ ಮಾಡಿ ಬೇಡುತ್ತಾನೆ. ಕೊಡುವ ಧನಿಕನ ಕೈ ಯಾವಾಗಲೂ ಮೇಲೆ. ಕೇಳುವವನಿಗೆ ಅನುಮಾನ. "ಕೊಡುತ್ತಾನೋ ಇಲ್ಲವೋ ಗೊತ್ತಿಲ್ಲ. ಹೇಗೆ ಕೇಳುವುದು? ಯಾವ ರೀತಿ ಕೇಳಿದರೆ ಕೊಡಬಹುದು? ಇಲ್ಲ ಅಂದುಬಿಟ್ಟರೆ ಏನು ಮಾಡುವುದು? ಕೊಟ್ಟರೂ ಏನು ಹೇಳಿ ಕೊಡುತ್ತಾನೋ? ಸಾಲ ಎಂದು ಕೊಡಬಹುದು. ಇಷ್ಟು ಬಡ್ಡಿ ಎಂದು ಹೇಳಬಹುದು. ಈಗ ಇಲ್ಲ, ನಾಳೆ ಬಾ ಎನ್ನಬಹುದು. ಹತ್ತು ಬಾರಿ ಓಡಾಡಿಸಿ ಕೊಡಬಹುದು. ಇನ್ನೊಬ್ಬರ ಮುಂದೆ ಅವಮಾನ ಮಾಡಬಹುದು. ಏನಾದರೂ ಕೇಳಲೇಬೇಕು. ವಿಧಿಯಿಲ್ಲ" ಹೀಗೆಲ್ಲಾ ಮನಸ್ಸಿನಲ್ಲಿ ಗೊಂದಲ. ಕಡೆಗೆ ಧೈರ್ಯ ಮಾಡಿ ಕೇಳಿದ. ಸಾಹುಕಾರ ಕೊಟ್ಟೇಬಿಟ್ಟ. ಅವನ ಕೆಲಸವಾಯಿತು. ಹೊರಟುಹೋದ. 

ಈಗ ಎರಡನೆಯವನು ಬಂದ. ಇವನು ತನಗೋಸ್ಕರ ಹಣ ಕೇಳಲು ಬಂದವನಲ್ಲ. ಇವನು ಯಾವುದೋ ಸಂಸ್ಥೆಯ ಒಬ್ಬ ವಿಶ್ವಸ್ತ ಮಂಡಳಿಯವನು (ಟ್ರಸ್ಟೀ). ಕೇಳುತ್ತಿರುವುದು ತನಗಾಗಿ ಅಲ್ಲ. ಟ್ರಸ್ಟಿಗಾಗಿ. ಪಡೆವ ಹಣದಿಂದ ಸ್ವಂತಕ್ಕೆ ಪ್ರಯೋಜನ ಪಡೆಯುವ ಅಭಿಲಾಷೆ ಇಲ್ಲ. ಹಣ ತೆಗೆದುಕೊಂಡಮೇಲೆ ತನ್ನದು ಅನ್ನುವ ಭಾವನೆ ಇಲ್ಲ. ದುರುಪಯೋಗ ಮಾಡಬೇಕೆಂಬ ಇರಾದೆ ಇಲ್ಲ. ತನಗಾಗಿ ಎಂದು ಕೇಳದುದರಿಂದ ಸಂಕೋಚವೂ ಇಲ್ಲ. ಕೊಡುವವನು ಇದನ್ನು ಸಾಲ ಎಂದು ಕೊಡುವುದಿಲ್ಲ. ಹಣ ಕೇಳಲು ಬಂದಿದ್ದರೂ ಸಾಹುಕಾರ ಗೌರವದಿಂದ ಕಾಣುತ್ತಾನೆ. ಕೂಡಿಸಿ ಮಾತನಾಡಿಸುತ್ತಾನೆ. ಸಾಹುಕಾರ ಕೊಡುತ್ತಾನೆ. ಇವನು ತೆಗೆದುಕೊಂಡು ಹೋಗುತ್ತಾನೆ. ತೆಗೆದುಕೊಂಡುದನ್ನು ಸರಿಯಾಗಿ, ಕೇಳಿದ ಉದ್ದೇಶ ಸಾಧನೆಗೆ ಉಪಯೋಗಿಸುತ್ತಾನೆ. 

ಇಬ್ಬರಾದಮೇಲೆ ಮೂರನೆಯವನು ಬಂದ . ಅವನು ಏನನ್ನೂ ಕೇಳಲು ಬಂದವನಲ್ಲ. ಅವನಿಗೆ ಏನೂ ಬೇಕಾಗಿಲ್ಲ. ಇರುವುದರಲ್ಲೇ ತೃಪ್ತನಾಗಿದ್ದಾನೆ. ಅವನಿಗೆ ಯಾವ ಪದಾರ್ಥವನ್ನೂ ಕೇಳಬೇಕೆಂಬ ಅಭಿಲಾಷೆ ಇಲ್ಲ. ಬದಲಾಗಿ ಅವನೇ ಸಾಹುಕಾರನಿಗೆ ಕೊಡಲು ಹಣ್ಣನ್ನು ತಂದಿದ್ದಾನೆ. ಹಣ್ಣು ಕೊಡುತ್ತಾನೆ. ಅಷ್ಟೇ. ಆದರೆ ಸಾಹುಕಾರ "ನಿನಗೆ ಏನು ಬೇಕು? ಕೇಳು. ಸಂತೋಷದಿಂದ ಕೊಡುತ್ತೇನೆ" ಅನ್ನುತ್ತಾನೆ. "ನನಗೆ ಏನೂ ಬೇಡ. ನಿನ್ನನ್ನು ಕಾಣಲು ಬಂದೆ. ನೋಡಿದ್ದಾಯಿತು. ಅಷ್ಟು ಸಾಕು" ಅನ್ನುತ್ತಾನೆ ಬಂದವನು. ಸಾಹುಕಾರ ಬಲವಂತ ಮಾಡಿ ಏನನ್ನೋ ಕೊಡುತ್ತಾನೆ.  ಬಂದವನು ಅದನ್ನು ತೆಗೆದುಕೊಂಡು ಹೋಗುತ್ತಾನೆ. ಕೊಡು ಎಂದು ಕೇಳಲಿಲ್ಲ. ಕೊಡದಿದ್ದರೆ ದುಃಖವಿಲ್ಲ. ಸಾಹುಕಾರ ತಾನಾಗಿಯೇ ಕೊಟ್ಟಿದ್ದನ್ನು ತೆಗೆದುಕೊಂಡಾಗ ಸಂತೋಷವಿಲ್ಲ. ಸಂತೋಷವಿಲ್ಲ ಎಂದರೆ ವಿಷಾದವೂ ಇಲ್ಲ. ಒಂದು ರೀತಿಯ ನಿರ್ಲಿಪ್ತ ಭಾವನೆ. "ನೀನು ಕೊಟ್ಟೆ. ಅದನ್ನು ಗೌರವಪೂರ್ವಕ ಸ್ವೀಕರಿಸುತ್ತೇನೆ. ಅದರ ಮೌಲ್ಯ ನೋಡಿ ಅಲ್ಲ. ಕೊಟ್ಟವನಾದ ನಿನ್ನ ದೊಡ್ಡತನ ನೋಡಿ ತೆಗೆದುಕೊಂಡೆ" ಎನ್ನುವ ಭಾವ. 
*****

ಭಗವಂತನೆಂಬ ದೊಡ್ಡ ಸಾಹುಕಾರ. ಬಂದವರು ಮೂರು ರೀತಿಯ ಭಕ್ತರು. ಮೊದಲನೆಯವನು ತನಗೆ ಬೇಕು ಎಂದು ಕೇಳುವ "ಸಕಾಮಿ ಭಕ್ತ". ಕೇಳಿ ಪಡೆದದ್ದರಿಂದ ಸುಖ ಪಡುವ ಅಭಿಲಾಷೆ. ಸಾಹುಕಾರನ ಬಳಿ ಹೋಗುವಾಗಲೇ ಏನು ಬೇಕು ಎಂದು ತೀರ್ಮಾನ ಮಾಡಿ ಅದನ್ನು ಕೇಳಿದವ. ಕೇಳಿದ ಉದ್ದೇಶದಲ್ಲಿ ಅನುಮಾನವಿಲ್ಲ. ಅದು ಸ್ವಾರ್ಥಕ್ಕೇ. ಆದರೂ ಭಗವಂತ ಕೊಟ್ಟ. ಭಕ್ತನಿಗೆ ಸಂತೋಷ. ಮತ್ತೆ ಇನ್ನೊಂದು ದಿನ ಮತ್ತೊಂದು ಬೇಕಾದಾಗ ಹೀಗೆ ಅವನ ಬಳಿ ಹೋಗುತ್ತಾನೆ. ಎಂದೋ ಒಂದು ದಿನ ಮುಂದಿನ ಹಂತಕ್ಕೆ ತೇರ್ಗಡೆ ಆಗಬಹುದು. ಪರಮಾತ್ಮ ಕರುಣಾಳು. ಅವನನ್ನು ತಳ್ಳಿ ಓಡಿಸುವುದಿಲ್ಲ. ಹೆಚ್ಚಿನ ಭಕ್ತರು, ಅವರ ಅನುಷ್ಠಾನಗಳು ಈ ರೀತಿಯವೇ. 

ಎರಡನೆಯವನೂ ಬೇಡಲೆಂದೇ ಬಂದವನು. ಆದರೆ ಪಡೆದುದರಿಂದ ಸುಖ ಪಡುವ ಅಭಿಲಾಷೆ ಇಲ್ಲ. ಆ ಪರಿಕರಗಳಿಂದ ಮತ್ತಷ್ಟು ಸಾಧನೆ ಮಾಡಲು ಅನುಕೂಲ ಎಂದು ಬೇಡುತ್ತಿದ್ದಾನೆ. ಇವನಿಗೆ ಕೊಡುವುದರಿಂದ ಸರಿದಾರಿಯಲ್ಲಿ ಮುಂದುವರೆಯುತ್ತಾನೆ ಎನ್ನುವುದು ಅವನಿಗೂ ಗೊತ್ತು. (ಅವನಿಗೆ ಎಲ್ಲವೂ ಗೊತ್ತು). ಮೊದಲಿನವನಂತೆ ಇವನೂ ಬೇಡುವವನೇ ಆದರೂ ಇವನಿಗೆ ಗೌರವವೂ ಸಿಗುತ್ತದೆ. ಕೇಳಿದ್ದೂ ಸಿಗುತ್ತದೆ. ಈ ರೀತಿ ಭಕ್ತರು ಮೊದಲಿನವರಿಗಿಂತ ಸಂಖ್ಯೆಯಲ್ಲಿ ಕಡಿಮೆ. 

ಮೂರನೆಯವರದು ಬೇರೆಯೇ ರೀತಿ. ಅವರಿಗೆ ಭಗವಂತನ ಪ್ರೀತಿ ಬಿಟ್ಟು ಬೇರೆ ಏನೂ ಬೇಕಾಗಿಲ್ಲ. ಮಾಡಿದ ಪ್ರತಿ ಕೆಲಸವೂ ಅವನ ಪ್ರೀತಿಗಾಗಿ. ಸಂಕಲ್ಪ ಮಾಡುವಾಗ "ಅಸ್ಮಾಕಂ ಸಹಕುಟುಂಬಾನಾಂ" ಇಲ್ಲ. "ಲೋಕ ಕಲ್ಯಾಣಾರ್ಥಂ" ಮಾತ್ರವೇ ಉಂಟು. "ಪರಮೇಶ್ವರ ಪ್ರೇರಣಯಾ, ಪರಮೇಶ್ವರ ಪ್ರೀತ್ಯರ್ಥಂ" ಎನ್ನುವುದೇ ಧ್ಯೇಯ. "ಕರ್ಮ ಫಲ" ಎಂಬ ಹಣ್ಣನ್ನೂ ಭಗವಂತನಿಗೇ ಕೊಡುತ್ತಾರೆ. ಅದರ ಮೇಲೂ ಪ್ರೀತಿಯಾಗಲೀ, ಅಧಿಕಾರವಾಗಲೀ ಇಲ್ಲವೇ ಇಲ್ಲ. ಪರಮಾತ್ಮನೇ ತಾನಾಗಿ ಕೊಟ್ಟದ್ದನ್ನು "ಪ್ರಸಾದ" ಎಂದು ಸ್ವೀಕರಿಸುತ್ತಾರೆ. ತಿರಸ್ಕರಿಸುವ ಅಹಂಕಾರವಿಲ್ಲ. ಸಿಕ್ಕಿತು ಎಂಬ ಬೀಗುವಿಕೆಯಂತೂ ಮೊದಲೇ ಇಲ್ಲ. 

*****

ಸ್ವಾತಂತ್ರ್ಯಾನಂತರದ ಎರಡು-ಮೂರು ದಶಕಗಳಲ್ಲಿ ಹುಟ್ಟಿದ ತಲೆಮಾರಿನ ಜನರಿಗೆ ಮೂರು ರೀತಿಯಲ್ಲಿ ತೊಂದರೆಗಳು. ಹೆಚ್ಚಿನವರು ನಮ್ಮ ಅನುಷ್ಠಾನಗಳನ್ನು ಕ್ರಮವಾಗಿ ಕಲಿತವರಲ್ಲ. ಅಪ್ಪ, ಅಜ್ಜಂದಿರು ಮಾಡುತ್ತಿದ್ದರು. ಆದ್ದರಿಂದ ನಾವೂ ಮಾಡುತ್ತೇವೆ. (ನಮ್ಮ ಹಿಂದಿನ ತಲೆಮಾರಿನ ಜನ ಸಾಮಾನ್ಯವಾಗಿ ಇವನ್ನು ಕ್ರಮವಾಗಿ ಕಲಿತಿದ್ದರು. ಮುಂದಿನ ತಲೆಮಾರಿನವರು ಹೆಚ್ಚು-ಕಡಿಮೆ ಬಿಟ್ಟೀ ಬಿಟ್ಟರು.) ಮಂತ್ರ-ಸ್ತೋತ್ರಗಳ ಸರಿಯಾದ ಅರ್ಥಗಳು ತಿಳಿದಿಲ್ಲ. ಆದ್ದರಿಂದ ಹಿಂದಿನವರಂತೆ ಮಾಡುತ್ತಾ ಹೋಗುವುದು. ಇದು ಮೊದಲನೆಯ ತೊಂದರೆ. ಕ್ರಮೇಣ ವ್ಯವಹಾರ ಜ್ಞಾನದ ಜೊತೆಗೆ ಅನುಭವದ ಜ್ಞಾನ ಸೇರಿದಾಗ "ಇದೇನು ಹೀಗಿದೆ? ಕೆಲವು ಸರಿ ಕಾಣುವುದಿಲ್ಲ?" ಎನ್ನುವ ಅನುಮಾನ ಬರುತ್ತದೆ.

ಎರಡನೆಯ ಸಿಕ್ಕು  ಅಂದರೆ ನಮ್ಮಲ್ಲಿ ಪ್ರತಿಯೊಬ್ಬರಿಗೂ ನಾವು ಹುಟ್ಟಿದ ಮನೆಯ ಆಚರಣೆಯೇ ಸರ್ವಶ್ರೇಷ್ಠ.. ಹೀಗೆಂದು ಪ್ರತಿ ಮತವೂ, ಪಂಗಡವೂ ಹೇಳುತ್ತವೆ. ಬೇರೆಯದರಲ್ಲೂ ಸ್ವಲ್ಪ ಒಳ್ಳೆಯದಿರಬಹುದು ಎಂದು ಒಪ್ಪುವ ಉದಾರ ಮನೋಭಾವ ಕಡಿಮೆ. ಜೊತೆಗೆ ಯಾವುದಾದರೂ ಸರಿ ಇಲ್ಲ ಅಂದರೆ ಅದನ್ನು ಬಿಟ್ಟುಬಿಡುವ ದಾರ್ಢ್ಯ ಇರುವುದಿಲ್ಲ. ಏಕೆಂದರೆ ಅದು ಸರಿಯಾಗಿಲ್ಲ ಎಂದು ಖಚಿತವಾದ ಅಭಿಪ್ರಾಯಕ್ಕೆ ಬರುವ ತಳಹದಿ ಭದ್ರವಿಲ್ಲ. 

ಮೂರನೆಯ ಸಮಸ್ಯೆ ಅಂದರೆ ನಾವು ತತ್ವಕ್ಕೂ ಮತ-ಪಂಗಡಗಳಿಗೂ ಇರುವ ವ್ಯತ್ಯಾಸವನ್ನು ಮಸಕು-ಮಸಕಾಗಿ ಕಾಣುತ್ತೇವೆ. ನಮ್ಮ ವೈದಿಕ ವಾಂಗ್ಮಯದಲ್ಲಿ, ವಿಶೇಷವಾಗಿ ಉಪನಿಷತ್ತುಗಳಲ್ಲಿ, ಹೇಳುವಂತೆ "ಎಲ್ಲವನ್ನೂ ತಿಳಿ; ನಿನಗೆ ಸರಿ ಅನ್ನಿಸಿದ್ದನ್ನು ಮಾಡು" ಎನ್ನುವುದರಲ್ಲಿ ನಮಗೆ ಹೆಚ್ಚಿನ ಪರಿಶ್ರಮವಿಲ್ಲ. ಆದ್ದರಿಂದ ಮೊದಲಿನಿಂದ ಮಾಡಿಕೊಂಡು ಬಂದ ಯಾವುದನ್ನೂ ಅದು ಈಗ ನಮಗೆ ಸರಿಕಾಣುತ್ತಿಲ್ಲ ಎಂದು ಬಿಡುವುದಿಲ್ಲ. ಇದಕ್ಕೆ ಪೂರಕವಾಗಿ ನಮ್ಮ ಅನುಮಾನಗಳಿಗೆ ಮುಕ್ತ ಮನಸ್ಸಿನಿಂದ ಸಮಾಧಾನ ಹೇಳುವ ಹಿರಿಯರೂ ತಿಳಿದವರೂ ಸಿಗುವುದು ಬಹಳ ಅಪರೂಪ. 

*****

ನಮ್ಮ ಅನೇಕ ಮಂತ್ರ-ಸ್ತೋತ್ರಗಳಲ್ಲಿ ದೇವರಲ್ಲಿ ಅನೇಕ ವಸ್ತುಗಳನ್ನು ಬೇಡುವ ಪ್ರಕರಣಗಳಿವೆ. ಕೆಲವುಗಳಲ್ಲಿ ಬೇಡಿದ್ದನ್ನೇ ಮತ್ತೆ ಮತ್ತೆ ಕೇಳುವ ಅಂಶಗಳಿವೆ. ನಮ್ಮ ಅರಿವು ಆಳವಾದಂತೆ ಈ ರೀತಿ ಬೇಡುವುದು, ಮತ್ತೆ ಮತ್ತೆ ಅದನ್ನೇ ಕೇಳುವುದು, ಅನವಶ್ಯಕವಾದ ಪದಾರ್ಥಗಳ ಕೋರಿಕೆ, ಮುಂತಾದುವುಗಳ ಸಮಸ್ಯೆ ಕಾಡುತ್ತವೆ. ಇದಕ್ಕೆ ಪರಿಹಾರವೇನು?

ಅಂತಹವುಗಳ ಆಚರಣೆ ಬಿಡುವುದು ಒಂದು ಪರಿಹಾರ. ಆದರೆ ಅನೇಕ ಇಂತಹ ಸಂದರ್ಭಗಳಲ್ಲಿ ಅವುಗಳಲ್ಲಿ ನಮಗೆ ಹಿಡಿಸುವ, ಹಿತವಾದ ಅನೇಕ ವಿಷಯಗಳೂ ಸೇರಿರುತ್ತವೆ. ಕೆಲವಂತೂ ಮನಸ್ಸಿಗೆ ಹೆಚ್ಚಿನ ಮುದವನ್ನೂ, ಶಾಂತಿಯನ್ನೂ ಕೊಡುತ್ತವೆ. ಅನೇಕ ಕಡೆ ನಿಜವಾದ ಭಕ್ತಿ ಹೊರಹೊಮ್ಮುವ ಅವಕಾಶಗಳಿವೆ. ಹೀಗಾಗಿ ಅವನ್ನು ಬಿಡುವುದೂ ಪೂರ್ತಿಯಾಗಿ ಸರಿ ಕಾಣುವುದಿಲ್ಲ. 

ಮೇಲೆ ಚರ್ಚಿಸಿದ ಮೂವರು ಭಕ್ತರ ಗುಂಪುಗಳಲ್ಲಿ ಮೂರನೆಯ ಗುಂಪಿಗೆ ಹೋಗಲು ನಾವು ಬಹಳ ಬಹಳ ದೂರ ಹೋಗಬೇಕಾಗಿದೆ. ಇಂತಹ ಪ್ರಶ್ನೆಗಳು ಮನಸ್ಸಿನಲ್ಲಿ ಹುಟ್ಟಿವೆ ಅಂದರೆ ಮೊದಲನೆಯ ರೀತಿಯಲ್ಲಿ ಇರುವುದನ್ನು ದಾಟಿದ್ದೇವೆ ಅನ್ನಬಹುದು. ಆದ್ದರಿಂದ ಇಂತಹ ಬೇಡುವ ಸಂದರ್ಭಗಳಲ್ಲಿ ಮನಸ್ಸನ್ನು ಹದ ಮಾಡಿಕೊಂಡು ಕೇಳುವಾಗ "ಇದು ನಮ್ಮ ಭೋಗಕ್ಕಲ್ಲ. ಹೆಚ್ಚಿನ ಸಾಧನೆಗಾಗಿ ಬೇಡುತ್ತೇವೆ. ದುರುಪಯೋಗ ಮಾಡುವುದಿಲ್ಲ" ಅನ್ನುವ ಅನುಸಂಧಾನ ಇದ್ದು ಎರಡನೇ ವರ್ಗಕ್ಕೆ ಸೇರುವ ಪ್ರಯತ್ನ ಮಾಡಬಹುದು. 
***** 

ಮೂರನೆಯ ಗುಂಪಿನ ಭಕ್ತರ ಗುಣ-ಸ್ವರೂಪಗಳು ಮತ್ತು ಎರಡು-ಮೂರು ಉದಾಹರಣೆಗಳನ್ನು ಮುಂದಿನ ಸಂಚಿಕೆಯಲ್ಲಿ ಚರ್ಚಿಸುವ ಪ್ರಯತ್ನ ಮಾಡೋಣ.